ಕನ್ನಡದ ಇಲ್ಲಗಳು!
– ಡಾ. ಶ್ರೀಪಾದ ಭಟ್, ಸಹಾಯಕ ಪ್ರಾಧ್ಯಾಪಕ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು, ಕರ್ನಾಟಕ
ಕನ್ನಡ ಸಾವಿರ ವರ್ಷಗಳಿಂದ ಉಳಿದು ಬಂದ ಬಗೆ ಬೆರಗು ಹುಟ್ಟಿಸುವಂಥದ್ದೇನಲ್ಲ. ಅದು ಎಲ್ಲ ಜೀವಂತ ಭಾಷೆಗಳಂತೆಯೇ ಸಹಜವಾಗಿ ಸವಾಲುಗಳನ್ನು ಎದುರಿಸಿ ತನ್ನೊಡಲೊಳಗೆ ಸೇರಿಸಿಕೊಂಡು, ತನ್ನದನ್ನಾಗಿ ಮಾಡಿಕೊಂಡಿದೆ. ಹೀಗೆಂದರೆ ಬಿಸಿಲು, ಮಳೆ ಗಾಳಿಗಳನ್ನು ಎದುರಿಸಿ ಸಾವಿರ ವರ್ಷಗಳಿಂದ ಜಗ್ಗದೇ ಈ ಕಲ್ಲು ನಿಂತಿದೆ ಎಂಬಂತೆ ಕನ್ನಡ ಎಂದರೆ ಯಾವುದೋ ಎರಡನೆಯ ವಸ್ತುವಲ್ಲ. ಕನ್ನಡ ದಕ್ಕಿಸಿಕೊಂಡಿದೆ ಎಂದರೆ ಕನ್ನಡ ಮಾತನಾಡುವ ಜನ ಹಾಗೆ ಮಾಡಿದ್ದಾರೆ ಎಂದರ್ಥ. ಆದರೆ ಇಂದೇನಾಗಿದೆ? ಕನ್ನಡಿಗರು ಕನ್ನಡವೇ ಬೇರೆ, ತಾವೇ ಬೇರೆ ಎಂಬಂತೆ ಇದ್ದಾರೆ. ಎಲ್ಲವನ್ನೂ ಸಿದ್ಧಮಾದರಿಯಲ್ಲಿ ಬಯಸುವ ನಮಗೆ ಕನ್ನಡವೂ ಸಿದ್ಧಮಾದರಿಯಲ್ಲಿ ಉದ್ಧಾರವಾಗಬೇಕು! ನಾನೊಬ್ಬ ಕನ್ನಡ ಮಾತಾಡದಿದ್ದರೆ ಏನಂತೆ? ನನ್ನ ಮಗ/ಮಗಳು ಕನ್ನಡ ಕಲಿಯದಿದ್ದರೆ ಏನಂತೆ? ಎಂದು ಒಬ್ಬೊಬ್ಬರೂ ಭಾವಿಸಿ ಅಂತೆಯೇ ವರ್ತಿಸುತ್ತಿರುವುದೇ ಕನ್ನಡದ ಇಂದಿನ ಸಮಸ್ಯೆಗೆ ಬಹುಪಾಲು ಕಾರಣ. ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಗತಿಯಾದ ಭಾಷೆಯನ್ನು ಆರ್ಥಿಕ-ಔದ್ಯೋಗಿಕ ಮತ್ತು ರಾಜಕೀಯ ದೃಷ್ಟಿಯಿಂದ ನೋಡುವ ಪರಿಪಾಠ ಇನ್ನೊಂದು ಅಪಾಯ. ಕಾಲ ಕಾಲಕ್ಕೆ ಆಯಾ ಭಾಷಿಕ ಪರಿಸರದಲ್ಲಿ ಕಾಣಿಸುವ ರಾಜಕೀಯ, ವಿಜ್ಞಾನ, ತಂತ್ರಜ್ಞಾನ, ಆರ್ಥಿಕತೆ ಮೊದಲಾದ ಸನ್ನಿವೇಶಗಳನ್ನು ಎದುರಿಸುತ್ತ, ಅದನ್ನು ತನ್ನೊಡಲೊಳಗೆ ಸೇರಿಸಿಕೊಳ್ಳುತ್ತ ಹೋಗಬೇಕಾದ ಸವಾಲು ಇರುವುದರಿಂದ ಕನ್ನಡ ಎಂದಲ್ಲ, ಎಲ್ಲ ಜೀವಂತ ಭಾಷೆಗಳೂ ಸದಾ ಕಾಲ ಸಂಕ್ರಮಣ ಸ್ಥಿತಿಯಲ್ಲೇ ಇರುತ್ತವೆ.
ಸದ್ಯದ ಸ್ಥಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಕನ್ನಡಕ್ಕಾಗಿ ಇರುವ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಘ ಸಂಸ್ಥೆಗಳು ನೂರನ್ನೂ ಮೀರುತ್ತವೆ. ಇಷ್ಟಾದರೂ ಜಾಗತಿಕ ವಿದ್ಯಮಾನದ ಹಿನ್ನೆಲೆಯಲ್ಲಿ ಆಗುತ್ತಿರುವ ಬದಲಾವಣೆಗೆ ಸಿದ್ಧವಾಗುವಂತೆ ಕನ್ನಡವನ್ನು ಕಟ್ಟುವ ಮತ್ತು ರೂಪಿಸುವ ಕೆಲಸ ಮಾತ್ರ ನಡೆಯುತ್ತಿಲ್ಲ. ಇದು ಆಕ್ಷೇಪವಲ್ಲ, ವಾಸ್ತವ. ಆಧುನಿಕ ತಂತ್ರಜ್ಞಾನದಿಂದ ಇಂದು ಭಾಷೆ, ಶಿಕ್ಷಣ ಮತ್ತು ಸಾಹಿತ್ಯದ ಸ್ವರೂಪವೇ ಬದಲಾಗಿಹೋಗಿದೆ. ಕಂಪ್ಯೂಟರ್, ಮೊಬೈಲ್ ತಂತ್ರಜ್ಞಾನಗಳು ನಿತ್ಯ ಜೀವನದ ಅವಿಭಾಜ್ಯ ಅಂಗಗಳಾಗಿವೆ. ಹೊಸ ಜಗತ್ತಿನ ಈ ಹೊಸ ಸಂಪರ್ಕ ಮಾಧ್ಯಮಗಳು ಭಾಷೆಯನ್ನು ಬಳಸಿಕೊಳ್ಳುವ ಬಗೆಯೇ ಬೇರೆ. ಈ ತಂತ್ರಜ್ಞಾನಗಳಿಗೆ ಒಳಪಡದ ಭಾಷೆ ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುವುದು ಖಂಡಿತ. ಕನ್ನಡ ಈಗ ಈ ಸವಾಲು ಎದುರಿಸುತ್ತಿದೆ.
ವೇಶ್ಯಾವೃತ್ತಿ: ಮಹಿಳೆಯರ ರಕ್ಷಣೆಗೆ ಮಹಿಳೆಯರ ಅತ್ಯಾಚಾರವೇ?
