ವಿಷಯದ ವಿವರಗಳಿಗೆ ದಾಟಿರಿ

Posts from the ‘ಕಗ್ಗದ ಸಗ್ಗ’ Category

7
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೨)

– ರವಿ ತಿರುಮಲೈ

ಲೋಕಜೀವನ ಮಂಥನ

ಕೃತ್ರಿಮವೋ ಜಗವೆಲ್ಲ I  ಸತ್ಯತೆಯದೆಲ್ಲಿಹುದೋ?
ಕರ್ತೃವೆನಿಸಿದನೆ ತಾಂ ಗುಪ್ತನಾಗಿಹನು
ಚತ್ರವೀ ಜಗವಿದರೋಳಾರ ಗುಣವೆಂತಹುದೋ
ಯಾತ್ರಿಕನೆ, ಜಾಗರಿರೋ – ಮಂಕುತಿಮ್ಮ

ಕೃತ್ರಿಮ  =ಡಾ೦ಬಿಕತೆ, ನಾಟಕ, ಬೂಟಾಟಿಕೆ. ಕರ್ತೃವು = ಜಗತ್ತನ್ನು ಸೃಷ್ಟಿಮಾಡಿದ ಶಕ್ತಿ. ಗುಪ್ತ= ಅವ್ಯಕ್ತನಾಗಿ, ಅಮೂರ್ತನಾಗಿ, ಕಣ್ಣಿಗೆ ಕಾಣದೆ. ಯಾತ್ರಿಕ  = ಪಯಣಿಗ. ಜಾಗರಿರು- ಜಾಗ್ರತೆಯಾಗಿರು.

ಕ್ರುತ್ರಿಮವು  ಜಗವೆಲ್ಲ ಸತ್ಯತೆಯು ಎಲ್ಲಿಹುದೋ ? ಕರ್ತೃವೆನಿಸಿದವನು ತಾಂ ಗುಪ್ತನಾಗಿಹನು
ಚತ್ರವೀ ಜಗವಿದು ಇದರೊಳು ಯಾರ ಗುಣವೆಂತಹುದೋ ಯಾತ್ರಿಕನೆ ಜಾಗರಿರೊ ಮಂಕುತಿಮ್ಮ

ಹಿಂದಿನ ಐದು ಕಗ್ಗಗಳಲ್ಲಿ ವೇದಾಂತದ ಹಲವು ವಿಚಾರಗಳನ್ನು ನಮಗೆ ಅರುಹುತ್ತಾ, ಈ ಕಗ್ಗದಲ್ಲಿ ಮಾನ್ಯ ಗುಂಡಪ್ಪನವರು, ಈ ಜಗತ್ತಿನ ಪ್ರಸ್ತಾಪ ಮಾಡುತ್ತಾರೆ. ಈ ಜಗತ್ತು ಕೃತ್ರಿಮವೆನ್ನುತ್ತಾರೆ. ಇದನ್ನು ಕೇವಲ ಮಾನವರಜಗತ್ತಿಗೆ ಅನ್ವಯಿಸಿಕೊಳ್ಳಬೇಕು. ಏಕೆಂದರೆ, ಗಿಡ, ಮರ, ಪಶು ಪಕ್ಷಿ ಮತ್ತು ಅನ್ಯ ಜೀವಿಗಳಲ್ಲಿ ಇಂದಿಗೂ ಕೃತ್ರಿಮತೆ ನಾವು ಕಾಣುವುದಿಲ್ಲ. ಈ ಕೃತ್ರಿಮತೆ ಏನಿದ್ದರೂ ಕೇವಲ ಮಾನವರಿಗೆ ಅನ್ವಯಿಸುತ್ತದೆ. “ಏಕೆ ಹೀಗೆ? ಮಾನವರಲ್ಲಿ ಮಾತ್ರ ಏಕೆ? ಮಾನವರು ಮೊದಲಿನಿಂದಲೂ ಹೀಗೇ ಇದ್ದಾರೆಯೇ ಅಥವಾ ಈ ಕೃತ್ರಿಮತೆ ಕಾಲಕ್ರಮೇಣ ಜನಮಾನಸದಲ್ಲಿ ಹೊಕ್ಕಿದೆಯೇ?” ಎಂಬುದನ್ನು ಯೋಚಿಸಿದಾಗ ನಮಗೆ ಕಾಣುವುದು ಹೀಗೆ . ಮಾನವಮೊದಲಿನಿಂದಲೂ ಕೃತ್ರಿಮನಲ್ಲ. ಪ್ರಕೃತಿಯ ಮಗುವಾಗಿ ಪ್ರಕೃತಿಯಲ್ಲಿ ಒಂದಾಗಿ ಅಲ್ಲೇ ಜೀವಿಸುತ್ತಿದ್ದ. ಅವನೂ ಸಹ ಮಿಕ್ಕೆಲ್ಲ ಪ್ರಾಣಿಗಳಂತೆ, ತನ್ನ ಆಹಾರ ಹುಡುಕುವುದು, ತನ್ನನ್ನು ತಾನು ರಕ್ಷಿಸಿಕೊಳ್ಳುವುದು ಮತ್ತು ತನ್ನ ಸಂತತಿಯನ್ನು ಬೆಳೆಸುವುದು, ಇಷ್ಟಕ್ಕೆ  ತನ್ನ ಚಟುವಟಿಕೆಗಳನ್ನು ಮಿತಗೊಳಿಸಿಕೊಂಡಿದ್ದ. ಮಾನವ ಕಾಲಕ್ರಮೇಣ ಸಂಗ ಜೀವಿಯಾದ. ಅಲೆಮಾರಿಯಾಗಿದ್ದ ಅವನು ಒಂದು ಕಡೆ ನೆಲೆನಿಲ್ಲಲು ಆರಂಭಿಸಿದ ದಿನದಿಂದ ಅಲ್ಪ ಅಲ್ಪವಾಗಿ ಇವನಲ್ಲಿ ಇದು ತನ್ನದು, ಇದು ತನಗೆ, ಇವರು ತನ್ನವರು ಎಂಬ ಮಮಕಾರದ ಭಾವಗಳು ಬಂದವು.  ಮುಕ್ತನಾಗಿದ್ದ ಮನುಷ್ಯ ತನ್ನ ಸುತ್ತ ಒಂದು ವೃತ್ತವನ್ನು ಎಳೆದುಕೊಂಡ. ಆ ವೃತ್ತದಲ್ಲಿ ಇರುವುದೆಲ್ಲ ತನ್ನದು ಎನ್ನುವ ಮಮಕಾರವನ್ನು ಬೆಳೆಸಿಕೊಂಡ. ಕ್ರಮೇಣ ಅವನ ಪರಿವಾರ ಬೆಳೆದಂತೆ, ಆ ವೃತ್ತವನ್ನೂ ದೊಡ್ದದಾಗಿಸುವ ಪ್ರಯತ್ನ. ಹೀಗೇ ಅವನಿಗೆ ವಸ್ತು ಸಂಚಯನ ಅಭ್ಯಾಸವಾಗಿಹೋಯಿತು. ಇಷ್ಟಿದ್ದರೆ ಇನ್ನಷ್ಟರಾಸೆ. . ” ಕಡಿಮೆ ಸಂಪನ್ಮೂಲಗಳಿಗೆ ಅಧಿಕ ಬೇಡಿಕೆಯಾದರೆ, ಪೈಪೋಟಿ ಬೆಳೆಯುತ್ತದೆ” ಎನ್ನುವುದು ಅರ್ಥಶಾಸ್ತ್ರದ ಸಿದ್ಧಾಂತ. ಆ ಸಿದ್ಧಾಂತದ ಪ್ರಕಾರ, ಮನುಷ್ಯ ಮನುಷ್ಯನ ಮಧ್ಯೆ ತೀವ್ರ ಪೈಪೋಟಿ. ಎಲ್ಲ ವಿಷಯದಲ್ಲೂ. ಅಲ್ಲಿ ಎಲ್ಲರೂ,  ಎಂದಿಗೂ ಮುಂಚೂಣಿಯಲ್ಲಿ ನಿಲ್ಲಲು ಸುಳ್ಳು, ಮೋಸ, ದಗಾ, ಎಲ್ಲವನ್ನೂ ತನ್ನ ಮನೋಭಾವದಲ್ಲಿ ಅಳವಡಿಸಿಕೊಂಡ. ಯಾರು ಹೆಚ್ಚು ಸುಳ್ಳನ್ನು, ಹೆಚ್ಚು ಸಮರ್ಪಕವಾಗಿ, ಸುಳ್ಳರೆಂದು ಬಯಲಾಗದೆ, ಹೆಚ್ಚು ಸಮಯಕ್ಕೆ ಹೇಳಬಲ್ಲವರೋ ಅವರೇ ಈ ಪೈಪೋಟಿಯಲ್ಲಿ ಗೆಲ್ಲುತ್ತಾ ಬಂದರು. ಗೆಲುವಿಗೆ
ಇದು ಒಂದು ಸೂಕ್ತ ಮಾರ್ಗವೆಂದು ಮನಗಂಡು ಅದನ್ನೇ ಅಭ್ಯಾಸಮಾಡಿ, ತಮ್ಮ ಸ್ವಾಭಾವವಾಗಿಸಿಕೊಂಡರು. ” ರುಚ” ವೆಂದರೆ ಮನದೊಳಗಿನ ಭಾವ. “ಸತ್ಯ” ವೆಂದರೆ ಆ ಮನದೊಳಗಿನ ಆ ಭಾವ ಹಾಗೇ, ಬದಲಾಗದೆ,  ವ್ಯಕ್ತವಾದರೆ ಅದು ಸತ್ಯ. ಆದರೆ ಇಂದು ರುಚದಲ್ಲೂ ಕುಟಿಲತೆ, ಸತ್ಯದಲ್ಲೂ ಕುಟಿಲತೆ. ಇದನ್ನೇ ಮಾನ್ಯ ಗುಂಡಪ್ಪನವರು ” ಕೃತ್ರಿಮವು ಜಗವೆಲ್ಲ ಸತ್ಯತೆಯೆದಲ್ಲಿಹುದೋ ”  ಎಂದರು

ಆದರೆ ಇವುಗಳನ್ನೆಲ್ಲ ಮತ್ತು ಎಲ್ಲ ಪ್ರಾಣಿಗಳನ್ನು ಸೃಷ್ಟಿಸಿದ ಆ ಸೃಷ್ಟಿಕರ್ತನೂ ಎಲ್ಲೋ ಗುಹ್ಯನಾಗಿಬಿಟ್ಟಿದ್ದಾನೆ ಎನ್ನುತ್ತಾರೆ, ಶ್ರೀ ಡಿ ವಿ. ಜಿ. ಅಂದರೆ ಮನುಷ್ಯರ ಮನಸ್ಸುಗಳಲ್ಲಿ ಆ ದೈವ ಭಕ್ತಿ, ಪರಮಾತ್ಮ ಸೃಷ್ಟಿಯಾದ ಈ ಜಗತ್ತನ್ನು ಪೂಜಾಭಾವದಿಂದ ನೋಡುವ ಪರಿ, ಎಲ್ಲವೂ  ಆ ಪರಮಾತ್ಮನ ಸೃಷ್ಟಿ, ಇದನ್ನು ನಾನು ದುರುಪಯೋಗಪಡಿಸಿಕೊಳ್ಳಬಾರದು, ಮತ್ತು ಅವನು ನಿರ್ಮಿಸದ ಲೋಕದಲ್ಲಿ ನಾನೂ ಎಲ್ಲರಂತೆ, ಹಾಗಾಗಿ ದುರಾಸೆ, ದುರ್ಭಾವ, ದುರಾಲೋಚನೆ, ಸುಳ್ಳು ಮೋಸ, ತಟವಟ ಇವೆಲ್ಲವೂ ಇರಬಾರದು,ಇದ್ದರೆ ನಾನು ಆ ದೈವದ ಅವಕೃಪೆಗೆ  ಪಾತ್ರನಾಗುತ್ತೇನೆಂಬ ಭಯ ಯಾವುದೂ ಇಲ್ಲದೆ ಸ್ವೇಚ್ಚಾ ಮನೋಭಾವ ಬೆಳೆಸಿಕೊಂಡಿರುವುದರಿಂದ, ಅವನ ಮನಸ್ಸಿನಲ್ಲಿ ಆ ದೈವವಿಲ್ಲದಿರುವುದರಿಂದ, ಆ “ಸೃಷ್ಟಿಕರ್ತನೂ ಎಲ್ಲೋ ಗುಹ್ಯನಾಗಿಬಿಟ್ಟಿದ್ದಾನೆ” ಎನ್ನುತ್ತಾರೆ ಮಾನ್ಯ ಗುಂಡಪ್ಪನವರು. ಆ ದೇವರು ನಮ್ಮೆಲ್ಲರ ಕಲ್ಪನೆಯೆಂತೆ ಇರುವನೋ ಇಲ್ಲವೋ ಎಂಬ ಜಿಜ್ಞಾಸೆ ಬೇಡ. ಆದರೆ ಒಂದು ಮಾತು ಸತ್ಯ. ಆ ದೈವವಿದೆ, ನಾವದರ ಅಧೀನ ಎಂಬ ಭಾವಗಳು, ಮಾನವರು ಸಂಸ್ಕಾರವನ್ನು ಬೆಳೆಸಿಕೊಳ್ಳಲು ಮತ್ತು ಅವರೇ ನಿರ್ಮಿಸಿಕೊಂಡ ಸಮಾಜದಲ್ಲಿ ಒಂದು ಸಂಯಮ ಮತ್ತು ಶಿಸ್ತು ಇರಲು ಕಾರಣವಾಗಿದೆ ಎಂದರೆ ಅದು ಒಳ್ಳೆಯದೇ ಅಲ್ಲವೇ. ಅಂತಹ ದೈವದಲ್ಲಿ ಇಂದು ಭಯ ಭಕ್ತಿಗಳು ಇಂದು ಕಾಣೆಯಾಗಿವೆ ಎನ್ನುವ ಅರ್ಥದಲ್ಲಿ  ” ಆ ಸೃಷ್ಟಿಕರ್ತನೂ ಎಲ್ಲೋ ಗುಹ್ಯನಾಗಿಬಿಟ್ಟಿದ್ದಾನೆ” ಎನ್ನುತ್ತಾರೆ ಮಾನ್ಯ ಗುಂಡಪ್ಪನವರು. ವಾಚಕರೆ ಇದರ ವಿಚಾರವನ್ನು ಎಲ್ಲರೂ ಮಾಡಲೇ ಬೇಕು. ಏಕೆಂದರೆ ಯಾವುದೋ ಇದ್ದರೆ ಸಮಾಜ ಒಳ್ಳೆಯ ಸಮಾಜವಾಗಿ ಪರಿವರ್ತನೆಗೊಳ್ಳುತ್ತದೆ ಎಂದು ಅರಿತರೆ, ನಮ್ಮ ಸಮಾಜ ಸುಧಾರಿಸಲು ಎಲ್ಲೋ ಒಂದು ಮಾರ್ಗವಿದೆ ಎಂದು ಅರಿತುಕೊಳ್ಳಬಹುದು. ಎಲ್ಲರೂ  ಅದನ್ನು ಸಾಧಿಸಲು ಪ್ರಯತ್ನಿಸಬೇಕು.

