ವಿಷಯದ ವಿವರಗಳಿಗೆ ದಾಟಿರಿ

Archive for

7
ಜುಲೈ

ಖೆಡ್ಡ :೩ – ಕುರ್ಚಿಗಳು!

ಹೇಮಂತ್ ಕುಮಾರ್

ಸೂರ್ಯ ಎಂದಿನಂತೆ ಬೆಳಕನ್ನು ಕಕ್ಕುತ್ತಲಿದ್ದ ಆದರೆ ಇಂದಿನ ಬೆಳಗ್ಗೆ ಎಂದಿನಂತಿರಲಿಲ್ಲ. ಅಪ್ಪ ಅಮ್ಮ, ಅವರ ಎಂಟು ವರ್ಷದ ಮಗ ಎಂದಿನಂತೆಯೇ ಸ್ನಾನಾದಿ ತಿಂಡಿ ತೀರ್ಥಗಳನ್ನು ಗಡಬಡನೇ ಮುಗಿಸಿ ಟಿಫಿನ್ ಬಾಕ್ಸುಗಳನ್ನು ಸಿದ್ಧಗಳೊಸಿಕೊಂಡು, ಮಗ ಶಾಲೆಯ ಸಮವಸ್ತ್ರ, ಅಪ್ಪ ಅಮ್ಮ ಆಫೀಸಿನ ಐಡೆಂಟಿಟಿ ಕಾರ್ಡು, ಊಟದ ಬುತ್ತಿಯನ್ನು ಹೊತ್ತುಕೊಂಡು ಮನೆಯಿಂದ ಹೊರಡುತ್ತಾ ಮೂವರೂ ಒಂದೊಂದು ಕುರ್ಚಿಗಳನ್ನು ಹೊತ್ತುಕೊಂಡು ಮನೆ ಬೀಗ ಹಾಕಿ ಹೊರಡುವರು. ಅಕ್ಕ ಪಕ್ಕದ ಮನೆಯವರೂ ಸಹ ಅದೇ ರೀತಿ ಸಂಸಾರ ಸಮೇತ ಕುರ್ಚಿಗಳನ್ನು ಹೊತ್ತುಕೊಂಡು ಸೈಕಲ್ ಗಳಿದ್ದ ಮಕ್ಕಳು ಸೈಕಲ್ಲಿನಲ್ಲಿ, ದ್ವಿಚಕ್ರವಾಹನಗಳಿದ್ದವರು, ಕಾರಿದ್ದವರು, ಬಸ್ಸಿನಲ್ಲಿ ಹೊರಡುವವರು ಎಲ್ಲರ ಕೈಗಳಲ್ಲೂ ಹೆಗಲ ಮೇಲೂ ಒಂದೊಂದು ಕುರ್ಚಿಗಳು. ಇಡೀ ಊರಿಗೆ ಊರೇ ಒಬ್ಬರನ್ನೊಬ್ಬರು ನೋಡುತ್ತಾ ಮುಗುಳ್ನಗುತ್ತಾ ಗೊತ್ತಿದ್ದವರೊಂದಿಗೆ ಮಾತನಾಡುತ್ತಾ ಬಣ್ಣ ಬಣ್ಣದ ಕುರ್ಚಿಗಳನ್ನು ಹಿಡಿದುಕೊಂಡು ಒಂದೇ ದಾರಿಯಲ್ಲಿ ಸಾಗುತ್ತಿರುವುದು. ದೊಡ್ಡ ಲಾರಿಯೊಂದು ಅದರ ಭರ್ತಿ ಕುರ್ಚಿಗಳನ್ನು ಹೊತ್ತುಕೊಂಡು ಜನರ ನಡುವಿನಲ್ಲಿ ಜಾಗ ಮಾಡಿಕೊಂಡು ಮುಂದುವರೆಯಿತು.

 
ಸೈಕಲ್ಲುಗಳು, ದ್ವಿಚಕ್ರ ಗಾಡಿಗಳು, ಕಾರು, ಆಟೋ, ಬಸ್ಸುಗಳು, ಲಾರಿಗಳು, ಟೆಂಪೋಗಳು, ಎಲ್ಲವೂ ಕ್ರಮಬದ್ಧವಾಗಿ ಸಾಲಾಗಿ ಒಂದೊಂದು ಕಡೆ ನಿಂತಿರಲು ಇನ್ನೂ ವಾಹನಗಳು ಬಂದು ಸೇರಿಕೊಳ್ಳುತ್ತಿರಲು ಜನರೆಲ್ಲಾ ಕುರ್ಚಿಗಳನ್ನು ವಿಧಾನಸೌಧದ ಸುತ್ತಾ ಹಾಕಿಕೊಂಡು ಒಬ್ಬರ ನಂತರ ಒಬ್ಬರು ಕೂರುತ್ತಿರುವರು. ನೋಡ ನೋಡುತ್ತಿದ್ದಂತೆಯೇ ಒಂದು ಜನಸಾಗರವೇ ಸೇರಿಹೋಗುತ್ತಿಹುದು. ಪೊಲೀಸರೂ ಎಷ್ಟೆಂದು ತಾನೆ ತಡೆದಾರು, ಆದಷ್ಟೂ ಜನರನ್ನು ಪ್ರಶ್ನಿಸಿ, ವಿಧಾನಸೌಧದೊಳಗಡೆ ನುಗ್ಗದಿರಲೆಂದು ಅಡ್ಡಗೋಡೆಗಳನ್ನು ನಿರ್ಮಿಸಿ ಎಲ್ಲೆಲ್ಲಿಂದ ಕರೆಸಲು ಸಾಧ್ಯವೋ ಅಷ್ಟೂ ಜನ ಸಿಬ್ಬಂಧಿಗಳನ್ನು ಸೇರಿಸಿ ಮುಂದೆ ನಿಲ್ಲುವರು. ಯಾಕೆ ಜನ ಸೇರುತ್ತಿದ್ದಾರೆಂದು ಯಾರನ್ನು ಹೇಗೆ ಯಾವ ರೀತಿಯಲ್ಲಿ ವಿಚಾರಿಸಿದರೂ ಯಾರೂ ಬಾಯಿ ಬಿಡದ ಕಾರಣ ತಲೆಕೆಟ್ಟು ಉನ್ನತಾಧಿಕಾರಿಗಳಿಗೆ ಫೋನು, ವೈರ್ ಲೆಸ್ ಮೆಸೇಜುಗಳನ್ನ ಕಳುಹಿಸುತ್ತಾ ಯಾವ ಕ್ರಮ ತೆಗೆದುಕೊಳ್ಳುವುದೆಂದು ತೀರ್ಮಾನಿಸುವುದರಲ್ಲೇ ನಿರತರಾಗಿರುವರು. ಅಷ್ಟರಲ್ಲಿ ಇತ್ತ ನೆರೆದಿದ್ದ ಜನರಿಗೆ ಪ್ರತೀ ಸಾಲಿಗೊಂದೊಂದು ಎರಡೆರಡು ಮೈಕುಗಳನ್ನು ಯಾರು ಯಾರೋ ಸ್ವಯಂಸೇವಕರುಗಳು ಹಂಚಲು ಶುರುಮಾಡುವರು. ದೊಡ್ಡ ದೊಡ್ಡ ಕಪ್ಪು ಸ್ಪೀಕರುಗಳನ್ನು ವಿಧಾನಸೌಧದ ಕಡೆಗೆ ತಿರುಗಿಸಿ ಸುತ್ತಲೂ ನಿಲ್ಲಿಸಲಾಗುವುದು. ಎಲ್ಲಿ ಸಮಸ್ಯೆ ಇದ್ದರೆ ಅಲ್ಲಿ ನಾವಿದ್ದೇವೆ ಎಂದು ಪಣ ತೊಟ್ಟಿರುವಂತಹ ಹಲವು ಬಗೆಯ ಮೀಡೀಯಾ ಪಾರ್ಟ್ನರ್ ಗಳು ಪೆನ್ನು ಪೇಪರು, ಕ್ಯಾಮೆರಾ ಮೈಕುಗಳನ್ನು ಹಿಡಿದು ವಾಸ್ತು ಲೆಕ್ಕ ಹಾಕಿ ವಾಸ್ತವ್ಯ ಹೂಡುವರು. ವಿಧಾನಸೌಧದ ಆವರಣ ಕಾಣಲೂ ಸಹ ಸಾಧ್ಯವಾಗದಷ್ಟು ಹಿಂದೆ ಕುಳಿತಿರುವ ಜನರಿಗೆ ದೊಡ್ಡ ದೊಡ್ಡ ಪರದೆಗಳ ಟಿವಿ ಸಿದ್ಧಗೊಳಿಸಿ ಅದರ ಮೇಲೆ ತಮ್ಮ ತಮ್ಮ ಚಾನಲ್ ಗಳ ಲೋಗೋ ಹಾಕಿ ಜಾಹಿರಾತು ಮಾಡುತ್ತಾ ಮುಂದೆ ವಿಧಾನ ಸೌಧದ ಬಳಿ ಏನು ನಡೆಯುತ್ತಿದೆಯೆಂಬ ಚಿತ್ರಣವನ್ನು ನೇರವಾಗಿ ಬಿತ್ತರಿಸುವರು. ಸಧ್ಯಕ್ಕೆ ಸುಮ್ಮನೆ ಕುಳಿತಿರುವ ಜನ, ಬಾಲ ಸುಟ್ಟ ಬೆಕ್ಕಿನಂತೆ ಓಡಾಡುತ್ತಿರುವ ಪೊಲೀಸರು, ಅಲ್ಲಿ ಇಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಧಾನಸೌಧದ ಕಾವಲು ಸಿಬ್ಬಂಧಿಗಳು ಇಷ್ಟನ್ನೇ ಪರದೆಯ ಮೇಲೆ ನೋಡುತ್ತಾ ಹಿಂದಿರುವ ಜನರೂ ಸಹ ಶಾಂತವಾಗಿಯೇ ಕುಳಿತಿರುವರು.
 