– ತುರುವೇಕೆರೆ ಪ್ರಸಾದ್
ವೇಶ್ಯಾವೃತ್ತಿಯನ್ನು ಕಾನೂನು ಬದ್ಧಗೊಳಿಸಬೇಕು. ಇದರಿಂದ ಸ್ವಲ್ಪ ಮಟ್ಟಿಗೆ ಸ್ತ್ರೀಯರ ಮೇಲಿನ ದೌರ್ಜನ್ಯಗಳು ಹಾಗೂ ಅತ್ಯಾಚಾರಗಳು ನಿಯಂತ್ರಣಕ್ಕೆ ಬರುತ್ತವೆ ಎಂದು ಹಲವರು ಅಭಿಪ್ರಾಯಪಡುತ್ತಾರೆ. ಪ್ರಪಂಚದ ಹಲವು ಕಡೆ ನಡೆಸಿದ ಸಮೀಕ್ಷೆ ಹಾಗೂ ಅಧ್ಯಯನಗಳಲ್ಲಿ ಇದಕ್ಕೆ ಪೂರಕವಾದ ಅಂಕಿ ಅಂಶಗಳು ಸಿಕ್ಕಿವೆ. ಅವುಗಳಲ್ಲಿ ಕೆಲವನ್ನು ಉದಾಹರಿಸುವುದಾದರೆ ಎನ್ಬಿಇಎಲ್ ಅಧ್ಯಯನದ ಪ್ರಕಾರ ರೋಡ್ ದ್ವೀಪದಲ್ಲಿ 2003-2009ರ ಅವಧಿಯಲ್ಲಿ ವೇಶ್ಯಾ ವೃತ್ತಿಯನ್ನು ಕಾನೂನುಬದ್ಧಗೊಳಿಸಿದಾಗ ಶೇ.39 ರಷ್ಟು ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಿದ್ದವು. ಗೊನೇರಿಯಾ ಕಾಯಿಲೆಯ ಹರಡುವಿಕೆ ಪ್ರಮಾಣ ಶೇ.45ರಷ್ಟು ಕಡಿಮೆಯಾಗಿತ್ತು. ಬೈಲಾರ್ ವಿಶ್ವವಿದ್ಯಾಲಯದ ಸಂಪನ್ಮೂಲ ವ್ಯಕ್ತಿಗಳಾದ ಸ್ಕಾಟ್ ಕನ್ನಿಂಗ್ ಹ್ಯಾಮ್ ಮತ್ತು ಮಾನಿಷಾ ಶಾ ವೇಶ್ಯೆಯರ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದೆ ತೆಗೆದ ಪರಿಣಾಮ ಹೆಂಗಸರ ಮೇಲಿನ ಅಪರಾಧ ಹಾಗೂ ದೌರ್ಜನ್ಯಗಳ ಸಂಖ್ಯೆ ಇಳಿಮುಖವಾಗಿತ್ತು ಎಂಬುದನ್ನು ಗುರುತಿಸಿದ್ದಾರೆ. ನಾರ್ತ್ ಈಸ್ರ್ಟನ್ ಸ್ಟೇಟ್ ಯೂನಿವಸಿಟಿಯ ಕಿರ್ಬಿ ಆರ್. ಕಂಡೀಫ್ ಅಮೇರಿಕಾದಲ್ಲಿ ವೇಶ್ಯಾವೃತ್ತಿಯನ್ನು ಕಾನೂನುಬದ್ಧಗೊಳಿಸಿದರೆ ಶೇ.25ರಷ್ಟು ಅಂದರೆ 25ಸಾವಿರ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಬಹುದೆಂದು ಬಹಳ ಹಿಂದೆಯೇ ಸಲಹೆ ನೀಡಿದ್ದರು. ಕ್ವೀನ್ಸ್ಲ್ಯಾಡ್ನಲ್ಲಿ ಕಾನೂನುಬದ್ಧವಾಗಿ ನಡೆಸುತ್ತಿದ್ದ ವೇಶ್ಯಾಗೃಹಗಳನ್ನು ಮುಚ್ಚಿದಾಗ ಅಲ್ಲಿನ ಅತ್ಯಾಚಾರ ಪ್ರಕರಣಗಳ ಪ್ರಮಾಣ ಶೇ.149ಕ್ಕೆ ಏರಿತು ಎಂದು ಲಿಂಡಾ ರಿಚ್ಮ್ಯಾನ್ ಅಭಿಪ್ರಾಯ ಪಡುತ್ತಾರೆ. 2004ರಲ್ಲಿ ಜರ್ಮನಿಯಲ್ಲಿ ವೇಶ್ಯಾವೃತ್ತಿಯನ್ನು ಕಾನೂನುಬದ್ಧಗೊಳಿಸಿ ನೊಂದಾಯಿಸಿದ ವೇಶ್ಯೆಯರಿಗೆ ಆರೋಗ್ಯವಿಮೆ, ನಿವೃತ್ತಿ ವೇತನ ಇತರೆ ಸೌಲಭ್ಯಗಳನ್ನು ನೀಡುವುದಾಗಿ ಘೋಷಿಸಲಾಗಿತ್ತು. ಇದರಿಂದ ಪ್ರವಾಸೋದ್ಯಮ ಬೃಹತ್ತಾಗಿ ಬೆಳೆಯಿತು. ಹೆಂಗಸರಿನ ಮೇಲಿನ ಅಪರಾಧ ಪ್ರಕರಣಗಳು ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾದವು. ಅದರೆ ಕೇವಲ 44 ಮಂದಿ ವೃತ್ತಿನಿರತ ಮಹಿಳೆಯರು ಮಾತ್ರವೇ ಸರ್ಕಾರದ ಸವಲತ್ತು ಪಡೆದರು. ಇದೇ ಅವಧಿಯಲ್ಲಿ ಜರ್ಮನ್ ಧೋರಣೆಗೆ ವಿರುದ್ಧವಾಗಿ ಸ್ವೀಡನ್ ವೇಶ್ಯಾವೃತ್ತಿಯನ್ನು ಸಂಪೂರ್ಣ ನಿಯಂತ್ರಿಸುವ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತು. ಇದರ ಪರಿಣಾಮ ಸ್ವೀಡನ್ನಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಸಂಖ್ಯೆ ಏರುಪ್ರಮಾಣ ದಾಖಲಿಸಿತು. ವೇಶ್ಯಾವೃತ್ತಿಯಲ್ಲಿ ತೊಡಗುವವರು ವಯಸ್ಕರಾಗಿರಬೇಕು ಮತ್ತು ಯಾವುದೇ ಒತ್ತಡಕ್ಕೆ ಬಲಿಯಾಗದಂತೆ ಈ ವೃತ್ತಿಯನ್ನು ಕಾನೂನು ಬದ್ಧಗೊಳಿಸಬಹುದು. ಇದರಿಂದ ಭಾರತದಲ್ಲಿ ಸಹ ಅತ್ಯಾಚಾರ ಪ್ರಕರಣಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತವೆ ಎಂದು ಖ್ಯಾತ ಪತ್ರಕರ್ತ ದಿ. ಕುಶ್ವಂತ್ಸಿಂಗ್ ಸಹ ಅಭಿಪ್ರಾಯಪಟ್ಟಿದ್ದರು.
ಪೌರಕಾರ್ಮಿಕರ ಸಮಸ್ಯೆಗಳು ಮತ್ತು ಶ್ರೇಣಿಕೃತ ಜಾತಿವ್ಯವಸ್ಥೆಯೆಂಬ ಮಿಥ್
– ರಾಕೇಶ್ ಶೆಟ್ಟಿ
‘ವಿಜಯವಾಣಿ’ ಪತ್ರಿಕೆಯಲ್ಲಿ ಅಕ್ಟೋಬರ್ ೧೪ನೇ ತಾರೀಖು ಪ್ರಕಟವಾದ, ಮಾಜಿ ಸಚಿವ ಬಿ.ಸೋಮಶೇಖರ್ ಅವರ “ಸ್ವಚ್ಚ ಮನಸ್ಸುಗಳಿಂದ ಸ್ವಚ್ಚ ಭಾರತ ನಿರ್ಮಾಣ” ಲೇಖನಕ್ಕೆ ನನ್ನ ಪ್ರತಿಕ್ರಿಯೆ.
ಸೋಮಶೇಖರ್ ಅವರು ಲೇಖನದಲ್ಲಿ ‘ಸ್ವಚ್ಚ ಭಾರತ ಅಭಿಯಾನ’ದ ಬಗ್ಗೆ ಮಾತನಾಡುತ್ತ ಮುಖ್ಯವಾಗಿ ಎರಡು ಅಂಶಗಳನ್ನು ದಾಖಲಿಸಿದ್ದಾರೆ.ಅದರಲ್ಲಿ ಮೊದಲನೆಯ ಅಂಶದಲ್ಲಿ, ಸರ್ವೇ ಸಾಧಾರಣವಾಗಿ ಭಾರತದ ಯಾವುದೇ ಬುದ್ಧಿಜೀವಿಯೋ ಅಥವಾ ರಾಜಕಾರಣಿಯೋ ಹೇಳುವಂತಹ “ಭಾರತೀಯ ಸಮಾಜ ಜಾತಿ ಆಧಾರಿತ,ಶ್ರೇಣಿಕೃತ” ಇತ್ಯಾದಿ.ಹಾಗೇ,ಸ್ವಚ್ಚಗೊಳಿಸುವ ಕೆಲಸಕ್ಕಾಗಿ ಇಲ್ಲಿ ಒಂದೇ ಜಾತಿ,ವರ್ಗವನ್ನು ಸೃಷ್ಟಿಸಲಾಯಿತು ಮತ್ತು ಅದಕ್ಕೆ ಧರ್ಮ-ಶಾಸ್ತ್ರಗಳ ಮೂಲಕ ಅಧಿಕೃತವನ್ನಾಗಿಸಲಾಯಿತು ಅಂತೆಲ್ಲ ಬರೆದುಕೊಂಡಿದ್ದಾರೆ. ಎರಡನೆಯ ಅಂಶ ಪೌರ ಕಾರ್ಮಿಕರ ಸಮಸ್ಯೆಗಳು,ಸ್ವಚ್ಚ ಭಾರತ ಅಭಿಯಾನದ ಅನುಷ್ಟಾನದ ಬಗ್ಗೆಯಾಗಿದೆ.
ಅವರ ಲೇಖನದ ಮೊದಲನೇ ಅಂಶದಲ್ಲಿ ಬರುವ ಶ್ರೇಣಿಕೃತ ಜಾತಿ ವ್ಯವಸ್ಥೆ,ಧರ್ಮ-ಶಾಸ್ತ್ರಗಳು ಇತ್ಯಾದಿ ವಾದಗಳಿಗೆ ಯಾವುದೇ ವೈಜ್ನಾನಿಕ ಆಧಾರಗಳು ಇಲ್ಲ.ಈ ವಾದಗಳು “ಅಡಗೂಲಜ್ಜಿ ಕತೆ”ಗಳಂತೆ ಹಳೆ ಕಾಲದಿಂದ ಕೇಳಿಸುತ್ತಲೇ ಬರುತ್ತಿವೆ.ಇತ್ತೀಚಿನ ಸಮಾಜ ವಿಜ್ನಾನದ ವಾದಗಳು ಭಾರತದಲ್ಲಿ ‘ಶ್ರೇಣಿಕೃತ ಜಾತಿ ವ್ಯವಸ್ಥೆ’ ಇಲ್ಲವೆಂದು ಹೇಳುತ್ತಿವೆ.
ಅಷ್ಟಕ್ಕೂ “ಶ್ರೇಣಿಕೃತ (Hierarchy)ವ್ಯವಸ್ಥೆ” ಎಂದರೇನು?