ಇನ್ನು ಈ ಸಮಾಜದಲ್ಲಿ  ಹೇಗಿರಬೇಕೆಂದು ಒಂದು ಎಚ್ಚರಿಕೆಯನ್ನು ನೀಡುತ್ತಾರೆ ಶ್ರೀ ಡಿ ವಿ. ಜಿ ಯವರು, ಇಂತಹ ವಿಚಿತ್ರವಾದ ಜಗತ್ತಿನಲ್ಲಿ ಯಾರ ಗುಣ ಹೇಗಿರುತ್ತೋ ತಿಳಿಯುವುದು ಕಷ್ಟ ಎನ್ನುತ್ತಾರೆ. ನಯ ವಂಚಕರಿರುವ ಈ ಜಗತ್ತಿನಲ್ಲಿ ಮೋಸಮಾಡುವವರು ಕಡಿಮೆಯಾದರೂ ಮೋಸಹೋಗುವವರ ಸಂಖ್ಯೆ ಅಧಿಕ. ಇಲ್ಲಿ ಒಂದು ವಿಷಯ ಹೇಳಬೇಕು. ಮೋಸಮಾಡಲು ಬುದ್ಧಿವಂತಿಕೆ ಬೇಕು. ” ಎಲ್ಲ ಬುದ್ಧಿವಂತರೂ ಮೋಸಗಾರರಲ್ಲ. ಆದರೆ ಎಲ್ಲ ಮೋಸಗಾರರೂ ಬುದ್ಧಿವಂತರು” ಎನ್ನುವುದು ಸತ್ಯವಾದ ಮಾತು. ಇಂತಹವರ ಸಂಖ್ಯೆ ಕಡಿಮೆಯಾದರೂ ಅವರ ಬಲೆಗೆ ಬೀಳುವ

ಜನರ ಸಂಖ್ಯೆ ಹೆಚ್ಚಾದ್ದರಿಂದ ಎಲ್ಲರೂ ಒಂದಲ್ಲ ಒಂದು ಬಾರಿ ಆ ಮೋಸದ ವಂಚನೆಯ ಕೃತ್ರಿಮತೆಯ, ತಟವಟದ ಜನರ ಬಲೆಯಲ್ಲಿ ಸಿಕ್ಕು ಕಷ್ಟಪಟ್ಟಿರುವವರೇ ಆಗಿರುತ್ತಾರೆ.  ಹಾಗಾಗಿ ನೀ ಜಾಗರೂಕನಾಗಿರು ಎಂದು ಎಚ್ಚರಿಕೆಯನ್ನು ನೀಡುತ್ತಾರೆ. ಹಾಗೇ ನೀಡುವಾಗ” ಯಾತ್ರಿಕನೆ ” ಎನ್ನುವ ಪದ ಪ್ರಯೋಗ ಮಾಡುತ್ತಾರೆ. ಹೌದು ನಾವೆಲ್ಲರೂ ಈ ಜಗತ್ತಿನಲ್ಲಿ ಜೀವನವೆನ್ನುವ ಪ್ರಯಾಣವನ್ನು ಮಾನವರೂಪದ ಈ ಮಣ್ಣಿನ ಬಂಡಿಯಲ್ಲಿ ಮಾಡುವ “ಪ್ರಯಾಣಿಕ”ರೇ, ಅಲ್ಲವೇ?

ಹಾಗಾಗಿ ಈ ಜಗತ್ತು ಕೃತ್ರಿಮತೆ, ಕುಟಿಲತೆ, ಸುಳ್ಳು ಮತ್ತು ಮೋಸದಿಂದ ತುಂಬಿದೆ. ದೈವಭಕ್ತಿಯು ನಶಿಸಿದೆ. ಇಲ್ಲಿ ನೀನು ಜಾಗರೂಕನಾಗಿರು ಎಂದು ಎಚ್ಚರಿಸುವ ಭಾವವೇ ಈ ಕಗ್ಗ. ಆದರೆ ಈ ಸ್ತಿತಿ  ಅ-ನಿವಾರ್ಯ( incurable ) ಅಲ್ಲ. ಎಲ್ಲರೂ ಮನಸ್ಸು ಮಾಡಿದರೆ ಸಾಧ್ಯ. ಇಲ್ಲಿ ಸುಳ್ಳು

ಕೃತ್ರಿಮತೆ, ಕುಟಿಲತೆ, ಸುಳ್ಳು ಮತ್ತು ಮೋಸಗಳ ಸ್ಥಾನದಲ್ಲಿ ಕರುಣೆ ಪ್ರೀತಿ ಪ್ರೇಮ ಸಹೃದಯತೆ ಮುಂತಾದ  ಭಾವಗಳನ್ನು ಬೆಳೆಸಿಕೊಂಡು ನಾವಿರುವ ಜಗತ್ತನ್ನು ಸುಂದರವನ್ನಾಗಿಸಲು  ನಾವೆಲ್ಲರೂ ಪ್ರಯತ್ನಪಡೋಣವೆಂದು  ಹೇಳುತ್ತಾ, ………………

ಇವುಗಳನ್ನೇ ಚಿಂತಿಸುತ್ತಾ ವಿಚಾರಮಾಡುತ್ತಾ ಸುಧಾರಣೆಯ ಮಾರ್ಗ ಹುಡುಕುತ್ತಾ. ನಾವು ಮುಂದಿನ ಕಗ್ಗಕ್ಕೆ ಹೋಗೋಣ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.

ನಮಸ್ಕಾರ

**************************************************************************

6
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೧)

– ರವಿ ತಿರುಮಲೈ

ಲೋಕಜೀವನ ಮಂಥನ

ಹೊನ್ನೆಂದು ಜಗದಿ ನೀಂ ಕೈಗೆ ಕೊಂಡದನು ವಿಧಿ
ಮಣ್ಣೆನುವನ್, ಅವನವರ ಮಣ್ಣೆನುವೆ ನೀನು
ಬಿನ್ನವಿಂತಿರೆ ವಸ್ತು ಮೌಲ್ಯಗಳ ಗಣನೆಯೀ
ಪಣ್ಯಕ್ಕೆ ಗತಿಯನ್ತೋ? – ಮಂಕುತಿಮ್ಮ

ಹೊನ್ನು ಎಂದು ಜಗದಿ ನೀ೦  ಕೈಗೆ ಕೊಂಡದನು ವಿಧಿ ಮಣ್ಣೆನುವನು, ಅವನ ವರ ಮಣ್ಣೆನುವೆ ನೀನು
ಭಿನ್ನವು ಇಂತಿರೆ ವಸ್ತು ಮೌಲ್ಯಗಳ ಗಣನೆಯು ಈ ಪಣ್ಯಕ್ಕೆ ಗತಿಯೇನೋ ಮಂಕುತಿಮ್ಮ

ಹೊನ್ನು= ಚಿನ್ನ, ಜಗದಿ=ಜಗತ್ತಿನಲ್ಲಿ, ಭಿನ್ನ=ವ್ಯತ್ಯಾಸ, ಪಣ್ಯ= ವ್ಯಾಪಾರ.

ಯಾವುದನ್ನು ನೀನು ಚಿನ್ನ ಎಂದು ಕೈಗೆ ಎತ್ತಿಕೊಳ್ಳುತೀಯೋ, ಅದು ವಾಸ್ತವದಲ್ಲಿ ಚಿನ್ನವಾಗಿರದೆ, ಮಣ್ಣಂತೆ ನಿಷ್ಪ್ರಯೋಜಕವಾಗುತ್ತದೆ. ಆದರೆ ಕೆಲವು ಬಾರಿ ಬಯಸದೆ ಸಂದ ಭಾಗ್ಯವನ್ನು, ಆ ಪರಮಾತ್ಮನ  ಕರುಣೆಯಿಂದ ವರ ರೂಪದಲ್ಲಿ ಸಂದದ್ದು ನಿನಗೆ ನಿಷ್ಪ್ರಯೋಜಕವಾಗಿ ಕಾಣುತ್ತದೆ. ಹೀಗೆ ವಸ್ತುಗಳ ನಿಜರೂಪ ಗುರುತಿಸುವುದರಲ್ಲಿ ನಮಗೆ ವ್ಯತ್ಯಾಸವಾದರೆ ಈ ಜಗತ್ತಿನ ವ್ಯಾಪಾರ ನಡೆಯುವುದು ಹೇಗೆ ಎಂದು ಪ್ರಶ್ನಿಸುತ್ತಾರೆ ಮಾನ್ಯ ಗುಂಡಪ್ಪನವರು.
ಮತ್ತಷ್ಟು ಓದು »

5
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೦)

– ರವಿ ತಿರುಮಲೈ

ಲೋಕಜೀವನ ಮಂಥನ

ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು? I
ಚಂಡಚತುರೋಪಾಯದಿಂದಲೇನಹುದು ? II
ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು I
ಅಂಡಲೆತವಿದಕೇನೋ? – ಮಂಕುತಿಮ್ಮ II

ಚಂಡ= ಉಗ್ರ, ಚತುರೋಪಾಯ = ನಾಲ್ಕು ವಿಧವಾದ ಉಪಾಯಗಳು, ಮುಗಿದೇನಹುದು = ಮುಗಿದು ಏನು ಅಹುದು= ಮುಗಿದರೆ ಏನಾಗುತ್ತದೆ.
ತಂಡುಲ=ಅಕ್ಕಿ, ಅಂಡಲೆತ= ಸುಮ್ಮನೆ ಸುತ್ತಾಟ.

ಅಂದಿನ ಮತ್ತು ಇಂದಿನ ವಾಸ್ತವಿಕ ಚಿತ್ರಣವನ್ನು ನಮಗೆ ಗುಂಡಪ್ಪನವರು ಕೊಟ್ಟಿದ್ದಾರೆ ಈ ಕಗ್ಗದಲ್ಲಿ. ನಮ್ಮಲ್ಲಿ ಅನೇಕ ದೇವರುಗಳು. ಆ ದೇವರುಗಳ ಸಂಖ್ಯೆ ಎಷ್ಟಿದೆಯಂದರೆ ಎಣಿಸಲೂ ಸಾಧ್ಯವಿಲ್ಲ. ಒಂದುಕಡೆ ತಿರುಪತಿ ತಿಮ್ಮಪ್ಪನಾದರೆ, ಇನ್ನೊಂದು ಕಡೆ, ಬದರಿಯ ಬದರೀನಾಥ, ಒಂದುಕಡೆ ಮಧುರೆಯ ಮೀನಾಕ್ಷಿಯಾದರೆ, ಇನ್ನೊಂದುಕಡೆ ಕಾಶಿಯ ವಿಶಾಲಾಕ್ಷಿ, ಒಂದುಕಡೆ ಪೂರಿಯ ಜಗನ್ನಾಥನಾದರೆ  ಇನ್ನೊಂದುಕಡೆ  ತಿರುವನಂತಪುರದ ಅನಂತಪದ್ಮನಾಭ, ಒಂದುಕಡೆ ವಿನಾಯಕನಾದರೆ, ಇನ್ನೊಂದುಕಡೆ ಷಣ್ಮುಖ, ಹೀಗೇ ಬರೆಯುತ್ತಹೋದರೆ ಪಟ್ಟಿ ಬಹಳ ಉದ್ದ ಆದೀತು. ದೇಶ ಕಾಲ ಸಂಧರ್ಭಕ್ಕನುಗುಣವಾಗಿ ನಮಗೆ ನಾವು ಪೂಜಿಸುವ ದೇವತೆಗಳು ಬದಲಾಗುತ್ತ ಹೋಗುತ್ತಾರೆ. ಇದನ್ನೇ ಗುಂಡಪ್ಪನವರು “ಕಂಡ ದೈವಕ್ಕೆಲ್ಲ” ಎಂದಿರಬೇಕು.