ಸಾರ್ವಜನಿಕರು ವಿಧಾನಸೌಧಕ್ಕೆ ಲಗ್ಗೆ ಇಡ್ತಿದ್ದಾರೆ! ಸಾಮಾನ್ಯ ಜನರು ತಮ್ಮ ಕುರ್ಚಿಗಳನ್ನ ತಾವೇ ಹೊತ್ತುಕೊಂಡು ಬಂದು ವಿಧಾನಸೌಧಕ್ಕೆ ಘೇರಾವ್ ಮಾಡ್ತಿದ್ದಾರಂತೆ! ವಿಧಾನಸೌಧವನ್ನ ದೂರದಲ್ಲಿ ನಿಂತು ನೋಡಿದ್ರೆ ಬರೀ ಕುರ್ಚಿಗಳೇ ಕಾಣ್ತಿದ್ದಾವಂತೆ. ಜನ ವಿಧಾನಸೌಧವನ್ನ ಕುರ್ಚಿಗಳಿಂದ ದಾಳಿ ಮಾಡ್ತಿದ್ದಾರಂತೆ! ಹೀಗೆ ಎಲ್ಲಾ ಎಮ್ ಎಲ್ ಏ, ಎಮ್ ಪಿ, ಪುಡಿ ರಾಜಕಾರಣಿಗಳಿಗೂ ಸಹ ಕರೆಗಳು ಹೋಗುತ್ತಿರಲು, ಏನು, ಯಾಕೆ ಜನ ಸೇರುತ್ತಿದ್ದಾರೆ ಎಂದು ತಿಳಿಯುವ ಮೊದಲೇ ಈ ತುರ್ತು ಪರಿಸ್ಥಿತಿಯಲ್ಲಿ ಯಾವುದಾದರೂ ರೆಸಾರ್ಟು, ವಿದೇಶೀ ಟೂರು ಹೊರಟುಬಿಟ್ಟರೆ ಹೇಗೆಂದು ತಯಾರಿ ನಡೆಸಲೂ ಸಹ ಕೆಲವರು ಶುರುಮಾಡಿಬಿಡುವರು. ಅಷ್ಟರಲ್ಲಿ ವಿರೋಧ ಪಕ್ಷದವರು ವಿಧಾನಸೌಧಕ್ಕೆ ಜನರ ಮುಂದೆ ನಿಲ್ಲಲು ಹೋಗುತ್ತಿರುವರೆಂದು ಆಡಳಿತ ಪಕ್ಷಕ್ಕೆ, ಮತ್ತು ಆಡಳಿತ ಪಕ್ಷದವರು ಜನರನ್ನು ಎದುರಿಸಲು ಹೋಗುತ್ತಿರುವರೆಂದು ವಿರೋಧ ಪಕ್ಷದ ಅಧ್ಯಕ್ಷರಿಗೆ ಕರೆ ಹೋದದ್ದರಿಂದ, ಇವರಿಬ್ಬರೇ ಹೋಗುತ್ತಿದ್ದ ಮೇಲೆ ನಾವೂ ಹೋಗಿ ನಮ್ಮ ಬೇಳೆಯೂ ಏನಾದರೂ ಬೇಯುವುದೋ ನೋಡೋಣವೆಂದು ಎಡ ಬಲ ಪಕ್ಷದವರೂ ಹೊರಟು ಅಂತೂ ಮಧ್ಯಾಹ್ನದೊಳಗೇ ಎಲ್ಲ ಬಿಳಿ ಟೊಪ್ಪಿಗಳು, ಗರಿ ಗರಿ ಗಂಜಿ ಬಟ್ಟೆಗಳೂ ಪಾನ್ ಪರಾಗು, ಗುಟ್ಖಾ ನಮಲುತ್ತಿದ್ದ ಗಲೀಜು ಹಲ್ಲುಗಳನ್ನು ತೆರೆದುಕೊಂಡು ದಪ್ಪ ದಪ್ಪ ಉಂಗುರಗಳ ಬೆರಳುಗಳನ್ನು ಜೋಡಿಸಿ ನಿಂತು ಮುಂದೇನು ಎಂಬಂತೆ ನೋಡುವರು. ತಣ್ಣಗೆ ಮಲಗಿದ್ದ ಈ ನಮ್ಮ ಬೆಂಗಾಡಿನ ಜನ ಧಿಡೀರನೆ ಇಂದು ಎದ್ದು ಈ ವಿಧಾನಸೌಧವೆಂಬ ವಿಧಾನಸೌಧದ ಮುಂದೆ ಎಲ್ಲ ರಾಜಕಾರಿಣಿಗಳನ್ನ ಗುಡ್ಡೆ ಹಾಕಿಕೊಂಡು ಕರೀ ಸ್ಪೀಕರ್ ಗಳನ್ನು ಮೊಟ್ಟ ಮೊದಲ ಬಾರಿಗೆ ರಾಜಕಾರಿಣಿಗಳೆಡೆಗೆ ತಿರುಗಿಸಿ ಮೈಕುಗಳನ್ನು ತಮ್ಮ ಬಳಿ ಹಿಡಿದಿಟ್ಟುಕೊಂಡು, ತಮ್ಮ ಕುರ್ಚಿಗಳನ್ನು ತಾವೇ ತಂದು ಕುಳಿತಿರುವುದಾದರೂ ಯಾಕೆ? ನೀವೇ ನೋಡಿ ಸಣ್ಣ ಬ್ರೇಕ್ ನ ನಂತರ ಎಂದು ಅವನಾರೋ ಕ್ಯಾಮೆರಾ ಮುಂದೆ ಅರಚುತ್ತಿದ್ದಂತೆಯೇ ಮುಖ್ಯಮಂತ್ರಿಗಳು ಮುಂದೆ ಬಂದು ಹಿ ಹಿ ಹಿ ಎಂದು ಹಲ್ಲು ಕಿರಿದೇ ಬಿಡುವರು.
 