ಉದಾಹರಣೆಗೆ,ನಮಗೊಂದು ರಾಜ್ಯ ಸರ್ಕಾರವಿದೆ.ಅದಕ್ಕೊಬ್ಬರು ಮುಖ್ಯಮಂತ್ರಿ,ಅವರ ಕೆಳಗೆ ಮಂತ್ರಿಗಳು, ಶಾಸಕರು,ಮುಖ್ಯ ಕಾರ್ಯದರ್ಶಿಗಳು,ಅಧಿಕಾರಿಗಳು,ಜಿಲ್ಲಾಧಿಕಾರಿಗಳು,ತಹಶೀಲ್ದಾರರು ಹೀಗೆ ಒಂದು ವ್ಯವಸ್ಥೆ (System/Structure)ಇದೆ.ಇದೇ ರೀತಿಯ ವ್ಯವಸ್ಥೆಯೇನಾದರೂ ನಮ್ಮ ಸಮಾಜದಲ್ಲಿ ಕಾಣಬರುವ ಜಾತಿಗಳಲ್ಲಿ ಇವೆಯೇ?
ಕನ್ನಡ ಅಕ್ಷರ ಮಾಲೆಯ ಸೌಂದರ್ಯ ಅಭಿವ್ಯಕ್ತಗೊಳಿಸುವ ಕವನ
– ಡಾ. ಸುದರ್ಶನ ಗುರುರಾಜರಾವ್
”ಅ,ಆ ಇ,ಈ ಕನ್ನಡದಾ ಅಕ್ಷರಮಾಲೆ ಅಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ” ಈ ಹಾಡನ್ನು ಕೇಳದ ಕನ್ನಡಿಗರಿಲ್ಲ. ಈ ಸುಂದರ ಗೀತೆ ಸ್ವರಗಳ ಸ್ತರದಲ್ಲಿ ಯೋಗವಾಹಗಳಾದ ಅಂ ಅಃ ಗಳೊಂದಿಗೆ ಮುಗಿಯುತ್ತದೆ. ಕರುಳಿನ ಕರೆ ಚಿತ್ರಕ್ಕಾಗಿ ಶ್ರಿ ಆರ್.ಎನ್. ಜಯಗೋಪಾಲ್ ಅವರು ರಚಿಸಿದ ಕನ್ನಡದ ಈ ಅನನ್ಯ ಗೀತೆ ಪ್ರತಿಯೊಂದು ಸ್ವರಕ್ಕೂ ಜೀವನದ ವಿವಿಧ ಹಂತ (ಸ್ತರ) ಗಳಲ್ಲಿ ಇರಬಹುದಾದ ಪ್ರಾಮುಖ್ಯತೆ ಯನ್ನು ತೊರುತ್ತದೆ. ’ಅ’ ಇಂದ ಅಮ್ಮಾ ಎನ್ನುವ ಮೊದಲ ಮಾತು ಶಿಶುವಾಗಿದ್ದಾಗ, ಆಟ ಊಟ ಓಟ ಗಳು ಬಾಲಕನಾಗಿದ್ದಾಗ,ಇನ್ನೂ ಬೆಳೆದ ನಂತರ ಮಾನವೀಯ ಮೌಲ್ಯಗಳ ಕಲಿಕೆ- ಇದ್ದವರು ಇಲ್ಲದವರಿಗೆ ನೀಡುವುದು, ಈಶ್ವರನಲ್ಲಿ ಭಕ್ತಿ ಇಡುವುದು ಮುಖ್ಯವಾಗುತ್ತದೆ;ಅಂದರೆ, “ನಾನು” ಎನ್ನುವ ಭಾವ ತೊಡೆಯುವುದು. ತರುಣರಾಗಿದ್ದಾಗ ಕಲಿಯುವ ಬಹು ಮುಖ್ಯ ನೀತಿ ಉಪ್ಪು ತಿಂದ ಮನೆಗೆ ಎರ್ಡ ಬಗೆಯದಿರುವ ಮನೋಭಾವ, ಸ್ವಾರ್ಥ ಸಾಧನೆಗಾಗಿ ಊರಿಗೆ ದ್ರೋಹ ಮಾಡದಿರುವ ( ವ್ಯಕ್ತಿಗತ ಹಿತಕ್ಕಿಂತ ಸಾಮಾಜಿಕ ಹಿತವನ್ನು ಪರಿಗಣಿಸುವ ಮನೋಭಾವನೆ) ವ್ಯಕ್ತಿತ್ವದ ಬೆಳವಣಿಗೆ, ಆನಂತರದಲ್ಲಿ ಓದು ಮುಗಿದು ಮಾಗಿದ ತಾರುಣ್ಯದ ವಯಸ್ಸಿನಲ್ಲಿ ದೇಶಸೇವೆ ಈಶ ಸೇವೆ ಎಂದು ಮಾಡಿದಾಗ ಜೀವನ ಆಹಾ ಆಃ ಆಃ ಎನ್ನುವಂತಿರುತ್ತದೆ ಎಂದು ಸುಂದರವಾಗಿ ಹೆಣೆದಿದ್ದಾರೆ. ಕನ್ನಡದ ಮುಂದಿನ ವರ್ಣಮಾಲೆಯಲ್ಲಿ ಬರುವ ವ್ಯಂಜನಗಳಿಗೂ ಅವುಗಳದ್ದೆ ಆದ ವೈಶಿಷ್ಟ್ಯ ಇದ್ದು ಇದು ಬಹಳ ಜನಕ್ಕೆ ತಿಳಿಯದು. ವ್ಯಂಜನಗಳಲ್ಲಿ ವರ್ಗೀಯ,ಅವರ್ಗೀಯ, ಅಲ್ಪಪ್ರಾಣ,ಮಹಪ್ರಾಣ ಹಾಗು ಅನುನಾಸಿಕಗಳೆಂಬ ಬಗೆಗಳಿವೆ ಇದು ಎಲ್ಲರಿಗೂ ತಿಳಿದ ವಿಚಾರ. ವರ್ಣಮಾಲೆಯ ಪ್ರತಿಯೊಂದು ಗುಂಪಿನ ಎಲ್ಲ ಸದಸ್ಯರು ನಮ್ಮ ಶ್ವಾಸ ಪ್ರಕ್ರಿಯೆಯ ವಿವಿಧ ಹಂತಗಳಿಂದ ಕ್ರಮವಾಗಿ ಮೂಡಿಬರುತ್ತವೆ. ಸ್ವರಗಳಿಂದ ಆರಂಭವಾಗುವ ಧ್ವನಿಗಳು ಹಂತ ಹಂತವಾಗಿ ಗಂಟಲಿನಿಂದ ಮೇಲೇರಿ ತುಟಿಯ ವರೆಗೂ ಬರುತ್ತವೆ. ಉದಾಹರಣೆಗೆ, ಅ,ಆ ಅಂದು ನೋಡಿ, ನಾಲಿಗೆಯ ಹಿಂದಿನ ಗಂಟಲ ಭಾಗದಿಂದ ಶಬ್ದ ಹೊರಡುತ್ತದೆ. ಕ,ಖ,ಗ ಗಳು ಅಲ್ಲಿಂದ ಮುಂದಕ್ಕೆ ಸರಿದು ನಾಲಿಗೆ ಮತ್ತು ಕಿರಿನಾಲಿಗೆಯ ಚಲನೆಯಿಂದ ಬರುತ್ತವೆ. ಹೀಗೆ ಪ.ಫ ಬ ದಲ್ಲಿ ಎರಡು ತುಟಿಗಳು ತಗುಲಿದಾಗ ಮಾತ್ರವೆ ಶಬ್ದ ಹೊರಡುವುದು. ಇಷ್ಟು ಸುಂದರವಾಗಿ, ವ್ಯವಸ್ಥಿತವಾಗಿ ಸಂಸ್ಕೃತದಿಂದ ಪ್ರೇರಿತವಾದ ಭಾರತದ ಭಾಷೆಗಳಲ್ಲದೆ ಬೇರೆ ಭಾಷೆಯಲ್ಲಿದೆಯೆಂದು ನನಗನಿಸದು. ಅದರಲ್ಲೂ, ಎಲ್ಲಾ ವರ್ಣಗಳಿಂದ ಸಮೃದ್ಧವಾದ ಕನ್ನಡ ಭಾಷೆಯಲ್ಲಿ ಈ ಬೆಡಗನ್ನು ಕಾಣಬಹುದು. ಈ ಭಾಷಾ ಸೌಂದರ್ಯವನ್ನು ಕವಿತೆಯಲ್ಲಿ ಹಿಡಿದಿಡುವ,ಅಭಿವ್ಯಕ್ತಗೊಳಿಸುವ ಅಭಿಲಾಷೆ ನನ್ನದು.
ಮತ್ತಷ್ಟು ಓದು 
ಕನ್ನಡ – ಕನ್ನಡ
– ಭರತೇಶ ಅಲಸಂಡೆಮಜಲು
ಅ.. ಆ.. ಅ. ಆ..
ಇ.. ಈ.. ಇ.. ಈ..