ಆದರೆ ಇದು ಸರಿಯೇ ಅಲ್ಲವೇ ಎಂದು ಸ್ವಲ್ಪ ವಿಶ್ಲೇಷಿಸೋಣವೇ? ಭಾರತೀಯರಾದ ನಮಗೆ ಎಲ್ಲವೂ ದೈವವೇ? ಗಿಡ ಮರ ಬಳ್ಳಿ ನದಿ ಗುಡ್ಡ ಬೆಟ್ಟ, ಆಕಾಶ ಸೂರ್ಯ ಚಂದ್ರ ಎಲ್ಲ ಗ್ರಹಗಳು, ಪಕ್ಷಿ ಮೀನು ಪ್ರಾಣಿಗಳು ಎಲ್ಲವೂ ದೇವರೇ. ಅಷ್ಟೇ ಅಲ್ಲ ಎಲ್ಲದರಲ್ಲೂ ದೈವವನ್ನು ಕಾಣುವ ಸಂಸ್ಕೃತಿ ನಮ್ಮದು. ಅವುಗಳನ್ನೆಲ್ಲ ಕಾಪಾಡುವ ಕಾರಣದಿಂದ ಅವುಗಳಿಗೆಲ್ಲ ದೈವತ್ವವನ್ನು ಆರೋಪಿಸಿದ್ದಾರೆ ನಮ್ಮ ಪೂರ್ವಜರು. ಒಂದು ರೀತಿಯಲ್ಲಿ ಇದು ಒಳ್ಳೆಯದೇ ಅಲ್ಲವೇ ವಾಚಕರೆ? ಆದರೆ ವ್ಯಕ್ತಿ ಆಂತರ್ಯದಲ್ಲಿಬೆಳೆಯುತ್ತಾ  ಹೋದಂತೆಲ್ಲ ಅನೇಕದಿಂದ ಏಕಕ್ಕೆ  ಬರುವುದೇ ಅಧ್ಯಾತ್ಮಸಾಧನೆಯ ಗುರಿ. ಆಕಾರದಿಂದ ನಿರಾಕಾರಕ್ಕೆ ಬರುವುದೇ ಎಲ್ಲ ಸಾಧನೆಯ ಫಲ.

ಆದರೆ ನಾವು ಏಕೆ ಈ ದೈವಕ್ಕೆ ಕೈ ಮುಗಿಯುತ್ತೇವೆ? ಇದಕ್ಕೆ ನನ್ನ ಅರಿವಿನ ಪರಿಮಿತಿಯಲ್ಲಿ ವಿವರಿಸುತ್ತೇನೆ.   ನಮಗೆ ಆಸೆಗಳುಂಟು. ಆಸೆಗಳು ನಾವು ಈ ಬದುಕಿಗೆ ಅಂಟಿಕೊಂಡಿರುವುದರಿಂದ ಉಂಟು. ಈ ಆಸೆಯ ಪಕ್ಕ ಪಕ್ಕದಲ್ಲೇ ಒಂದು ಭಯವೂ ಉಂಟು. ಮಾನವರಿಗೆ ಎರಡು ರೀತಿಯ ಭಯಗಳುಂಟು. ಒಂದು ತನ್ನಲ್ಲಿರುವ ವಸ್ತು, ವಿಷಯ ಅಥವಾ ವ್ಯಕ್ತಿ ಯನ್ನು ಕಳೆದುಕೊಳ್ಳುವ ಭಯ. ಎರಡು, ತಾನು ಆಸೆ ಪಟ್ಟ ವಸ್ತು, ವ್ಯಕ್ತಿ, ವಿಷಯಗಳು ಸಿಗದೆಹೋಗುವ ಭಯ. ಮಾನವನ ಎಲ್ಲ ಭಯಗಳನ್ನೂ ಈ ಎರಡು ಅಂದರೆ ಎರಡೇ ವಿಭಾಗಗಳಲ್ಲಿ ಸೇರಿಸಬಹುದು. ಮೂರನೆಯದು ನನಗೆ ಗೋಚರಿಸುತ್ತಿಲ್ಲ.

ಆದರೆ ಈ ಭಯ ಸಹಜವಾದದ್ದೇ. ಮನುಷ್ಯನಿಗೆ ತನ್ನ ಜೀವನದಲ್ಲಿ ತನಗೆ ಸಂಬಂಧಿಸಿದ ಎಲ್ಲ ವ್ಯಕ್ತಿ, ವಿಷಯ ಮತ್ತು ವಸ್ತುವಿನ ಮೇಲೆ ಮಮಕಾರವಿರುತ್ತದೆ. ಈ ಮಮಕಾರವೇ ಈ ಭಯಕ್ಕೆ ಕಾರಣ.

ಈ ವ್ಯಕ್ತಿ, ವಿಷಯ ಮತ್ತು ವಸ್ತುಗಳು ಹಲವಿಧದಲ್ಲಿ ಇರಬಹುದು, ತನ್ನವರು, ಅವರಿಗೆ ಸಂಬಂಧಿಸಿದ ವಿಷಯಗಳಾದ, ಆರೋಗ್ಯ, ವಿದ್ಯೆ, ಪರಸ್ಪರ ಸಂಬಂಧಗಳು ವಿವಾಹಕ್ಕೆ, ಪ್ರೇಮಕ್ಕೆ, ಉದ್ಯೋಗ, ಹಣಕಾಸು, ಹೀಗೆ ಹತ್ತು ಹಲವಾರು ವಿಷಯಗಳಿಗೆ  ನಾವು ಅಂಟಿಕೊಂಡಿರುತ್ತೇವೆ. ಅವುಗಳಲ್ಲಿ ಇರುವುದು ಕಳೆದು ಹೋಗುವ ಭಯ ಅಥವಾ ಬಯಸಿದ್ದು ಆಗದೆ ಹೋಗಬಹುದಾದ ಭಯ. ಕಳೆದು ಹೋಗುವುದು ಏಕೆ? ಬಯಸಿದ್ದು ಆಗದೆ ಹೋಗುವುದು ಏಕೆ? ಎಂದು ಖಚಿತವಾಗಿ ನಮಗೆ ಅರಿಯದಾದಾಗ ಮತ್ತು ಸಂಶಯಗಳಿದ್ದಾಗ, ನಮಗರಿಯದ ಯಾವುದೋ ಶಕ್ತಿ ಅಥವಾ ನಮ್ಮನ್ನು ಕಾಯುವ ಯಾವುದೋ ಶಕ್ತಿಗೆ ನಾವು ಕೈಮುಗಿದು,  ಬೇಡುವುದೋ ಅಥವಾ ಶರಣಾಗುವುದೋ ಮಾಡುತ್ತೇವೆ. ಅದನ್ನೇ ಗುಂಡಪ್ಪನವರು ” ಆ ವಿಚಿತ್ರಕೆ ಶರಣಾಗೋ ” ಎನ್ನುತ್ತಾರೆ.

ಭಾರತೀಯರಾದ ನಮಗೆ ಎಲ್ಲವೂ ದೇವರೇ ಆದ್ದರಿಂದ, ಇಷ್ಟೊಂದು ಬಗೆಬಗೆಯ ದೇವರುಗಳು ನಮ್ಮಲ್ಲಿ, ಹಣಕ್ಕೊಬ್ಬ, ಗುಣಕ್ಕೊಬ್ಬ, ವಿದ್ಯೆಗೊಬ್ಬ, ಆರೋಗ್ಯಕ್ಕೊಬ್ಬ, ಪಾಪನಾಶನಕ್ಕೊಬ್ಬ, ಪರಮಾರ್ಗಕ್ಕೊಬ್ಬ. ಮತ್ತು ಈ ದೇವತೆಗಳನ್ನು ಒಲಿಸಿಕೊಳ್ಳಲು ಹಲವಾರು ವಿಧಾನಗಳು. ದರ್ಶನ, ಅರ್ಚನೆ, ಅಭಿಷೇಕ, ದಾನ,ಧ್ಯಾನ, ಭಜನೆ,  ಆನ್ನ ಸಂತರ್ಪಣೆ, ಸಮಾರಾಧನೆ, ಪರೋಪಕಾರದ ಕೆಲಸಗಳು, ಹೋಮ, ಹವನ, ಯಜ್ಞ, ಯಾಗಾದಿಗಳು, ಹೀಗೆ ನಮಗೆ ತೋಚಿದ್ದು, ಮತ್ತು ಪರರಿಂದ ಸೂಚಿಸಲ್ಪಟ್ಟ, ಸಾಮ, ದಾನ , ಬೇಧ, ದಂಡದಂತ ಚತುರೋಪಾಯಗಳನ್ನೂ ಉಪಯೋಗಿಸಿ, ನಮ್ಮ ಕಾರ್ಯ ಸಾಧನೆಗೆ ಆ ದೇವರನ್ನು ಸದಾಕಾಲ ಒಲಿಸಿಕೊಳ್ಳಲು ಪ್ರಯತ್ನಿಸುತ್ತೇವೆ. ಇದು ಒಂದು ಮಾನಸಿಕ  ಸ್ವಯಂ ಚಿಕಿತ್ಸೆ.  ನಮ್ಮ ಮನಸ್ಸುಗಳಲ್ಲಿ ಉದ್ಭವಿಸುವ ಹಲವಾರು ಪ್ರಶ್ನೆ ಮತ್ತು ಸಂದೇಹಗಳಿಗೆ ನಾವೇ ಕಂಡುಕೊಳ್ಳುವ ಸಮಾದಾನ.

ಇದು ಅಧ್ಯಾತ್ಮ ಪ್ರಯಾಣದ ಒಂದು ಸ್ತರ. ಅವರವರ ಮಟ್ಟಿಗೆ ಸರಿ. ಆದರೆ ಗುಂಡಪ್ಪನವರು ” ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು” ಒಂದು ಹಿಡಿ ಅಕ್ಕಿಗಾಗಿ, ಹೊಟ್ಟೆ ತುಂಬಿಸಿಕೊಳ್ಳಲು,ಗೇಣುದ್ದ ಬಟ್ಟೆಗಾಗಿ, ಮೈಮುಚ್ಚಲು ಮನುಷ್ಯ ಇಷ್ಟೆಲ್ಲಾ ಮಾಡಬೇಕೆ, ಎಂಬ ಭಾವದಲ್ಲಿ ಒಂದು ವೈರಾಗ್ಯದ ವಿಷಯವನ್ನು ಪ್ರಸ್ತಾಪ ಮಾಡುತ್ತಾರೆ.  ಆದರೆ ವೈರಾಗ್ಯವು ಅನುಭವದಿಂದ ಮಾತ್ರ ಬರಲು ಸಾಧ್ಯ. ಅಂತಹ ಅನುಭವನ್ನ್ನು ಕೊಡುವುದೇ ಜೀವನ. ಅಂತ ಅನುಭವಗಳನ್ನು ಪಡೆದು ಅನುಭವಿಸಿ, ಇಲ್ಲಿ ಯಾವುದರಿಂದಲೂ ಏನೂ ಆಗುವುದಿಲ್ಲ, ನಾನು ಇಲ್ಲಿನವನಲ್ಲ, ನನ್ನ ಮೂಲ ಬೇರೆ ಇದೆ, ” ಅಲ್ಲಿದೆ ನಮ್ಮ ಮನೆ. ನಾನೇಕೆ ಬಂದೆ ಸುಮ್ಮನೆ” ಎಂದು ಪುರಂದರದಾಸರು ಹೇಳುವಹಾಗೆ, ನಮಗೆ ಈ ಪ್ರಪಂಚದಿಂದ ಏನೂ ಆಗಬೇಕಾಗಿಲ್ಲವೆಂಬ “ನಿಜ” ವೈರಾಗ್ಯದ ಭಾವ ಮನದಲ್ಲಿ ಸ್ಥಿರವಾಗಿ ಮೂಡಿದರೆ…………….. ಆದರೆ ಕೆಲವರು ಹೀಗೂ ಯೋಚನೆ ಮಾಡುತ್ತಾರೆ, ಆ ವೈರಾಗ್ಯ ಬೇಕೆ?  ಈ ಜೀವನದಾಚಿನದು ಏನೋ ಗೊತ್ತಿಲ್ಲ. ಗೊತ್ತಿಲ್ಲದ ವಿಷಯದಲ್ಲಿ ಆಸಕ್ತಿ ತೋರಿ, ಇರುವುದನ್ನು ಬಿಡುವುದು ಸರಿಯಲ್ಲ. ಬದುಕಿರುವ ತನಕ ಬದುಕನ್ನು ಅನುಭವಿಸಿ ಬದುಕಬೇಕು, ಎನ್ನುತ್ತಾರೆ.

