ಸ್ವಪ್ನ ಸಾರಸ್ವತ – ಎರಡು ಅನಿಸಿಕೆಗಳು
ಸ್ವಪ್ನ ಸಾರಸ್ವತ – ಕುಲ ಮತ್ತು ಕಾಲದ ಕಥೆ
– ನವೀನ ಗಂಗೋತ್ರಿ
ನೆನಪಳಿಯದ ಕೃತಿಗಳ ಸಾಲಿನಲ್ಲಿ ಈ ಹೆಸರು ಎಂದಿಗೂ ಅಜರಾಮರ- ಸ್ವಪ್ನ ಸಾರಸ್ವತ. ಒಂದು ಕೃತಿ ಯಾಕೆ ಹಾಗೆ ಪದೇ ಪದೇ ಸ್ಮರಣೀಯವಾಗುತ್ತದೆ ಎನ್ನುವುದಕ್ಕೆ ಆ ಕೃತಿಯ ರೋಚಕತೆಯಾಗಲೀ, ಕಥೆಯ ಕಲ್ಪಕತೆ ಅಥವಾ ಕುತೂಹಲದ ತುದಿಯಲ್ಲಿ ನಿಲ್ಲಿಸುವ ಗುಣವಾಗಲೀ ಕಾರಣವಾಗದೆ ಆ ಕೃತಿಯು ತನ್ನ ಪಾತ್ರಗಳ ಮೂಲಕ ಮಾನವ ಬದುಕಿನ ಯಾವೆಲ್ಲ ಘಟ್ಟಗಳನ್ನು ತಾಕಬಲ್ಲದು,ಮತ್ತು ತಾತ್ತ್ವಿಕವಾಗಿ ಯಾವ ಅನಿಸಿಕೆಯನ್ನು ವ್ಯಕ್ತಪಡಿಸಬಲ್ಲದು ಎನ್ನುವುದು ಕಾರಣವಾಗುತ್ತದೆ. ಮಹಾಕಾವ್ಯಗಳಲ್ಲದೆ, ನಮ್ಮನಡುವೆ ಉಳಿದುಬಂದ ಯಾವುದೇ ಮೌಲಿಕ ಕೃತಿಯನ್ನು ತೆಗೆದುಕೊಂಡರೂ ಅದರ ಸಾರ್ವತ್ರಿಕ ಗುಣ ಇದುವೇ ಆಗಿರುತ್ತದೆ- ಮಾನವ ಬದುಕನ್ನು ಅದು ಕಾಣುವ ರೀತಿ ಮತ್ತು ಕಟ್ಟಿಕೊಡುವ ತಾತ್ತ್ವಿಕತೆ. ಬದುಕಿನ ಅರ್ಥದ ಬಗ್ಗೆ ಮನುಷ್ಯನಿಗಿರುವ ಆರದ ಕುತೂಹಲವೂ ಇದಕ್ಕೆ ಕಾರಣವಿದ್ದೀತು. ಎಷ್ಟೇ ರೋಚಕವಾದರೂ ಯಾವುದೋ ಸಾಮಾನ್ಯ ಪತ್ತೇದಾರಿ ಕಾದಂಬರಿ, ಯಾವುದೋ ಸಾಮಾನ್ಯ ಪ್ರೇಮ ಕಥೆ ನೆನಪಿರುವುದು ತುಂಬ ತುಂಬ ವಿರಳ. ಸಾರಸ್ವತದ ಚಿರಂಜೀವಿತ್ವ ಇರುವುದು ಅದರ ಚಿಂತನೆ ಮತ್ತು ತಾತ್ತ್ವಿಕ ಹಿನ್ನೆಲೆಯಲ್ಲಿ.
ಗೋವೆಯೆಂಬ ಪುಟ್ಟ ನಾಡಲ್ಲಿ ತಮ್ಮಪಾಡಿಗೆ ತಾವು ಬದುಕಿದ್ದ ಸಾರಸ್ವತ ಜನಾಂಗ, ಏಕಾ ಏಕಿ ಎರಗಿದ ಹುಂಬ ಪೋರ್ಚುಗೀಸರ ಭಯಂಕರ ಕಿರುಕುಳ ತಾಳಲಾರದೆ ತಮ್ಮ ಉಸಿರಿನ ನೆಲ ಬಿಟ್ಟು, ಬದುಕಲ್ಲಿ ಎಂದಿಗೂ ಕಂಡಿರದಿದ್ದ ಅರಿಯದ ನೆಲೆಗೆ ಎದ್ದುನಡೆದ ಕಥೆ ಅದು. ಕಥೆಯ ಹಂದರವಂತೂ ತುಂಬ ತುಂಬ ಸಂಕೀರ್ಣವಾಗಿದೆ. ಓದುವುದಕ್ಕೇ ಅದೊಂದುಬಗೆಯ ಏಕಾಗ್ರತೆಯನ್ನು ಬೇಡುವ ಈ ಕೃತಿ ತನ್ನ ಬರಹಗಾರನಲ್ಲಿ ಬೇಡಿದ ತಪಸ್ಸಿನ ಮೊತ್ತವನ್ನು ಕಲ್ಪಿಸಿ ಚಕಿತನಾಗುತ್ತೇನೆ.
ಸಮುದಾಯವೊಂದು ತನ್ನ ಜೀವನೆಲೆಯಂತಿರುವ ಭೂಭಾಗವನ್ನು ತೊರೆದು ಬರುವಾಗ ಅದೊಂದು ’ಕೇವಲ ಸ್ಥಾನಾಂತರಣ’ ಆಗಿರದೆ, ತಲೆಮಾರುಗಳನ್ನು ಪ್ರಭಾವಿಸುವ ಸಂಗತಿಯಾಗಿರುತ್ತದೆ ಎನ್ನುವುದು ಸಾರಸ್ವತವನ್ನು ಓದುವಾಗ ನಿಚ್ಚಳವಾಗುತ್ತದೆ. ತನ್ನ ಪರಿವಾರ, ಪರಿಸ್ಥಿತಿ, ಸಮೂಹದ ಸಮೇತ ಒಂದು ಕುಲ ಸ್ಥಾನಾಂತರವಾಗುವಾಗ ಯಾವುದೆಲ್ಲವನ್ನು ತನ್ನೊಡನೆ ಕೊಂಡೊಯ್ಯಬಹುದು? ಆಸ್ತಿ, ಹಣ, ಒಡವೆ, ಉಳಿಕೆ, ಗಳಿಕೆ- ಯಾವುದನ್ನು? ಸಾರಸ್ವತದ ದೃಷ್ಟಿ ಕೇಂದ್ರಗೊಳ್ಳುವುದು ಇದ್ಯಾವುದರ ಮೇಲೆಯೂ ಅಲ್ಲ, ಬದಲಿಗೆ ಆ ಹಂತದಲ್ಲಿ ಮನುಷ್ಯ ತುಂಬಾ ಗಾಢವಾಗಿ ಹೊತ್ತೊಯ್ಯಲು ಬಯಸುವುದೆಂದರೆ ತನ್ನ ತಲೆಮಾರುಗಳಿಗೆ ಸಾಕಾಗುವಷ್ಟು ನೆನಪನ್ನು, ಸಂಪ್ರದಾಯ ಆಚಾರ ಮತ್ತು ನಂಬುಗೆಗಳನ್ನು ಎಂಬ ನಿಲುಮೆಗೆ ಸಾರಸ್ವತ ಬರುತ್ತದೆ. ನೆಲ ಬಿಟ್ಟೆದ್ದು ಬಂದದ್ದೇ ಆಚಾರದ ಉಳಿಕೆಗಾಗಿ ಎಂಬಾಗ, ಹೊತ್ತೊಯ್ಯಬೇಕಿರುವುದು ಅದನ್ನೇ ಅಲ್ಲವೆ?