ಮುಖ್ಯಮಂತ್ರಿಗಳು ಮಾತಿಗೆ ಮೊದಲಾಗುವ ಮುನ್ನ ತುಂಬಾ ಹಿಂದೆ, ಮುಖ್ಯಮಂತ್ರಿಗಳ ಎತ್ತರಕ್ಕೆ ಕಾಣದಷ್ಟೂ ದೂರದಲ್ಲಿ ಕುಳಿತಿರುವವನೊಬ್ಬ ಮೈಕು ಹಿಡಿದು ಮಾನ್ಯ ಜನಪ್ರತಿನಿಧಿಗಳೇ ನಮ್ಮ ಮನೆಯಲ್ಲಿ ಬೆಳಗ್ಗಿನ ಹೊತ್ತು ಚಿತ್ರಾನ್ನ, ವಾಂಗಿಬಾತ್, ಪುಳಿಯೋಗರೆಗಳನ್ನ ಮಾಡುವುದು ಬಿಟ್ಟು ತುಂಬಾ ದಿನಗಳು ಕಳೆದಿವೆ, ಬ್ರೆಡ್ಡು ಜಾಮ್ ಈಗೀಗ ಓಟ್ಸ್ ತಿನ್ನುವ ಹಾಗೆ ಮಾಡಿದ್ದೀರಿ, ಇನ್ನು ರಾತ್ರಿಯ ಹೊತ್ತು ಮಧ್ಯಾಹ್ನದ ಊಟವನ್ನೇ ಬಿಸಿ ಕೂಡ ಮಾಡದೇ ತಿನ್ನುವ ಗತಿ ಕೂಡ ಪದೇ ಪದೇ ಸ್ಟೋವು ಹಚ್ಚಿದರೆ ಇಂಧನ ಬೇಗ ಖಾಲಿಯಾದರೆ ಬ್ಲ್ಯಾಕಿನಲ್ಲಿ ತರಲು ನಮ್ಮಲ್ಲಿ ಶಕ್ತಿಯಿಲ್ಲ, ಅಕ್ಕ ಪಕ್ಕದ ರಾಜ್ಯಗಳಲ್ಲಿ, ಇಲ್ಲಿ ಸಿಗರೇಟು ಸಿಗುವ ದರದಲ್ಲಿ ಅಕ್ಕಿ ಕೊಡಲಾಗುತ್ತಿದೆ, ನಾವೂ ಅವರಂತೆ ಎಲ್ಲೆಲ್ಲಿಂದಲೋ ಇಲ್ಲಿಗೆ ವಲಸೆ ಬಂದವರಲ್ಲ, ಇಲ್ಲೇ ಹುಟ್ಟಿ ಬೆಳೆದಿರುವುದರಿಂದ ಬೇರೆ ಕಡೆ ಹೋಗುವ ಮನಸ್ಸೂ ಬರುತ್ತಿಲ್ಲ ನಮ್ಮಂತಹವರ ಊಟದ ಗತಿ ಏನು ನೀವು ಏನಾದರೂ ಪರಿಹಾರವನ್ನ ಹೇಳ್ತೀರಾ? ಎಂದು ಕೇಳಿದ್ದು ಮುಂದಿನ ಕರಿಪೆಟ್ಟಿಗೆಗಳಲ್ಲಿ ಮುಂದೆ ನಿಂತಿದ್ದ ಮುಖ್ಯಮಂತ್ರಿಗಳ ಕಿವಿ ತೂತು ಬೇಳುವಂತೆ ಕೇಳಿಸುತ್ತಿದ್ದುದರಿಂದ ಹಿಂದೆ ಸರಿದು ತನ್ನ ಸಹಪಾಠಿಗಳನ್ನು ಸೇರುವರು. ಇದಕ್ಕೆ ಯಾರು ಏನು ಉತ್ತರಿಸಬಹುದೆಂದು ಸಮಾಲೋಚನೆ ಶುರುವಾಗುವುದು. ಮುಂದೆ ಗುಸು ಗುಸು ಪಿಸ ಪಿಸ ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಳ್ಳುತ್ತಿದ್ದ ಬುದ್ಧಿವಂತರುಗಳನ್ನು ಮತ್ತೊಬ್ಬ ಸಾರ್ವಜನಿಕನ ಪ್ರಶ್ನೆ ಸ್ತಬ್ಧಗೊಳಿಸುವುದು. ಒಬ್ಬ ಸರ್ಕಾರಿ ಆಸ್ಪತ್ರೆಗಳ ಸಮಸ್ಯೆ ಬೆಗ್ಗೆ ಪ್ರಸ್ನಿಸಿದರೆ, ಮತ್ತೊಬ್ಬ ಸರ್ಕಾರಿ ಶಾಲೆಯ ಬಗ್ಗೆ ಪ್ರಶ್ನಿಸುವನು, ಸರ್ಕಾರಿ ಕಛೇರಿಗಳಲ್ಲಿನ ಲಂಚದ ಬಗ್ಗೆ, ರಸ್ತೆ, ಡಿನೋಟಿಫಿಕೇಶನ್, ಗಣಿಗಾರಿಕೆ ಹೀಗೆ ಒಬ್ಬರ ನಂತರ ಒಬ್ಬರು ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಸುರಿಯುತ್ತಿರಲು ರಾಜಕಾರಣಿಗಳ ಗುಂಪಿನಿಂದ ಒಬ್ಬ ಮುಂದೆ ಬಂದು ಒಂದು ಮೈಕನ್ನು ಕೇಳಿ ಪಡೆದು, ನೋಡಿ ಮತ ಬಾಂಧವರೇ, ನಿಮ್ಮ ಕಷ್ಟ ನಮಗೆ ಅರ್ಥವಾಗುತ್ತೆ. ನಾವು ನಿಮ್ಮ ಸೇವೆಗಾಗಿಯೇ ಶ್ರಮಿಸುತ್ತಿದ್ದೇವೆ ಎಂದು ಸಾಧ್ಯವಾದಷ್ಟೂ ಜೋರಾಗಿಯೇ ಹೇಳುವನು ಆ ಧ್ವನಿ ಮತ್ತೆ ತಮ್ಮ ಕಡೆಗೇ ಪ್ರತಿಧ್ವನಿಸಿತ್ತಿದ್ದರೂ ಕಷ್ಟ ಪಟ್ಟು ಸಹಿಸಿಕೊಂಡು ಮಾತುಮುಂದುವರೆಸುವಷ್ಟರಲ್ಲಿ ಒಬ್ಬ ಮಾತಿಗೆ ಅನುವಾಗುವನು. ಏನ್ರೀ ಮಾಡ್ತಿದ್ದೀರಿ? ನಾವುಗಳೂ ನೋಡ್ತಾನೇ ಇದ್ದೀವಿ. ನಿಮ್ಮ ನಿಮ್ಮ ಪಕ್ಷಗಳೊಳಗೆ ಕಿತ್ತಾಡುವುದರಲ್ಲಿ, ಆ ಪಕ್ಷದವರು ನಿಮ್ಮ ಮೇಲೆ ಗೂಬೆ ಕೂರಿಸುವುದರಲ್ಲಿ, ನೀವು