ಏನಾದರಾಗಲಿ ಒಂದು ಕಡೆ ಈ ಜಗತ್ತು ಮತ್ತು ಸಂಸಾರದಲ್ಲಿ ರಕ್ತಿ ಇನ್ನೊಂದುಕಡೆ ವಿರಕ್ತಿ. ಯಾವುದು ಬೇಕೋ ಅದನ್ನು ಆಯ್ದುಕೊಳ್ಳಲು ಎಲ್ಲರಿಗೂ ಸಂಪೂರ್ಣ ಸ್ವಾತಂತ್ರ್ಯ. ನಮ್ಮ ನಮ್ಮ ವಿಚಾರಗಳು ನಮಗೆ ಸಂತೋಷ ನೀಡಬೇಕು ಅಷ್ಟೇ.

ಇವುಗಳನ್ನೇ ಚಿಂತಿಸುತ್ತಾ ವಿಚಾರಮಾಡುತ್ತಾ ನಾವು ಮುಂದಿನ ಕಗ್ಗಕ್ಕೆ ಹೋಗೋಣ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.
ನಮಸ್ಕಾರ

******************************************************

4
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೧೮)

– ರವಿ ತಿರುಮಲೈ

ಲೋಕಜೀವನ ಮಂಥನ

ನದಿಯ ತೆರೆಯವೊಲುರುಳಿ ಹೊರಳುತಿರುವುದು ಜೀವ I
ಮೊದಲಿಲ್ಲ ಮುಗಿವಿಲ್ಲ ನಿಲುವಿಲ್ಲ ವದಕೆ II
ಬದುಕೇನು ಸಾವೇನು ಸೊದೆಯೇನು ವಿಷವೇನು? I
ಉದಕಬುದ್ಬುದವೆಲ್ಲ ! – ಮಂಕುತಿಮ್ಮ II

ತೆರೆಯವೊಲುರುಳಿ = ತೆರೆಯವೊಲು ಉರುಳಿ,     ಉದಕಬುದ್ಬುದವೆಲ್ಲ= ಉದಕ ಬುದ್ಬುದವು ಎಲ್ಲ.
ತೆರೆಯವೊಲು=ನದಿಯ ಅಲೆಯಂತೆ ,  ಮುಗಿವಿಲ್ಲ= ಕೊನೆಯಿಲ್ಲ, ನಿಲುವಿಲ್ಲ = ನಿಲುವು ಅಂದರೆ ಸ್ಥಿರತೆ,. ಸೊದೆಯೇನು= ಅಮೃತವೇನು, ಉದಕ= ನೀರು, ಬುದ್ಬುದ= ಗುಳ್ಳೆ

ನದಿಯ ತೆರೆಯಂತೆ ಉರುಳಿ ಹೊರಳುತಿದೆ ಜೀವ, ಮೊದಲಿಲ್ಲ , ಮುಗಿವಿಲ್ಲ ನಿಲುವಿಲ್ಲ ಅದಕೆ
ಬದುಕೇನು ಸಾವೇನು ಸೊದೆಯೇನು ವಿಷವೇನು ಉದಕದ ಬುದ್ಬುದವು  ಎಲ್ಲ ಮಂಕುತಿಮ್ಮ.

ವಾಚಕರೆ ಹಿಂದಿನ ಕಗ್ಗದಲ್ಲಿ ಈ ಹಳತು ಹೊಸತನದ ತಿಕ್ಕಾಟವನ್ನು  ಅಮೃತಕ್ಕಾಗಿ ನಡೆಯುವ ಸಮುದ್ರ ಮಂಥನಕ್ಕೆ ಹೋಲಿಸಿದರು ಮಾನ್ಯ ಡಿ.ವಿ.ಜಿ ಯವರು.ಆದರೆ ಇಂದಿನ ಕಗ್ಗದಲ್ಲಿ ಒಂದು ವೇದಾಂತದ ಮಾತನ್ನು ಸೂಚಿಸಿದ್ದಾರೆ. ಇಡೀ ಜೀವನವನ್ನು ಅವರು ಒಂದು ನದಿಯ ತೆರೆ ಅಥವಾ ಅಲೆಯಂತೆ ಎಂದಿದ್ದಾರೆ. ಒಂದು ನಿಮಿಷವೂ ಒಂದೇ ತೆರನಾಗಿ ಇರದ ನದಿಯ ತೆರೆಗೆ ಹೋಲಿಸಿದ್ದಾರೆ. ಹೌದು ಯಾರ ಜೀವನವೂ ಎಂದೂ ಒಂದೇ ತೆರನಾಗಿ ಇರುವುದಿಲ್ಲ.ಬದಲಾವಣೆಯಾಗುತ್ತಲೇ ಇರುತ್ತದೆ. ಅದಕ್ಕೆ ನಾನು ಅದನ್ನು kaleidoscopic ಲೈಫ್  ಎಂದು ಕರೆಯುತ್ತೇನೆ.  ಕೆಲಿಡೋಸ್ಕೊಪ್ ಎನ್ನುವುದು ನಾವು ಚಿಕ್ಕಂದಿನಲ್ಲಿ ಮೂರು ಬಿಳಿಯ ಗಾಜಿನ ಪಟ್ಟಿಗಳನ್ನು ತೆಗೆದುಕೊಂಡು ಮೂರನ್ನೂ ತ್ರಿಕೋನಾಕಾರದಲ್ಲಿ ಜೋಡಿಸಿ ಎಲ್ಲ ಬದಿಯಿಂದಲೂ ಬಂಧಿಸಿ ಒಂದು ಕೊನೆಯನ್ನು  ಮುಚ್ಚ್ಚಿ ಸುತ್ತಲೂ ಕಾಗದವನ್ನು ಸುತ್ತಿ ಬಿಡುತ್ತಿದ್ದೆವು. ತೆರೆದ ಬದಿಯಿಂದ ಒಡೆದ ಗಾಜಿನ ಬಳೆಯ ಚೂರುಗಳನ್ನು ಹಾಕಿದರೆ  ಒಂದು ಚಿತ್ತಾರ (ಡಿಸೈನ್) ಮೂಡುತ್ತಿತ್ತು. ಅದನ್ನು ತಿರುಗಿಸುತ್ತಾ ಹೋದಂತೆಲ್ಲ, ಬೇರೆಬೇರೆ ಚಿತ್ತಾರಗಳು ಮೂಡುತ್ತಿದ್ದವು. ಒಂದು ಬಾರಿ ಮೂಡಿದ ಚಿತ್ತಾರ ಮತ್ತೊಂದು ಬಾರಿಗೆ ಎಂದೂ ಬರುವುದಿಲ್ಲ. ಹಾಗೆಯೇ ನಮ್ಮ ಜೀವನಗಳು ಈಗ ಇದ್ದಂತೆ ಎಲ್ಲವೂ ಮತ್ತೆಂದಿಗೂ ಇರುವುದಿಲ್ಲ. ದಿನಕಳೆದಂತೆ ನಮ್ಮ ವಯಸ್ಸು ಒಂದು ದಿನ ಹೆಚ್ಚಾಗುತ್ತದೆ. ಒಂದು ದಿನ  ಇದ್ದ ಮನೋಭಾವ ಮತ್ತೊಂದು ದಿನ ಇರುವುದಿಲ್ಲ, ಒಂದು ಗಳಿಗೆ ಇದ್ದ ನಮ್ಮ ಯೋಚನಾ ವಿಧ ಮತ್ತೊಂದು ಗಳಿಗೆ ಇರುವುದಿಲ್ಲ. ಇದನ್ನೇ ಮಾನ್ಯ ಗುಂಡಪ್ಪನವರು ನಿಲುವಿಲ್ಲ ಎಂದರು.
ಮತ್ತಷ್ಟು ಓದು »

4
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೧೯)

– ರವಿ ತಿರುಮಲೈ

ಲೋಕಜೀವನ ಮಂಥನ

ಗಾಳಿ ಮಣ್ಣು೦ಡೆಯೊಳಹೊಕ್ಕು  ಹೊರಹೊರಳಲದು  I
ಆಳೆನಿಪುದಂತಾಗದಿರೆ ಬರಿಯ ಹೆಂಟೆ II
ಬಾಳೇನು ಧೂಳು ಸುಳಿ, ಮರ  ತಿಕ್ಕಿದುರಿಯ ಹೊಗೆI
ಕ್ಶ್ವೇಳವೇನಮೃತವೇಂ ? – ಮಂಕುತಿಮ್ಮ II

ಮಣ್ಣು೦ಡೆಯೊಳಹೊಕ್ಕು= ಮಣ್ಣ + ಉಂಡೆ+ಒಳ+ಹೊಕ್ಕು , ಹೊರಹೊರಳಲದು = ಹೊರ+ಹೊರಳಲು +ಅದು
ಆಳೆನಿಪುದಂತಾಗದಿರೆ = ಆಳು+ ಎನಿಪುದು +ಅಂತೆ + ಆಗದಿರೆ,  ತಿಕ್ಕಿದುರಿಯ = ತಿಕ್ಕಿದ+ಉರಿಯ, ಕ್ಶ್ವೇಳವೇನಮೃತವೇಂ =ಕ್ಶ್ವೇಳವೇನು +ಅಮೃತವೇನು

ಈ ದೇಹವನ್ನು ಮಣ್ಣು೦ಡೆಗೆ ಹೋಲಿಸಿದ್ದಾರೆ ಮತ್ತು ಈ ದೇಹದಲ್ಲಿ  ಆಡುವ ಉಸಿರು ( ಗಾಳಿ ) ಆಡುತ್ತಿದ್ದರೆ ನಾವುಗಳು “ಆಳು” ಎಂದು ಎನ್ನಿಸಿ ಕೊಳ್ಳುತ್ತೇವೆ. ಇಲ್ಲದಿದ್ದರೆ ಈ ದೇಹ ಬರೀ ಮಣ್ಣಿನ ಹೆಂಟೆ ಎಂದು ಒಂದು ಅತ್ಯುತ್ತಮ ಸತ್ಯವನ್ನು ಪ್ರತಿಪಾದಿಸುತ್ತಾರೆ. ಇಂದು ನಮ್ಮ ಸ್ನೇಹಿತರೊಬ್ಬರು ಇದಕ್ಕೆ ಸರಿಯಾಗಿ” ಬಡಿತ ನಿಂತರೆ ಬಡಿವಾರ ಬಂದ್ ” ಎಂದು ಹಿಂದಿನ ಕಗ್ಗಕ್ಕೆ ಪ್ರತಿಕ್ರಿಯೆ ನೀಡಿ, ಬಹಳ ಸೂಕ್ತವಾಗಿ ಹೇಳಿದರು. ಬಹುಶಃ ಅವರಿಗೆ ಇಂದಿನ ಕಗ್ಗದ ಪರಿಚಯವಿತ್ತೇನೋ ಎಂದು ಅನ್ನಿಸುತ್ತದೆ. ಇರಲಿ ಗುಂಡಪ್ಪನವರು ಈ ಬಾಳನ್ನು ದೂಳ ಸುಳಿ ಎಂದು ಕರೆಯುತ್ತಾರೆ. ಇದು ಬಹಳ ಸೂಕ್ತವಾಗಿದೆ. ಏಕೆಂದರೆ, ನಾನು ಹಿಂದೆ ಒಮ್ಮೆ ಈ ಬ್ರಹ್ಮಾಂಡದ ವಿವರಣೆಯನ್ನು ಮಾಡುವಾಗ, ಇಡೀ ಬ್ರಹ್ಮಾಂಡವು ಎಷ್ಟು ದೊಡ್ಡದೆಂದರೆ, ಇದರೆದುರು ನಾವು ಒಂದು ದೂಳ ಕಣವೂ ಅಲ್ಲ ಎಂದು ಹೇಳಿದ್ದೆ. ಈಗ ಮಣ್ಣಿಂದ ಆದ, ಮತ್ತು ಈ ಸಮಸ್ತ  ಭೂಮಂಡಲವನ್ನು ನಿವಾಸಸ್ಥಾನವನ್ನಾಗಿಸಿಕೊಂಡ  ಪ್ರಾಣಿಗಳೆಲ್ಲವೂ ಧೂಳ ಕಣಗಳೇ ಎಂದು ಗುಂಡಪ್ಪನವರು ಹೇಳುತ್ತಾರೆ.