ಅಆಇಈ ಕನ್ನಡದ ಅಕ್ಷರಮಾಲೆ
ಅ…. ಅಮ್ಮ ಎಂಬುವುದೇ ಕಂದನ ಕರುಳಿನ ಕರೆಯೋಲೆ
ಆ…. ಆಟ, ಊಟ, ಓಟ ಕನ್ನಡ ಒಂದನೇ ಪಾಠ
ಕನ್ನಡ ಭಾಷೆಯ ಕಲಿತವನ ಜೀವನವೇ ರಸದೂಟ…
ಇದು “ಕರುಳಿನ ಕರೆ” ಚಿತ್ರದ ಕನ್ನಡ ಭಾಷೆಯ ಬಗೆಗಿನ ಹೆಮ್ಮೆಯ ಹಾಡು, ಹೌದು ಜೀವಿಯೊಂದರ ಧ್ವನಿ ಪೆಟ್ಟಿಗೆಯಿಂದ ಉದ್ಭವಿಸಿದ ದನಿ ಗಾಳಿಯ ಒತ್ತಡಕ್ಕೆ ಸಿಳುಕಿ ಹಾರಾಡಿ ಅದು ತರಂಗಗಳಾಗಿ ತಮಟೆಗೆ ಬಡಿದು ಅನಾಥವಾದರೆ ಶಬ್ಧ, ಅದು ಅರ್ಥವಾದರೆ ಭಾಷೆಯಾಗುತ್ತದೆ. ಪ್ರತಿಯೊಬ್ಬರಿಗೂ ಭಾಷೆಯ ಬಗೆಗೆ ವಿಧ ವಿಧವಾದ ವ್ಯಾಖ್ಯಾನಗಳಿವೆ ಭಾಷೆ ಒಂದು ಸಂಸ್ಕಾರದ ಪರಿಶೋಧನೆಗೆ ಸಂಕೇತಗಳ ರೂಪ ನೀಡಿ ವ್ಯವಹರಿಸಲಿರುವ ವಿಶೇಷ ಸಾಮಥ್ರ್ಯ ಹಾಗೂ ಪಶು-ಪಕ್ಷಿಗಳಿಂದ ಪ್ರತ್ಯೇಕಿಸುವ ಘಟಕವೆಂದೆ ಬಿಂಬಿತವಾಗಿದೆ. ಭಾಷೆಯೆಂಬುದು ಆ ಪ್ರಾಂತ್ಯದ , ಜನ ಮಾನಸದ, ವ್ಯವಹಾರದ, ಸಮಾಜ ಸಂಸ್ಕ್ರತಿಯ ಸೊಗಡನ್ನು ಅಭಿವ್ಯಕ್ತಿ ಪಡಿಸುವ ರಾಯಭಾರಿಯಿದ್ದಂತೆ. ನಾವು ನಮ್ಮನ್ನು ಪರಿಚಯಿಸುವುದೇ ನಮ್ಮ ಭಾಷೆ, ನಮ್ಮ ನಾಡಿನ ಹೆಸರುಗಳ ಮೂಲಕ, ನಮ್ಮದು ಕನ್ನಡ ಭಾಷೆ ಅದರ ನವ್ಯತೆ, ನವಿರತೆ, ಮುಗ್ಧತೆ, ಸ್ಪಷ್ಟತೆ, ಉಚ್ಚರಣೆ, ಭಾವಾವಿಶೇಷಣಗಳು ಕನ್ನಡಿಗನೆನ್ನುವವನ ಮನ ಗೌರವವೆನಿಸುತ್ತದೆ.. ಅದಿ ದ್ರಾವಿಡ ಭಾಷೆಯಿಂದ ಕವಳೊಡೆದು ಒಸರಿನಂತೆ ಜಿನುಗಿ ಅದರ ಗಟ್ಟಿತನ , ಪ್ರಾಚೀನತೆ, ಸ್ವತಂತ್ರ ಪರಂಪರೆ, ಅಪಾರ ಸಾಹಿತ್ಯ ಬಿನ್ನತೆ, ಉನ್ನತ ಮಟ್ಟದ ಮೌಖಿಕ , ಶ್ರೇಷ್ಠ ಜಾನಪದ ನೆಲೆಯಲ್ಲಿ ಇಂದು ಕನ್ನಡ ಶಾಸ್ತ್ರೀಯ ಭಾಷೆಗಳಲ್ಲಿ ಒಂದಾಗಿದೆ. ಕನ್ನಡದ ಕುಲಪುರೋಹಿತ ಅಲೂರು ವೆಂಕಟರಾಯರು ಹೇಳುತ್ತಾ ” ಭರತ ಖಂಡವಿಲ್ಲದೆ ಕರ್ನಾಟಕ ಮುಂತಾದ ಪ್ರಾಂತ್ಯಗಳು ಇಲ್ಲವೆಂಬುದು ಎಷ್ಟು ನಿಜವೋ, ಅಷ್ಟೇ ಕರ್ನಾಟಕ ಮುಂತಾದ ಪ್ರಾಂತ್ಯಗಳಿಲ್ಲದೆ ಭರತಖಂಡವಿಲ್ಲವೆಂಬುದೂ ನಿಜ !!!
ಮತ್ತಷ್ಟು ಓದು 
ವಿಜ್ಞಾನಿಗಳೇಕೆ ಪೂಜೆ ಮಾಡಬಾರದು?
– ಡಾ. ಪ್ರವೀಣ್ ಟಿ. ಎಲ್
ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ
ಮಂಗಳಯಾನದ ಯಶಸ್ವೀ ಕಾರ್ಯಾಚರಣೆ ಬಗ್ಗೆ ಇಡೀ ದೇಶವೇ ಸಂತಸಪಟ್ಟಿದೆ. ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತರ ಸಾಧನೆಯನ್ನು ಭಾರತೀಯ ವಿಜ್ಞಾನಿಗಳು ಮಾಡಿರುವುದು ಮಹಾನ್ ಸಾಧನೆಯೇ ಸರಿ. ಆದರೆ ಕೆಲವು ‘ಚಿಂತಕರು’ ಈ ಇಡೀ ಕಾರ್ಯಾಚರಣೆಯ ಮುಖ್ಯಸ್ಥರಾಗಿದ್ದ ವಿಜ್ಞಾನಿ ರಾಧಾಕೃಷ್ಣನ್ರವರ ನಡೆಯ ಕುರಿತು ತಮ್ಮ ಕುಹಕ, ತಕರಾರುಗಳನ್ನು ಅಂತರ್ಜಾಲ, ಮತ್ತಿತರ ಕಡೆಗಳಲ್ಲಿ ಹರಿಯಬಿಡುತ್ತಿದ್ದಾರೆ. ರಾಧಾಕೃಷ್ಣನ್ರವರು ‘MOM’ ನ ಸಣ್ಣ ಮಾದರಿಯೊಂದನ್ನು ತಿರುಪತಿಗೆ ತಂದು, ತಮ್ಮ ಧರ್ಮಪತ್ನಿಯೊಡನೆ ಪೂಜಾ ಕಾರ್ಯಗಳನ್ನು ನೇರವೇರಿಸಿದ್ದು ಅವರ ಟೀಕೆಗೆ ಕಾರಣ.
ಉಡಾವಣೆಗೊಂಡ ‘MOM’ ಮಂಗಳನ ತಲುಪುವ ಮುಂಚೆಯೇ ಇದೊಂದು ವಿಫಲಯತ್ನವೇನೋ ಎಂಬಂತೆ ಕೆಲವರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದರು. ಇನ್ನೂ ಕೆಲವರು ವಿಫಲವಾಗಿದೆ ಎಂಬ ತೀರ್ಮಾನಕ್ಕೂ ಬಂದಿದ್ದರು. ಅಷ್ಟೇ ಅಲ್ಲದೇ ಈ ವಿಫಲತೆಗೆ ವಿಜ್ಞಾನಿಗಳು ತಿರುಪತಿಗೆ ತೆರಳಿ ‘ತಲೆಬೋಳಿಸಿ’ಕೊಳ್ಳದೇ ವಾಪಾಸಾದುದೇ ಪ್ರಮುಖ ಕಾರಣ ಎಂಬಂತೇ ಕುಹಕವಾಡಲು ಶುರುಮಾಡಿದರು. ಕುಹಕಗಳಿಗೆಲ್ಲಾ ಉತ್ತರವನ್ನು ವಿಜ್ಞಾನಿಗಳು ಈಗಾಗಲೇ ನೀಡಿದ್ದಾರೆ.
ಈ ‘ವೈಜ್ಞಾನಿಕ’ ಚಿಂತಕರ ಪ್ರಮುಖ ತಕರಾರೆಂದರೆ, ವಿಜ್ಞಾನಿಗಳು ದೇವಸ್ಥಾನಗಳಿಗೆ ತೆರಳಿ ತಾವು ತಯಾರಿಸಿದ ಆಯುಧದ ಪೂಜೆ ನೆರವೇರಿಸಿರುವುದು ಎಷ್ಟು ಸರಿ. ವಿಜ್ಞಾನಿಗಳಿಗೆ ವಿಶ್ವದ ಸೃಷ್ಟಿಯ ಕುರಿತು ವೈಜ್ಞಾನಿಕ ಕಾರಣಗಳು ತಿಳಿದಿದ್ದರೂ ಸಹಾ ದೇವರ ಅಸ್ತಿತ್ವವನ್ನು ನಂಬುತ್ತಾರೆ ಮತ್ತು ತಮ್ಮ ವೈಜ್ಞಾನಿಕ ಪ್ರಯೋಗಗಳಲ್ಲಿ ದೇವರ ಕೈವಾಡ ಇದೆ ಎಂದುಕೊಳ್ಳುವುದು ಅಜ್ಞಾನ/ ಮೂಢತೆ ಎಂಬುದವರ ವಾದ. ISRO ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಭಾರತ ಒಂದು ಜಾತ್ಯಾತೀತ ರಾಷ್ಟ್ರ ಎಂಬುದನ್ನು ರಾಧಾಕೃಷ್ಣನ್ರವರು ನೆನಪಿಡಬೇಕು ಎಂದು ಅಪ್ಪಣೆ ಹೊರಡಿಸುತ್ತಾರೆ.