ನೂರರ ಹೊಸ್ತಿಲಲ್ಲಿ ಕನ್ನಡ ಸಾಹಿತ್ಯ ಪರಿಷತ್ತು
– ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ
ಕನ್ನಡ ಸಾಹಿತ್ಯ ಪರಿಷತ್ತು ಈಗ ನೂರರ ಹೊಸ್ತಿಲಲ್ಲಿ ನಿಂತಿದೆ. 1915 ರಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ತು ಅನೇಕ ಏಳು ಬೀಳುಗಳ ನಡುವೆಯೂ ನೂರು ವರ್ಷಗಳನ್ನು ಪೂರೈಸುತ್ತಿರುವುದು ಕನ್ನಡಿಗರಾದ ನಮಗೆಲ್ಲ ಅಭಿಮಾನದ ಸಂಗತಿಯಿದು. ಕನ್ನಡ ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಬೆಳವಣಿಗೆಗಾಗಿ ಅಂದಿನ ಮೈಸೂರಿನ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಗೆ ಆದತ್ಯೆ ನೀಡಿದರು. ಇಂಥದ್ದೊಂದು ಕನ್ನಡ ಸಂಸ್ಥೆಯ ಸ್ಥಾಪನೆಗೆ ಆ ದಿನಗಳ ಅನೇಕ ಸಾಹಿತಿಗಳ ಬೇಡಿಕೆಯೂ ಇತ್ತು. ಸರ್ ಎಮ್.ವಿಶ್ವೇಶ್ವರಯ್ಯ ಮತ್ತು ಕರ್ಪೂರ ಶ್ರೀನಿವಾಸರಾವ್ ಕನ್ನಡ ಸಾಹಿತ್ಯದ ರಕ್ಷಣೆಗಾಗಿ ಪರಿಷತ್ತನ್ನು ಸ್ಥಾಪಿಸಲು ಕಂಕಣಬದ್ಧರಾಗಿ ದುಡಿದರು. ಒಟ್ಟಾರೆ ಎಲ್ಲರ ಪ್ರಯತ್ನ ಮತ್ತು ಆಸೆಯಂತೆ 05.05.1915 ರಂದು ಕನ್ನಡ ಸಾಹಿತ್ಯ ಪರಿಷತ್ತು ಅಸ್ತಿತ್ವಕ್ಕೆ ಬಂದಿತು. ಬೆಂಗಳೂರಿನ ಶಂಕರಪುರ ಬಡಾವಣೆಯಲ್ಲಿನ ಸಣ್ಣ ಕೊಠಡಿಯೊಂದರಲ್ಲಿ ಸ್ಥಾಪನೆಯಾದ ಪರಿಷತ್ತಿಗೆ ನಂತರದ ದಿನಗಳಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ, ಉತ್ತಂಗಿ ಚೆನ್ನಪ್ಪ, ಹಂ.ಪಾ.ನಾಗರಾಜಯ್ಯ, ಮೂರ್ತಿರಾವ್, ವೆಂಕಟಸುಬ್ಬಯ್ಯ, ಗೊರುಚ, ಚಂಪಾ ಅವರಂಥ ಖ್ಯಾತನಾಮ ಸಾಹಿತಿಗಳ ಅಧ್ಯಕ್ಷತೆ ಲಭ್ಯವಾಯಿತು. ಸಣ್ಣ ಕೊಠಡಿಯಿಂದ ಸ್ವತಂತ್ರ ಕಟ್ಟಡಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಳಾಂತರಗೊಂಡು ಕನ್ನಡ ಸಾಹಿತ್ಯದ ಮತ್ತು ನಾಡಿನ ರಕ್ಷಣೆಯ ಕೆಲಸದಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡಿತು. ಪುಸ್ತಕಗಳ ಪ್ರಕಟಣೆ, ಸಾಹಿತ್ಯ ಸಮ್ಮೇಳನದ ಏರ್ಪಾಡು, ದತ್ತಿ ಉಪನ್ಯಾಸ ಇತ್ಯಾದಿ ಚಟುವಟಿಕೆಗಳಿಂದ ಕನ್ನಡ ಸಾಹಿತ್ಯ ಪರಿಷತ್ತು ಬಹುಬೇಗ ಜನರಿಗೆ ಹತ್ತಿರವಾಯಿತು. ಪ್ರಾರಂಭದ ದಿನಗಳಲ್ಲಿ ದೊರೆತ ಸಾಹಿತ್ಯಾಸಕ್ತರ ನೆರವು ಮತ್ತು ಅವರುಗಳ ಪ್ರಾಮಾಣಿಕ ದುಡಿಮೆಯ ಪರಿಣಾಮ ಕನ್ನಡ ಸಾಹಿತ್ಯ ಪರಿಷತ್ತು ಬಹಳಷ್ಟು ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟಿಸಲು ಹಾಗೂ ಯಶಸ್ಸನ್ನು ಕಾಣಲು ಸಾಧ್ಯವಾಯಿತು.
ಕುವೆಂಪು ಮತ್ತು ಅಧ್ಯಾತ್ಮ
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಕುವೆಂಪು ಮೂಲತಃ ಒಬ್ಬ ಕವಿ, ಶ್ರೇಷ್ಠ ಕವಿ. “ನಾನೃಷಿಃ ಕುರುತೇ ಕಾವ್ಯಂ” ಎಂಬ ಮಾತಿದೆ. ಋಷಿ ಎಂಬುದಕ್ಕೆ ದ್ರಷ್ಟಾರ ಎಂಬ ಅರ್ಥವಿದೆ. ಅಧ್ಯಾತ್ಮದ ಒಂದು ಮಜಲನ್ನು ದಾಟದಿದ್ದರೆ ದ್ರಷ್ಟಾರನಾಗುವುದು ಸಾಧ್ಯವಿಲ್ಲ. ಅಧ್ಯಾತ್ಮ ಎಂದರೆ ‘Immediate feeling of unity of the self with God’ ಎಂಬ ವ್ಯಾಖ್ಯೆಯನ್ನು ನೀಡಲಾಗಿದೆ. ದೇವರದೊಂದಿಗಿನ ಆತ್ಮದ ಐಕ್ಯವೇ ಅಧ್ಯಾತ್ಮ. ಕಾಯಕ, ನಿಸರ್ಗ, ಅಣುಜೀವ ಪ್ರೇಮ, ಹೀಗೆ ಯಾವುದೇ ಶಾಶ್ವತ ಮೌಲ್ಯವೂ ದೇವರಾಗಬಹುದು. ಇವು ವ್ಯಕ್ತಿಯಲ್ಲಿ ಲೀನವಾಗುವ ಬಗೆ ಅಧ್ಯಾತ್ಮದ ಹಂತಕ್ಕೆ ಒಯ್ಯುತ್ತದೆ.
