ವಿಷಯದ ವಿವರಗಳಿಗೆ ದಾಟಿರಿ

Archive for

2
ಜನ

ನಾವು ಈಗ ಯಾಕೆ ಹೀಗಾಗಿರುವೆವು?

-ರೂಪಲಕ್ಷ್ಮಿ

ನಾನು ಸಣ್ಣವಳಾಗಿದ್ದಾಗ, ಅಜ್ಜನ ಊರಿಗೆ ಹೋಗಿದ್ದಾಗ (ಮಂಗಳೂರಿನ ಬಳಿಯ ಪುಟ್ಟ ಹಳ್ಳಿ) ಬಾಗಿಲುಗಳಿಗೆ ಚಿಲಕವೇ ಹಾಕುತ್ತಿರಲಿಲ್ಲ, ಮನೆಗಳಲ್ಲಿ ಅಲ್ಮೇರಾ ಇವುಗಳು ಕೂಡ ಮರದ್ದೇ ಆಗಿದ್ದು, ಬೀಗ ಎಂಬುದೆಲ್ಲಾ ನಾನು ನೋಡಿರಲಿಲ್ಲ. ತಾಮ್ರದ ಬಿಂದಿಗೆಗಳು ಹಾಗೇಯೇ ಬಾವಿ ಕಟ್ಟೆಯ ಬಳಿ ಇಟ್ಟು ಬರುತ್ತಿದ್ದರು. ನಾನು ಬೆಂಗಳೂರಿನಿಂದ ಹೋಗುತ್ತಿದ್ದರಿಂದ ನನಗೆ ಇವೆಲ್ಲವೂ ಆಶ್ಚರ್ಯ! ಅಣ್ಣನನ್ನು ಕೇಳಿದ್ದಕ್ಕೆ, ಯಾರೂ ತೆಗೆದುಕೊಂಡು ಹೋಗುವುದಿಲ್ಲ, ಅಷ್ಟು ನಂಬಿಕೆ ಇದೆ ಎಂದು ಹೇಳುತ್ತಿದ್ದ. ಆದರೆ ಆಗ ಬೆಂಗಳೂರಿನಲ್ಲಿ ಸ್ವಲ್ಪ ಕಳ್ಳತನದ ಭಯವಿತ್ತು. ಆದರೂ ಸಿಕ್ಕಿದನ್ನಷ್ಟೇ ಅಂದರೆ, ಕಿಟಕಿಯಲ್ಲಿಟ್ಟ ವಾಚು, ರೇಡಿಯೋ, ಹೊರಗೆ ಒಣಗಿ ಹಾಕಿದ ಬಟ್ಟೆಗಳು, ಇಂತಹವುಗಳನ್ನೇ ತೆಗೆದುಕೊಂಡು ಹೋಗುತ್ತಿದ್ದರೇ ವಿನಃ ಮನೆಗೆ ನುಗ್ಗಿ, ದೋಚಲು ಅಥವಾ ಮನೆಯವರನ್ನು ಕೊಲೆ ಮಾಡಲು ಭಯವಾಗುತ್ತಿತ್ತು. ಏಕೆಂದರೆ ಒಂದು ಕೂಗು ಹಾಕಿದ ತಕ್ಷಣ ಅಕ್ಕ, ಪಕ್ಕದ ಮನೆಯವರೆಲ್ಲರೂ ಸೇರಿ, ಕಳ್ಳನನ್ನು ಚಚ್ಚಿ ಹಾಕುತ್ತಿದ್ದರು. ಇನ್ನೂ ಜಿಂಡಾಲ್ ಮುಂತಾದ ಕ್ವಾರ್ಟರ್ಸ್ ಮನೆಗಳಲ್ಲಿ (ಬೆಂಗಳೂರಿನಲ್ಲಿಯೂ ಕೂಡ) ಹೊರಗೆ ಎಲ್ಲಿಗೆ ಹೋಗುವಾಗಲೂ ಚಿಲಕ ಹಾಕುವ ಪದ್ಧತಿ ಇರುತ್ತಿರಲಿಲ್ಲ. ನೆರೆಹೊರೆಯವರಲ್ಲಿ ಅಷ್ಟೊಂದು ನಂಬಿಕೆ ಆಗ.