ಮೇಲಿನ ತಕರಾರುಗಳು ಭಾರತದ ಕುರಿತ ಈ ಚಿಂತಕರ ಅಜ್ಞಾನವನ್ನೂ, ಅವೈಜ್ಞಾನಿಕತೆಯನ್ನೂ, ಮೌಢ್ಯತೆಯನ್ನೂ ಪ್ರದರ್ಶಿಸುತ್ತಿವೆ. ಈ ಚಿಂತಕರುಗಳು ತಪ್ಪಾದ ‘ಯೂರೋಪಿನ ಗ್ರಹಿಕೆ’ಗಳಿಂದ ಕೂಡಿದ ತಮ್ಮ ವಿವರಣೆಗಳನ್ನೇ ವೈಜ್ಞಾನಿಕ ಎಂದು, ತಾವೇ ವಿಜ್ಞಾನದ ಪಿತಾಮಹರೆಂಬ ತೀರ್ಮಾನಕ್ಕೆ ಬಂದಿದ್ದಾರೆ. ಜೊತೆಗೆ ಯೂರೋಪಿನ ಸೆಕ್ಯುಲರ್ ಚಿಂತನೆಯ ನಕಲನ್ನು ಭಾರತದಲ್ಲಿ ವೈಜ್ಞಾನಿಕತೆಯ ಹೆಸರಲ್ಲಿ ವ್ಯಾಪಾರ ಮಾಡುತ್ತಿರುವುದು ಕಂಡುಬರುತ್ತದೆ. ವಿಜ್ಞಾನಿಗಳ ಈ ನಡೆಯನ್ನು ಅವೈಜ್ಞಾನಿಕ, ಮೌಢ್ಯ ಎನ್ನಲು ಕಾರಣ ಅವರ ಆಚರಣೆ ಮತ್ತು ನಂಬಿಕೆಗಳ ನಡುವಿನ ಸಂಬಂಧ. ಅಂದರೆ ಬಾಹ್ಯಾಕಾಶ ನೌಕೆಯ ಉಡಾವಣೆಗೂ ದೇವರ ಮೇಲಿನ ನಂಬಿಕೆಗೂ ಸಂಬಂಧ ಇದೆ ಎಂಬುದು. ದೇವರೇ ಬಂದು ಕ್ಷಿಪಣಿಯನ್ನು ಉಡಾವಣೆ ಮಾಡುತ್ತಾನೆ ಎಂದೇನೂ ವಿಜ್ಞಾನಿಗಳು ನಂಬಿಲ್ಲವಲ್ಲ. ಹಾಗಿದ್ದರೆ ಅವರು ವರ್ಷಗಟ್ಟಲೇ ಶ್ರಮಪಟ್ಟು ತಯಾರಿಸುವ ಅವಶ್ಯಕತೆಯಾದರೂ ಏನಿತ್ತು. ಅಲ್ಲದೇ ಅದಕ್ಕೆ ನಿರ್ದಿಷ್ಟ ಕಾಲಕ್ಕೆ ಬೇಕಾಗುವಷ್ಟು ಇಂಧನವನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸುವ ಅಗತ್ಯವಾದರೂ ಏಕೆ?
ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೩
– ಷಣ್ಮುಖ ಎ
ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
- ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೧
- ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೨
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಚಿತ್ರಣ– ಕಾಯಿದೆ ಮತ್ತು ವಾಸ್ತವ ಸ್ಥಿತಿಗಳು
ಈ ವರದಿಯಲ್ಲಿ ಸಂಗ್ರಹಿಸಿರುವ ಅಂಕಿ-ಅಂಶ ಮತ್ತು ಉಲ್ಲೇಖಿತವಾಗಿರುವ ವಿವರಣೆಗಳನ್ನೇ ಗಮನಿಸಿದರೂ ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯು ಏಕೆ ವಿಫಲವಾಗುತ್ತಿದೆ ಎನ್ನುವುದು ಅರಿವಿಗೆ ಬರುತ್ತದೆ. ಈ ವರದಿಯಲ್ಲಿನ ಅಂಶಗಳು ಸ್ಪಷ್ಟಪಡಿಸುವ ಹಾಗೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಜಾತಿವ್ಯವಸ್ಥೆಯ ಚೌಕಟ್ಟಿನಡಿಯಲ್ಲಿ ನಿರೂಪಿಸಲಾದ ಸಾಮಾಜಿಕ ತಾರತಮ್ಯದ ಅಥವಾ ಅಸ್ಪೃಷ್ಯತೆಯ ಆಚರಣೆಯ ಹೆಸರಿನಲ್ಲಿ ದಾಖಲಾಗುತ್ತಿರುವುದು ಕೆಲವೇ ಪ್ರಕರಣಗಳು. ಅದರಲ್ಲೂ ನೇರವಾಗಿ ಈ ರೀತಿಯ ಪ್ರಕರಣಗಳಲ್ಲಿ ನಿಂದನೆ ಮತ್ತು ಹಲ್ಲೆಗಳನ್ನೊಳಗೊಂಡ ಪ್ರಕರಣಗಳೇ ಹೆಚ್ಚಿನವು. ಉಳಿದಂತೆ ಈ ವರದಿಯು ನಿಜಕ್ಕೂ ಸಾಮಾಜಿಕ ತಾರತಮ್ಯ, ಅಸ್ಪೃಷ್ಯತಾಚರಣೆ ಎನ್ನುವುಂತಹ ಪ್ರಕರಣಗಳನ್ನು ವಿರಳವಾಗಿ ಹೆಸರಿಸುತ್ತದೆ. ಉಳಿದಂತೆ ನಿಂದನೆ, ಹಲ್ಲೆ, ಭೂ ವಿವಾದ, ಗೋಮಾಳ, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಸಾಮಾನ್ಯ ಪ್ರಕರಣಗಳೇ ಹೆಚ್ಚಾಗಿವೆ.
ಈ ರೀತಿಯ ವ್ಯಾಜ್ಯಗಳು ಸಾಮಾನ್ಯವಾಗಿ ಜನರ ನಡುವೆ ದಲಿತರೆನಿಸಿಕೊಂಡಿರುವವರ ನಡುವೆ, ದಲಿತರಲ್ಲದವರ ನಡುವೆ ಮತ್ತು ದಲಿತರೆನಿಸಿಕೊಂಡವರು ಮತ್ತು ಅಲ್ಲದವರ ನಡುವೆ ನಡೆಯುತ್ತಲೇ ಇರುತ್ತವೆ. ಪ್ರಕರಣಗಳು ದಾಖಲಾಗುತ್ತಲೇ ಇರುತ್ತವೆ ಇದು ಸಾಮಾನ್ಯ ಸಂಗತಿ. ಆದರೆ,ಈ ರೀತಿಯಲ್ಲಿ ಸಾಮಾನ್ಯವಾಗಿ ದಾಖಲಾಗುವ ಪ್ರಕರಣಗಳಲ್ಲಿ ವಾದಿ ಪ್ರತಿವಾದಿಗಳು ದಲಿತರು ಮತ್ತು ದಲಿತೇತರರು ಆಗಿದ್ದರೆ, ಅದು ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯ್ದೆಯ ಅಡಿಯಲ್ಲಿ ದಾಖಲಾಗುತ್ತದೆ ಅಷ್ಟೇ. ಉಳಿದ ಸಂದರ್ಭದಲ್ಲಿ ಸಾಮಾನ್ಯ ಪ್ರಕರಣವೆಂದು ದಾಖಲಾಗುತ್ತದೆಯಷ್ಟೆ.
ಸಾಮಾನ್ಯವಾಗಿ ಯಾವುದೇ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗುವರೆಗೆ ಅದರಲ್ಲಿ ತಪ್ಪಿತಸ್ಥರು ಮತ್ತು ಮುಗ್ದರ ತೀರ್ಮಾನ ಸಾಧ್ಯವಿಲ್ಲ. ಅದರೆ ಅದೇ ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣವು ದಾಖಲಾದ ತಕ್ಷಣ ಅಲ್ಲಿ ಅಪರಾಧಿ ಮತ್ತು ಮುಗ್ದರ ತೀರ್ಮಾನವಾಗಿರುತ್ತದೆ. ಹಾಗಾಗಿಯೇ ಅಲ್ಲವೇ? ಇಲ್ಲಿ ಕೇವಲ ಪ್ರಕರಣ ದಾಖಲಾಗಿ ಕನ್ವಿಕ್ಷನ್ ಆಗದಿದ್ದರೂ, ಪೆಂಡಿಂಗ್ ಇದ್ದರೂ, ರಾಜಿಮಾಡಿಕೊಂಡಿದ್ದರೂ ಸಹ ಸರ್ಕಾರದ ಹಣಕಾಸಿನ ಪರಿಹಾರ ನೀಡಲಾಗಿರುತ್ತದೆ. ಅಲ್ಲದೆ ದೂರದಾರರೆನಿಸಕೊಂಡ ಮತ್ತು ದೌರ್ಜನ್ಯಕ್ಕೆ ಒಳಗಾದವರೆನಿಸಿಕೊಂಡ ದಲಿತರೂ ಸಹ ಪ್ರಕರಣಗಳನ್ನು ದಾಖಲು ಮಾಡಿ ಪರಿಹಾರ ಪಡೆದನಂತರ ಇಡೀ ಪ್ರಕರಣದ ಬಗ್ಗೆ ಆಸಕ್ತಿಯನ್ನೇ ತೋರದೆ ಕೆಲಸ ಮುಗಿಯಿತೆಂದು ಸುಮ್ಮನಿದ್ದುಬಿಡುತ್ತಿರುತ್ತಾರೆ.