ತೀವ್ರ ವಿಚಾರವಾದಿ, ಅಧ್ಯಾತ್ಮವಾದಿ, ಅಧ್ಯಾತ್ಮ ಜೀವಿಯಾದ ಕುವೆಂಪು ಸುಲಭಗ್ರಾಹ್ಯರಲ್ಲ. ಅವರು ವಿಚಾರವಾದಿ ನಿಜ, ಆದರೆ ಕೇವಲ ಭೌತವಾದಿಯಲ್ಲ. ಅಧ್ಯಾತ್ಮವಾದಿ ನಿಜ, ಆದರೆ ಕರ್ಮಠರಲ್ಲ. ಅಧ್ಯಾತ್ಮ ಜೀವಿ ನಿಜ, ಆದರೆ ಸಂನ್ಯಾಸಿಯಲ್ಲ. ನಿರಂಕುಶಮತಿಗಾಗಿ ಅವರು ನೀಡುವ ಕರೆ,ಆತ್ಮಶ್ರೀಗಾಗಿಯೇ ವಿನಾ ಭೌತಿಕ ರುಚಿಗಳ ಆರೈಕೆ, ಪೂರೈಕೆಗಳಿಗಾಗಿ ಅಲ್ಲ.
ಯಾವುದೇ ಅಧ್ಯಾತ್ಮ ತತ್ತ್ವದ ಅಂತಿಮ ಬಿಂದು ವ್ಯಕ್ತಿ ನಿಷ್ಠತೆ, ವ್ಯಕ್ತಿ ಉದ್ಧಾರ. ಸಮೂಹವನ್ನು ಇಡಿಯಾಗಿ ಉದ್ಧರಿಸುವ ಆಧ್ಯಾತ್ಮಿಕ ಸೂತ್ರ ಇಲ್ಲವೇ ಇಲ್ಲ. ಭಗವದ್ಗೀತೆಯಲ್ಲಿ ಹೇಳುವ “ಉದ್ಧರೇದಾತ್ಮನಾತ್ಮನಂ” ಎಂಬ ಮಾತು ಅಕ್ಷರಶಃ ನಿಜ. ವ್ಯಕ್ತಿ ಸ್ವತಃ ಉದ್ಧಾರವಾಗಬೇಕು. ವ್ಯಕ್ತಿ ವ್ಯಕ್ತಿಗಳು ಕೂಡಿ ಒಂದು ಸಮಾಜ. ವ್ಯಕ್ತಿಗಳ ಉದ್ಧಾರವೇ ಸಮಾಜದ ಉದ್ಧಾರ. ಕುವೆಂಪು ಅವರ ಕಾವ್ಯ, ಸಾಹಿತ್ಯ ಸೃಷ್ಟಿಯ ಮುಖ್ಯ ಸೂತ್ರವೂ ವ್ಯಕ್ತಿಯ ಆತ್ಮ ಸ್ವಾತಂತ್ರ್ಯಕ್ಕಾಗಿ ತುಡಿಯುವುದೇ ಆಗಿದೆ. ನಮ್ಮ ಉದ್ಧಾರಕ್ಕಾಗಿ ಯಾರೋ ಒಬ್ಬರು ದುಡಿಯುತ್ತಾರೆ ಎಂದು ಬಯಸುವಂತಿಲ್ಲ. ಎಲ್ಲರೂ ದುಡಿಯುತ್ತಲೇ ಅವರವರ ಹಾದಿಯಲ್ಲಿ ನಡೆದು, ಉದ್ಧಾರ ಕಂಡುಕೊಳ್ಳಬೇಕೆಂಬುದು ಅವರ ಕಾಣ್ಕೆ. ಹಾಗಾಗಿಯೇ ಅವರ ಸಾಹಿತ್ಯ ಸರ್ವಸ್ವದ ಸಾರವೇ ಆಗಿರುವ ಸಪ್ತ ಸೂತ್ರಗಳಲ್ಲಿ, “ಮತ ತೊಲಗಿ ಅಧ್ಯಾತ್ಮ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು ಹಾಗೂ ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು, ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾಗುವ ಎಲ್ಲವನ್ನೂ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ಪಡೆಯಬೇಕು” ಎಂದಿದ್ದಾರೆ.
ಸಾಮಾನ್ಯ ಓದುಗನ ಗ್ರಹಿಕೆಯಲ್ಲಿ ಭೈರಪ್ಪ
– ಎಸ್ ಎನ್ ಸಿಂಹ. ಮೇಲುಕೋಟೆ.
ಸೃಷ್ಟಿಯ ಆರಂಭದಿಂದ ಇಂದಿನವರೆಗೂ ಮನುಷ್ಯನ ಹೃದಯವನ್ನು ಅನೇಕ ಚಿಂತೆ ಸಂತಾಪಗಳು ಬಾಧಿಸುತ್ತಲೇ ಇವೆ. ಅವುಗಳನ್ನು ನೀಗಿ ಜೀವನವನ್ನು ನೇರ್ಪಡಿಸಿಕೊಳ್ಳುವ ಯತ್ನದಲ್ಲಿ ಆತ ಹಲವು ಸಾಮಗ್ರಿಗಳ ನೆರವನ್ನು ಅಪೇಕ್ಷಿಸುತ್ತಾನೆ. ಅವುಗಳ ನೆರವಿನಿಂದ ಸಂಪೂರ್ಣವಾಗಿ ಅಲ್ಲದಿದ್ದರೂ ತಾತ್ಕಾಲಿಕವಾಗಿಯಾದರೂ ಸಂತಾಪಶಮನವನ್ನು ಪಡೆಯುವಲ್ಲಿ ಸುಖಾಪೇಕ್ಷಿಯಾದ ಮಾನವ ಕೊಂಚಮಟ್ಟಿಗೆ ಯಶಸ್ವಿಯಾಗಿದ್ದಾನೆ.ಇಂತಹ ಸುಖವನ್ನು ಪಡೆಯುವ ನಿಟ್ಟಿನಲ್ಲಿ ಅಗತ್ಯವಾದ ಕನಿಷ್ಠ ಸಾಮಗ್ರಿಗಳು ಯಾವುವೆಂದು ಸೂಫಿ ಸಂತ ಉಮರ್ ಖಯ್ಯಮನು ತನ್ನೊಂದು ರುಬಾಯಿಯಲ್ಲಿ ಹಿಡಿದಿಟ್ಟಿದ್ದಾನೆ. ರಸಋಷಿ ಡಿ.ವಿ.ಜಿ. ಅವರು ಮಾಡಿರುವ ಅದರ ಸುಂದರವಾದ ಅನುವಾದ ಹೀಗಿದೆ..
ಅಲ್ಲಿ ಮರದಡಿಯಲ್ಲಿ ನಲ್ಗಾವ್ಯವೊಂದಿರಲು
ರೊಟ್ಟಿಯೊಂದಿನಿಸೊಂದು ಕುಡಿಕೆಯಲಿ ಮಧುವು |
ಮೇಣ್ ಮುಗುದೆ ನೀನೆನ್ನ ಬಳಿ ಕುಳಿತು ಪಾಡಲಹ
ಕಾಡಾದೊಡೇನದುವೆ ಸಗ್ಗಸುಖವೆನಗೆ ||
ಖಯ್ಯಮನಿಗಿಂತಲೂ ತುಂಬ ಹಿಂದೆಯೇ ನಮ್ಮ ಭರ್ತೃಹರಿ ಹೇಳುವುದಾದರೂ ಇದನ್ನೇ..
ಅಗ್ರೇ ಗೀತಂ ಸರಸ ಕವಯಃ ಪಾರ್ಶ್ವತೋ ದಾಕ್ಷಿಣಾತ್ಯಾಃ
ಪಶ್ಚಾಲ್ಲೀಲಾವಲಯರಣಿತಂ ಚಾಮರಗ್ರಾಹಿಣೀನಾಮ್ |
ಯದ್ಯಸ್ತ್ಯೇವಂ ಕುರು ಭವರಸಾಸ್ವಾದನೇ ಲಂಪಟತ್ವಂ
ನೋಚೇಚ್ಚೇತಃ ಪ್ರವಿಶ ಸಹಸಾ ನಿರ್ವಿಕಲ್ಪೇ ಸಮಾಧೌ ||
ಮತ್ತಷ್ಟು ಓದು 
ಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 2
– ರೋಹಿತ್ ಚಕ್ರತೀರ್ಥ
ಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 1
ಶ್ರೀ ರಾಮನವಮಿಯ ದಿವಸ ರಾಮನಾಮಾಮೃತವೆ
ಪಾನಕ, ಪನಿವಾರ, ಕೋಸಂಬರಿ;
ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆ;
ವ್ಯಕ್ತಮಧ್ಯಕ್ಕೆ ಬಂದುರಿವ ಶಬರಿ
ಎಂದು ಶುರುವಾಗುತ್ತದೆ ಅಡಿಗರ ಕವಿತೆ. ರಾಮನ ಹುಟ್ಟುಹಬ್ಬ ಬೇಸಗೆಯಲ್ಲಿ ಬರುತ್ತದೆ ಎನ್ನುವುದನ್ನು ಹೇಳಲಿಕ್ಕೇ ಕವಿ ಎರಡು ಸಾಲುಗಳಲ್ಲಿ ಪಾನಕ, ಪನಿವಾರ, ಕೋಸಂಬರಿ, ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆಗಳನ್ನು ಹರಡಿ ಕೂತಿದ್ದಾರೆ! ಇಲ್ಲಿ ಪಾನಕ ಎಂದರೆ ಪಾನಕ, ಪನಿವಾರ ಎಂದರೆ ಪನಿವಾರ. ಅದಕ್ಕೆ ಎರಡನೆ ಅರ್ಥ ಇರುವ ಹಾಗೇನೂ ಕಾಣುತ್ತಿಲ್ಲ. ನಾನು ಈಗಾಗಲೇ ಹೇಳಿದ ಹಾಗೆ, ಅಡಿಗರು ಚಿತ್ರಕ ಶಕ್ತಿಯ ಕವಿ. ಒಂದು ಸಂಗತಿಯನ್ನು ವಿವರಿಸಲು ಎಷ್ಟು ಮೂರ್ತ ಉದಾಹರಣೆಗಳು ಸಾಧ್ಯವೋ ಅಷ್ಟನ್ನು ಎತ್ತಿಕೊಂಡು ಬರಬಲ್ಲ ಪ್ರತಿಭಾವಂತ. “ಬೇಸಗೆ” ಅಂದಿದ್ದರೆ ಸಾಕಿತ್ತು. ರಾಮನ ಬರ್ತ್ಡೇ ಸಮಯದಲ್ಲಿ ಸೆಕೆ ವಿಪರೀತ ಇರುತ್ತೆ ಎಂದಿದ್ದರೂ ನಡೆಯುತ್ತಿತ್ತು. ಆದರೆ, ಅಂತಹ ಯಾವ ಮಾತನ್ನೂ ಹೇಳದೆ ಪಾನಕ-ಕೋಸಂಬರಿಗಳ ಬಗ್ಗೆ ಹೇಳುತ್ತ ಅಡಿಗರು ಒಂದು ವಿಭಿನ್ನ ವಾತಾವರಣವನ್ನು ಸೃಷ್ಟಿಸುತ್ತಾರೆ. ಅದನ್ನು ಓದುವಾಗ ನಮಗೆ ಹಬ್ಬದ ವಾತಾವರಣ ಕಂಡಂತೆ ಆಗಬೇಕು. ಆ ಸಿಹಿಭಕ್ಷ್ಯಗಳನ್ನು ತಿಂದಹಾಗನಿಸಬೇಕು. ಕಾವ್ಯದ ಉದ್ಧೇಶ ರಸೋತ್ಪತ್ತಿಯಲ್ಲವೆ?
ಅದೆಲ್ಲ ಸರಿ, ಆದರೆ ವ್ಯಕ್ತಮಧ್ಯಕ್ಕೆ ಬಂದುರಿವ ಶಬರಿ – ಎಂಬ ಸಾಲಿಗೆ ಏನರ್ಥ? ಇಷ್ಟೆಲ್ಲ ಹಬ್ಬದ ವಾತಾವರಣ ಕಟ್ಟಿಕೊಡುವಾಗ ಮಧ್ಯದಲ್ಲಿ ಶಬರಿ ಯಾಕೆ ಬರಬೇಕು? ಅವಳು ಯಾಕೆ ಉರಿಯಬೇಕು? ವ್ಯಕ್ತಮಧ್ಯ ಎಂಬ ಪದವನ್ನು ಅಡಿಗರು ಎತ್ತಿಕೊಂಡಿರುವುದು (ಇತ್ತೀಚೆಗೆ ಕೆಲವು ಬುದ್ಧಿವಂತರು ಸುಡಬೇಕು ಎಂದು ಆದೇಶಿಸಿದ) ಭಗವದ್ಗೀತೆಯಿಂದ! ಅಲ್ಲಿ ಸಾಂಖ್ಯಯೋಗದಲ್ಲಿ ಮತ್ತಷ್ಟು ಓದು 
ಪರ್ವ ಮತ್ತು ಮಹಾಭಾರತ
– ಮು.ಅ ಶ್ರೀರಂಗ
ಹರವು ಸ್ಫೂರ್ತಿ ಗೌಡ ಅವರು ‘ಅವಧಿ’ಯಲ್ಲಿ ೬-೩-೧೫ರಂದು ಬರೆದಿರುವ ‘ಭೈರಪ್ಪನವರಿಗೆ ಕೆಲವು ಪ್ರಶ್ನೆಗಳು’ ಲೇಖನದಲ್ಲಿ ಭೈರಪ್ಪನವರು ಮಹಾಭಾರತವನ್ನು ಆಧರಿಸಿ ಬರೆದಿರುವ ಪರ್ವ ಕಾದಂಬರಿಯ ಬಗ್ಗೆ ಪ್ರಸ್ತಾಪಿಸಿರುಪ ಪ್ರಶ್ನೆಗಳನ್ನು ಕುರಿತಂತೆ ಕೆಲವು ವಿಷಯಗಳನ್ನು ನಿಲುಮೆಯ ಓದುಗರ ಜತೆ ಹಂಚಿಕೊಳ್ಳುವುದು ಈ ನನ್ನ ಬರಹದ ಉದ್ದೇಶ. ಸ್ಪೂರ್ತಿ ಗೌಡ ಅವರ ಲೇಖನಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಅವುಗಳು ಸದ್ಯದ ನಮ್ಮ ಓದುಗರ ಮನೋಭಾವ, ಅವರ ಓದಿನ ರೀತಿ ನೀತಿ, ಕನ್ನಡ ಸಾಹಿತ್ಯದ ಸದ್ಯದ ವಿಮರ್ಶೆಯ ವಾತಾವರಣ ಇತ್ಯಾದಿಗಳ ಪ್ರತಿಫಲನದಂತೆ ಇದೆ. ಇದು ಸಹಜ.ಆ ಪ್ರತಿಕ್ರಿಯೆಗಳ ಬಗ್ಗೆ ಇದಕ್ಕಿಂತ ಹೆಚ್ಚೇನು ಹೇಳುವುದು ಇಲ್ಲ.