ಮಣ್ಣಿಂದ ಆದ ಜೀವಕಣಗಳು ಮತ್ತು ಈ ಜೀವಕಣಗಳಿಂದಾದ ಈ ದೇಹವೂ ಮಣ್ಣಲ್ಲವೇ?  “ಮಣ್ಣಿಂದ ಕಾಯ ಮಣ್ಣಿಂದ” ಎಂದು ನಾವು ಕೇಳಿಲ್ಲವೇ? ಹಾಗೆ ಮಣ್ಣಿಂದ ಆದ ಈ ದೇಹವನ್ನು ಮಣ್ಣ ಉಂಡೆ ಎಂದು ಹೇಳಿದ್ದಾರೆ. ಈ ಮಣ್ಣ ಉಂಡೆಯಲಿ ಗಾಳಿ ಆಡುತ್ತಿದ್ದರೆ ನಾವೂ ಸಹ “ಆಳು” ಅಂದರೆ ಮನುಷ್ಯ ಎಂದು ಕರೆಯಲ್ಪಡುತ್ತೇವೆ. ಇಲ್ಲದಿದ್ದರೆ ಬರೇ ಮಣ್ಣ ಉಂಡೆ. ಆಗ ನಮ್ಮನ್ನು ಹೆಣ ಎನ್ನುತ್ತಾರೆ

ಹಾಗಿದ್ದರೆ ಈ ಬಾಳು ಅಂದರೆ ಜೀವನವು ಏನು? ಎಂದರೆ ಮಣ್ಣ ಕಣಗಳ ತಿಕ್ಕಾಟವೆನ್ನುತ್ತಾರೆ ಶ್ರೀ ಗುಂಡಪ್ಪನವರು.  ಈ ತಿಕ್ಕಾಟದಲ್ಲಿ ಬೆಂಕಿ ಉಂಟಾಗುತ್ತದೆ ಮತ್ತು ಹೊಗೆಯಾಡುತ್ತದೆ. ದ್ವೇಷದ ಬೆಂಕಿ, ಅಸೂಯೆಯ ಬೆಂಕಿ ಕೋಪದ ಬೆಂಕಿ ಹೀಗೆ ಹಲವಾರು ವಿಧದಲ್ಲಿ ಮನುಜ ಮನುಜರ ಮಧ್ಯೆ ಉಂಟಾಗುವ ತಿಕ್ಕಾಟ.  ಆ ತಿಕ್ಕಾಟದ ಪರಿಣಾಮ ಸಾವು ನೋವುಗಳ ಪರಿಣಾಮ. ಅದೇ ಈ ಬೆಂಕಿಯಿಂದ ಬರುವ ಹೊಗೆ.

ಇದರಿಂದ ಕೆಲವರಿಗೆ ಸುಖ ಕೆಲವರಿಗೆ ದುಃಖ. ಇದನ್ನೇ “ಕ್ಶ್ವೇಳ “ಅಂದರೆ ವಿಷವೆಂದು, ಸುಖ ಮತ್ತು ಆನಂದವನ್ನು “ಅಮೃತ”ವೆಂದೂ ಕರೆಯುತ್ತಾರೆ ಗುಂಡಪ್ಪನವರು.
ಪರಮಾತ್ಮನೆಂಬ  ಮಹಾಜ್ಜ್ವಾಲೆಯಲ್ಲಿ ಉರಿಯುವ ಬೆಂಕಿಯಿಂದ ಸಿಡಿದ ಕೋಟ್ಯಾಂತರ ಕಿಡಿಗಳೇ, ಈ ಜೀವಿಗಳು.  ಈ ಜಗತ್ತಿನಲ್ಲಿ, ಮಣ್ಣಿನ ಉಂಡೆಗಳಂತೆ ಇರುವ ನಾವೂ ಮತ್ತು ಈ ಉಂಡೆಯೊಳಗೆ ಗಾಳಿ ಎಂಬಂತೆ ಇರುವ ಆತ್ಮ ಅಥವಾ ಚೇತನದ ಸಮ್ಮಿಲನದಿಂದ  ಉಂಟಾದ ಬದುಕೆಂಬ ತಿಕ್ಕಾಟದಲ್ಲಿ ಬೆಂಕಿಯುಗುಳಿ,  ವಿಷಕಾರಿ, ಅಮೃತವ ಸವಿದು ಬಾಳ ಸವೆಸಿ ಮತ್ತದೇ ಚೇತನವನ್ನು ಸೇರುವಾಗ, ಇಲ್ಲಿ ಪಡೆದ ಅಮೃತದ ಬೆಲೆಯೇನು ಕುಡಿದ ಅಥವಾ ಕಕ್ಕಿದ ವಿಷದ ಬೆಲೆಯೇನು ಎಂದು ಕೇಳುತ್ತಾರೆ ಶ್ರೀ ಗುಂಡಪ್ಪನವರು.

ಈ ಕಗ್ಗದ ಒಟ್ಟಾರೆ ಅಂತರ್ಯವೇನೆಂದರೆ, ಮಣ್ಣಿಂದ ಆಗಿ, ಮಣ್ಣಲ್ಲೇ ಇದ್ದು ಮಣ್ಣಲ್ಲೇ ಸೇರುವ ಈ ಮಾನವನ  ಬಾಳು ಕೇವಲ ಉಸಿರಿರುವ ತನಕ. ಹೀಗೆ ಬದುಕಿರುವಾಗ ನಾವು ಪಡೆಯುವ ಸುಖ ದುಃಖ ಅನುಭವಿಸುವ , ಕೋಪ ದ್ವೇಷ, ಅಸೂಯ, ಪ್ರೀತಿ, ಪ್ರೇಮ, ಅನುರಾಗ, ಬಂಧನಗಳಂಥಹ ಭಾವಗಳೆಲ್ಲವೂ, ” ಬಡಿತವಿರುವತನಕ( ಹೃದಯದ)” ಅದು ನಿಂತರೆ” ಬಡಿವಾರ ಬಂದ್” ಈ ಜೀವನದ ಎಲ್ಲಕ್ಕೂ ಒಂದು ಮಂಗಳವನ್ನು ಹಾಡುವ,ಸಾವನ್ನು ಅಪ್ಪಿ  ಎಲ್ಲವನ್ನೂ ಇಲ್ಲೇ ಬಿಟ್ಟು  ಹೋಗುವಾಗುವಂಥಾ ಈ ಜೀವನದಲ್ಲಿ ಪಡೆದ ಸುಖಕ್ಕೆ ಏನು ಬೆಲೆ, ದುಃಖಕ್ಕೆ ಏನು ಬೆಲೆ. ಎಲ್ಲವೂ ಶೂನ್ಯ.

ಇಂತಹ  ಭಾವಗಳನ್ನು ವ್ಯಕ್ತಪಡಿಸುವ ಈ ಕಗ್ಗದ ಅಂತರ್ಯವನ್ನು ವಾಚಕರು ಅವರದೇ ಅನುಭವದ ಮೂಸೆಯಲ್ಲಿ ಹಾಕಿ ನೋಡಿದಾಗ, ಪ್ರತಿಯೊಬ್ಬರಿಗೂ ಅವರವರದೇ ಅನುಭವದ ಭಾವ ಸಿಗುತ್ತದೆ.

ಇವುಗಳನ್ನೇ ಚಿಂತಿಸುತ್ತಾ ವಿಚಾರಮಾಡುತ್ತಾ ನಾವು ಮುಂದಿನ ಕಗ್ಗಕ್ಕೆ ಹೋಗೋಣ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.

ನಮಸ್ಕಾರ

3
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೧೭)

– ರವಿ ತಿರುಮಲೈ

ಲೋಕಜೀವನ ಮಂಥನ

ತಳಮಳವಿದೇನಿಳೆಗೆ? ದೇವದನುಜರ್ ಮಥಿಸೆ
ಜಳಧಿಯೊಳಾದಂತೆ ಸುಧೆಗೆ ಪೀಠಿಕೆಯೇಂ?
ಹಾಲಾಹಲವ ಕುಡಿವ ಗಿರೀಶನಿರ್ದೊಡೀ
ಕಳವಳವದೇತಕೆಲೋ? – ಮಂಕುತಿಮ್ಮ

ತಳಮಳವಿದೇನಿಳೆಗೆ= ತಳಮಳವಿದು + ಏನು + ಇಳೆಗೆ,   ದೇವಮನುಜರ್ =ದೇವದ   + ಅನುಜರ್
ಜಳಧಿಯೊಳಾದಂತೆ = ಜಲಧಿಯೊಳು + ಆದಂತೆ, ಗಿರೀಶನಿರ್ದೊಡೀ= ಗಿರೀಶನು + ಇರ್ದೊಡೆ, ಕಳವಳವದೇತಕೆಲೋ = ಕಳವಳವು + ಅದು+ ಏತಕೆ+ ಎಲೋ,

ದೇವದನುಜರ್ = ದೇವಲೋಕದ ಅಣ್ಣ ತಮ್ಮಂದಿರು , ಮಥಿಸೆ= ಕಡೆಯೆ, ಜಲಿಧಿ= ಸಮುದ್ರ, ಸುಧೆ= ಅಮೃತ, ಪೀಠಿಕೆ = ಭೂಮಿಕೆ, ಪ್ರಸ್ತಾವನೆ, ಹಾಲಾಹಲ= ವಿಷ, ಗಿರೀಶ= ಶಿವ

ತಳಮಳವದೇನು ಇಳೆಗೆ ? ದೇವದುಜರು ಮಥಿಸೆ ಜಲಧಿಯೊಳು ಆದಂತೆ, ಸುಧೆಗೆ ಪೀಠಿಕೆಯೇನು,
ಹಲಾಹಲವ ಕುಡಿಯಲು ಗಿರೀಶನಿರುವಾಗ ಕಳವಳವದು ಏತಕೆ ಎಲೋ ಮಂಕುತಿಮ್ಮ.

ಇಲ್ಲಿ ಒಂದು ಆಶಾಭಾವನೆಯನ್ನು ವ್ಯಕ್ತಪಡಿಸುತ್ತಾರೆ, ಶ್ರೀ ಗುಂಡಪ್ಪನವರು. ಆಗ ಎಲ್ಲೆಲ್ಲೂ ಅತಂತ್ರದ ಸ್ಥಿತಿ. ಹಳೆಯ ಭಕ್ತಿ ಶ್ರದ್ಧೆಗಳು ಸಶಿಸಿ ಹೊಸದು ಯಾವುದೋ ಇಲ್ಲದೆ, ಒಂದು ಅತಂತ್ರದ ಸ್ಥಿತಿ ಇದೆ. ಜನರೆಲ್ಲಾ ಕಳವಳ ಗೊಂಡು  ತಳಮಳಿಸುತ್ತಿದ್ದಾರೆ. ಅಂತ ಸ್ಥಿತಿಯಲ್ಲಿ ಇವರಿಗೊಂದು ಆಶಾಭಾವನೆ. ಅದನ್ನು ಅವರು ಈ ಕಗ್ಗದಲ್ಲಿ  ಸೂಚಿಸುತ್ತಾರೆ.

ಹಿಂದೆ,  ದೇವಲೋಕದಲ್ಲಿ ಅಮೃಥವನ್ನು ಪಡೆಯಲು  ಸಮುದ್ರ ಮಂಥನ ನಡೆಯಿತು. ಅದನ್ನು ನಡೆಸಿದವರು  ದೇವತೆಗಳು ಮತ್ತು ದಾನವರು. ಇವರನ್ನು ಗುಂಡಪ್ಪನವರು ಸೂಕ್ತವಾಗಿ “ದೇವಲೋಕದ ಅನುಜರ್” ಎಂದು ಸಂಬೋಧಿಸುತ್ತಾರೆ. ಏಕೆಂದರೆ ಪುರಾಣದ ಪ್ರಕಾರ ಈ ದೇವತೆಗಳು ಮತ್ತು ದಾನವರು ಇಬ್ಬರೂ ಕಶ್ಯಪ  ಬ್ರಹ್ಮನ ಮಕ್ಕಳು. ಹಾಗಾಗಿ ಅವರನ್ನು ಅಣ್ಣ ತಮ್ಮಂದಿರು ಎಂದಿದ್ದಾರೆ. ವಾಚಕರು ಈ ದೇವದಾನವರು ನಡೆಸಿದ ಅಮೃತ ಮಂಥನದ ಕಥೆಯನ್ನು ಬೇರೆಯಾಗಿ ಓದಬೇಕಾಗಿ ವಿನಂತಿ. ಆದರೆ ಆ ಮಂಥನದಲ್ಲಿ ಮೊದಲು ಹಾಲಾಹಲ ಅಂದರೆ ವಿಷದ ಉದ್ಭವವಾಯಿತಂತೆ. ಘನ ಘೋರ ವಿಷವನ್ನು ಲೋಕ ಕಲ್ಯಾಣಕ್ಕಾಗಿ  ಗಿರಿಜಾಪತಿ ಪರಮಶಿವನು ಕುಡಿದುಬಿಟ್ಟನಂತೆ. ಅದನ್ನು ಪಾರ್ವತಿ ಕಂಠದಲ್ಲೇ ತಡೆದದ್ದರಿಂದ ಅದು ಅಲ್ಲೇ  ನಿಂತು,  ಶಿವನು ನೀಲಕಂಠ ಮತ್ತು ವಿಷಕಂಠನಾದನಂತೆ.