ಈ ಕಾಯ್ದೆಯಡಿಯಲ್ಲಿ ದಲಿತರ ದೌರ್ಜನ್ಯ ಪ್ರಕರಣಗಳನ್ನು ಪರಿಭಾವಿಸುವುದರಲ್ಲಿಯೇ ಸಮಸ್ಯೆಗಳಿವೆ ಎನ್ನುವುದು ಒಂದೆಡೆಯಾದರೆ, ಮತ್ತೊಂದೆಡೆ ಹಳ್ಳಿಯ ದೀನರ ನಿಜವಾದ ಜಾತಿ ತಾರತಮ್ಯ ಅಥವಾ ಅಸ್ಪೃಷ್ಯತೆಯ ಆಚರಣೆಗಳ ಸಮಸ್ಯೆಗಳನ್ನು ಇದು ಹೇಗೆ ಪರಿಹರಿಸುತ್ತದೆ? ಎನ್ನುವ ಪ್ರಶ್ನೆ ಏಳುತ್ತದೆ. ಹೇಳಬೇಕೆಂದರೆ ಅಸ್ಪೃಷ್ಯತೆಯ ಆಚರಣೆಗಳ ಸಂದರ್ಭಕ್ಕಿಂತ ಅತಿಹೆಚ್ಚಾಗಿ ಈ ಕಾಯ್ದೆಯು ಬಳಕೆಯಾಗಿರುವುದೇ ಬೇರೆ ಸಂದರ್ಭಗಳಲ್ಲಿ. ಹಾಗಿದ್ದಪಕ್ಷದಲ್ಲಿ ಮಂತ್ರಿಗಳು ಮತ್ತು ಬುದ್ಧಿಜೀವಿ ವರ್ಗಗಳು ಈ ಕಾಯ್ದೆಯು ಪರಿಣಾಮಕಾರಿಯಾಗಿ ಅನುಷ್ಟಾನಗೊಳ್ಳುತ್ತಿಲ್ಲ, ಈ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿಯಾಗುವವರ ಪ್ರಮಾಣ ಅತ್ಯಂತ ಕಡಿಮೆ ಇದೆಯೆಂದು ಕಳವಳ ಪಡುವುದರ ಹಿಂದೆ ಯಾವ ವಾಸ್ತವ ಸಮಸ್ಯೆಯ ಕಾಳಜಿ ಇದೆ?
ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೨
– ಷಣ್ಮುಖ ಎ
ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
ಕ್ಷೇತ್ರಾಧ್ಯಯನ ಆಧಾರಿತ ಮಾಹಿತಿಗಳು ಮತ್ತು ವಿಶ್ಲೇಷಣೆ:
ಈ ಮೇಲಿನ ಪ್ರಶ್ನೆಯನ್ನು ಪರಿಶೀಲಿಸಲು ಒಂದು ಕ್ಷೇತ್ರಾಧಾರಿತ ಸಂಶೋಧನಾ ಪ್ರಾಜೆಕ್ಟ್ನ ಮಾಹಿತಿಗಳು ಕೆಲವು ವಿಶೇಷವಾದ ಆಸಕ್ತಿಕರ ಅಂಕಿ-ಅಂಶಗಳನ್ನು ಕೊಡುತ್ತವೆ. ಈ ಕ್ಷೇತ್ರಾಧ್ಯಯನದ ಮಾಹಿತಿಗಳು, ದಾಖಲಾಗುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಅವುಗಳು ಶಿಕ್ಷೆಯಾಗುವ ಪ್ರಕರಣಗಳ ಪ್ರಮಾಣದ ನಡುವಿನ ಅಂತರಕ್ಕೆ ಕಾರಣಗಳ ಬಗ್ಗೆ ಬೇರೆಯದೇ ರೀತಿಯಲ್ಲಿ ಯೋಚಿಸಲು ದಾರಿ ಮಾಡಿಕೊಡುತ್ತದೆ.
ಮೈಸೂರು ವಿಶ್ವವಿದ್ಯಾನಿಲಯದ ಆಂತ್ರೋಪಾಲಜಿ ವಿಭಾಗದ ಅಧ್ಯಾಪಕರೊಬ್ಬರು ತಮ್ಮ ಏಳುಜನ ಸಂಶೋದನಾ ಸಹಾಯಕರೊಂದಿಗೆ ಕರ್ನಾಟಕ ಸರ್ಕಾರದ ಪರವಾಗಿ ಬೆಂಗಳೂರಿನ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನ ಕೇಂದ್ರದ ವತಿಯಿಂದ ಒಂದು ಸಂಶೋಧನಾ ಅಧ್ಯಯನ ಕೈಗೊಂಡಿದ್ದರು. ಇದು ‘ಕರ್ನಾಟಕದಲ್ಲಿನ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯ ಮತ್ತು ದೌರ್ಜನ್ಯಕ್ಕೆ ಬಲಿಯಾದವರಿಗೆ ನೀಡಲಾಗಿರುವ ಪರಿಹಾರಗಳ’ ಬಗ್ಗೆ ಮಾಡಲಾದ ಒಂದು ಮೌಲ್ಯಮಾಪನ ಅಧ್ಯಯನವಾಗಿದೆ. ಇದು ಬಾಗಲಕೋಟೆಯೊಂದನ್ನುಳಿದು ಉಳಿದ ಕರ್ನಾಟಕದ ಎಲ್ಲಾ 26 ಜಿಲ್ಲೆಗಳಿಂದ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿ ಪರಿಹಾರಗಳನ್ನು ಪಡೆದ ಫಲಾನುಭವಿ ದಲಿತರನ್ನು ಮತ್ತು ಅಪರಾಧಿಗಳನ್ನು ಗುರುತಿಸಿ ಅವರುಗಳಲ್ಲಿ ಪ್ರತಿಜಿಲ್ಲೆಯಿಂದ ಶೇ. 10ರಷ್ಟು ಜನರನ್ನು ಸಂದರ್ಶನ ನಡೆಸಿದ್ದಾರೆ.
ಮೊದಲಿಗೆ ಅವರ ಅಧ್ಯಯನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳಿಗೆ ಮೂಲಕಾರಣ (Root Cause) ವಾದ ಅಂಶಗಳಾವುವು ಮತ್ತು ಅವುಗಳಲ್ಲಿ ಯಾವ ಯಾವ ರೀತಿಯ ನಡವಳಿಕೆಗಳು ಬರುತ್ತವೆ ಎಂಬುದನ್ನು ಯಾವ ರೀತಿ ಗುರುತಿಸುತ್ತಾರೆ ಎನ್ನುವುದನ್ನು ನೋಡೋಣ.
ದಲಿತರ ಮೇಲಿನ ದೌರ್ಜನ್ಯಕ್ಕೆ ಮೂಲಕಾರಣಗಳು: ಈ ವರದಿಯಲ್ಲಿ ನಮೂದಿಸಿರುವಂತೆ ಪೋಲೀಸರು ಎಫ್ಐಆರ್ನಲ್ಲಿ ಉಲ್ಲೇಖಿಸಿರುವ ಕಾರಣಗಳು ಮತ್ತು ಅಧ್ಯಯನದ ಸಂದರ್ರ್ಭದಲ್ಲಿ ಸಂದರ್ಶಿತ ಮಾಹಿತಿದಾರರು ನೀಡಿದ ಕಾರಣಗಳನ್ನು ತುಲನೆ ಮಾಡಿ ಅವುಗಳನ್ನು ವರ್ಗೀಕರಿಸಿದ್ದಾರೆ. ಅವುಗಳೆಂದರೆ: ಸಾಮಾಜಿಕ ತಾರತಮ್ಯ, ಭೂವಿವಾದ, ರಾಜಕೀಯ ವೈಷಮ್ಯ, ಹಿಂದಿನ ವೈರತ್ವ, ಆರ್ಥಿಕ ವ್ಯವಹಾರಗಳು, ಕಾರ್ಮಿಕ ವ್ಯಾಜ್ಯಗಳು, ಮತ್ತು ಇತರೆ. ಅವುಗಳ ಕುರಿತು ಸಂಕ್ಷಿಪ್ರವಾಗಿ ನೋಡುವುದಾದರೆ,
- ಸಾಮಾಜಿಕ ತಾರತಮ್ಯ (Social Discrimination): ಈ ವರ್ಗೀಕರಣದಡಿಯಲ್ಲಿ ಅಸ್ಪೃಷ್ಯತೆ ಆಚರಣೆಗಳು ಎನ್ನಬಹುದಾಂತಹ ಅಂಶಗಳನ್ನು ಪಟ್ಟಿಮಾಡಲಾಗಿದೆ ಎನ್ನುತ್ತದೆ ವರದಿ. ಮುಖ್ಯವಾಗಿ, ಸಮಾಜದ ಪ್ರತಿಯೊಂದು ಜಾತಿಗಳು ಪರಸ್ಪರ ವ್ಯವಹರಿಸುವಂತಹ ಪ್ರದೇಶಗಳಾದ ಶಾಲೆಗಳು, ಆಸ್ಪತ್ರೆಗಳು, ಗ್ರಾಮ ಅಥವಾ ಪಟ್ಟಣ ಪಂಚಾಯಿತಿಗಳು, ಮತ್ತಿತರೆ ಕಾರ್ಯಕ್ಷೇತ್ರಗಳಲ್ಲಿ ಮೇಲ್ಜಾತಿಗಳ ಸದಸ್ಯರಿಂದ ಅಸ್ಪೃಷ್ಯತೆಯ ಆಚರಣೆಗಳೆಂದು ಕಂಡುಬಂದ ಅಂಶಗಳು. ಅವುಗಳೆಂದರೆ:
- ಶಾಲೆಗಳಲ್ಲಿ ಪರಿಶಿಷ್ಟಜಾತಿಯ ಮಕ್ಕಳನ್ನು ಪ್ರತ್ಯೇಕ ಬೆಂಚ್ಗಳಲ್ಲಿ ಕುಳಿತುಕೊಳ್ಳುವಂತೆ ಮಾಡಿರುವುದು.
- ವಿಶೇಷ ಸಮಾರಂಭಗಳು, ವಿಧಿ ಆಚರಣೆಗಳು ಹಬ್ಬಗಳ ಸಂದರ್ಭಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ಊಟಕ್ಕೆ ಪ್ರತ್ಯೇಕ ಸಾಲಿನಲ್ಲಿ ಕೂರಿಸುವುದು.
- ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನಗಳನ್ನು ಪಡೆಯದಂತೆ ಪರಿಶಿಷ್ಟ ಜಾತಿಯ ಸದಸ್ಯರನ್ನು ತಡೆಯುವುದು.
- ಗ್ರಾಮೀಣ ಪ್ರದೇಶಗಳ ಕೆಲವು ಹೊಟೇಲುಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರುಗಳಿಗೆ ಪ್ರತ್ಯೇಕ ಲೋಟ ಮತ್ತು ತಟ್ಟೆಗಳಲ್ಲಿ ಉಪಾಹಾರ ಪಾನಿಯಗಳನ್ನು ನೀಡಿರುವುದು.
- ಹಲವು ಹಳ್ಳಿಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ದೇವಾಲಯ ಪ್ರವೇಶಕ್ಕೆ ನಿರಾಕರಿಸುವುದು.
- ಸಾರ್ವಜನಿಕ ಕೊಳವೆಗಳಿಂದ ನೀರು ಪಡೆಯುವಾಗ ಉನ್ನತ ಜಾತಿಯ ಸದಸ್ಯರು ಪರಿಶಿಷ್ಟ ಜಾತಿಯ ಸದಸ್ಯರೊಂದಿಗೆ ಜಗಳವಾಡುವುದು ಕಂಡುಬರುತ್ತದೆ. ಮೇಲ್ಜಾತಿಯವರು ಕೆಳಜಾತಿಯವರಿಗೆ ಕೆಲವು ಪ್ರದೇಶಗಳಲ್ಲಿ ನೀರು ಹಿಡಿದುಕೊಳ್ಳಲು ಬಿಡುವುದಿಲ್ಲ.
ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೧
– ಷಣ್ಮುಖ ಎ
ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ-577451
ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಅಸ್ಪೃಷ್ಯತೆಯ ಆಚರಣೆಯ ಮೂಲಕ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಾ ಇವೆ. ಈ ರೀತಿಯ ದೌರ್ಜನ್ಯಗಳಿಂದ ದಲಿತರನ್ನು ರಕ್ಷಿಸಿ ಅವರನ್ನು ಅಸ್ಪೃಷ್ಯತೆಯ ಆಚರಣೆಗಳಿಂದ ಮುಕ್ತಿಗೊಳಿಸುವ ಒಂದು ಮಹಾಅಸ್ತ್ರವೆಂಬಂತೆ ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆಯನ್ನು ಭಾರತ ಸರ್ಕಾರ 1989ರಲ್ಲಿ ಜಾರಿಗೆ ತಂದಿದೆ. ಈ ಕಾಯಿದೆಯ ಜಾರಿಯಾದ ಎರಡು ದಶಕಗಳ ತರುವಾಯ ಈ ಕಾಯಿದೆಯ ಜಾರಿ ಮತ್ತು ಅದರ ಪರಿಣಾಮದ ಕುರಿತು ಚರ್ಚೆಗಳು ಮತ್ತು ಅಧ್ಯಯನಗಳು ನಡೆಯುತ್ತಿವೆ. ಬಹುತೇಕ ಈ ಚರ್ಚೆಗಳಲ್ಲಿನ ಸಾಮಾನ್ಯ ನಿಲುವೆಂದರೆ ಅಸ್ಪೃಷ್ಯತೆ ಆಚರಣೆಯ ವಿರುದ್ದ ಪ್ರಬಲವಾದ ಕಾಯಿದೆ ಇದ್ದರೂ ಇದರ ಪರಿಣಾಮಕಾರಿ ಜಾರಿಯಲ್ಲಿ ಅಧಿಕಾರಿಗಳು ಆಸಕ್ತಿವಹಿಸದಿರುವುದರಿಂದ ಈ ಕಾಯಿದೆಯಿಂದ ದಲಿತರಿಗೆ ಸಿಗಬೇಕಾದ ನ್ಯಾಯ ದೊರೆಯುತ್ತಿಲ್ಲ ಎನ್ನುವ ಸಾಮಾನ್ಯ ಆತಂಕ-ಕಾಳಜಿಗಳು ವ್ಯಕ್ತವಾಗುತ್ತಿವೆ.
ಪ್ರಸ್ತುತ ಲೇಖನವು ಈ ಆತಂಕಗಳ ವಾಸ್ತವತೆಯನ್ನು ಪರೀಕ್ಷಿಸಲು ಪ್ರಯತ್ನಿಸಿದೆ.ಸರ್ಕಾರವೇ ನಡೆಸಿರುವ ಈ ಕಾಯಿದೆಯ ಮೌಲ್ಯಮಾಪನ ಅಧ್ಯಯನ ವರಧಿಯ ಅಂಕಿಅಂಶಗಳು ಮತ್ತು ಅದರಲ್ಲಿನ ವಿವರಣೆಗಳನ್ನು ಆದರಿಸಿ ಈ ಕಾನೂನಿನಡಿಯಲ್ಲಿ ದಾಖಲಾಗಿರುವವ ಪ್ರಕರಣಗಳ ವಾಸ್ತವ ಸ್ಥಿತಿಯನ್ನು ಇಲ್ಲಿ ಪರೀಕ್ಷಿಸಲಾಗಿದೆ.
ಈ ವರದಿಯಲ್ಲಿ ಉಲ್ಲೇಖವಾಗಿರುವಂತೆ, ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿದ ದಲಿತರು ಈ ಕಾನೂನಿನಿಂದ ದೊರೆಯುವ ಪರಿಹಾರ ಪಡೆದ ನಂತರ ಪ್ರಕರಣದ ಕುರಿತು ಆಸಕ್ತಿಯನ್ನು ಕಳೆದುಕೊಳ್ಳುವುದೇ ಪ್ರಕರಣಗಳು ಇತ್ಯರ್ಥಗೊಳ್ಳದಿರಲು ಮುಖ್ಯ ಕಾರಣವೆಂದು ಗುರುತಿಸುತ್ತದೆ. ಜೊತೆಗೆ, ಈ ಕಾನೂನಿನಡಿಯಲ್ಲಿ ಅಸ್ಪೃಷ್ಯತೆಯ ಆಚರಣೆಯ ಕಾರಣಕ್ಕೆ ದಾಖಲಾಗುವ ಪ್ರಕರಣಗಳು ಅತಿಕಡಿಮೆ ಇದ್ದು ಇತರೇ ಜಗಳ-ವ್ಯಾಜ್ಯಗಗಳೇ ಈ ಕಾಯಿದೆಯಡಿಯಲ್ಲಿ ದಾಖಲಾಗುತ್ತಿರುವ ಅಂಶವನ್ನು ಎತ್ತಿ ತೋರಿಸುತ್ತವೆ.ಈ ರೀತಿಯಲ್ಲಿ ಈ ಕಾಯಿದೆಯು ಅಸ್ಪೃಷ್ಯತೆಯ ಆಚರಣೆಯಲ್ಲದ ವಿಚಾರಗಳಿಗೆ (ದುರು)ಉಪಯೋಗವಾಗುತ್ತಿರುವುದಕ್ಕೆ ಈ ಕಾಯಿದೆ ರೂಪುಗೊಂಡಿರುವ ಸೈದ್ಧಾಂತಿಕ ಚೌಕಟ್ಟಿನಲ್ಲಿಯೆ ಸಮಸ್ಯೆ ಇರಬೇಕೆಂದು ಈ ಲೇಖನವು ತರ್ಕಿಸುತ್ತದೆ.
ಮುಖ್ಯವಾಗಿ, ಭಾರತೀಯ ಸಮಾಜದ ಕುರಿತ ಜಾತಿವ್ಯವಸ್ಥೆಯ ಚೌಕಟ್ಟಿನ ಹಿನ್ನೆಲೆಯಲ್ಲಿ ಕೆಳಜಾತಿ-ಮೇಲ್ಜಾತಿಗಳ ಕುರಿತು ವಸಾಹತುಶಾಹಿ ಸ್ಟೀರಿಯೋಟೈಪುಗಳು ಸಮಾಜವಿಜ್ಞಾನದಲ್ಲಿ ಹರಡಿಕೊಂಡಿದೆ. ಜಾತಿಗಳ ಕುರಿತ ಈ ರೀತಿಯ ಸ್ಟೀರಿಯೋಟೈಪುಗಳನ್ನು ಆಧರಿಸಿದ ನಿರೂಪಣೆಗಳಿಂದ ಹುಟ್ಟಿಕೊಂಡಿರುವ ಬೌದ್ಧಿಕ ವಲಯದಲ್ಲಿನ ಸಾಮಾನ್ಯ ಗ್ರಹಿಕೆಗಳು ಈ ಕಾಯಿದೆ ರೂಪಿತಗೊಳ್ಳಲು ಕಾರಣವಾಗಿದೆ. ಈ ಸಾಮಾನ್ಯಗ್ರಹಿಕೆಗಳು ಇಲ್ಲಿಯ ವಾಸ್ತವ ಸ್ಥಿತಿಯಾಗಿರದೇ ಇರುವುದರಿಂದ ಈ ಕಾಯಿದೆಯಿಂದ ತಮ್ಮ ಸಮಸ್ಯೆಗಳನ್ನು ಪರಿಹಾರ ಮಾಡಿಕೊಂಡು ನ್ಯಾಯಪಡೆಯುವುದಕ್ಕಿಂತ ಹೆಚ್ಚಾಗಿ ಲಾಭ ಪಡೆಯುವ ಕಡೆಗಷ್ಟೇ ಒಲವಿದೆ. ಅಲ್ಲದೆ ದಲಿತರ ಸಮಸ್ಯೆಗಳನ್ನು ಪರಿಹರಿಸುವುದಕ್ಕಿಂತ ಹೆಚ್ಚಾಗಿ ಈ ಕಾಯಿದೆಯು ಹಲವು ಹೊಸ ರೀತಿಯ ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ ಎಂದು ಈ ಲೇಖನವು ವಾದಿಸುತ್ತದೆ. ಮತ್ತಷ್ಟು ಓದು 
ದೀಪಾವಳಿ ಅಭ್ಯಂಜನ!