ಸ್ಫೂರ್ತಿ ಗೌಡ ಅವರು ‘ಪರ್ವ’ದ ಬಗ್ಗೆ random ಆಗಿ ಎತ್ತಿರುವ ಮೂರ್ನಾಲಕ್ಕು ಆಕ್ಷೇಪಣೆಗಳು ಮತ್ತು ಉಪ ಆಕ್ಷೇಪಣೆಗಳ relevanceಗೆ ಮಾತ್ರ ನನ್ನ ಈ ಬರಹ ಸೀಮಿತವಾಗಿದೆ. ಇತಿಹಾಸ, ಕಾವ್ಯ ಮತ್ತು ಪುರಾಣಗಳು ಬೆರೆತಿರುವ ಮಹಾಭಾರತದ ಕತೆಯನ್ನು ಈಗ ಚಾಲ್ತಿಯಲ್ಲಿರುವ ವಿಮರ್ಶೆಯ ಅಳತೆಗೋಲಿನಿಂದ ಅಳೆದು ಬೆಲೆ ಕಟ್ಟುವ ಕ್ರಿಯೆಯೇ ಸರಿಯಾದುದಲ್ಲ. ಇಂದು ನಮ್ಮ ಸಾಹಿತ್ಯದ ವಿಮರ್ಶಕ ಮತ್ತು ವಿಮರ್ಶಕಿಯರಿಗೆ ಹಿಂದಿನ ಮತ್ತು ಇಂದಿನ ಕೃತಿಗಳಿಗೆ (ಅದು ಸಾಮಾಜಿಕ/ಐತಿಹಾಸಿಕ/ಪೌರಾಣಿಕ ಯಾವುದೇ ಆಗಿರಲಿ) ಪ್ರಗತಿಗಾಮಿ.ಪ್ರತಿಗಾಮಿ,ಮಹಿಳಾ ವಿರೋಧಿ,ವೈದಿಕ ಶಾಹಿ ಇತ್ಯಾದಿ ಹಣೆ ಪಟ್ಟಿಗಳನ್ನು ಕಟ್ಟಿ ಆ ಕೃತಿಗಳ ಲೇಖಕರನ್ನು ಏರಿಸುವುದೋ ಇಳಿಸುವುದೋ ಮಾಡುವುದು ತುಂಬಾ ಖುಷಿ ಕೊಡುವ ಕೆಲಸವಾಗಿದೆ. ಹಾಗೆ ನೋಡಿದರೆ ಇಂತಹ ವಿದ್ಯಮಾನ ಮೂವತ್ತು ನಲವತ್ತು ವರ್ಷಗಳಷ್ಟು ಹಳೆಯದೇ. ಈಗ ಈ ಕೆಲಸ ಇನ್ನೂ ಜೋರಾಗಿದೆ ಅಷ್ಟೇ. ವಿಮರ್ಶೆಯ ಪರಿಭಾಷೆಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತವೆ; ಬದಲಾಗಬೇಕು ಎಂಬುದರ ಬಗ್ಗೆ ಯಾರೂ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದರೆ ಬದಲಾಗುತ್ತಿರುವ ವಿಮರ್ಶೆಯ ಪರಿಭಾಷೆಗಳನ್ನು ಸಾಹಿತ್ಯ ಕೃತಿಯೊಂದಕ್ಕೆ ನಾವು ಯಾವ ರೀತಿ apply ಮಾಡಬೇಕು? ಆ ಪರಿಭಾಷೆಗಳ limits ಏನು? ಎಂಬುದರ ಬಗ್ಗೆ ನಾವು ಯೋಚಿಸದಿದ್ದರೆ ಆಭಾಸವಾಗುತ್ತದೆ. ಸ್ಪೂರ್ತಿಗೌಡ ಅವರು ಪರ್ವದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೆ ಮೂಲ ಕಾರಣ ಹೊಸ ವಿಮರ್ಶೆಯ ಪರಿಭಾಷೆಗಳ wrong application.
ಮತ್ತಷ್ಟು ಓದು 
ಓದುಗ ಸಾಹಿತ್ಯ ಮತ್ತು ವಿಮರ್ಶಕ – ಭಾಗ 3
– ಮು.ಅ ಶ್ರೀರಂಗ,ಬೆಂಗಳೂರು
ಓದುಗ ಸಾಹಿತ್ಯ ಮತ್ತು ವಿಮರ್ಶಕ – ಭಾಗ 1
ಓದುಗ ಸಾಹಿತ್ಯ ಮತ್ತು ವಿಮರ್ಶಕ – ಭಾಗ 2
(ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ-೧೦ ರಲ್ಲಿ ತಿಳಿಸಿದಂತೆ (“ನಿಲುಮೆ” ದಿನಾಂಕ ೧೨-೧೧-೨೦೧೪) ನನ್ನ ಮತ್ತು ಶ್ರೀ ವಸುಧೇಂದ್ರರ ಪತ್ರಗಳ ಪೂರ್ಣ ಪಾಠ)
ವಸುಧೇಂದ್ರರ ಮೊದಲನೇ ಪತ್ರ – ಬೆಂಗಳೂರು ೨೧-೦೬-೨೦೧೨
ಶ್ರೀರಂಗ ಅವರಿಗೆ-
ನಮಸ್ಕಾರಗಳು. ನಿಮ್ಮ ಸುಧೀರ್ಘವಾದ ಪತ್ರ ಬಂದಿದೆ. ಸುಮಾರು ಎರಡು ವರ್ಷಗಳ ಹಿಂದೆ ಪ್ರಕಟವಾದ ಈ ಲೇಖನವನ್ನು ನೆನಪಿನಲ್ಲಿಟ್ಟುಕೊಂಡು, ಈಗ ನನ್ನ ವಿಳಾಸ ದೊರೆತ ಮೇಲೆ ಅದಕ್ಕೆ ಪ್ರತಿಕ್ರಿಯಿಸಿರುವ ನಿಮ್ಮ ಸಾಹಿತ್ಯಾಭಿಮಾನ ದೊಡ್ಡದು. ನಿಮ್ಮಂತಹ ಕಟ್ಟಾ ಅಭಿಮಾನಿಗಳನ್ನು ಹೊಂದಿರುವ ಭೈರಪ್ಪನವರ ಬಗ್ಗೆ ಅಸೂಯೆಯಾಗುತ್ತದೆ.
ಭೈರಪ್ಪನವರ ಬಗ್ಗೆ ನನಗೆ ಯಾವುದೇ ವೈಯಕ್ತಿಕ ದ್ವೇಷವಾಗಲಿ, ಬೇಸರವಾಗಲಿ ಇಲ್ಲ. ಇದುವರೆಗೆ ನಾನು ಅವರನ್ನು ಭೇಟಿಯಾಗಿಲ್ಲ. ನಿಮ್ಮೆಲ್ಲರಂತೆ ನಾನೂ ಅವರೆಲ್ಲಾ ಕಾದಂಬರಿಗಳನ್ನು ಪ್ರೀತಿ ವಿಶ್ವಾಸದಿಂದ ಓದಿದ್ದೇನೆ . ಗೃಹಭಂಗ ಮತ್ತು ಪರ್ವ ನನ್ನ ಬಹು ಇಷ್ಟವಾದ ಕಾದಂಬರಿಗಳು. ಅವುಗಳ ಬಗ್ಗೆ ಮತ್ತೊಮ್ಮೆ ಖಂಡಿತಾ ಬರೆಯುತ್ತೇನೆ.
