ವಿಷಯದ ವಿವರಗಳಿಗೆ ದಾಟಿರಿ

Archive for

27
ಜನ

ನನ್ನ ಅನ್ನಭಾಗ್ಯ

– ಪ್ರೇಮಶೇಖರ

ತಿಂಡಿಅದು ಆಗಸ್ಟ್ 1984.  ಹದಿನೈದಿಪ್ಪತ್ತು ಕಿಲೋಮೀಟರ್ ದೂರದ ಡೆಲ್ಲಿ ಯೂನಿವರ್ಸಿಟಿಯಲ್ಲಿ ಎಂ.ಎ. ಮುಗಿಸಿ, ಮನೆಯಿಂದ ಐದಾರು ನಿಮಿಷಗಳ ನಡಿಗೆಯಷ್ಟು ಹತ್ತಿರದಲ್ಲಿದ್ದ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯಕ್ಕೆ ಸೇರಿದ್ದೆ, ಎಂ.ಫಿಲ್.ಗಾಗಿ.  ಕ್ಲಾಸುಗಳು ಆರಂಭವಾಗಿದ್ದವು.ಮನೆಯಲ್ಲಿ ನಾನೊಬ್ಬನೇ.ಉಳಿದವರೆಲ್ಲಾ ಮೈಸೂರಿಗೆ ಹೋಗಿದ್ದರಿಂದ ಹಾಗೂ ಇನ್ನೊಂದು ತಿಂಗಳವರೆಗೆ ದೆಹಲಿಗೆ ಹಿಂತಿರುಗುವ ಯೋಚನೆ ಅವರ್ಯಾರಲ್ಲೂ ಇಲ್ಲದ್ದರಿಂದ ಅಲ್ಲಿಯವರೆಗೆ ನನ್ನ ಏಕಾಂತವಾಸ ನಿರ್ವಿಘ್ನವಾಗಿ ಸಾಗುವುದು ನಿಶ್ಚಿತವಾಗಿತ್ತು.ಏಕಾಂತವಾಸವೇನೋ ನನಗಿಷ್ಟವೇ.ಓದುತ್ತಾ, ಚಿತ್ರ ಬಿಡಿಸುತ್ತಾ ಕೂತುಬಿಟ್ಟೆನೆಂದರೆ ನನಗೆ ಸುತ್ತಲ ಪ್ರಪಂಚದ ಪರಿವೇ ಇರುತ್ತಿರಲಿಲ್ಲ. ಆದರೆ ಈಗೊಂದು ಪ್ರಾಬ್ಲಂ.  ಸುತ್ತಲ ಜಗತ್ತಿನ ಪರಿವೇ ಇಲ್ಲದಂತೆ ನನ್ನ ಜಗತ್ತಿನಲ್ಲಿ ನಾನಿರಲು ಅವಕಾಶ ಮಾಡಿಕೊಡುತ್ತಿದ್ದುದು ಅಕ್ಕ,ಕಾಲಕಾಲಕ್ಕೆ ಊಟತಿಂಡಿ ಚಾಯ್ ನಿಂಬುಪಾನಿಗಳನ್ನು ಸಪ್ಲೈ ಮಾಡುತ್ತಾ.  ಈಗ…?

ಆದರೆ ಪವಾಡವೊಂದು ಘಟಿಸಿಬಿಟ್ಟಿತು!

ನನ್ನ ಹೊಟ್ಟೆಪಾಡಿನ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಕ್ಕೆ ಮೊದಲೇ ನೆರೆಯ ಮೂವರು ದಯಾದ್ರ ಮಹಿಳೆಯರು ಅಕ್ಕ ಹಿಂತಿರುಗುವವರೆಗೆ ನನ್ನನ್ನು ಜೀವಂತವಾಗಿಡುವ ಜವಾಬ್ದಾರಿಯನ್ನು ಸ್ವಇಚ್ಚೆಯಿಂದ ತೆಗೆದುಕೊಂಡುಬಿಟ್ಟರು.  ಮೂವರೂ ಸೇರಿ ಸಮಾಲೋಚನೆ ನಡೆಸಿ ಮಾಸಿಕ (ಅದರಾಚೆಗೂ ವಿಸ್ತರಿಸಲನುಕೂಲವಾದ ಫ್ಲೆಕ್ಸಿಬಿಲಿಟಿ ಅನುಚ್ಚೇದಗಳನ್ನೊಳಗೊಂಡ) ಯೋಜನೆಯೊಂದನ್ನು ರೂಪಿಸಿಬಿಟ್ಟರು.ಎಲ್ಲ ನಿರ್ಧರಿಸಿಕೊಂಡ ಮೇಲೇ ನನಗೆ ಹೇಳಿದ್ದು.

ಮತ್ತಷ್ಟು ಓದು »