ಇನ್ನೂ ಮನೆಯಲ್ಲಿ ಕೆಲಸದವಳನ್ನು ಇಟ್ಟುಕೊಳ್ಳುವ ಪದ್ಧತಿ ಕೂಡ ಇರಲಿಲ್ಲ. ಮನೆಯವರೇ ಮಕ್ಕಳಾದಿಯಾಗಿ ಎಲ್ಲರೂ ಸೇರಿಕೊಂಡು ಮನೆಕೆಲಸವನ್ನೆಲ್ಲಾ ಮಾಡಿಕೊಳ್ಳುತ್ತಿದ್ದರು. ಮನೆಯಲ್ಲಿನ ದೊಡ್ಡವರು ಎಲ್ಲಿಗಾದರೂ ಹೋಗುವುದಾದರೆ, ಮಕ್ಕಳು ಶಾಲೆಯಿಂದ ಬಂದ ಮೇಲೆ ಪಕ್ಕದ ಮನೆಯವರು ನೋಡಿಕೊಳ್ಳುತ್ತಿದ್ದರು. ಒಬ್ಬರಿಗೊಬ್ಬರು ಸಹಾಯ ಮಾಡುತ್ತಿದ್ದರು. ಎಲ್ಲರಲ್ಲಿಯೂ ಒಂದು ಬದ್ಧತೆ ಇತ್ತು. ಸಹಕಾರವಿತ್ತು. ಕಿತ್ತಾಡಿದರೂ ಅದು ಆ ಕ್ಷಣಕಷ್ಟೇ ಆಗಿರುತ್ತಿತ್ತು. ನಂತರ ಒಂದಿಷ್ಟು ದಿವಸಗಳಾದ ಮೇಲೆ, ಯಾವುದೋ ಜಾತ್ರೆಯೋ, ಹಬ್ಬವೋ ಬಂದಾಗ ಮತ್ತೆ ಒಂದಾಗುತ್ತಿದ್ದರು. ಮಕ್ಕಳು ಕೂಡ ಹೊಡೆದಾಡಿಕೊಂಡರೂ, ಒಂದಷ್ಟು ಕ್ಷಣಗಳಾದ ಮೇಲೆ ಮತ್ತೆ ಒಂದುಗೂಡಿ ಆಡುತ್ತಿದ್ದರು. ಇಲ್ಲಿ ಅವರು ಶ್ರೀಮಂತರು, ನಾವು ಬಡವರು, ಅವರು ಓದಿದವರು, ನಾವು ಅನಕ್ಷರಸ್ಥರು ಎಂಬ ಭೇಧ ಭಾವ ಇರುತ್ತಿರಲಿಲ್ಲ. ಮಕ್ಕಳು ಮನೆಯಲ್ಲಿ ಗಲಾಟೆ ಮಾಡದಿದ್ದರೇ ಸೈ, ಹೊರಗೆ ಹೋಗಿ ಆಡಿಕೊಳ್ಳಲಿ ಎಂಬುದಷ್ಟೇ ದೊಡ್ಡವರು ಯೋಚಿಸುತ್ತಿದ್ದರು. ಅಣ್ಣ ಒಮ್ಮೆ ಕೆಟ್ಟ ಪದವನ್ನು ಕಲಿತು ಬಂದಾಗ ಅಮ್ಮ ಬಾಸುಂಡೆ ಬರುವಂತೆ ಬಾರಿಸಿದ್ದು ನನಗೆ ಈಗಲೂ ನೆನಪಿದೆ. ಅಮ್ಮ ಒಂದಕ್ಷರವೂ ಪಕ್ಕದ ಮನೆಯ ಹುಡುಗನಿಗೆ ಬೈದಿರಲಿಲ್ಲ. ನಮ್ಮ ಮನೆಯಲ್ಲಿ ಇಷ್ಟು ಸಂಸ್ಕಾರವಿದ್ದು ನೀನು ಕಲಿತಿದ್ದು ಹೇಗೆ? ಎಂಬುದಷ್ಟೇ ಅವಳ ಪ್ರಶ್ನೆಯಾಗಿತ್ತು! ಅಷ್ಟೇ ಕೊನೆ, ಅಣ್ಣ ಇವತ್ತಿಗೂ ಎಷ್ಟೇ ಕೋಪ ಬಂದರೂ, ಕೆಟ್ಟ ಪದಗಳನ್ನು ಉಪಯೋಗಿಸುವುದಿಲ್ಲ. ಅವನಿಗೆ ಹೊಡೆದದ್ದು ನೋಡಿದ ನನಗೇ ಬುದ್ಧಿ ಕಲಿಯಲು ಅಷ್ಟೇ ಸಾಕಿತ್ತು!

ಮತ್ತಷ್ಟು ಓದು »