ಕೊಟ್ಟ ಕುದುರೆಯನೇರಲರಿಯದೆ… -ಪುಸ್ತಕ ವಿಮರ್ಶೆ
-ವಿನುತಾ ಎಸ್ ಪಾಟೀಲ್. ಕುವೆಂಪು ವಿಶ್ವವಿದ್ಯಾನಿಲಯ
ವಚನಸಾಹಿತ್ಯವು ಜಾತಿ ವಿರೋಧಿ ಚಳುವಳಿಯೇ? ಹೌದಾದರೆ, ವಚನಕಾರರೇ ಅದಕ್ಕೆ ವಿರುದ್ಧವಾಗಿ ಮಾತನಾಡುವುದನ್ನು ಹೇಗೆ ಅರ್ಥಮಾಡಿಕೊಳ್ಳುವುದು? ಜಾತಿ ವಿನಾಶವೇ ವಚನಕಾರರ ಉದ್ದೇಶವಾಗಿದ್ದರೆ ಅವರೇಕೆ ಜಾತಿಯ ಮೂಲಕ ತಮ್ಮನ್ನು ಗುರುತಿಸಿಕೊಳ್ಳುತ್ತಾರೆ? ದಲಿತ ಪರವು ಸ್ತ್ರೀಪರವು ಆಗಿರುವ ವಚನಕಾರರು ಅವರ ಬಗ್ಗೆ ಕೀಳಾಗಿ ಮಾತನಾಡಲು ಹೇಗೆ ಸಾಧ್ಯ? ನಿಲುಮೆ ಪ್ರಕಾಶನದಿಂದ ಹೊರಬಂದಿರುವ ‘ಕೊಟ್ಟ ಕುದುರೆಯನೇರಲರಿಯದೆ…’ ಎಂಬ ಪ್ರಸ್ತುತ ಕೃತಿಯು ಇಂತಹ ಅನೇಕ ಗೊಂದಲಗಳನ್ನು ದೂರ ಮಾಡುವ ಮೂಲಕ ವಚನಗಳ ಅಧುನಿಕ ನಿರೂಪಣೆಗಳ ಆಚೆಗೆ ವಚನಸಾಹಿತ್ಯವನ್ನು ಅರ್ಥಮಾಡಿಸುವಲ್ಲಿ ಸಫಲವಾಗಿದೆ ಎಂದು ಹೇಳುವುದು ಅತಿಶೋಕ್ತಿಯಾಗಲಾರದು.
ಕಳೆದ ಕೆಲವು ವರ್ಷಗಳಿಂದ ಎಸ್.ಎನ್. ಬಾಲಗಂಗಾಧರ ಮತ್ತವರ ಸಂಶೋಧನಾ ತಂಡದವರ ಸಂಶೋಧನೆ ಮತ್ತು ವಾದಗಳು ಕನ್ನಡದ ಸಂದರ್ಭದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿರುವುದು ಸುಳ್ಳಲ್ಲ. ಇದು ವಚನಗಳ ಕುರಿತ ಚರ್ಚೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ವಚನಸಾಹಿತ್ಯವು ಜಾತಿವಿರೋಧಿ ಚಳವಳಿ ಎಂಬುದು ಕನ್ನಡದ ಬೌದ್ಧಿಕವಲಯದ ನಂಬಿಕೆ. ಇದನ್ನು ಪ್ರಶ್ನಿಸುವ ಬಾಲಗಂಗಾಧರ ಅವರು ವಚನಸಾಹಿತ್ಯವು ‘ಜಾತಿವಿರೋಧಿ ಚಳುವಳಿ’ ಎಂದು ಹೇಳುವುದಕ್ಕೆ ಯಾವುದೇ ಅಧಾರವಿಲ್ಲ. ವಚನಕಾರರನ್ನು ಸಾಮಾಜಿಕ ಹೋರಾಟಗಾರರಂತೆ ನೋಡುವುದು ಗೊಂದಲಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗಾಗಿ ಅದನ್ನು ಅಧ್ಯಾತ್ಮ ಸಾಧನೆಯ ಮಾರ್ಗ ಎಂದು ನೋಡಿದಲ್ಲಿ ಹೆಚ್ಚು ಸುಸಂಬದ್ಧವಾಗಿ ಅರ್ಥಮಾಡಿಕೊಳ್ಳಲು ಸಾಧ್ಯ ಎನ್ನುತ್ತಾರೆ. ಬಾಲಗಂಗಾಧರ ಅವರ ಈ ವಾದವು ಪ್ರಜಾವಾಣಿಯ ಪತ್ರಿಕೆಯಲ್ಲಿ ಚರ್ಚೆಗೆ ಕಾರಣವಾಗುವುದರ ಜೊತೆಗೆ, ಚರ್ಚೆಯ ಸಂದರ್ಭದಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿಯೂ ಹೊರತರಲಾಯಿತು. ಒಂದು ಗುಂಪಿನ ವಾದಗಳಿಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದ ಈ ಪುಸ್ತಕದ ವಿಚಾರಗಳು ವಚನಸಾಹಿತ್ಯದ ಕುರಿತ ಗೊಂದಲಗಳನ್ನು ಪರಿಹರಿಸುವ ಬದಲಾಗಿ ಬಾಲಗಂಗಾಧರ ಅವರ ಸಂಶೋಧನೆಯ ಹೊಸತನವನ್ನು ತಿಳಿಯಲು ತಡೆಯುಂಟುಮಾಡಿತ್ತು. ಪ್ರಸ್ತುತ ಕೃತಿಯು ಎಲ್ಲಾ ಲೇಖನಗಳು ವಚನಸಾಹಿತ್ಯದ ಕುರಿತ ಗೊಂದಲಗಳನ್ನು ನಿವಾರಿಸುವ ಮೂಲಕ ಬಾಲಗಂಗಾಧರ ಅವರ ಸಂಶೋಧನೆಯ ಹೊಸತನವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಮತ್ತಷ್ಟು ಓದು
ಹುಳಿಮಾವಿನ ಮರ: ಪಿ.ಲಂಕೇಶ್ ಅವರ ಆತ್ಮಕಥನ
– ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ,ಬಾಗಲಕೋಟ
‘ಹುಳಿಮಾವಿನ ಮರ’ ಕನ್ನಡದ ಶ್ರೇಷ್ಟ ಲೇಖಕ ಹಾಗೂ ಪತ್ರಕರ್ತ ಪಿ.ಲಂಕೇಶ್ ಅವರ ಆತ್ಮಕಥನ. ಲಂಕೇಶ್ ಲೇಖಕರಾಗಿ ಮತ್ತು ಪತ್ರಕರ್ತರಾಗಿ ಕನ್ನಡಿಗರಿಗೆ ಚಿರಪರಿಚಿತರು. ಶಿವಮೊಗ್ಗ ಜಿಲ್ಲೆಯ ಸಣ್ಣ ಹಳ್ಳಿಯೊಂದರ ರೈತಕುಟುಂಬದಲ್ಲಿ ಜನಿಸಿ ತನ್ನೊಳಗಿನ ಪ್ರತಿಭೆ ಮತ್ತು ಪ್ರಯತ್ನದಿಂದ ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ಬಹುದೊಡ್ಡ ಹೆಸರು ಮಾಡಿದ ಪ್ರತಿಭೆ ಈ ಲಂಕೇಶ್. ಲಂಕೇಶರ ಆಸಕ್ತಿಯ ಕ್ಷೇತ್ರದ ಹರವು ಬಹುದೊಡ್ಡದು. ಬರವಣಿಗೆ, ಪತ್ರಿಕೋದ್ಯಮ, ನಾಟಕ, ಅಧ್ಯಾಪನ, ಕೃಷಿ, ಚಳವಳಿ,ಫೋಟೋಗ್ರಾಫಿ ಹೀಗೆ ಅನೇಕ ಕ್ಷೇತ್ರಗಳಲ್ಲಿ ಅಲೆದಾಡಿ ಕೊನೆಗೆ ತನ್ನ ಛಾಪನ್ನು ಮೂಡಿಸಿದ್ದು ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ. ಹತ್ತೊಂಬತ್ತು ವರ್ಷಗಳ ಕಾಲ ಅಧ್ಯಾಪಕರಾಗಿ ದುಡಿದು ವೃತ್ತಿಯ ಏಕತಾನತೆ ಬೇಸರ ಮೂಡಿಸಿದಾಗ ಮುಲಾಜಿಲ್ಲದೆ ರಾಜಿನಾಮೆಯಿತ್ತು ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟ ವಿಚಿತ್ರ ವ್ಯಕ್ತಿತ್ವ ಪಿ.ಲಂಕೇಶ್ ಅವರದು. 