ಅಭಿಮಾನ ಜಾಸ್ತಿಯಾದಾಗ ಆರಾಧನೆಯಾಗುತ್ತದೆ. ಆಗ ನಮಗೆ ಸಾಹಿತಿಗಳ ತಪ್ಪುಗಳೊಂದೂ ಕಾಣುವುದಿಲ್ಲ. ಅವರ ಎಲ್ಲಾ ಹೇಳಿಕೆಗಳೂ, ಮಾತುಗಳೂ, ಕೃತಿಗಳೂ ಸರಿಯೆನ್ನಿಸಲಾರಂಭಿಸುತ್ತವೆ. ಓದುಗ ಎಂದೂ ಆ ಅಪಾಯದಲ್ಲಿ ಸಿಲುಕಬಾರದು. ಕೇವಲ ಓದುಗನಾದ ನನಗೆ ಭೈರಪ್ಪನವರ ಗುಣ–ದ್ವೇಷಗಳೆರಡೂ ಸ್ಪಷ್ಟವಾಗಿ ಕಾಣಿಸುತ್ತವೆ. ಎರಡನ್ನೂ ಸಮಾನ ಪ್ರೀತಿಯಿಂದಲೇ ದಾಖಲಿಸಿದ್ದೇನೆ. ಆದರೆ ನಮ್ಮ ಸಾಹಿತ್ಯದ ಮಾನ ದಂಡ ಬೇರೆಯಾದಾಗ ಅವು ನಿಮಗೆ ಒಪ್ಪಿಗೆಯಾಗದೇ ಹೋಗುವುದನ್ನೂ ನಾನು ಒಪ್ಪುತ್ತೇನೆ, ಗೌರವಿಸುತ್ತೇನೆ. ಮತ್ತಷ್ಟು ಓದು 
ನುಡಿಸಿರಿಯನ್ನು ವಿರೋಧಿಸುವ ನೈತಿಕತೆ ಇಂದಿನ ಸಾಹಿತಿಗಳಿಗಿದೆಯೇ?
– ಸಂತೋಷ್ ಕುಮಾರ್ ಪಿ.ಕೆ
ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವಾದ ಆಳ್ವಾಸ್ ನುಡಿಸಿರಿ 2014 ನ್ನು ಅದ್ಧೂರಿಯಾಗಿ ಮತ್ತು ಅಚ್ಚುಕಟ್ಟಾಗಿ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನಡೆಸಲಾಯಿತು. ಕನ್ನಡ ಭಾಷೆ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಡಾ.ಮೋಹನ್ ಆಳ್ವರ ಶ್ರಮ ಶ್ಲಾಘನೀಯವಾದುದು. ನುಡಿಸಿರಿಯ ವೈಭವವು ಆಗಮಿಸಿದ ಎಲ್ಲಾ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರೇಮಿಗಳಿಗಳಿಗೆ ಮನತಣಿಸುವಷ್ಟು ವಿಷಯ, ಮನರಂಜನೆಗಳನ್ನು ನೀಡಿರುವುದು ಸುಳ್ಳಲ್ಲ. ಅತ್ಯದ್ಭುತ ಮೆರವಣಿಗೆಯ ಮೂಲಕ ಪ್ರಾರಂಭವಾಗುವ ನುಡಿಸಿರಿಯು ಪ್ರತಿಯೊಂದು ಹಂತದಲ್ಲಿಯೂ ಸಮಯ ಮತ್ತು ಶಿಸ್ತು ಪಾಲನೆಯ ಅಣತಿಯಂತೆ ಜರುಗುತ್ತಾ ಹೋಗುತ್ತದೆ.
ಕನ್ನಡವು ಕರ್ನಾಟಕದ ವ್ಯವಹಾರಿಕ ಮತ್ತು ಮುಖ್ಯವಾಹಿನಿಯ ಭಾಷೆಯಾಗಿದ್ದರೂ ಸಹ ಇತರ ಭಾಷೆಗಳಿರುವುದನ್ನು ಕಡೆಗಣಿಸಲು ಸಾಧ್ಯವಿಲ್ಲ. ಉದಾಹರಣೆಗೆ, ತುಳು, ಕೊಂಕಣಿ, ಬ್ಯಾರಿ, ಬಂಜಾರ, ಕೊಡವ ಇನ್ನೂ ಮುಂತಾದ ಭಾಷೆಗಳು ಅಸ್ತಿತ್ವದಲ್ಲಿವೆ. ಈ ಬಾರಿಯ ನುಡಿಸಿರಿಯಲ್ಲಿ ಇಂತಹ ಪ್ರಾದೇಶಿಕ ಭಾಷೆಗಳಿಗೂ ಸಹ ಮನ್ನಣೆ ನೀಡುವ ಮೂಲಕ ಅವುಗಳಿಗೆ ಸಂಬಂಧಿಸಿದ ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳನ್ನೂ ಸಹ ಆಯೋಜಿಲಾಗಿತ್ತು. ಪ್ರತ್ಯೇಕವಾಗಿ ಒಂದೊಂದು ದಿನವೂ ತುಳು, ಕೊಂಕಣಿ ಹಾಗೂ ಬ್ಯಾರಿ ಭಾಷಾ ಸಮ್ಮೇಳನಗಳೂ ಪ್ರತಿದಿನ ಸಂಜೆ ಜರುಗಿದವು. ಹಾಗೂ ಕೃಷಿ ಸಲಕರಣೆಗಳ ಮೇಳ, ಆಹಾರ ತಿಂಡಿತಿನಿಸುಗಳ ಮೇಳ ಹಾಗೂ ಪುಸ್ತಕ ಮೇಳ ಇವೆಲ್ಲವೂ ನುಡಿಸಿರಿಯ ವಿಶೇಷ ರಂಗುಗಳು.
