ಕಳೆದುಹೋಗುತ್ತಿರುವ ದಲಿತ ಚಿಂತನೆ
– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ
ದಲಿತ ಸಾಹಿತ್ಯವಲಯ ಒಂದಿಷ್ಟು ಹೆಚ್ಚೇ ಎನ್ನುವಷ್ಟು ಮುನಿಸಿಕೊಂಡಿದೆ. ಅದಕ್ಕೆಂದೇ ಕಳೆದ ಆರು ವರ್ಷಗಳಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವಾಗಿ ಅವರು ದಲಿತ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸುತ್ತಿರುವರು. ಸಾಹಿತ್ಯದ ಮುಖ್ಯವಾಹಿನಿಯಲ್ಲಿ ನಮಗೆ ಪ್ರವೇಶ ದೊರೆಯುತ್ತಿಲ್ಲ, ಪ್ರಶಸ್ತಿ-ಪುರಸ್ಕಾರ-ಗೌರವಗಳಿಂದ ನಾವು ವಂಚಿತರು, ದಲಿತ ಸಾಹಿತ್ಯ ಮತ್ತು ಬರಹಗಾರರನ್ನು ಅಸ್ಪೃಶ್ಯರಂತೆ ಕಾಣಲಾಗುತ್ತಿದೆ ಹೀಗೆ ಹಲವು ಕಾರಣಗಳನ್ನು ಮುಂದಿಟ್ಟುಕೊಂಡು ಕನ್ನಡದ ದಲಿತ ಸಾಹಿತ್ಯವಲಯ ತನ್ನ ಅಸ್ಮಿತೆಯನ್ನು ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ನಿಜಕ್ಕೂ ಕನ್ನಡದ ಒಟ್ಟು ಸಾಹಿತ್ಯ ಕ್ಷೇತ್ರಕ್ಕೆ ಆತಂಕ ತಂದೊಡ್ಡುತ್ತಿರುವ ಬೆಳವಣಿಗೆಯಿದು. ದಲಿತ ಸಾಹಿತ್ಯ ಈಗ ಕನ್ನಡ ಸಾಹಿತ್ಯದ ಬಹುಮುಖ್ಯ ಭಾಗ ಎನ್ನುವ ಮನ್ನಣೆಗೆ ಪಾತ್ರವಾಗಿದೆ. ದಲಿತ ಸಾಹಿತ್ಯವನ್ನು ಹೊರಗಿಟ್ಟು ಕನ್ನಡ ಸಾಹಿತ್ಯದ ಬೆಳವಣಿಗೆ ಹಾಗೂ ಇತಿಹಾಸವನ್ನು ನೋಡುವುದು ಅಧ್ಯಯನ ಹಾಗೂ ಸಂಶೋಧನೆಯ ದೃಷ್ಟಿಯಿಂದ ಅಸಾಧ್ಯದ ಸಂಗತಿ. ಹಾಗೆ ನೋಡುವುದು ಕೂಡ ಸಲ್ಲದು. ಹಾಗೊಂದು ವೇಳೆ ದಲಿತ ಸಾಹಿತ್ಯವನ್ನು ಹೊರಗಿಟ್ಟು ನೋಡಿದಲ್ಲಿ ಕನ್ನಡ ಸಾಹಿತ್ಯದ ಒಟ್ಟು ಚಿತ್ರಣ ನಮಗೆ ದಕ್ಕಲಾರದು. ಇಲ್ಲಿ ಕುವೆಂಪು, ಕಾರಂತ, ಬೇಂದ್ರೆ ಅವರಷ್ಟೇ ದೇವನೂರ ಮಹಾದೇವ, ಬರಗೂರು ರಾಮಚಂದ್ರಪ್ಪ, ಸಿದ್ಧಲಿಂಗಯ್ಯ ಸಹ ಕನ್ನಡದ ಬಹುಮುಖ್ಯ ಬರಹಗಾರರು. ಕನ್ನಡ ಸಾಹಿತ್ಯದ ಬೆಳವಣಿಗೆಗೆ ದಲಿತ ಬರಹಗಾರರು ನೀಡಿದ ಕೊಡುಗೆ ತುಂಬ ಮೌಲಿಕವಾದದ್ದು. ಇವತ್ತು ದಲಿತ ಸಾಹಿತ್ಯ ಕನ್ನಡ ಸಾಹಿತ್ಯದ ಮುಖ್ಯಧಾರೆಯಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ಅನೇಕ ದಲಿತ ಲೇಖಕರ ಸಾಹಿತ್ಯವನ್ನು ಆದರ್ಶವಾಗಿಟ್ಟುಕೊಂಡು ಬರವಣಿಗೆಯ ಕೃಷಿಯಲ್ಲಿ ತೊಡಗಿಸಿಕೊಂಡ ಹಲವಾರು ದಲಿತೇತರ ಬರಹಗಾರರು ಇಲ್ಲಿರುವರು. ಕಾರಂತರ ‘ಚೋಮನ ದುಡಿ’ಯಷ್ಟೇ ಮಹಾದೇವರ ‘ಕುಸುಮ ಬಾಲೆ’ ಸಹ ಅಸಂಖ್ಯಾತ ಓದುಗರ ಓದಿನ ವ್ಯಾಪ್ತಿಗೆ ದಕ್ಕಿದೆ. ಅನೇಕ ದಲಿತ ಲೇಖಕರು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಮತ್ತು ಗೌರವಕ್ಕೆ ಭಾಜನರಾಗಿರುವರು. ದಲಿತ ಸಾಹಿತಿಗಳನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುತ್ತಿಲ್ಲ ಎನ್ನುವ ಆಪಾದನೆಯಿಂದ ಕಳಚಿಕೊಳ್ಳುವ ಪ್ರಯತ್ನವಾಗಿ 81 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧಲಿಂಗಯ್ಯನವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು. ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ದಲಿತ ಸಾಹಿತಿಗಳನ್ನು ಆಯ್ಕೆ ಮಾಡಿದ ಉದಾಹರಣೆಗಳಿವೆ. ಹೀಗಿದ್ದೂ ದಲಿತ ಸಾಹಿತ್ಯವಲಯ ಮುನಿಸಿಕೊಂಡಿದೆ.