ಇನ್ನೊಂದು ಪಕ್ಷದವರನ್ನ ಜೈಲಿಗೆ ಹಾಕಿಸುವುದರಲ್ಲಿ ಇಷ್ಟೇ ಆಗೋಯ್ತಲ್ಲಾ. ಯಾವಾಗ ನಿಮಗೆ ನಮ್ಮ ಕಡೆ ಗಮನ ಕೊಡೋಕೆ ಸಮಯ ಸಿಗುತ್ತೆ ಎಂದು ನೇರವಾಗಿ ಪ್ರಶ್ನಿಸುವನು. ಆ ಮುಂದೆ ನಿಂತಿದ್ದ ರಾಜಕಾರಣಿಗೆ ಬೆಂಬಲ ನೀಡಲೆಂಬಂತೆ ಇನ್ನೊಬ್ಬ ಬಂದು ಮೈಕಿನಲ್ಲಿ, ನೋಡಿ ಒಂದು ಪಕ್ಷ ನಡೆಸುವುದು ನೀವಂದುಕೊಂಡಷ್ಟು ಸುಲಭವಲ್ಲ, ರಾಜಕೀಯ ತುಂಬಾ ಕ್ಲಿಷ್ಟವಿರ್ತದೆ, ನೀವು ಒಮ್ಮೆ ಬಂದು ನಮ್ಮ ಕುರ್ಚಿಯಲ್ಲಿ ಕೂತು ನೋಡಿ, ನಮ್ಮ ಕಷ್ಟ ನಿಮಗೆ ಗೊತ್ತಾಗುತ್ತೆ ಎನ್ನುವ ಧೈರ್ಯ ಮಾಡಿ ಬೆವರೊರೆಸಿಕೊಳ್ಳುವನು. ಅದಕ್ಕೆ ಜನಸಾಗದರದಲ್ಲೆಲ್ಲೋ ಇನ್ನೊಬ್ಬ ಉತ್ತರಿಸುತ್ತಾ ಸರಿ ಹಾಗಿದ್ರೆ ನೀವುಗಳು ನಿಮ್ಮ ಕಷ್ಟ ಸುಖ ನೋಡ್ಕೊಂಡು ಹೊರಡಿ ಹಾಗಾದ್ರೆ, ನಿಮ್ಮ ನಿಮ್ಮಲ್ಲಿನ ಜಗಳ, ಕಿತ್ತಾಟಗಳು ತೀರ್ಮಾನಕ್ಕೆ ಬಂದಮೇಲೆ ವಾಪಾಸು ಬನ್ನಿ, ಅಲ್ಲಿಯವರೆಗೂ ನಾವೇ ಆಡಳಿತ ನಡೆಸಿಕೊಳ್ತೀವಿ ಎನ್ನಲು ವಿರೋಧ ಪಕ್ಷದ ನಾಯಕರು ಮುಂದೆ ಬಂದು ಮೈಕು ಕಿತ್ತುಕೊಂಡು ನೋಡಿ ನಾವು ಮುಂಚಿನಿಂದಲೇ ಹೇಳ್ತಾ ಬಂದಿದ್ದೀವಿ ಈ ಪಕ್ಷ ದಕ್ಷ ಆಡಳಿತ ನಡೆಸೋದಕ್ಕೆ ಸಮರ್ಥವಾಗಿಲ್ಲ ಅಂತ ಎಂದು ಏನೋ ಹೇಳಲು ಅನುವಾದವನನ್ನು ಒಬ್ಬ ಒಂದಷ್ಟು ಜನ ಒಟ್ಟಿಗೆ ತಡೆದು ಸುಮ್ಮನಿರಿ ಸಾರ್ ಅವರು ಆಡಳಿತ ಪಕ್ಷಕ್ಕೆ ಅರ್ಹರಲ್ಲ ಅಂದ್ರೆ, ನೀವು ಸಹ ವಿರೋಧ ಪಕ್ಷಕ್ಕೂ ಸಹ ಅರ್ಹರಲ್ಲ. ನಾವು ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಮಾತನಾಡಲು ಬಂದಿಲ್ಲ. ನಮಗೆ ನೀವೆಲ್ಲಾ ಒಂದೇ ತಕ್ಕಡಿಯಲ್ಲಿನ ಕಪ್ಪೆಗಳ ತರಹ ಕಾಣೋಕೆ ಶುರುವಾಗಿದ್ದೀರಿ. ಜನ ರಾಜಕಾರಣಿಗಳೆಂದರೆ ಹಾಸ್ಯ ಮಾಡಿ ನಗುವ ಮಟ್ಟಿಗೆ ಆಗಿದೆ. ನೀವು ಒಂದು ಸಂಘಟನೆಯನ್ನ, ಒಂದು ಊರನ್ನ, ಒಂದು ರಾಜ್ಯವನ್ನ, ಒಂದು ಪಕ್ಷವನ್ನ ಪ್ರತಿನಿಧಿಸುತ್ತಿದ್ದೀರ ಅಂತ ನೀವು ಮರೆತಿದ್ದೀರೋ ಏನೋ ಗೊತ್ತಿಲ್ಲ ಒಟ್ಟಿನಲ್ಲಿ ನೀವುಗಳು ಅಕಸ್ಮಾತ್ತಾಗಿ ಟಿವಿ ಪೇಪರ್ ಗಳಲ್ಲಿ ಕಾಣಿಸಿಕೊಂಡರೂ ನಮಗೆ ಇನ್ನಾವ ಸ್ಕ್ಯಾಮ್ ಹೊರಗೆ ಬಂತೋ ಇನ್ನಾವ ಹಣ ಲೂಟಿ ಮಾಡಿದ್ದರ ವಿಷಯ ಹೊರಗೆ ಬಂತೋ, ಇನ್ನಾವುದರ ಬೆಲೆ ಹೆಚ್ಚಳವಾಯ್ತೋ ಎಂದು ಹೆದರಿಕೊಂಡೇ ನೋಡಬೇಕಾಗುತ್ತೆ ಎಂದು ಸಾರ್ಮಜನಿಕರು ತಮ್ಮ ಅಳಲನ್ನು, ಕ್ರೋಧವನ್ನು ತೋಡಿಕೊಳ್ಳುತ್ತಿರುವಂತೆಯೇ, ರಾಜಕಾರಣಿಗಳು ಬೆವರೊರೆಸಿಕೊಳ್ಳಿತ್ತಿದ್ದಂತೆಯೇ ಸೂರ್ಯ ಬೆಳಕನ್ನ ಸ್ಟ್ರಾ ಹಾಕಿ ಹೀರಿಕೊಂಡು ಬಿಡುವನು. ಕುರ್ಚಿಗಳು, ಕ್ಯಾಮರಾಗಳು, ಸ್ಪೀಕರ್ ಗಳು, ಗಾಡಿಗಳು, ಬಾಡಿಗಳು ಎಲ್ಲವೂ ನೋಡನೋಡುತ್ತಿದ್ದಂತೆ ಮಾಯವಾಗಿಬಿಡುವವು. ಸಾರ್ವಜನಿಕರು ಮನೆ ಸೇರಿಕೊಳ್ಳುವರು, ರಾಜಕಾರಣಿಗಳು ಮತ್ತೊಂದು ಸ್ಕ್ಯಾಮಿನಲ್ಲಿ ಕಾಣಿಸಿಕೊಳ್ಳುವರು. 
 