– ತುರುವೇಕೆರೆ ಪ್ರಸಾದ್
ಪ್ರತಿವರ್ಷ ದೀಪಾವಳಿ ಬರುತ್ತದೆ, ಹೋಗುತ್ತದೆ. ವರ್ಷದಿಂದ ವರ್ಷಕ್ಕೆ ದೀಪಾವಳಿ ಸಂಭ್ರಮದಲ್ಲಿ ನನ್ನ ಬೆಲೆ ಮಾತ್ರ ನಮ್ಮ ರೂಪಾಯಿ ತರ ಕೆಳಕ್ಕೆ ಕೆಳಕ್ಕೆ ಜಾರುತ್ತಲೇ ಹೋಗುತ್ತಾ ಪಾತಾಳ ಮುಟ್ಟುತ್ತಿದೆ. ಮದುವೆಯಾದ ಹೊಸದರಲ್ಲಿ ಢಂ..ಢಮಾರ್ ಅನ್ನುತ್ತಿದ್ದ ದೀಪಾವಳಿ ಈಗ ಟುಸ್ಸಾಗಿದೆ. ಆಗಿನ ಉಪಚಾರಕ್ಕೂ ಈಗಿನ ಸಂಭ್ರಮಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಹೇಗೆ ಎಂದಿರಾ? ಕೇಳಿ ಹೇಳ್ತೀನಿ..!
ಮದುವೆಯಾದ ಹೊಸದರಲ್ಲಿ ದೀಪಾವಳಿಗೆಂದು ಮಾವನ ಮನೆಗೆ ಹೋದಾಗ ಅದೇನು ಉಪಚಾರ? ಅದೇನು ಗೌರವ..? ಬೆಳಿಗ್ಗೆ ಎದ್ದ ಕೂಡಲೇ ಹೆಂಡತಿ ಟವಲ್ ಹಿಡಿದು ನಗುನಗುತ್ತಾ ಹಿಂದೆಯೇ ಬರುತ್ತಿದ್ದಳು. ಮನೆಯ ಬಾಗಿಲುದ್ದಕ್ಕೂ ಅಕ್ಕ ಪಕ್ಕದಲ್ಲಿಟ್ಟಿರುತ್ತಿದ್ದ ಕೆರಕ( ಸಗಣಿ ಉಂಡೆ) ತುಳಿಯದಂತೆ ಎಚ್ಚರ ವಹಿಸುತ್ತಿದ್ದಳು. ಸಗಣಿಯನ್ನು ಮೈ ಕೈಗೆಲ್ಲಾ ಬಳಿದುಕೊಂಡು ತಟಪಟ ತಟ್ಟುತ್ತಾ ಕೆರಕನ ಸೃಷ್ಟಿಯಲ್ಲಿ ನಿರತರಾಗಿರುತ್ತಿದ್ದ ಚಿಲ್ಟಾರಿಗಳನ್ನು ‘ ಏಯ್! ಸ್ವಲ್ಪ ಇರ್ರೋ! ಇವರಿಗೆ ಸಿಡಿಯುತ್ತೆ’ ಎಂದು ನನ್ನನ್ನು ಸೆರಗಲ್ಲಿ ಮರೆಮಾಡಿಕೊಂಡು ಬಚ್ಚಲಿಗೆ ಕರೆದೊಯ್ಯುತ್ತಿದ್ದಳು. ಒಮ್ಮೆ ಬಾಗಿಲ ಪಕ್ಕ ಇಟ್ಟಿದ್ದ ಇಂತದ್ದೊಂದು ಸಗಣಿ ಉಂಡೆಯನ್ನು ತುಳಿದೇ ಬಿಟ್ಟಿದ್ದೆ. ಆಗಂತೂ ನನ್ನ ಹೆಂಡತಿ ಬಾಂಬ್ ತುಳಿದೆ ಎನ್ನುವಂತೆ ಮನೆಯವರ ಮೇಲೆಲ್ಲಾ ಎಗರಾಡಿ ನನ್ನ ಕಾಲಿಗೆ ಎರಡು ಮೂರು ಟ್ರಿಪ್ ಅಭಿಷೇಕ ಮಾಡಿಸಿ, ಅದಕ್ಕೆ ಘಂ ಎನ್ನುವ ಗಂದದೆಣ್ಣೆ ಪೂಸಿ ಪುಣ್ಯಾಹ ಮಾಡಿ ಸಗಣಿ ವಾಸನೆಯಿಂದ ಮುಕ್ತವಾಗಿಸಿದ್ದಳು.
ಈಗ ಮದುವೆಯಾಗಿ 20 ವರ್ಷಗಳ ನಂತರ ಸೀನೇ ಬೇರೆ! ದೀಪಾವಳಿ ಪ್ರಾರಂಭವಾಗುವುದೇ ನನ್ನ ಸುಗುಣೆ ಹೆಂಡತಿಯ ಸಗಣಿ ಸುಪ್ರಭಾತದಿಂದ! ‘ ಏನ್ರೀ! ಇನ್ನು ಮಲಗೇ ಇದೀರಿ? ಸಗಣಿ ಯಾವಾಗ್ರೀ ಹಾಕೋದು?’ ಎಂದು ಕೂಗಿದರೆ ಅಕ್ಕ ಪಕ್ಕದ ಮನೆಯವರು ಏನಂದ್ಕೊಬೇಕು ಹೇಳಿ? ಗಂಡ ಸಗಣಿ ಹಾಕುವ ದನ ಎಂಬ ಸತ್ಯ ಜಗಜ್ಜಾಹೀರಾದರೆ ನನ್ನ ಮರ್ಯಾದೆ ಗತಿ ಏನು ಎಂದು ಇವಳು ಸ್ವಲ್ಪವಾದರೂ ಯೋಚಿಸಿದ್ದಾಳಾ? ನಾನು ಮೇಲೆದ್ದು ಸಗಣಿ ಹಾಕುವ ದನ ಹುಡುಕಿ ಮನೆ ಮನೆ, ಹಟ್ಟಿ ಹಟ್ಟಿ ತಿರುಗಬೇಕಿತ್ತು. ಯಾರದ್ದೋ ಕೊಟ್ಟಿಗೆಯಲ್ಲಿ ಸಗಣಿಗಾಗಿ ಕಾದು ನಿಂತವರ ಹಿಂದೆ ನಿಂತು ದನ ಕೊಟ್ಟಿಗೆಯಲ್ಲಿ ಸಗಣಿ ಹಾಕುವ ತನಕ ಕಾದು ಆ ಸಗಣಿ ಭೂಸ್ಪರ್ಶ ಮಾಡುವ ಮುಂಚೆಯೇ ಡೈವ್ ಹೊಡೆದು ಅದನ್ನು ಅಂಗೈಯಲ್ಲಿ ಹಿಡಿಯಬೇಕಿತ್ತು.ಆಗ ನನಗೆ ಚಿಕ್ಕ ಹುಡುಗನಾಗಿದ್ದಾಗ ಉಡುಸಲಮ್ಮ ಉತ್ಸವದ ಮುಂದೆ ಸೋಮಂಗೆ ಬಾಳೆಹಣ್ಣಿನ ರಸಾಯನ ಮಣೆ ಹಾಕಿದಾಗ ಹುಡುಗರು ಅದಕ್ಕೆ ಮುಗಿ ಬೀಳುತ್ತಿದ್ದುದು ನೆನಪಾಗುತ್ತಿತ್ತು. ದೇವರೇ ಎಂತ ಕಾಲ ಬಂತಪ್ಪ ? ಎಂದು ಸಗಣಿಯನ್ನು ಎರಡೂ ಕೈಲಿ ಹಿಡಿದು ಬರುವಾಗ ದಾರಿಯುದ್ದಕ್ಕೂ ಆಂಟಿಯರು ಕಿಸಕ್ಕನೇ ನಗುತ್ತಿದ್ದರು. ಕೆಲವರಂತೂ ‘ತಲೆಲಿರೋದನ್ನ ಕೈಗೆ ಯಾಕೆ ತಕ್ಕೊಂಡ್ರಿ?’ ಅಂತ ತಮಾಷೆ ಮಾಡಿದ್ದೂ ಇತ್ತು. ಇನ್ನು ಕೆಲವರು ಆಂಟಿಯರು ದಡಾರನೆ ಮನೆಯಿಂದಾಚೆ ಹೊಸಲು ದಾಟಿ ಓಡಿ ಬಂದು ‘ಅಂಕಲ್! ಒಂದು ಗಜುಗ ಸಗಣಿ ಕೊಡ್ತೀರಾ? ನಮ್ಮೆಜಮಾನರು ಸಗಣಿ ಹುಡುಕಿಕೊಂಡು ಎಲ್ಲಿ ಹಾಳಾಗಿ ಹೋದ್ರೋ! ಇನ್ನೂ ಬಂದಿಲ್ಲ’ ಎಂದು ಸಗಣಿ ಹುಡುಕಲು ಹೋದ ಗಂಡಂದಿರಿಗೆ ಹಿಡಿಶಾಪ ಹಾಕುತ್ತಾ ನನ್ನ ಕೈಯ್ಯಿಂದ, ಮೊರದಿಂದ ಸಗಣಿ ಬಾಚಿಕೊಂಡು ಹೋಗುತ್ತಿದ್ದರು.