ಹಿಂದಿನ ಕಗ್ಗದಲ್ಲಿ ಮಾನ್ಯ ಗುಂಡಪ್ಪನವರು  II  ಹಳೆ ಧರ್ಮ ಸತ್ತಿಹುದು ಹೊಸ ಧರ್ಮ ಹುಟ್ಟಿಲ್ಲ – ತಳಮಳಕೆ ಕಡೆಯೆಂದು – ಮಂಕು ತಿಮ್ಮ II  ಎಂದು ತಮ್ಮ ಕಳವಳವನ್ನು ವ್ಯಕ್ತಪಡಿಸುತ್ತಾರೆ. ಆ ಕಳವಳಕ್ಕೆ ಉತ್ತರವೆಂಬಂತೆ ಈ ಕಗ್ಗದಲ್ಲಿ ಈ ರೀತಿಯ ಕಳವಳ, ತಳಮಳಗಳು ಸಹಜ. ಒಂದು  ಉತ್ತಮವಾದ ವಸ್ತು ಈ ಪ್ರಪಂಚಕ್ಕೆ ಸಿಗಬೇಕಾದರೆ ಈ ರೀತಿಯ ಮಥನ ವಾಗಬೇಕು. ಇಲ್ಲಿ ದೇವದಾನವರ ಉಲ್ಲೇಖಮಾಡಿ ಮನುಷ್ಯನ ಅಂತರ್ಯದಲ್ಲಿರುವ
” ಒಳ್ಳೆಯ ಮತ್ತು ಕೆಟ್ಟ ” ಗುಣಗಳನ್ನು ಸೂಚ್ಯವಾಗಿಸುತ್ತಾರೆ.

ಮನುಷ್ಯನ ಮನಸ್ಸಿನಲ್ಲಿ ಒಳ್ಳೆಯದು ಕೆಟ್ಟದ್ದು ಎರಡೂ ಇರುತ್ತದೆ. ಪ್ರಮಾಣ ಮತ್ತು ಪರಿಮಾಣಗಳ ವ್ಯತ್ಯಾಸ ಅಷ್ಟೇ. ಯಾವುದು ಅಧಿಕವಾಗಿದ್ದರೆ ಅದರ ಪ್ರಾಬಲ್ಯ. ಆದರೆ ಒಂದು ವ್ಯಕ್ತಿಯಿಂದ ಮಹತ್ತರ ಕಾರ್ಯವಾಗಬೇಕಾದರೆ ಅಂತರ್ಯದಲ್ಲೂ ತಿಕ್ಕಾಟಗಳು ತುಮಲಗಳು ನಿರಂತರ ನಡೆಯಬೇಕು. ಸಮುದ್ರಮಥನದ ರೀತಿ. ನಮ್ಮ ಲೋಕದ ಮಹಾ ಮಹಿಮರೆಲ್ಲರಿಗೂ ಇಂಥಹ ಅನುಭವವಾಗಿದೆ. ಅವರ ಪ್ರಯತ್ನದಲ್ಲಿ ಅವರಿಗೆ ” ವಿಷದ” ರೂಪದಲ್ಲಿ ಬೇಕಾದಷ್ಟು ಕಷ್ಟಗಳು ಬಂದಿವೆ. ಆ ಮಹಾಮಹಿಮರೆಲ್ಲ ಅಂತಹ ಕಷ್ಟಗಳನ್ನೆಲ್ಲ ” ಪರಶಿವನು ಹಾಲಾಹಲವನ್ನು ಕುಡಿದಂತೆ ” ನುಂಗಿ ಲೋಕ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ತ್ಯಾಗಮಾಡಿದ್ದಾರೆ.  ಉದಾಹರಣೆಗೆ, ನಮ್ಮ ದೇಶಕ್ಕೆ ಚಾಣಕ್ಯ ವಿಷ್ಣು ಶರ್ಮನ ಕೊಡುಗೆ ಅಪಾರ. ಅಷ್ಟೇ ಕಷ್ಟ ನಿಷ್ಟೂರಗಳನ್ನು ಆಭವಿಸಿದ ಅವನು. ಹೀಗೆ, ಶಂಕರರು, ರಾಮಾನುಜರು, ಬಸವಣ್ಣನವರು, ನಮ್ಮ ದೇಶದ ಸ್ವಾತಂತ್ರ ಹೋರಾಟಗಾರರಾದ ಭಗತ್ ಸಿಂಗ್, ಚಂದ್ರಶೇಖರ್ ಅಜಾದ್, ರಾಜಗುರು, ಬೋಸ್ ಮುಂತಾದ ಅನೇಕ ವೀರರು ಸ್ವಾರ್ಥ ತೊರೆದು ಲೋಕಕಲ್ಯಾಣಕ್ಕಾಗಿ ಕಷ್ಟಗಳೆಂಬ ವಿಷವನ್ನು, ಪರಶಿವನಂತೆ ಕುಡಿದ ದೃಷ್ಟಾಂತಗಳು ನಮಗೆ ಹೇರಳವಾಗಿ ಸಿಗುತ್ತದೆ.

ಅದೇ ರೀತಿ ಇಂದು ಇರುವ ಪರಿಸ್ಥಿತಿಯೂ ಬದಲಾಗಿ ಇಂದಿರುವ ವಿಷ ಮತ್ತ ವಿಷಮ ಪರಿಸ್ಥಿತಿ ಕರಗಿ ಅಮೃತ ಹುಟ್ಟುವುದಕ್ಕೆ ಈ ರೀತಿಯ ತಿಕ್ಕಾಟವೇ, ತುಮುಲಗಳೇ, ತಳಮಳವೇ ಪೀಠಿಕೆಯೋ ಎಂದು ಕೇಳುತ್ತಾರೆ ಶ್ರೀ ಗುಂಡಪ್ಪನವರು. ಅಂದು ಪರ ಶಿವನು ” ವಿಷ”ವನ್ನು ಕುಡಿದು ಲೋಕಕಲ್ಯಾಣವನ್ನು ಮಾಡಿದಹಾಗೆ ಇಂದೂ ಯಾರಾದರೂ ಬರಬಹುದೆಂದು ಅವರ ಆಸೆ. ಅವರ ಅಶಾಭಾವಕ್ಕೆ ಒಂದು ನಮಸ್ಕಾರ.

ಆದರೆ ವಾಚಕರೆ, ವಿಚಾರ ಮಾಡಿ ನೋಡಿ. ಅಂದಿನ ಮಥನದಿಂದ  ಅಂದರೆ ಲೋಕದ ದ್ವಂದ್ವಗಳಿಂದ ಮತ್ತು ಆ ದ್ವಂದ್ವಗಳ ತಿಕ್ಕಾಟದಿಂದ, ತೊಳಲಾಟದಿಂದ ಇನ್ನೂ ಅಮೃತ ಬಂದೆ ಇಲ್ಲ. ಎಲ್ಲೆಲ್ಲೂ ವಿಷಮ ಸ್ಥಿತಿಯ ವಿಷದ ಧಾರೆ ಹರಿಯುತ್ತಿದೆ. ದ್ವೇಷಾಸೂಯೆಗಳ, ಭಾಷಾಸೂಯಗಳ, ಅಹಂಕಾರದ, ಜನಬಲದ ಮದ, ಧನಬಲದ ಮದ, ಅಧಿಕಾರ ಮದದ ವಿಷದ  ಗಾಳಿ ಎಲ್ಲೆಲ್ಲೂ ಹರಡಿದೆ. ಇಡೀ ಸಮಾಜ ಪ್ರೀತಿ ಕರುಣೆ ವಾತ್ಸಲ್ಯಗಳ ಕೊರತೆಯಿಂದ ಸೊರಗಿದೆ.  ಹಳೆಯ ಶ್ರದ್ಧೆ -ಭಕ್ತಿಗಳ ಮತ್ತು ಆಧುನೀಕತೆಯ, ಡಂಬ ತೋರಿಕೆಯ ಜೀವನದ ನಡುವೆಯ ಅಂತರ ಅಗಾಧವಾಗುತ್ತಿದೆ.

ಅಂದು ಅಂದರೆ ಈಗ್ಗೆ  ಎಂಬತ್ತು ವರ್ಷಗಳ ಹಿಂದೆ ಡಿ.ವಿ.ಜಿ.ಯವರು ಕಂಡ ಅಮೃತದ ಕನಸು ನನಸಾಗುವ ಕಾಲ ಬಂದೀತೆ ಎಂದರೆ, ನಾವು ಆಶಾಭಾವನೆಯನ್ನು ಎಂದಿಗೂ ಬಿಡಬಾರದು,ಇಂದಿನ ಯುವ ಪೀಳಿಗೆಗೆ ಮತ್ತು  ಮುಂದಿನ ಪೀಳಿಗೆಗೆ, ಹಿಂದಿನ ತತ್ವಗಳ ಸತ್ವವನ್ನು ತಿಳಿಸಿಕೊಡಬೇಕು. ಅವುಗಳ ಅರಿವು ಮೂಡಿಸಬೇಕು. ಬಹಳಷ್ಟು ಜನ ಆ ಪ್ರಯತ್ನದಲ್ಲಿ ಇದ್ದರೂ ಇಷ್ಟು ವಿಶಾಲವಾದ ದೇಶದಲ್ಲಿ ಆಧುನೀಕತೆಯ ಪೊಳ್ಳು ಸಂಸ್ಕೃತಿಯ ವ್ಯಾಪ್ತಿಯನ್ನು ಮುಟ್ಟಲು ಇನ್ನೂ ಸಾಧ್ಯವಾಗಿಲ್ಲ. ಶೀಘ್ರವೇ ಫಲ ಬೇಕಾದಲ್ಲಿ, ಸಮರೋಪಾದಿ ಕಾರ್ಯಗಳು ನಡೆದು ನಮ್ಮ ಭಾರತೀಯ ಅಸ್ಮಿತೆಯನ್ನು ಅರಿತುಕೊಳ್ಳಲು ಮತ್ತು ಕಾಪಾಡಲು ಎಲ್ಲರೂ ಪ್ರವೃತ್ತರಾಗಬೇಕು.  ಅದಕ್ಕೆ ನಾವು ನೀವು ಎಲ್ಲರೂ ಪ್ರಯತ್ನಪಟ್ಟು ನಮ್ಮ ಸುತ್ತು ಮುತ್ತಲಿನವರನ್ನೂ ಅದಕ್ಕೆ ಪ್ರೇರೇಪಿಸಿದರೆ ಅದು ಸಾಧ್ಯ.

ಅಂಥಹ ಪ್ರಯತ್ನವನ್ನು ಮಾಡುವ ಧೃಢ ಸಂಕಲ್ಪವನ್ನು ಮಾಡುತ್ತಾ ನಾವು ಮುಂದಿನ ಕಗ್ಗಕ್ಕೆ ಹೋಗುವ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.

ನಮಸ್ಕಾರ

**************************************************

2
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೧೬)

– ರವಿ ತಿರುಮಲೈ

ಲೋಕಜೀವನ ಮಂಥನ

ಇಳೆಯ ಬಿಟ್ಟಿನ್ನುಮೆತ್ತಲುಮೈದದ ಪ್ರೇತ  I
ವಲೆವಂತೆ ಲೋಕ ತಲ್ಲಣಿಸಿಹುದಿಂದು II
ಹಳೆಧರ್ಮ ಸತ್ತಿಹುದು ಹೊಸ ಧರ್ಮ ಹುಟ್ಟಿಲ್ಲ II
ತಳಮಳಕೆ ಕಡೆಯೆಂದು – ಮಂಕು ತಿಮ್ಮ II

ಇಳೆಯ ಬಿಟ್ಟಿನ್ನುಮೆತ್ತಲುಮೈದದ = ಇಳೆಯ+ ಬಿಟ್ಟು + ಇನ್ನು+ ಎತ್ತಲುಂ+ಐದದ, ಪ್ರೇತವಲೆವಂತೆ= ಪ್ರೇತವು + ಅಲೆವಂತೆ, ಕಡೆಯಂದು= ಕಡೆ+ ಎಂದು

ಇಳೆ = ಭೂಮಿ, ಎತ್ತಲುಂ= ಯಾವಕಡೆಗೂ, ಐದದ=ಸೇರದ, ಪ್ರೇತ= ಮರಣಾನಂತರದ ಪ್ರಯಾಣದಲ್ಲಿ ಇರುವ ಆತ್ಮದ ಸ್ಥಿತಿ. ತಲ್ಲಣಿಸಿಹುದು + ಒದ್ದಾಡುತ್ತಿದೆ.