ಚಿತ್ರಕೃಪೆ: google
**************************************************************
7
ಜುಲೈ

ಶೇರು ಮಾರುಕಟ್ಟೆ : ಭಾಗ -೨

– ವೆಂಕಟೇಶ್ ಗುರುರಾಜ್

ನಮ್ಮ ದೇಶದ ಗುಜರಾತಿಗಳು ಮತ್ತು ಮಾರ್ವಾಡಿಗಳು ಈ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವುದು ಹೆಚ್ಚಾಗಿ ಕಂಡುಬರುತ್ತದೆ. ನಮ್ಮ ಕನ್ನಡಿಗರು ಹೆಚ್ಚಾಗಿ ಬ್ಯಾಂಕ್/ಅಂಚೆ ಕಛೇರಿ ಗಳಲ್ಲಿ ನಿಶ್ಚಿತ ಠೇವಣಿಗಳಲ್ಲಿ ಹಣ ಇಟ್ಟು ಅವರು ಕೊಡುವ ೧೦-೧೧% ವಾರ್ಷಿಕ ಬಡ್ಡಿಗೆ ತೃಪ್ತಿಪಟ್ಟುಕೊಳ್ಳುತ್ತಾರೆ. ಇನ್ನು ಕೆಲವರು ಚಿನ್ನವನ್ನು ಒಡವೆ ರೂಪದಲ್ಲಿ ಇಟ್ಟುಕೊಂಡು ತಮ್ಮ ಕಷ್ಟ ಕಾಲದಲ್ಲಿ ಉಪಯೋಗಿಸಿಕೊಳ್ಳುತ್ತಾರೆ. ಮತ್ತೆ ಕೆಲವರು ಭೂಮಿಯ ಮೇಲೆ ಹಣವನ್ನು ವಿನಿಯೋಗಿಸುತ್ತಾರೆ. ಕನ್ನಡಿಗರು ಈ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವುದು ಬಹಳ ಕಡಿಮೆ. ಒಂದು ಜ್ಞಾನದ ಕೊರತೆಯಾದರೆ, ಮತ್ತೊಂದು ಹೆಚ್ಚಿನ ರಿಸ್ಕ್ ತೆಗೆದುಕೊಳ್ಳಲು ಹೆಚ್ಚಾಗಿ ಕನ್ನಡಿಗರು ಇಷ್ಟಪಡುವುದಿಲ್ಲ. ಆದ ಕಾರಣ ನಮ್ಮಲ್ಲಿ ಈ ಶೇರು ಮಾರುಕಟ್ಟೆಯ ಬಗ್ಗೆ ಕನ್ನಡದಲ್ಲಿ ಬಂದಿರುವ ಪುಸ್ತಕಗಳು ಬಹಳ ಕಡಿಮೆ.  ಕೆಲವು ಪತ್ರಿಕೆಗಳು ಲೇಖನಗಳನ್ನು ಆಗಾಗ ಪ್ರಕಟಿಸುತ್ತವೆ. ಆದರೆ ಅದು ಬಹಳ ಕಡಿಮೆ. ನಮ್ಮ ಕನ್ನಡಿಗರು ಈ ಮಾರುಕಟ್ಟೆಯಿಂದ ದೂರ ಇರಲು ಇದೂ ಸಹ ಒಂದು ಕಾರಣವಿರಬಹುದು. ಆಂಗ್ಲ ಭಾಷೆಯಲ್ಲಿ ಈ ಮಾರುಕಟ್ಟೆಯ ಬಗ್ಗೆ ಸಂಭೃದ್ದ ಮಾಹಿತಿ ಇದೆ. ಗೊಗಲ್ ನಲ್ಲಿಯೂ ಸಹ ಅನೇಕ ಮಾಹಿತಿ ಪಡೆಯಬಹುದು.

ಪ್ರಪಂಚದ ೩ನೇ ಅತೀ ದೊಡ್ಡ ಶ್ರೀಮಂತ ವಾರನ್ ಬಫೆಟ್ ಶೇರು ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಹಣ ಸಂಪಾದಿಸಿರುವ ವ್ಯಕ್ತಿ. ಇವರ ಹೂಡಿಕೆ ಕಂಪನಿಯ ಹೆಸರು ” ಬರ್ಕ್ ಶೈರ್  ಹಾಥ್ ವೇ ’ ಇವರು ತಮ್ಮ ೧೩-೧೪ನೇ ವಯಸ್ಸಿನಲ್ಲಿ ಈ ಶೇರು ಮಾರುಕಟ್ಟೆಯ ವ್ಯವಹಾರದಲ್ಲಿ ಇಳಿದು, ” ಬಫೆಟ್ ಲೀ ” ಮುಂತಾದ  ಕೆಲವು ಕಂಪನಿಗಳನ್ನೂ ಸೃಷ್ಟಿಸಿದ್ದಾರೆ. ಭಾರತದಲ್ಲಿ  ಶೇರು ಮಾರುಕಟ್ಟೆಯ ರಾಜನೆಂದು ಪ್ರಸಿದ್ದಿಗೆ ಬಂದವರು ರಾಕೇಶ್ ಜುಂಜುನ್ ವಾಲ. ಇವರು ಅತಿ ದೊಡ್ಡ ಮಾರುಕಟ್ಟೆಯ ವಿಶ್ಲೇಷಕರು ಹಾಗೂ ನಮ್ಮ ಶೇರು ಮಾರುಕಟ್ಟೆಯ ದೊಡ್ದ ಹೂಡಿಕದಾರರಲ್ಲಿ ಒಬ್ಬರು.

ಮತ್ತಷ್ಟು ಓದು »

6
ಜುಲೈ

ಕಾಡುವಂತ ಗೆಳೆಯ ಬೇಕು..