ಆಳ್ವಾಸ್ ’ನುಡಿಸಿರಿ’ ಮತ್ತು ಪ್ರಗತಿಪರರ ’ಕಿರಿಕಿರಿ’
– ಹರಿಶ್ಚಂದ್ರ ಶೆಟ್ಟಿ
ಮೋಹನ ಆಳ್ವರ ನಾಡು ನುಡಿಯ ಕಂಪಿನ ಕನ್ನಡ ನುಡಿಸಿರಿ ಅದ್ದೂರಿಯ ಮುಕ್ತಾಯ ಕಂಡಿದೆ.ಒಬ್ಬ ವ್ಯಕ್ತಿ ತನ್ನ ಇಚ್ಛಾಶಕ್ತಿಯಿಂದ ಇಂತಹದೊಂದು ಕಾರ್ಯ ನಡೆಸುವುದು ಸಾಧ್ಯವೇ ಎನ್ನುವ ಸಾರ್ವಜನಿಕರ ಆಶ್ಚರ್ಯದ ನಡುವೆ ಕೆಲವು ಹುಳುಕಿನ ಮನಸ್ಸುಗಳು ತಮ್ಮ ವಿತಂಡ ವಾದವನ್ನು ಆಳ್ವರತ್ತ ಹರಿಸಿ ಬಿಟ್ಟಿವೆ.ಕಳೆದ ವರ್ಷ ಮೋಹನ ಆಳ್ವರಿಂದ ಸನ್ಮಾನ ಮಾಡಿಸಿಕೊಂಡು,ಶಾಲು ಹೊದಿಸಿಕೊಂಡು,ಒಟ್ಟಿಗೆ ನೋಟಿನ ದಪ್ಪ ಕಟ್ಟನ್ನು ಕಿಸೆಗೇರಿಸಿಕೊಂಡು ಹೋದ ಸಾರಸ್ವತ ಲೋಕದ ಮಹಾಶಯರೊಬ್ಬರು ನಂತರ ತಮ್ಮ ಅಸಲಿ ಬುದ್ಧಿಯ ” ಜಾತಿ” ವಾದವನ್ನು ಸಾಬೀತು ಪಡಿಸಿದ್ದರು…ಅಂತಹ ಸಾಹಿತಿಗೆ,” ಓತಿಕ್ಯಾತನಿಗೆ ಬೇಲಿ ಸಾಕ್ಷಿ ” ಎನ್ನುವಂತೆ,ಕಳೆದ ಹಲವಾರು ವರ್ಷಗಳಿಂದ ನುಡಿಸಿರಿಯ ಹೆಸರಿನಲ್ಲಿ ಕುತ್ತಿಗೆ ಮಟ್ಟ ತಿಂದು ತೇಗಿದ ಬುದ್ಧಿಜೀವಿಗಳು ಸಹಕಾರ ವಾಣಿಯನ್ನು ಒದಗಿಸಿದ್ದವು.ಈ ಸಲವೂ ಇವರುಗಳಿಗೆ ಏನೋ ಒಡಕು ಕಂಡಿದೆಯಂತೆ.ಆಳ್ವರ ಕನ್ನಡ ಮನಸ್ಸು ಪ್ರಿಯವಾಗುವ ಬದಲು ,ಅವುಗಳಿಗೆ ಎಲ್ಲೋ ಬಿದ್ದಿದ್ದ ಕೊಳಚೆ ಆಪ್ಯಾಯಮಾನವಾಗಿ ಕಂಡಿದೆ.ಜನಪದ ನೃತ್ಯಗಳೂ ಜಾತಿ ಪದ್ಧತಿಯ ಓಣಿಯಲ್ಲಿಯೇ ಸಾಗಬೇಕೆಂಬ ಇವುಗಳು ಮಾತ್ರ ಜಾತಿ ಪದ್ದತಿ ನಿವಾರಣೆಗೆ ತಾವೇನು ಘನ ಕಾರ್ಯ ಮಾಡಿದ್ದೇವೆ ಎಂದು ಹೇಳುವುದಿಲ್ಲ.ಇವರುಗಳ ಕೆಲಸ ಏನಿದ್ದರೂ ಬರವಣಿಗೆ ಮೂಲಕ ಘರ್ಷಣೆಯ ಕಿಡಿ ಹೊತ್ತಿಸುವುದು ಮತ್ತು ಆ ಮೂಲಕ ಉದರ ಪೋಷಣೆ ಮಾಡಿಕೊಳ್ಳುವುದು….
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧೦
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೬
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೭
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೮
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೯
ಕವಲು
ಆವರಣ ಕಾದಂಬರಿಗೆ ಬಂದಷ್ಟು ಪ್ರತಿರೋಧ, ಪ್ರತಿಭಟನೆಗಳು ಮತ್ತು ವಿಮರ್ಶಾ ಸಂಕಲನಗಳು ಕವಲು ಕಾದಂಬರಿಗೆ ಬರದೇ ಇದ್ದರೂ ಸಹ ಪತ್ರಿಕೆಗಳಲ್ಲಿ ಸಾಕಷ್ಟು ಚರ್ಚೆಯಾಯಿತು. ಆವರಣಕ್ಕೆ ಕೋಮುವಾದಿ ಕೃತಿ ಎಂದು ಹೆಸರಿಟ್ಟಹಾಗೆ ಕವಲು ಕಾದಂಬರಿಗೆ ಸ್ತ್ರೀವಾದದ ವಿರೋಧಿ ಎಂಬ ಲೇಬಲ್ ಹಚ್ಚಲಾಯಿತು. ಖ್ಯಾತ ಕತೆಗಾರ, ಪ್ರಭಂಧಕಾರ ಮತ್ತು ಪ್ರಕಾಶಕರಾದ (ಛಂದ ಪುಸ್ತಕ ಪ್ರಕಾಶನ ಬೆಂಗಳೂರು) ವಸುಧೇಂದ್ರ ಅವರು ಕನ್ನಡ ಪ್ರಭ ಪತ್ರಿಕೆಯ ಭಾನುವಾರದ ಸಾಪ್ತಾಹಿಕ ಪ್ರಭದಲ್ಲಿ ಮಾಡಿದ ಕವಲು ಕಾದಂಬರಿಯ ವಿಮರ್ಶೆಗೆ ಪ್ರತಿಕ್ರಿಯೆಯಾಗಿ ನಾನು ಬರೆದದ್ದು ಈ ಪತ್ರ. .
ಶ್ರೀ ವಸುಧೇಂದ್ರ ಅವರಿಗೆ ನಮಸ್ಕಾರಗಳು, ದಿನಾಂಕ: ೧೩ ಜೂನ್ ೨೦೧೨
ಭೈರಪ್ಪನವರ ಕವಲು ಕಾದಂಬರಿಯ ಬಗ್ಗೆ ಸುಮಾರು ಎರಡು ವರ್ಷಗಳ ಹಿಂದೆ (೨೯–೮–೨೦೧೦) ಕನ್ನಡಪ್ರಭದ ಸಾಪ್ತಾಹಿಕ ಪ್ರಭದಲ್ಲಿ ಪ್ರಕಟವಾದ ತಮ್ಮ ವಿಮರ್ಶೆಯ ಬಗ್ಗೆ ನನ್ನ ಅನಿಸಿಕೆಗಳನ್ನು ಈಗ ತಿಳಿಸುತ್ತಿದ್ದೇನೆ. ಇದನ್ನು ಬರೆದಿಟ್ಟುಕೊಂಡು ಎರಡು ವರ್ಷಗಳಾಗಿದ್ದರೂ ಈಗ ಕಳಿಸುತ್ತಿರುವುದಕ್ಕೆ ಕಾರಣ ನಿಮ್ಮ ಅಂಚೆ ವಿಳಾಸ/ ಇ ಮೇಲ್ ಐಡಿ ಸಿಗದೇ ಇದ್ದದ್ದು. ಇತ್ತೀಚಿಗೆ ‘ಸಂಚಯ’ ಸಾಹಿತ್ಯಿಕ ಪತ್ರಿಕೆಯ ಪ್ರತಿಗಳನ್ನು ಒಂದೆಡೆ ನೀಟಾಗಿ ಜೋಡಿಸಿಡುತ್ತಾ ಹಾಗೆ ಅದರ ಪುಟಗಳ ಮೇಲೆ ಕಣ್ಣಾಡಿಸುತ್ತಿದ್ದಾಗ ಒಂದು ಸಂಚಿಕೆಯಲ್ಲಿ ನಿಮ್ಮ ವಿಳಾಸ ಸಿಕ್ಕಿತು. ಸಾಪ್ತಾಹಿಕ ಪ್ರಭದಲ್ಲಿ ಪ್ರಕಟವಾಗಿದ್ದ ನಿಮ್ಮ ಆ ವಿಮರ್ಶೆಯ ಜೆರಾಕ್ಸ್ ಪ್ರತಿಯನ್ನೂ ಇದರ ಜತೆ ಇಟ್ಟಿದ್ದೇನೆ.