1978 ರಿಂದ 1980ರ ವರೆಗೆ ನಾಲ್ಕು ಸಿನಿಮಾಗಳನ್ನು ನಿರ್ದೇಶಿಸಿಯೂ ಕನ್ನಡ ಚಿತ್ರೋದ್ಯಮದ ಪಟ್ಟುಗಳು ಅರ್ಥವಾಗದೇ ಹೋದಾಗ ಲಂಕೇಶರ ಆಸಕ್ತಿ ಪತ್ರಿಕೋದ್ಯಮದತ್ತ ಹೊರಳುತ್ತದೆ. 1980 ರಲ್ಲಿ ‘ಲಂಕೇಶ್ ಪತ್ರಿಕೆ’ಯನ್ನು ಆರಂಭಿಸುವುದರೊಂದಿಗೆ ಲಂಕೇಶ್ ಕರ್ನಾಟಕದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯದ ಬಹುದೊಡ್ಡ ಪಲ್ಲಟಕ್ಕೆ ಕಾರಣರಾಗುತ್ತಾರೆ. ಪತ್ರಿಕೋದ್ಯಮ ಎನ್ನುವುದು ರಾಜಕಾರಣಿಗಳ ಮತ್ತು ಧನಿಕರ ಸೊತ್ತು ಎಂದು ಅದುವರೆಗೂ ತಿಳಿದುಕೊಂಡಿದ್ದ ಜನಸಾಮಾನ್ಯರಿಗೆ ಲಂಕೇಶ್ ತಮ್ಮ ಪತ್ರಿಕೆಯ ಮೂಲಕ ಪತ್ರಿಕೋದ್ಯಮ ಜನರ ಧ್ವನಿ ಎಂದು ಅರ್ಥಮಾಡಿಸುತ್ತಾರೆ. ಲಂಕೇಶ್ ಸಾಹಿತ್ಯ ಮತ್ತು ಸಿನಿಮಾಕ್ಕಿಂತ ಪತ್ರಿಕೆಯ ಮೂಲಕವೇ ಜನರಿಗೆ ಹೆಚ್ಚು ಹತ್ತಿರವಾದರು. ಬದುಕಿನ ಕೊನೆಯ ದಿನದವರೆಗೂ ಪತ್ರಿಕೋದ್ಯಮಕ್ಕೆ ನಿಷ್ಟರಾಗುಳಿದ ಲಂಕೇಶ್ ತಮ್ಮ ಪತ್ರಿಕೆಯನ್ನು ಕನ್ನಡದ ಜಾಣ-ಜಾಣೆಯರ ಪತ್ರಿಕೆಯಾಗಿಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾದರು. ಪತ್ರಿಕಾ ಬರವಣಿಗೆಯಾಚೆಯೂ ಲಂಕೇಶ್ ಕಥೆ, ನಾಟಕ, ಕಾದಂಬರಿ, ಕವಿತೆ, ಗದ್ಯ, ಅನುವಾದದ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದ ಕನ್ನಡದ ಅನನ್ಯ ಬರಹಗಾರ. ಓದಿದ್ದು ಇಂಗ್ಲಿಷ್ ಸಾಹಿತ್ಯ, ಹತ್ತೊಂಬತ್ತು ವರ್ಷಗಳ ಕಾಲ ಪಾಠ ಮಾಡಿದ್ದು ಕೂಡ ಇಂಗ್ಲಿಷ್ ಸಾಹಿತ್ಯವನ್ನೇ ಆದರೆ ಬರೆದದ್ದು ಮಾತ್ರ ಕನ್ನಡದಲ್ಲಿ. ಲಂಕೇಶ್ ಅವರಂತೆ ಅನಂತಮೂರ್ತಿ, ಭೈರಪ್ಪ, ತೇಜಸ್ವಿ, ಚಂಪಾ, ಚಿತ್ತಾಲ ಇವರುಗಳೆಲ್ಲ ತಮ್ಮ ಅಧ್ಯಯನದ ವಿಷಯದಾಚೆಯೂ ಕನ್ನಡದಲ್ಲಿ ಶ್ರೇಷ್ಟ ಕೃತಿಗಳನ್ನು ಬರೆದು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದರು. ಲಂಕೇಶರ ಸಮಕಾಲೀನ ಬರಹಗಾರರು ಪ್ರಜ್ಞಾಪೂರ್ವಕವಾಗಿ ಬೆಳೆಸಿಕೊಂಡು ಬಂದ ಈ ಪ್ರವೃತ್ತಿ ಕನ್ನಡದ ಬರಹಗಾರರ ವಿಶಿಷ್ಟ ಗುಣದ ದ್ಯೋತಕವಾಗಿದೆ ಮತ್ತು ಅವರಲ್ಲಿನ ಈ ಗುಣ ಕನ್ನಡ ಸಾಹಿತ್ಯವನ್ನು ಸಾಕಷ್ಟು ಸಮೃದ್ಧಗೊಳಿಸಿತು.