– ಅನಿತ ನರೇಶ್ ಮಂಚಿ

ಪ್ರತಿ ಕ್ಷಣವೂ ರಚ್ಚೆ ಹಿಡಿದ ಪುಟ್ಟ ಮಗುವಿನಂತೆ ನನಗೇ ಜೋತು ಬೀಳುವ ಇವನು ಇವತ್ತು ಹೀಗೆ ತಣ್ಣಗೆ ಮಲಗುವುದು ಎಂದರೆ..
ಪಾದರಸದಂತೆ ಚುರುಕಾಗಿದ್ದವನು, ಈಗ ಕೆಲವು ದಿನಗಳಿಂದ ಯಾಕೋ ಹೀಗೇ.. ನಾನಾಗಿ ಮಾತನಾಡಿದರೆ ಬೇಕೋ ಬೇಡವೋ ಎಂಬ ಉತ್ತರ.. ಕೆಲವೊಮ್ಮೆ ಇವನೇನು ಹೇಳುತ್ತಿದ್ದಾನೆ ಎಂದು ನನಗರಿವಾಗದಂತೆ ಅಸ್ಪಷ್ಟ.. ಒಮ್ಮೊಮ್ಮೆ ಸುಮ್ಮನೆ ಕುಳಿತನೆಂದರೆ ಎಷ್ಟು ಮಾತನಾಡಿಸಿದರೂ ಮಾತನಾಡಲಾರ..  ತನ್ನಷ್ಟಕ್ಕೆ ತಾನೇ ಸರಿ ಹೋದಾನು ಎಂದು ನನ್ನದೇ ಚಿಂತೆಗಳಲ್ಲಿ ಮುಳುಗಿ ಇವನ ಬಗ್ಗೆ ಹೆಚ್ಚು ಗಮನ ನೀಡಿರಲಿಲ್ಲ.
ಇಂದು ಹತ್ತಿರವಿದ್ದವನನ್ನು ತಟ್ಟಿ ಎಬ್ಬಿಸಹೋದರೆ ಕೊರಡಿನಂತೆ ಸುಮ್ಮನೆ ಬಿದ್ದುಕೊಂಡಿದ್ದ.ನನಗೂ ಇವನ ಸಿಟ್ಟು ಸೆಡವು ನೋಡಿ ಬೇಸರವಾಗಿತ್ತು. ಕೊಂಚ ಜೋರಾಗಿ ಅಲುಗಾಡಿಸಿದೆ.ಉಹೂಂ.. ಯಾವುದೇ ರೀತಿಯ ಸ್ಪಂದನವಿಲ್ಲ..
ಕಂಡವರೆಲ್ಲ ಹೇಳುತ್ತಿದ್ದರು.. ಸಾಕೇ..  ಅದೆಷ್ಟು ಅಂತ  ಇಡೀ ದಿನ ಅವನೊಡನೆ ಇರ್ತೀಯ.. ನಿನ್ನ ಕೈ ಕೂಸಿನಂತಾಗಿದ್ದಾನೆ ಅವನು .. ಸತ್ಯ ಎಂದರೆ ನಾನೆ ಇವನ ಕೂಸಾಗಿದ್ದೆ. ನನ್ನ ನೋವು ನಲಿವು ಎಲ್ಲವೂ ಇವನೊಡನೆ ಹಂಚಿಕೊಳ್ಳುತ್ತಿದ್ದೆ.. ನನ್ನೆಲ್ಲ ಮಿಡಿತಗಳನ್ನು ಅರಿತವನಂತೆ ನಾನು ಪಿಸುನುಡಿದರೂ ಕೇಳಿಸಿಕೊಳ್ಳುತ್ತಿದ್ದ.. !!
4
ಜುಲೈ

ಮಾತೃಭಾಷೆಯಲ್ಲಿಯೇ ಶಿಕ್ಷಣ-ಮಕ್ಕಳ ಹಕ್ಕನ್ನು ರಕ್ಷಿಸಿ

– ಪಂಡಿತಾರಾಧ್ಯ,ಮೈಸೂರು

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡಬೇಕೆಂಬ ಜಗತ್ತಿನ ಎಲ್ಲ ಶ್ರೇಷ್ಠ ಶಿಕ್ಷಣ ತಜ್ಞರ ವಿಚಾರಗಳು ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಿ ಕರ್ನಾಟಕ ಸರಕಾರವು ತನ್ನ ಭಾಷಾನೀತಿಯನ್ನು ಅಂತಿಮವಾಗಿ ರೂಪಿಸಿತು(೧೯೯೪). ಅದರ ಪ್ರಕಾರ ಒಂದರಿಂದ ಐದನೇ ತರಗತಿಯವರೆಗೆ ಮಾತೃಭಾಷೆ/ರಾಜ್ಯಭಾಷೆ ಮಾತ್ರ ಕಡ್ಡಾಯ. ಕನ್ನಡ ಮಾತೃಭಾಷೆಯಲ್ಲದವರಿಗೆ ಒಂದನೆಯ ತರಗತಿಯಲ್ಲಿ ಪರಿಸರಭಾಷೆ/ರಾಜ್ಯಭಾಷೆಯಾದ ಕನ್ನಡವೂ ಕಡ್ಡಾಯ ಕಲಿಕೆಯ ವಿಷಯವಲ್ಲ. ಎರಡನೆಯ ಭಾಷೆಯನ್ನು ಕಲಿಯುವ ಹಂತದಿಂದ ಅಂದರೆ ಮೂರನೆಯ ತರಗತಿಯಿಂದ ಅವರಿಗೆ ರಾಜ್ಯಭಾಷೆ ಕನ್ನಡ ಐಚ್ಛಿಕ ಕಲಿಕೆಯ ವಿಷಯ ಮಾತ್ರ; ಪರೀಕ್ಷೆ ಕಡ್ಡಾಯವಲ್ಲ. ಐದನೆಯ ತರಗತಿಯಿಂದ ಕನ್ನಡ ಕಲಿಕೆ ಮತ್ತು ಪರೀಕ್ಷೆ ಕಡ್ಡಾಯ. ಎರಡನೆಯ ಭಾಷೆಯನ್ನು ಕಲಿಯುವ ಹಂತದಿಂದ ಅಂದರೆ ಮೂರನೆಯ ತರಗತಿಯಿಂದ ಮಾತ್ರ ಇಂಗ್ಲಿಷ್ ಮಾತೃಭಾಷೆಯಲ್ಲದ ಮಕ್ಕಳಿಗೆ ಇಂಗ್ಲಿಷ್ ಐಚ್ಛಿಕ ಕಲಿಕೆಯ ವಿಷಯ, ಪರೀಕ್ಷೆ ಕಡ್ಡಾಯವಲ್ಲ. ಐದನೆಯ ತರಗತಿಯಿಂದ ಇಂಗ್ಲಿಷ್ ಕಲಿಕೆ ಮತ್ತು ಪರೀಕ್ಷೆ ಕಡ್ಡಾಯ. ಕರ್ನಾಟಕ ಸರಕಾರದ ಈ ಭಾಷಾನೀತಿಯನ್ನು ಸರ್ವೋನ್ನತ ನ್ಯಾಯಾಲಯವೂ ಪ್ರಶಂಸಿಸಿ ಅನುಮೋದಿಸಿತ್ತು(೧೯೯೩).