ತಮಗೆ ತಿಳಿದಿರುವಂತೆ ಭೈರಪ್ಪನವರ ಕಾದಂಬರಿಗಳ ಬಗ್ಗೆ ನಮ್ಮ ವಿಮರ್ಶಾವಲಯದಲ್ಲಿ ಪರಸ್ಪರ ವಿರುದ್ಧವಾದ ಅಭಿಪ್ರಾಯಗಳು ಅವರ ಧರ್ಮಶ್ರೀ ಕಾಲದಿಂದ ಇಂದಿನ ಕವಲು ಕಾದಂಬರಿಯ ತನಕ ಇದ್ದೇ ಇದೆ. ಇದನ್ನು ನಾನು ಪುನಃ ವಿವರಿಸುವುದು ಅನವಶ್ಯ ಎಂದು ಭಾವಿಸಿದ್ದೇನೆ. ಈಗ ನೇರವಾಗಿ ಕವಲು ಕಾದಂಬರಿಯನ್ನು ಕುರಿತ ತಮ್ಮ ವಿಮರ್ಶೆಯ ಬಗ್ಗೆ ಹೋಗೋಣ. ನಾಲ್ಕು ಕಾಲಂಗಳ ಆ ವಿಮರ್ಶೆಯಲ್ಲಿ ಎರಡು ಕಾಲಂಗಳು ಆ ಕಾದಂಬರಿಯ ಕಥಾಸಾರಾಂಶವನ್ನು ಹೇಳುವುದಕ್ಕೆ ವಿನಿಯೋಗವಾಗಿದೆ. ಉಳಿದ ಎರಡು ಕಾಲಂಗಳ ಬಗ್ಗೆ ಹೇಳುವುದಾದರೆ—
(೧) ಭೈರಪ್ಪನವರು ಎಲ್ಲಾ ಸ್ತ್ರೀವಾದಿಗಳೂ ಕೆಟ್ಟ ಹೆಂಗಸರೆಂದು ಆ ಕಾದಂಬರಿಯಲ್ಲಿ ಎಲ್ಲಿ ಹೇಳಿದ್ದಾರೆ? ಕವಲು ಕಾದಂಬರಿಯಲ್ಲಿ ಚಿತ್ರಿತವಾಗಿರುವ ಇಬ್ಬರು ಹೆಂಗಸರ ಬಗ್ಗೆ, ಅವರ ನಡತೆಯ ಬಗ್ಗೆ ಬರೆದಿದ್ದಾರೆ. ಅವರಿಬ್ಬರು ಎಲ್ಲಾ ಸ್ತ್ರೀ ವಾದಿಗಳನ್ನು ಪ್ರತಿನಿಧಿಸುತ್ತಾರೆ ಎಂದು ಭಾವಿಸುವುದು ಸರಿಯೇ? ಓದು ಬರಹ ಬಲ್ಲ ಹೆಂಗಸರಿಂದ, ಸ್ತ್ರೀವಾದಿಗಳಿಂದ ಮಾತ್ರ ವರದಕ್ಷಿಣೆ ವಿರೋಧಿ ಕಾನೂನು, ವಿವಾಹ ವಿಚ್ಛೇದನದ ಕಾನೂನು ದುರುಪಯೋಗವಾಗುತ್ತಿಲ್ಲ: ಅದನ್ನು ಇತರರೂ ಮಾಡುತ್ತಿದ್ದಾರೆ ಎಂಬುದಕ್ಕೆ ಕವಲು ಕಾದಂಬರಿಯಲ್ಲೇ ಒಂದು ನಿದರ್ಶನವಿದೆ. ಜಯಕುಮಾರನ ಅಣ್ಣ ಕೇಶವಮೂರ್ತಿಯ ಹೆಂಡತಿ ಇಂದಿರಾ ತನ್ನ ಅತ್ತೆಯನ್ನು ವರದಕ್ಷಿಣೆ ಕಾನೂನಿನ ಅಡಿಯಲ್ಲಿ ಜೈಲಿಗೆ ಹಾಕಿಸಲಿಲ್ಲವೇ? (ಪುಟ ೨೬೧ ಕವಲು) ತಾವೇ ಹೇಳಿರುವಂತೆ ಕಾನೂನಿನ ಲೂಪ್ ಹೋಲ್ ಗಳನ್ನು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡವರ ಕಥೆ ಕವಲುವಿನದು. ಅಂತಹ ಒಂದು ಕಥೆಯನ್ನು ಹೇಳುವುದಕ್ಕೆ ಒಂದಷ್ಟು ಪಾತ್ರಗಳು ಬೇಕೇ ಬೇಕಲ್ಲವೇ? ಅಂತಹ ಪಾತ್ರಗಳು ಇಡೀ ಸಮಾಜದ ಪ್ರತಿಬಿಂಬವಾಗಲು ಹೇಗೆ ತಾನೇ ಸಾಧ್ಯ? ಜತೆಗೆ ಮರೆಯಬಾರದ ಸಂಗತಿ ಎಂದರೆ ಪ್ರಗತಿಪರ ,ಬಂಡಾಯ, ದಲಿತ ಸ್ತ್ರೀ ವಾದಿ ಇತ್ಯಾದಿ ಪ್ರಣಾಳಿಕೆಗಳು, ಇವುಗಳ ಬಗ್ಗೆ ಒಲವುಳ್ಳ ಅಷ್ಟನ್ನೇ high light ಮಾಡುವಂತಹ ಸಾಹಿತ್ಯ,ವಿಮರ್ಶೆಗಳು ಏಕಮುಖೀ ಧೋರಣೆ ಉದ್ದೇಶವಿಟ್ಟುಕೊಂಡು ರಚಿತವಾಗಿ ಜೀವನದ ಇತರೆ ಮಗ್ಗುಲುಗಳ ಬಗ್ಗೆ ಗಮನಹರಿಸದೇ ಇರುವುದು ತಿಳಿದ ವಿಷಯವೇ. ಒಬ್ಬ ಲೇಖಕ/ಸಾಹಿತಿ ಆಯಾ ಕಾಲದಲ್ಲಿ ಚಾಲ್ತಿಯಲ್ಲಿರುವಂತಹ ಸಾಮಾಜಿಕ/ರಾಜಕೀಯ ಸಿದ್ಧಾಂತ,ವಾದ ಇತ್ಯಾದಿಗಳ ಪರವಾಗಿ ಮತ್ತು ಅದರ ಚೌಕ್ಕಟ್ಟಿನೊಳಗೇ ಬರೆಯಬೇಕು ಎಂದು ನಿರೀಕ್ಷಿಸುವುದು/ಒತ್ತಾಯಿಸುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಯನ್ನೂ ಸಹ ನಾವು ಗಣನೆಗೆ ತೆಗೆದುಕೊಳ್ಳಬೇಕಲ್ಲವೇ? ಸಾಹಿತಿಗೆ ಆ ವಾದಗಳ ಸಾಧಕ ಬಾಧಕಗಳನ್ನು ತನ್ನ ಕೃತಿಯಲ್ಲಿ ಚರ್ಚಿಸುವ ಸೃಜನಶೀಲತೆಗೆ ಅವಕಾಶವಿರಬಾರದೆ?




