ವಿಷಯದ ವಿವರಗಳಿಗೆ ದಾಟಿರಿ

Archive for

25
ಆಗಸ್ಟ್

ಸ್ವಪ್ನ ಸಾರಸ್ವತ – ಎರಡು ಅನಿಸಿಕೆಗಳು

ಸ್ವಪ್ನ ಸಾರಸ್ವತ – ಕುಲ ಮತ್ತು ಕಾಲದ ಕಥೆ

– ನವೀನ ಗಂಗೋತ್ರಿ

ಸ್ವಪ್ನ ಸಾರಸ್ವತ'ನೆನಪಳಿಯದ ಕೃತಿಗಳ ಸಾಲಿನಲ್ಲಿ ಈ ಹೆಸರು ಎಂದಿಗೂ ಅಜರಾಮರ- ಸ್ವಪ್ನ ಸಾರಸ್ವತ. ಒಂದು ಕೃತಿ ಯಾಕೆ ಹಾಗೆ ಪದೇ ಪದೇ ಸ್ಮರಣೀಯವಾಗುತ್ತದೆ ಎನ್ನುವುದಕ್ಕೆ ಆ ಕೃತಿಯ ರೋಚಕತೆಯಾಗಲೀ, ಕಥೆಯ ಕಲ್ಪಕತೆ ಅಥವಾ ಕುತೂಹಲದ ತುದಿಯಲ್ಲಿ ನಿಲ್ಲಿಸುವ ಗುಣವಾಗಲೀ ಕಾರಣವಾಗದೆ ಆ ಕೃತಿಯು ತನ್ನ ಪಾತ್ರಗಳ ಮೂಲಕ ಮಾನವ ಬದುಕಿನ ಯಾವೆಲ್ಲ ಘಟ್ಟಗಳನ್ನು ತಾಕಬಲ್ಲದು,ಮತ್ತು ತಾತ್ತ್ವಿಕವಾಗಿ ಯಾವ ಅನಿಸಿಕೆಯನ್ನು ವ್ಯಕ್ತಪಡಿಸಬಲ್ಲದು ಎನ್ನುವುದು ಕಾರಣವಾಗುತ್ತದೆ. ಮಹಾಕಾವ್ಯಗಳಲ್ಲದೆ, ನಮ್ಮನಡುವೆ ಉಳಿದುಬಂದ ಯಾವುದೇ ಮೌಲಿಕ ಕೃತಿಯನ್ನು ತೆಗೆದುಕೊಂಡರೂ ಅದರ ಸಾರ್ವತ್ರಿಕ ಗುಣ ಇದುವೇ ಆಗಿರುತ್ತದೆ- ಮಾನವ ಬದುಕನ್ನು ಅದು ಕಾಣುವ ರೀತಿ ಮತ್ತು ಕಟ್ಟಿಕೊಡುವ ತಾತ್ತ್ವಿಕತೆ. ಬದುಕಿನ ಅರ್ಥದ ಬಗ್ಗೆ ಮನುಷ್ಯನಿಗಿರುವ ಆರದ ಕುತೂಹಲವೂ ಇದಕ್ಕೆ ಕಾರಣವಿದ್ದೀತು. ಎಷ್ಟೇ ರೋಚಕವಾದರೂ ಯಾವುದೋ ಸಾಮಾನ್ಯ ಪತ್ತೇದಾರಿ ಕಾದಂಬರಿ, ಯಾವುದೋ ಸಾಮಾನ್ಯ ಪ್ರೇಮ ಕಥೆ ನೆನಪಿರುವುದು ತುಂಬ ತುಂಬ ವಿರಳ. ಸಾರಸ್ವತದ ಚಿರಂಜೀವಿತ್ವ ಇರುವುದು ಅದರ ಚಿಂತನೆ ಮತ್ತು ತಾತ್ತ್ವಿಕ ಹಿನ್ನೆಲೆಯಲ್ಲಿ.