ಈ ಭಾಷಾನೀತಿಗೆ ಇದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವ ಸಂದರ್ಭದಲ್ಲಿ ಅದನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸೀಮಿತಗೊಳಿಸಿತು. ಪೂರ್ವ ಪ್ರಾಥಮಿಕವೂ ಸೇರಿದಂತೆ ಒಂದನೆಯ ತರಗತಿಯಿಂದಲೇ ಇಂಗ್ಲಿಷ್ ಮಾತೃಭಾಷೆಯಲ್ಲದವರಿಗೂ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ನಡೆಸಲು ಅನುದಾನರಹಿತ ಖಾಸಗಿ ಶಾಲೆಗಳಿಗೆ ಮುಕ್ತ ಅವಕಾಶ ನೀಡಿತು(೨೦೦೮). ಇದು ಮಾತೃಭಾಷೆಯಲ್ಲಿ ಶಿಕ್ಷಣ ನೀಡಬೇಕೆಂಬ ಮಕ್ಕಳ ಶೈಕ್ಷಣಿಕ ಹಕ್ಕಿನ ನೀತಿಗೆ ವಿರುದ್ಧವಾಗಿದೆ. ಇದರಿಂದ ಮಕ್ಕಳು ಆರಂಭದ ಹಂತದಲ್ಲಿಯೇ ‘ಸಮಾನ ಅವಕಾಶ-ಸಮಾನ ಸ್ಪರ್ಧೆ’ ಎಂಬ ಸಮಾನತೆಯ ನ್ಯಾಯದಿಂದ ವಂಚಿತರಾಗಿದ್ದಾರೆ.

ಮತ್ತಷ್ಟು ಓದು »

3
ಜುಲೈ

ಕಾನೂನಿನಂಗಳ ೪ : ಆಧುನಿಕ ಕಾನೂನುಗಳು

– ಉಷಾ ಐನಕೈ  ಶಿರಸಿ

ಭಾರತದಲ್ಲಿ ಕಾನೂನುಗಳನ್ನು ಅಧ್ಯಯನ ಮಾಡುವಾಗ ಸ್ಥೂಲವಾಗಿ ಎರಡು ವಿಭಾಗಗಳಲ್ಲಿ ನೋಡುವುದು ಅನಿವಾರ್ಯವಾಗುತ್ತದೆ. ಅದಾವವೆಂದರೆ ಬ್ರಿಟಿಶ್ ವಸಾಹತುಶಾಹಿ ಪೂರ್ವದ ಕಾನೂನುಗಳು ಹಾಗೂ ವಸಾಹತುಶಾಹಿ ನಂತರದ ಕಾನೂನುಗಳು. ಪೂರ್ವದ ಕಾನೂನುಗಳು ಪ್ರಾಚೀನ ಭಾರತದ ಕಾನೂನುಗಳೆಂದೇ ಗುರುತಿಸಲ್ಪಡುತ್ತದೆ. ಶ್ರುತಿ, ಸ್ಮೃತಿ, ಧರ್ಮ, ಸಂಪ್ರದಾಯಗಳೆಲ್ಲ ಆ ಕಾಲದ ಕಾನೂನಿನ ನೆಲೆಗಳು. ವಸಾಹತುಶಾಹಿ ನಂತರದ  ಕಾನೂನುಗಳು ಆಧುನಿಕ ಕಾನೂನುಗಳೆಂದು ಗುರುತಿಸ್ಪಟ್ಟು ಇಂದಿಗೂ ಕೂಡ ಚಾಲನೆಯಲ್ಲಿವೆ.

ವಸಾಹತುಶಾಹಿ ನಂತರದ ಕಾನೂನುಗಳು ಏಕೆ ಆಧುನಿಕ ಕಾನೂನುಗಳೆಂದು ಕರೆಯಲ್ಪಟ್ಟವು ಎಂಬುದಕ್ಕೆ ವಿವರಣೆಗಳು ಬೇಕಿಲ್ಲ. ಏಕೆಂದರೆ ಅದೊಂದು ಸಾಮಾನ್ಯ ಜ್ಞಾನ. ಐರೋಪ್ಯರು ಭಾರತಕ್ಕೆ ವ್ಯಾಪಾರಕ್ಕಾಗಿ ಬಂದವರು. ನಂತರ ಈ ದೇಶದ ಆಡಳಿತವನ್ನು ಕೈಗೆ ತೆಗೆದುಕೊಂಡರು. ಪಾಶ್ಚಾತ್ಯ ದೇಶಗಳ ಹಾಗೆ ಇಡೀ ಭಾರತದ ದೇಶವನ್ನು ಪುನರ್ಕಟ್ಟಲು ಪ್ರಯತ್ನಿಸಿದರು. ಅವರ ಈ ಪ್ರಯತ್ನ ಒಳಿತು ಕೆಡಕುಗಳೆರಡನ್ನೂ ಒಳಗೊಂಡಿದೆ. ಭಾರತ ನೂರಾರು ಪ್ರಾಂತಗಳಾಗಿ ಒಡೆದು ಹಂಚಿಹೋಗಿತ್ತು. ಇದು ಆಡಳಿತಾತ್ಮಕವಾಗಿ ಹಾಗೂ ಕಾನೂನಾತ್ಮಕವಾಗಿ ತುಂಬ ತೊಂದರೆಯನ್ನುಂಟುಮಾಡುತ್ತಿತ್ತು.

ಕಾನೂನಿನ ವಿಷಯವಾಗಿ ನೋಡುವುದಾದರೆ ಆಯಾ ಪ್ರಾಂತ್ಯದ ರೂಢಿ, ಪದ್ಧತಿಗಳೇ ಅಲ್ಲಿನ ಕಾನೂನುಗಳಾಗಿದ್ದವು. ಹೀಗಾಗಿ ಸ್ಥಳದಿಂದ ಸ್ಥಳಕ್ಕೆ ಕಾನೂನಿನ ಸ್ವರೂಪ ಕೂಡ ಭಿನ್ನತೆಯನ್ನು ಹೊಂದಿತ್ತು. ಇದು ಇಡೀ ಭಾರತವನ್ನು ಆಳಲು  ಹೊರಟ ಇಂಗ್ಲೀಶರಿಗೆ ನ್ಯಾಯ ನಿರ್ಣಯ ನೀಡಲು ತೊಡಕಾಯಿತು. ಹೀಗಾಗಿ ತಮ್ಮಂತಹದೇ ಒಂದು ಏಕರೂಪಿ ಕಾನೂನಿನ ಪರಿಕಲ್ಪನೆಯನ್ನು ಇಲ್ಲಿ ಅನುಷ್ಠಾನಗೊಳಿಸಲು ನಿರ್ಣಯಿಸಿದರು. ಪ್ರಾರಂಭದಲ್ಲಿ ಈಸ್ಟ್ ಇಂಡಿಯಾ ಕಂಪನಿ ತನ್ನ ಅಧಿಕಾರದ ಕೇಂದ್ರಗಳಾದ ಮದ್ರಾಸ್, ಮುಂಬಯಿ, ಕಲ್ಕತ್ತಾಗಳ ಮೂಲಕ ಬ್ರಿಟಿಶ್ ಇಂಗ್ಲೀಶ್ ಕಾನೂನುಗಳನ್ನು ಆಧಾರವಾಗಿಟ್ಟುಕೊಂಡು ಆಡಳಿತ ನಡೆಸುತ್ತಿತ್ತು. ನಂತರ ಈ ಅಧಿಕಾರ ಬ್ರಿಟಿಶ್ ಸರಕಾರಕ್ಕೆ ಹಸ್ತಾಂತರವಾದಾಗ ಇಡೀ ಭಾರತಕ್ಕೆ ಅನ್ವಯವಾಗುವಂತಹ ಹಲವು ಕಾನೂನುಗಳು ರಚಿತವಾದವು.

