ಕರ್ನಾಟಕದಲ್ಲಿ ಈ ಬಾರಿ ಪ್ರಾದೇಶಿಕ ಪಕ್ಷಗಳಿಗೆ ಕಾಲ ಕೂಡಿ ಬಂದಿದೆಯೇ?
ಭಾರತ ಒಕ್ಕೂಟದ ಮೇಲೊಂದು ಹಿನ್ನೋಟ
ಭಾರತ ಒಕ್ಕೂಟ ಅಸ್ತಿತ್ವಕ್ಕೆ ಬಂದ ದಿನಗಳನ್ನು ಒಮ್ಮೆ ಸುಮ್ಮನೆ ನೆನೆಸಿಕೊಳ್ಳಿ. ವಿವಿಧ ನುಡಿಯಾಡುವ, ವಿವಿಧ ಆಚರಣೆ, ಆಹಾರ, ಜೀವನವಿಧಾನವನ್ನೇ ಹೊಂದಿರುವ ಭಾರತ ಒಕ್ಕೂಟದ ಜನರನ್ನು ಭಾವನಾತ್ಮಕವಾಗಿ ಬೆಸೆದಿದ್ದು ನಮ್ಮೆಲ್ಲಗಿಂತಲೂ ಆರ್ಥಿಕವಾಗಿ, ತಾಂತ್ರಿಕವಾಗಿ ಮುಂದುವರೆದಿದ್ದ ಬ್ರಿಟಿಷ್ ಎಂಬ ಸಾಮಾನ್ಯ ಶತ್ರು. ಈ ಶತ್ರುವಿನ ವಿರುದ್ದ ಭಾರತ ಒಕ್ಕೂಟದ ಜನರನ್ನು ಸಂಘಟಿತರನ್ನಾಗಿಸಿ ಹೋರಾಟಕ್ಕೆ ಮೊನಚು ತಂದ ನಾಯಕರಿದ್ದದ್ದು ಕಾಂಗ್ರೆಸ್ ಅನ್ನುವ ಅಂದಿನ ಪಕ್ಷದಲ್ಲಿ. ಬ್ರಿಟಿಷರು ಭಾರತ ಬಿಟ್ಟು ಹೋದಾಗ ಜನರ ಮನದಲ್ಲಿದ್ದ “ಕಾಂಗ್ರೆಸ್ಸಿನವರು ಸ್ವಾತಂತ್ರಕ್ಕೆ ಕಾರಣರಾದರು” ಅನ್ನುವ ಭಾವನೆಯನ್ನೇ ಬಂಡವಾಳವಾಗಿಸಿಕೊಂಡು ದೇಶಾದ್ಯಂತ ಕಾಂಗ್ರೆಸ್ ಪಕ್ಷ ರಾಜಕೀಯ ನೆಲೆ ಕಂಡುಕೊಂಡಿತು. ಈ ಭಾವನಾತ್ಮಕ ಬಂಡವಾಳ ಗಟ್ಟಿಯಾಗಿದ್ದರಿಂದ ಸ್ವಾತಂತ್ರ್ಯ ನಂತರದ ಮೊದಲೆರಡು ದಶಕ ದೇಶಕ್ಕೆ ಒಂದೇ ಪಕ್ಷ ಅನ್ನುವಂತೆ ಕಾಂಗ್ರೆಸಿನ ಪಾರುಪತ್ಯ ನಡೆದಿತ್ತು.
ಒಂದು ಪಕ್ಷ, ಒಬ್ಬ ವ್ಯಕ್ತಿ ಒಕ್ಕೂಟವನ್ನಾಳುವುದು ಅಸಹಜ !
ಹೀಗೆ ಬ್ರಿಟಿಷರನ್ನು ಹೊಡೆದೊಡಿಸಲು ರೂಪುಗೊಂಡಿದ್ದ ಹೋರಾಟದಿಂದಾಗಿ ನೆಲೆ ಕಂಡಿದ್ದ ಭಾವನಾತ್ಮಕ ಒಗ್ಗಟ್ಟು ಅನ್ನುವ ತೆಳು ಅಂಟು ಕೆಲ ಸಮಯದಲ್ಲಿ ಖಾಲಿಯಾಗುತ್ತಲೇ ನಮ್ಮ ನಮ್ಮಲ್ಲಿನ ಆಸೆ, ಆಶೋತ್ತರಗಳು, ಏಳಿಗೆಯ ಕಲ್ಪನೆಗಳಲ್ಲಿನ ವೈವಿಧ್ಯತೆಗಳು ಹಂತ ಹಂತವಾಗಿ ಹೊರ ಹೊಮ್ಮತೊಡಗಿದವು. ಇಷ್ಟು ವ್ಯಾಪಕವೂ, ವೈವಿಧ್ಯಮಯವೂ ಆದ ಒಕ್ಕೂಟವೊಂದನ್ನು ಒಂದು ಪಕ್ಷ, ಒಬ್ಬ ವ್ಯಕ್ತಿ ದೆಹಲಿಯಿಂದ ಆಳುವುದು ಅತ್ಯಂತ ಅಸಹಜವೂ, ಆಳಲಸಾಧ್ಯವಾದದ್ದು (unwieldy) ಅನ್ನುವುದು ಅರ್ಥವಾಗತೊಡಗಿತು. ನೂರು ಕೋಟಿಗೂ ಮಿಗಿಲಾದ ಜನರ ಆಶೋತ್ತರಗಳನ್ನು ಒಂದು ಪಕ್ಷ, ಒಬ್ಬ ವ್ಯಕ್ತಿಯಿಂದ ಎಂದಿಗೂ ಈಡೇರಿಸಲಾಗದು ಅನ್ನುವ ಪ್ರಾಕ್ಟಿಕಲ್ ಆದ ತಿಳಿವೇ ಮುಂದಿನ ದಿನಗಳಲ್ಲಿ ಕಾಂಗ್ರೆಸಿನ ಪಾರಮ್ಯವನ್ನು ಮುರಿದು ದೇಶದ ಹಲವೆಡೆ ಪ್ರಾದೇಶಿಕ ಶಕ್ತಿಗಳು ಉದಯಿಸುವಂತೆ ಮಾಡಿದ್ದು ಅನ್ನುವುದನ್ನು ಗಮನಿಸಬೇಕಿದೆ. 1990ರ ಈಚೆಗೆ ಆರ್ಥಿಕ, ಸಾಮಾಜಿಕ ನೆಲೆಗಟ್ಟಿನಲ್ಲಾದ ತುರ್ತಿನ ಬದಲಾವಣೆಗಳು ಈ ಪ್ರಕ್ರಿಯೆಗೆ ಇನ್ನಷ್ಟು ವೇಗ ಒದಗಿಸಿದೆ ಅಂದರೆ ತಪ್ಪಾಗಲಾರದು. ಮತ್ತಷ್ಟು ಓದು