ಈ ಭೂಮಿಯನ್ನು  ಬಿಟ್ಟು ಎತ್ತಲೂ ಸೇರದ ಪ್ರೇತದಂತೆ ಲೋಕ ತಲ್ಲಣಿಸುತ್ತಿದೆ. ಹಳೆ ಧರ್ಮ ಸತ್ತಿದೆ. ಹೊಸ ಧರ್ಮ ಹುಟ್ಟಿಲ್ಲ ತಳಮಳಕೆ ಕಡೆ ಎಂದು ಮಂಕುತಿಮ್ಮ ಎಂದು ತಮ್ಮನ್ನು ತಾವೇ ಪ್ರಶ್ನಿಸುತ್ತಾ ಅದೇ ಪ್ರಶ್ನೆಯನ್ನು ನಮ್ಮ ಮುಂದಿಡುತ್ತಾರೆ.

ಭಾರತ  ದೇಶವು ಅನ್ಯ ದೇಶದವರ ಆಕ್ರಮಣಕ್ಕೆ ಬಲಿಯಾಗಿ, ಹಾಗೆ ಬಂದ ಆಕ್ರಮಣಕಾರರು ಈ ದೇಶದಲ್ಲೇ ನೆಲೆಯೂರಿ ನಿಂತಾಗ, ಅವರ ನಂಬಿಕೆಗಳು ವಿಶ್ವಾಸಗಳು ಅಚಾರ ವಿಚಾರಗಳು ಉಡುಗೆ ತೊಡಿಗೆಗಳ ಶೈಲಿ ಹೀಗೆ ಎಲ್ಲವೂ ನಮ್ಮ ದೇಶದ ಸಂಸ್ಕೃತಿಯ ಮೇಲೆ ತನ್ನ ಪರಿಣಾಮವನ್ನು ಬೀರುತ್ತ, ಕಾಲಕ್ರಮದಲ್ಲಿ ಇಲ್ಲಿನ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿ ನೆಲೆ ನಿಂತಿತು. ಆಗ ಅದರದು ಬೇರೆಯೇ ರೂಪ. ಆ ರೂಪ ಹಳೆಯದನ್ನು ಬಿಡಲಾಗದೆ, ಹೊಸದನ್ನು ಸಂಪೂರ್ಣ ಅಳವಡಿಸಿಕೊಳ್ಳಲಾಗದೆ ಒಂದು ಹೊಸರೂಪವನ್ನೇ ತಾಳಿತು. ಆದರೆ ಆ ಹೊಸರೂಪದಲ್ಲೂ ಒಂದು ತಳಮಳ, ಒಂದು ಚಡಪಡಿಕೆ ಇತ್ತು. ಅತ್ತ ಹಳೆಯದನ್ನು ಬಿಟ್ಟರೆ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಭಯ, ಇತ್ತ ಹೊಸದರ ಹೊಸತನದ ಮೋಜು. ಇವೆರಡರ ರೂಪವೇ ಒಂದು ಎಡಬಿಡಂಗಿ ಸ್ವರೂಪ. ಇಂದು ನಾವು ಇರುವುದೇ ಅಂತಹ ಸ್ಥಿತಿಯಲ್ಲಿ. ಇದನ್ನು ಶ್ರೀ ಗುಂಡಪ್ಪನವರು ” ಈ ಭೂಮಿಯನ್ನು  ಬಿಟ್ಟು ಎತ್ತಲೂ ಸೇರದ ಪ್ರೇತದಂತೆ ” ಎಂದು ಹೇಳುತ್ತಾರೆ. ಇದು ಒಂದು ಉಪಮೆ ಅಷ್ಟೇ. ಸನಾತನದಲ್ಲಿ ಅಂತಹ ನಂಬಿಕೆ ಉಂಟು. ಅನ್ಯರಲ್ಲೂ  ಬೇರೆ ಬೇರೆ ರೂಪದಲ್ಲಿ ಆ ನಂಬಿಕೆ  ಉಂಟು. ಆದರೆ ತಮ್ಮನ್ನು ತಾವು ಪ್ರಗತಿಪರರು ಅಥವಾ ಬುದ್ಧಿಜೀವಿಗಳು ಎಂದು ಅಂದುಕೊಂಡಿರುವ ಕೆಲವರು, ಇದರ ಸೂಕ್ತತೆಯನ್ನು ಮತ್ತು ಪ್ರಸ್ತುತತೆಯನ್ನು ಪ್ರಶ್ನಿಸುತ್ತಾರೆ. ಹಾಗೆ ಪ್ರಶ್ನೆ ಮಾಡುವ, ಅಲ್ಲಗೆಳೆಯುವ ಮತ್ತು ಟೀಕಿಸುವ ಹಕ್ಕು ಅವರಿಗೆ ಉಂಟು.

ಹಾಗೆ ಹಳೆಯದನ್ನು ಬಿಟ್ಟೂ ಬಿಡದ ಹಂಗೆ, ಹೊಸದನ್ನು ಹಿಡಿದೂ ಹಿಡಿಯದ ಹಂಗೆ ಇಂದಿನ ಸಮಾಜದಲ್ಲಿ ಎಲ್ಲರೂ ಇದ್ದಾರೆ. ಅದಕ್ಕೆ ಹಲವಾರು ಕಾರಣಗಳು. ವಿಧ್ಯಾಭ್ಯಾಸದ ಕ್ರಮ ಬದಲಾವಣೆ, ಹೊಸ ಹೊಸ ಸಾಧನಗಳು ಮತ್ತು ಮಾಹಿತಿ ತಂತ್ರಜ್ಞಾನದ ಸ್ಫೋಟ, ಜಾಗತೀಕರಣ, ಹೀಗೆ ಹತ್ತು ಹಲವಾರು. ಹಿಂದೆ ಇದ್ದದ್ದು ಇಂದು ಇಲ್ಲ. ಇಂದು ಇರುವುದು ಮುಂದಿರುವುದಿಲ್ಲ. ಅಂತಹ ಸ್ಥಿತಿಯಲ್ಲಿ ಜನರು ಯಾವುದೇ ಒಂದು ನಿರ್ಧಿಷ್ಟತೆಯಲ್ಲಿ ಇರದೇ ಒಂದು ಅತಂತ್ರದ ಸ್ಥಿತಿಯಲ್ಲಿದ್ದಾರೆ ಎಂದು ಮಾನ್ಯ ಗುಂಡಪ್ಪನವರ ಹೇಳುತ್ತಾರೆ. ಭಾಷೆ, ಜೀವನದ ಶೈಲಿ, ಉದ್ಯೋಗ, ಸಂಪಾದನೆ ಎಲ್ಲವೂ ಇಂದಿನ ಜನಾಂಗದ ಮೇಲೆ ಪರಿಣಾಮ ಬೀರಿದೆ. ಇಂದು ನಾವು ಹೊಸದಾಗಿ ಕಾಣುತ್ತಿರುವ ಹೊಸ ವಿಧ್ಯಮಾನವೇನಲ್ಲ. ನಮ್ಮ ಭಾರತೀಯ ಇತಿಹಾಸದಲ್ಲೇ ಬೇರೆ ಬೇರೆ ಸಮಯಗಳಲ್ಲಿ ಇಂತಹ ಅತಂತ್ರ ಸ್ಥಿತಿಗಳನ್ನು ನೋಡಬಹುದು. ಅಂದಿನ ಭೌಗೋಲಿಕ, ರಾಜಕೀಯ, ಸಾಂಸ್ಕೃತಿಕ ಮತ್ತು ಆರ್ಥಿಕ ಸ್ಥಿತಿಗಳು ಅಂದಿಗೆ,  ಅಂದಿನ ಸ್ಥಿತಿಗೆ ಕಾರಣವಾಗುತ್ತದೆ.

ಚಾಣಕ್ಯನಂತಹ ಮುತ್ಸದ್ಧಿಗಳು ಬಂದಾಗ ಏನೋ ಒಂದು ರೀತಿಯ ಕಲರವ ಉಂಟಾಗಿ ಸ್ವಲ್ಪ ಬದಲಾವಣೆಗಳನ್ನು ಕಾಣಬಹುದು. ಆದರೆ ಸ್ವಾಭಾವಿಕವಾಗಿ ಮಾನ್ಯ  ಡಿ.ವಿ.ಜಿ ಯವರು ಹೇಳಿದಂತೆ ಮತ್ತೆ ಅದೇ ಅತಂತ್ರ ಸ್ಥಿತಿಗೆ ಒಗ್ಗಿ ಹೋಗುತ್ತದೆ ಇಡೀ ಸಮಾಜ. ಆದರೆ ಇಂತಹ ಪ್ರತಿಪಾದನೆಗಳಿಗೆ, ಕೆಲವು ವ್ಯಕ್ತಿಗಳು ಅಪವಾದವಾಗಿ ಭಿನ್ನವಾಗಿರಬಹುದು. ಶುದ್ಧ ಸತ್ವದಲ್ಲಿ ಯಾವುದು ಪುರಾತನವೋ ಯಾವುದು ಸನಾತನವೋ ಅದನ್ನು ಪಾಲಿಸುತ್ತಿರಬಹುದು. ಆದರೆ ಒಟ್ಟಾರೆ ಸಮಾಜವನ್ನು ನೋಡಿದಾಗ ಎಲ್ಲೋ ಏನೋ ಸರಿಯಿಲ್ಲ ಎನ್ನುವ ಭಾವನೆ ಬರುತ್ತದೆ. ಅದನ್ನೇ  ಡಿ.ವಿ.ಜಿ ಯವರು ” ಲೋಕ ತಲ್ಲಣಿಸಿಹುದಿಂದು” ಎಂದರು.

ಆದರೆ ನಾವು ನೋಡಬೇಕಾದದ್ದು ಏನೆಂದರೆ, ಇದು ಸರಿಯೇ ಎಂದು. ಬದಲಾವಣೆಯೇ ಪ್ರಪಂಚದ ಮೂಲ ಗುಣವಾದ್ದರಿಂದ ಇದು ಸರಿ. ಅಸ್ತಿತ್ವವನ್ನು ಕಳೆದುಕೊಳ್ಳುವುದರಿಂದ ಇದು ಸರಿಯಿಲ್ಲ. ಹಾಗಾಗಿ ಏನು ಮಾಡಬೇಕು. ಡಿ.ವಿ.ಜಿ ಯವರೆ ಮುಂದೆ ಯಾವುದೋ ಕಗ್ಗದಲ್ಲಿ ಹೇಳುತ್ತಾರೆ” ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು ಹೊಸ ಯುಕ್ತಿ ಹಳೆ ತತ್ವ…..” ಎಂದು. ಅಂದರೆ ನೈಸರ್ಗಿಕವಾದ ಮತ್ತು  ಸ್ವಾಭಾವಿಕವಾದ ಬದಲಾವಣೆ ಬೇಕು ಮತ್ತು ಆಗಬೇಕು. ಆದರೆ ಹೊಸತನ್ನು,  ಹಳೆಯ ಮತ್ತು ಕಾಲದಲ್ಲಿ ಪರಿಕಿಸಿ ನಿರೂಪಿಸಲ್ಪಟ್ಟು ಸರ್ವಕಾಲಕ್ಕೂ ಅನ್ವಯವಾಗುವಂತಾ ಸಿದ್ಧಾಂತಗಳ ( theories ) ಆಧಾರದಮೇಲೆ ಹೊಸತು ಪಲ್ಲವಿಸ ಬೇಕು. ಆಗ ಹಳತು ಅಂತರ್ಯದಲ್ಲಿ ಉಳಿದು ಹೊಸತು ಪಲ್ಲವಿಸಿ ಬೆಳೆದು ಹಳೆಯದಕ್ಕೆ ಹೊಳಪ್ಪಿತ್ತಂತೆ  ಆಗುತ್ತದೆ. ಹೊಸತು,  ಆ ಹೊಳಪಿನ ಬೆಳಕಲ್ಲಿ ಸುಂದರವಾಗಿ ಕಾಣುತ್ತದೆ. ಆಗ ಎರಡೂ ಸಮನ್ವಯಗೊಂಡು ಒಂದು ಹೊಸ ನೆಲೆ ಸಿಕ್ಕಂತಾಗುತ್ತದೆ.

ಆದರೆ ವಿಷಾದವೇನೆಂದರೆ ಇಂದು ಯಾರಿಗೂ ಹಳೆಯದು ಬೇಡ. ಅದರ ಅರ್ಥ ಬೇಡ. ಅದರ ಸತ್ವ ಬೇಡ. ಅದನ್ನು ಗೊಡ್ಡು ಸಂಪ್ರದಾಯ ಎಂದು ಮೂದಲಿಸುವ, ಜರಿಯುವ, ನೇಪಥ್ಯಕ್ಕೆ ಸರಿಸುವ ಇಂದಿನ ಜನಾಂಗವು  ಸತ್ಯವಾಗಲೂ ಗುಂಡಪ್ಪನವರು ಹೇಳಿದಂತೆ “ಎತ್ತಲೂ ಸೇರದ ಪ್ರೇತದಂತೆ ಲೋಕ ತಲ್ಲಣಿಸುತ್ತಿದೆ”.ಅಂತರ್ಪಿಶಾಚಿಗಳ ತರಹೆ ಇದ್ದಾರೆ.