ಮತ್ತಷ್ಟು ಓದು »

2
ಜುಲೈ

ಕನ್ನಡ/ಇಂಗ್ಲೀಷ್ ಮಾಧ್ಯಮದ ಜೊತೆಗೆ ಏಕರೂಪ ಶಿಕ್ಷಣದ ಬಗ್ಗೆಯೂ ಚರ್ಚೆ ಆಗಬೇಕಲ್ಲವೇ?

– ರಾಕೇಶ್ ಶೆಟ್ಟಿ

ಕಡೆಗೂ ‘ಸರ್ಕಾರ ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತಿಸಬೇಕು’ ಅನ್ನುವ ಮಾತುಗಳನ್ನು ಕಸಪಾ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಇಂಗ್ಲೀಷ್ ಮಾಧ್ಯಮದ ಸುತ್ತ ನಡೆಯುತ್ತಲಿರುವ ಚರ್ಚೆಯಲ್ಲಿ ನಾನು ನಿರೀಕ್ಷಿಸುತಿದ್ದ ಮಾತು “ಏಕರೂಪ ಶಿಕ್ಷಣ”ದ ಬಗ್ಗೆ.ಪೇಟೆಯ/ಉಳ್ಳವರ ಮಕ್ಕಳಿಗೊಂದು ಶಿಕ್ಷಣ,ಹಳ್ಳಿಯ/ಬಡವರ ಮಕ್ಕಳಿಗೊಂದು ಶಿಕ್ಷಣ ಕೊಟ್ಟು ಕಡೆಗೆ ಸಮಾನತೆ,ಸಾಮಾಜಿಕ ನ್ಯಾಯ,ಭಾಷೆ,ನಾಡು-ನುಡಿಯ ಅಳಿವು ಉಳಿವು ಅಂತ ಮಾತನಾಡುವುದೆಷ್ಟು ಸರಿ?

೧೦ನೆ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ ನನಗೆ ಮಾತೃ ಭಾಷೆಯಲ್ಲಿ ಕಲಿಯುವುದೆಷ್ಟು ಸುಲಭ,ಆನಂದದ ವಿಷಯ ಅನ್ನುವುದರ ಅರಿವಿದೆ ಹಾಗೆಯೇ ೧೦ರ ನಂತರ ಇಂಗ್ಲೀಷ್ ಮಾದ್ಯಮಕ್ಕೆ (ಪಿಯುಸಿಯಲ್ಲಿ ಆಯ್ದುಕೊಂಡಿದ್ದು ವಿಜ್ಞಾನ ವಿಷಯ) ಕಾಲಿಟ್ಟಾಗ ಅನುಭವಿಸಿದ ಕಷ್ಟ,ಕೀಳರಿಮೆಯ ಅನುಭವಗಳು ಇವೆ.ಹಾಗಾಗಿ ಈ ಚರ್ಚೆಯಲ್ಲಿ ಮತ್ತು ಈಗಿನ ನಮ್ಮ ಶೈಕ್ಷಣಿಕ ಪರಿಸ್ಥಿತಿಯಲ್ಲಿ ನಾನು ಇಂಗ್ಲೀಷ್ ಮೀಡಿಯಂ ಬೇಕು ಅನ್ನುವುದರ ಪರವೇ ನಿಲ್ಲುತ್ತೇನೆ.

ಒಂದು ವೇಳೆ ಸಾಹಿತಿಗಳು ಒತ್ತಾಯಿಸುತ್ತಿರುವಂತೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲೇ ಆಗಬೇಕು ಅನ್ನುವುದಾದರೆ ಅದು ಈ ರಾಜ್ಯದಲ್ಲಿರುವ ಸರ್ಕಾರಿ/ಅನುದಾನಿತ/ಕೇಂದ್ರೀಯ/ಖಾಸಗಿ ಶಾಲೆಗಳಿಗೂ ಏಕರೂಪವಾಗಿ ಅನ್ವಯವಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಕಡ್ಡಾಯವಾಗಲಿ ಆ ಮೂಲಕ ಬಡವರ ಮಕ್ಕಳು ಮಾತ್ರ ಕನ್ನಡದಲ್ಲಿ ಕಲಿತು ಮುಂದೆ ಇಂಗ್ಲೀಷ್ ಲೋಕಕ್ಕೆ ಕಾಲಿಟ್ಟು ಅರ್ಧಕರ್ಧ ಜನ ಕೀಳರಿಮೆ,ಹೆದರಿಕೆಯಿಂದಾಗಿ ಹಿಂದೆ ಬೀಳಲಿ ಅನ್ನುವುದು ಇಬ್ಬಗೆಯ ನೀತಿಯಾಗುತ್ತದೆ.

ಏಕರೂಪ ಶಿಕ್ಷಣ ಅನ್ನುವಾಗ ಇನ್ನೊಂದು ಅಂಶವನ್ನ ನಾವು ಗಮನಕ್ಕೆ ತೆಗೆದುಕೊಳ್ಳಬೇಕು.ಮಕ್ಕಳನ್ನು ಶಾಲೆಗೇ ಸೇರಿಸುವಾಗ ಅದು ಇಂಗ್ಲೀಷ್ ಮೀಡಿಯಂ ಶಾಲೆಯೇ ಅಂತ ಮಾತ್ರ ಈಗಿನ ಪೋಷಕರು ನೋಡುತ್ತಿಲ್ಲ,ಅದರ ಜೊತೆಗೆ ಅವರು ಅಲ್ಲಿರುವುದು ಸೆಂಟ್ರಲ್ ಸಿಲ್ಲಬಸ್ಸೋ,ಐ.ಸಿ.ಎಸ್.ಈ ಸಿಲ್ಲಬಸ್ಸೋ (ಅಥವಾ ಇನ್ಯಾವುದೋ) ಅನ್ನುವುದನ್ನು ನೋಡುತಿದ್ದಾರೆ.ನಮ್ಮ ಮಕ್ಕಳು ಇಂತ ಸಿಲಬಸ್ಸ್ ಇರೋ ಶಾಲೆಯಲ್ಲಿ ಓದುತಿದ್ದಾರೆ ಅಂತ ಹೇಳಿಕೊಳ್ಳುವುದು ಈಗಿನ ಪೋಷಕರಿಗೆ ಗರ್ವದ ವಿಷಯವಾಗಿದೆ. ಅಸಲಿಗೆ ಈ ರೀತಿ ಬೇರೆ,ಬೇರೆ ಸಿಲ್ಲಬಸ್ಸಿನ ಅಗತ್ಯ ಶಾಲಾ ಮಟ್ಟದಲ್ಲಿ ಏನು ಅನ್ನುವುದು ಸಹ ಚರ್ಚೆಯಾಗಬೇಕಲ್ಲವೇ?

ಮತ್ತಷ್ಟು ಓದು »