ಗೋವೆಯೆಂಬ ಪುಟ್ಟ ನಾಡಲ್ಲಿ ತಮ್ಮಪಾಡಿಗೆ ತಾವು ಬದುಕಿದ್ದ ಸಾರಸ್ವತ ಜನಾಂಗ, ಏಕಾ ಏಕಿ ಎರಗಿದ ಹುಂಬ ಪೋರ್ಚುಗೀಸರ ಭಯಂಕರ ಕಿರುಕುಳ ತಾಳಲಾರದೆ ತಮ್ಮ ಉಸಿರಿನ ನೆಲ ಬಿಟ್ಟು, ಬದುಕಲ್ಲಿ ಎಂದಿಗೂ ಕಂಡಿರದಿದ್ದ ಅರಿಯದ ನೆಲೆಗೆ ಎದ್ದುನಡೆದ ಕಥೆ ಅದು. ಕಥೆಯ ಹಂದರವಂತೂ ತುಂಬ ತುಂಬ ಸಂಕೀರ್ಣವಾಗಿದೆ. ಓದುವುದಕ್ಕೇ ಅದೊಂದುಬಗೆಯ ಏಕಾಗ್ರತೆಯನ್ನು ಬೇಡುವ ಈ ಕೃತಿ ತನ್ನ ಬರಹಗಾರನಲ್ಲಿ ಬೇಡಿದ ತಪಸ್ಸಿನ ಮೊತ್ತವನ್ನು ಕಲ್ಪಿಸಿ ಚಕಿತನಾಗುತ್ತೇನೆ.

ಸಮುದಾಯವೊಂದು ತನ್ನ ಜೀವನೆಲೆಯಂತಿರುವ ಭೂಭಾಗವನ್ನು ತೊರೆದು ಬರುವಾಗ ಅದೊಂದು ’ಕೇವಲ ಸ್ಥಾನಾಂತರಣ’ ಆಗಿರದೆ, ತಲೆಮಾರುಗಳನ್ನು ಪ್ರಭಾವಿಸುವ ಸಂಗತಿಯಾಗಿರುತ್ತದೆ ಎನ್ನುವುದು ಸಾರಸ್ವತವನ್ನು ಓದುವಾಗ ನಿಚ್ಚಳವಾಗುತ್ತದೆ. ತನ್ನ ಪರಿವಾರ, ಪರಿಸ್ಥಿತಿ, ಸಮೂಹದ ಸಮೇತ ಒಂದು ಕುಲ ಸ್ಥಾನಾಂತರವಾಗುವಾಗ ಯಾವುದೆಲ್ಲವನ್ನು ತನ್ನೊಡನೆ ಕೊಂಡೊಯ್ಯಬಹುದು? ಆಸ್ತಿ, ಹಣ, ಒಡವೆ, ಉಳಿಕೆ, ಗಳಿಕೆ- ಯಾವುದನ್ನು? ಸಾರಸ್ವತದ ದೃಷ್ಟಿ ಕೇಂದ್ರಗೊಳ್ಳುವುದು ಇದ್ಯಾವುದರ ಮೇಲೆಯೂ ಅಲ್ಲ, ಬದಲಿಗೆ ಆ ಹಂತದಲ್ಲಿ ಮನುಷ್ಯ ತುಂಬಾ ಗಾಢವಾಗಿ ಹೊತ್ತೊಯ್ಯಲು ಬಯಸುವುದೆಂದರೆ ತನ್ನ ತಲೆಮಾರುಗಳಿಗೆ ಸಾಕಾಗುವಷ್ಟು ನೆನಪನ್ನು, ಸಂಪ್ರದಾಯ ಆಚಾರ ಮತ್ತು ನಂಬುಗೆಗಳನ್ನು ಎಂಬ ನಿಲುಮೆಗೆ ಸಾರಸ್ವತ ಬರುತ್ತದೆ. ನೆಲ ಬಿಟ್ಟೆದ್ದು ಬಂದದ್ದೇ ಆಚಾರದ ಉಳಿಕೆಗಾಗಿ ಎಂಬಾಗ, ಹೊತ್ತೊಯ್ಯಬೇಕಿರುವುದು ಅದನ್ನೇ ಅಲ್ಲವೆ?

ಮತ್ತಷ್ಟು ಓದು »