ಎಲ್ಲರಲ್ಲೂ ಹಳೆಯ ಸತ್ವಯುತವಾದ ಸಿದ್ಧಾಂತಗಳ, ಸಂಸ್ಕೃತಿಯ, ಸಂಸ್ಕೃತಿಯನ್ನು ಒಳಗೊಂಡ  ಭಾಷೆ, ಸಾಹಿತ್ಯ, ಕಲೆ ಮುಂತಾದವುಗಳನ್ನು ಪುರುಜ್ಜೀವನ ಮಾಡಲು ಒಂದು ಪ್ರಾಮಾಣಿಕ ಪ್ರಯತ್ನ ನಡೆಯಬೇಕು. ಅಂತಹ ಪ್ರಯತ್ನ ಎಲ್ಲ ಅಯಾಮಗಳಿಂದಲೂ ಒಂದೇ ಸಲಕ್ಕೆ ಒಂದು ಸ್ಫೋಟದಂತೆ  ಆದಾಗ ಒಂದು ಸಕಾರಾತ್ಮಕವಾದ ಬದಲಾವಣೆಯನ್ನು ನಾವು ನೋಡಬಹುದು. ನಮ್ಮ ಭಾರತೀಯತೆಯನ್ನು, ಸಂಸ್ಕೃತಿಯನ್ನು ಉಳಿಸಬೇಕಾದರೆ ಅಂತಹ ಪ್ರಯತ್ನ ಅಗತ್ಯ.

ಬನ್ನಿ ಮಿತ್ರರೇ, ನಾವೂ ಅಂತಹ ಪ್ರಯತ್ನದಲ್ಲಿ ನಮ್ಮನ್ನು  ನಾವೇ ತೊಡಗಿಸಿಕೊಳ್ಳೋಣ. ಅಂತಹ ವಿಚಾರಮಾಡುತ್ತಾ ಮುಂದಿನ ಕಗ್ಗಕ್ಕೆ ಹೋಗೋಣ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.

******************************************************

1
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೧೫)

– ರವಿ ತಿರುಮಲೈ

ಲೋಕಜೀವನ ಮಂಥನ

ಹಳೆಯ ಭಕ್ತಿ ಶ್ರದ್ಧೆಯಳಿಸಿಹೋಗಿದೆ ಮಾಸಿ I
ಸುಳಿದಿಲ್ಲವಾವ ಹೊಸ ದರ್ಶನದ ಹೊಳಪುಂ II
ಪಳಗಿದ್ದ ಮನೆ ಬಿದ್ದ ಕುಂಟ ಕುರುಡನ ತೆರದಿ I
ತಳಮಳಿಸುತಿದೆ ಲೋಕ – ಮಂಕುತಿಮ್ಮ II

ಹಳೆಯ  ಭಕ್ತಿ ಶ್ರದ್ಧೆಯು ಅಳಿಸಿಹೋಗಿದೆ ಮಾಸಿ. ಸುಳಿದಿಲ್ಲವು ಯಾವ ಹೊಸ ದರ್ಶನದ ಹೊಳಪು
ಪಳಗಿದ್ದ ಮನೆ ಬಿದ್ದ ಕುಂಟ ಕುರುಡನ ತೆರದಿ ತಳಮಳಿಸುತಿದೆ ಲೋಕ ಮಂಕುತಿಮ್ಮ

ಮಾಸು = ಅಳಿಸು , ದರ್ಶನ=ಸಿದ್ಧಾಂತದ ಹೊಸ ರೂಪ, ತೆರದಿ= ತರಹೆ, ತಳಮಳಿಸು= ಒದ್ದಾಡು, ಪರದಾಡು

ಈಗ್ಗೆ ಎಪ್ಪತ್ತು ವರ್ಷಗಳ ಕೆಳಗೇ ಗುಂಡಪ್ಪನವರಿಗೆ ಹೀಗೆ ಅನ್ನಿಸಿದ್ದರೆ, ಇಂದು ಅವರು ಏನನ್ನುತ್ತಿದ್ದರೋ ಏನೋ!

ಇರಲಿ, ಪುರಾತನ ಕಾಲದಿಂದಲೂ ಅನೂಚಾನವಾಗಿ ಜನಗಳಲ್ಲಿ ಇದ್ದ ದೇವರಲ್ಲಿ  ಭಕ್ತಿ ಮತ್ತು ಸಂಪ್ರದಾಯಗಳಲ್ಲಿ ಇದ್ದ ಶ್ರದ್ಧೆ ಈಗ ಅಳಿಸಿ ಹೋಗಿದೆ. ಇಲ್ಲಿ ಸಂಪ್ರದಾಯ ಎಂದರೆ ಹಿಂದಿನಿಂದ ಬಂದಿರುವ ನಡವಳಿಕೆ ಎಂದಷ್ಟೆ ಅರ್ಥ. ಜನರಲ್ಲಿ ಮತ್ತೆ ಈ ಭಕ್ತಿ ಮತ್ತು ಶ್ರದ್ಧೆಗಳನ್ನು ತರಲು ಯಾವ ಹೊಸ ಸಿದ್ಧಾಂತಗಳೂ ಪ್ರತಿಪಾದಿಸಲ್ಪಟ್ಟು ಪ್ರಚಾರಕ್ಕೆ ಬಂದಿಲ್ಲ. ಹಾಗಾಗಿ ಜನರೆಲ್ಲರೂ ಮೊದಲಿನಿಂದ ಬಂದದನ್ನು ಕಳೆದು ಕೊಂಡು ಹೊಸದಿಲ್ಲದೆ ಒಂದು ಅತಂತ್ರ ಸ್ಥಿತಿಯಲ್ಲಿದ್ದಾರೆ. ಯಾರ ಸಹಾಯವೂ ಇಲ್ಲದೆ ಸುಲಭವಾಗಿ  ಮತ್ತು ಚೆನ್ನಾಗಿ ಓಡಾಡಲು ಅಭ್ಯಾಸವಾಗಿರುವ ಮನೆ ಕುಸಿದು ಹೋದರೆ, ಆ ಮನೆಯಲ್ಲಿ ವಾಸಿಸುವ ಕುಂಟನಿಗೋ ಕುರುಡನಿಗೋ, ಪಾಪ ತಳಮಳಿಸುವ ಮತ್ತು ಪರದಾಡುವಂತೆ ಆಗುತ್ತದಲ್ಲವೇ?  ಹಾಗೆ ಆಗಿದೆ ಇಂದಿನ ಲೋಕದ ಪರಿಸ್ಥಿತಿ ಎನ್ನುತ್ತಾರೆ  ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
ಮತ್ತಷ್ಟು ಓದು »

30
ಮಾರ್ಚ್

ಮಂಕು ತಿಮ್ಮನ ಕಗ್ಗ – ರಸಧಾರೆ (೧೪)

– ರವಿ ತಿರುಮಲೈ

ಲೋಕಜೀವನ ಮಂಥನ
ಒಂದೇ ಗಗನವ ಕಾಣುತೊಂದೆ ನೆಲವನು ತುಳಿಯು I
ತೊಂದೆ ಧಾನ್ಯವನುಣ್ಣುತೊಂದೆ ನೀರ್ಗುಡಿದು II
ಒಂದೇ ಗಾಳಿಯನುಸಿರ್ವ ನರಜಾತಿಯೋಳಗೆಂತು I
ಬಂದುದೀ ವೈಷಮ್ಯ? – ಮಂಕುತಿಮ್ಮ  ಈ

ಉಣ್ಣು = ತಿನ್ನು,ಉಸಿರ್ವ= ಉಸಿರಾಡುವ , ನರಜಾತಿ = ಮಾನವ ಜನಾಂಗ.   ವೈಷಮ್ಯ = ದ್ವೇಷ . ಎಂತು- ಹೇಗೆ.

ಒಂದೇ ಆಕಾಶವ ಕಾಣುತ, ಒಂದೇ ನೆಲವನ್ನು ತುಳಿಯುತ ಒಂದೇ ಧಾನ್ಯವನ್ನು ಉಣ್ಣುತ ಒಂದೇ ಗಾಳಿಯನು ಉಸಿರಾಡುವ ಮಾನವಜಾತಿಯ  ಒಳಗೆ ಈ ದ್ವೇಷ  ಹೇಗೆ ಬಂತು ಎಂದು ತಮಗೆ ತಾವೇ ಪ್ರಶ್ನಿಸುತ್ತ
ಈ ವಿಚಾರವನ್ನು ಓದುಗರ ಮುಂದಿಟ್ಟಿದ್ದಾರೆ, ಶ್ರೀ ಗುಂಡಪ್ಪನವರು.

ಈ ಜಗತ್ತಿನಲ್ಲಿರುವ ಮಾನವರೆಲ್ಲರಿಗೂ, ಮಾನವರಿಗಷ್ಟೇ ಏನು ಸಕಲ ಜೀವಿ ಸಂಕುಲಕ್ಕೂ ತಲೆಯ ಮೇಲಿನ ಆಕಾಶ ಒಂದೇ. ಇರುವ ಭೂಮಿಯೂ ಒಂದೇ, ಎಲ್ಲರೂ ತಿನ್ನುವುದು ಒಂದೇ ರೀತಿಯ ಆಹಾರ, ಕುಡಿಯುವ ನೀರಿಗೂ ಒಂದೇ ಮೂಲ, ಹಾಗಿದ್ದರೂ ಏಕೆ ಈ ವೈಷಮ್ಯ, ಈ ದ್ವೇಷ ಎಂಬ ಪ್ರಶ್ನೆ ಕಾಲಾನುಕಾಲಕ್ಕೆ ಎಲ್ಲ ಚಿಂತಕರ ಮನಗಳಲ್ಲೂ ಸುಳಿದು, ಉತ್ತರ ಕಂಡು ಕೊಳ್ಳಲು ಪ್ರಯತ್ನ ಆಗಿದೆ.
ಮತ್ತಷ್ಟು ಓದು »

29
ಮಾರ್ಚ್

ಮಂಕುತಿಮ್ಮನ ಕಗ್ಗ – ರಸಧಾರೆ (೧೩)

– ರವಿ ತಿರುಮಲೈ

ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು ?I
ಧರಣಿಗನುದಿನದ ರಕ್ತಾಭಿಷೇಚನೆಯೇ? II
ಕರವಾಲವನು ಪುಷ್ಪಸರವೆಂದು ಸೆಳೆದಾಡೆ I
ಪರಿಮಳವ ಸೂಸುವುದೆ ? – ಮಂಕುತಿಮಾ II

ಪುರುಷ=ಶಕ್ತಿ , ಪರಮ =ಸರ್ವೋಚ್ಚ, ಸಿದ್ಧಿ= ಪ್ರಯೋಜನ, ಧರಣಿ= ಭೂಮಿ, ಅನುದಿನ=ಪ್ರತಿನಿತ್ಯ ,
ಅಭಿಷೇಚನೆ = ಅಭಿಷೇಕ , ಕರವಾಲ=ಕತ್ತಿ,  ಸೆಳೆದಾಡೆ = ಎಳೆದಾಡಿದರೆ,   ಪರಿಮಳ = ಸುಗಂಧ.

ಪುರುಷ ಸ್ವತಂತ್ರತೆಯು ಪರಮ ಸಿದ್ಧಿಯದೇನು ಧರಣಿಗೆ ಅನುದಿನವೂ ರಕ್ತಾಭಿಷೇಚನೆಯೇ
ಕರವಾಲವನು ಪುಷ್ಪಸರವೆಂದು ಸೆಳೆದಾಡೆ ಪರಿಮಳವ ಸೂಸುವುದೆ-ಮಂಕುತಿಮ್ಮ.

ಆಗ ನಡೆಯುತ್ತಿದ್ದ ಯುದ್ದ, ಯುದ್ದದಿಂದ ಆಗುತ್ತಿದ್ದ ದುಷ್ಪರಿಣಾಮಗಳು, ಇವುಗಳ ಬಗ್ಗೆ ಮನಕರಗಿ ಭಾವುಕರಾದ ಮಾನ್ಯ ಗುಂಡಪ್ಪನವರು ಶಕ್ತಿಯ ಸ್ವಾತಂತ್ರದ ಸರ್ವೋಚ್ಚ ಗುರಿ, ಈ ಭೂಮಿಗೆ ಪ್ರತಿದಿನವೂ ರಕ್ತದ ಅಭಿಷೇಕವೇ, ಒರೆಯಿಂದ ಕತ್ತಿಯನ್ನು ಹೂವಿನ ಮಾಲೆ ಎಂದು ಎಳೆದರೆ ಅದರಿಂದ ಸುಗಂಧ ಬರಬಹುದೇ ಎನ್ನುತ್ತಾರೆ.

ಮತ್ತಷ್ಟು ಓದು »