ವಿಷಯದ ವಿವರಗಳಿಗೆ ದಾಟಿರಿ

Recent Articles

13
ಮಾರ್ಚ್

ವಾಸನ್ ಐ ಕೇರ್ ಎಂಬ “ಡೋಂಟ್ ಕೇರ್” ಕಂಪೆನಿಯ ಕತೆ

_ ರೋಹಿತ್ ಚಕ್ರತೀರ್ಥ

Vasan-WhenAt60ವಾಸನ್ ಐ ಕೇರ್ – ಹೆಸರು ಕೇಳಿಯೇ ಇರುತ್ತೀರಿ. ಟಿವಿಯಲ್ಲಿ, ಸಿನೆಮಾ ಪರದೆಗಳಲ್ಲಿ, ಮಾಲ್‍ಗಳಲ್ಲಿ, ರಸ್ತೆಬದಿಯ ಆಳೆತ್ತರದ ಹೋರ್ಡಿಂಗ್‍ಗಳಲ್ಲಿ, ಪತ್ರಿಕೆಯ ಪುಟಗಳಲ್ಲಿ – ಹೀಗೆ ಎಲ್ಲೆಂದರಲ್ಲಿ ಇದರ ಜಾಹೀರಾತು ನಿಮ್ಮ ಕಣ್ಣಿಗೆ ಬಿದ್ದಿರುತ್ತದೆ. ನಿಮ್ಮ ಕಣ್ಣುಗಳ ಕಾಳಜಿ ನಾವು ಮಾಡುತ್ತೇವೆ; ಒಮ್ಮೆ ಭೇಟಿ ಕೊಡಿ ಎಂದು ಅವರು ಪ್ರೀತಿಯಿಂದ ಕರೆದದ್ದನ್ನು ಕಂಡು ಖುಷಿಯಾಗಿ ಒಂದೆರಡು ಬಾರಿ ಭೇಟಿ ಇತ್ತಿರಲೂಬಹುದು. ಅಥವಾ ಈ ಲೇಖನವನ್ನು ನೀವು ವಾಸನ್ ಐ ಕೇರ್‍ನಲ್ಲಿ ಪರೀಕ್ಷಿಸಿ ಕೊಂಡ ಕನ್ನಡಕದ ಮೂಲಕವೇ ಓದುತ್ತಿರಲೂಬಹುದು! ಬೆಂಗಳೂರಂಥ ಸಿಟಿಗಳಲ್ಲಿ ಬೀದಿಗೊಂದರಂತೆ ತಲೆ ಎತ್ತಿರುವ ವಾಸನ್ ನೇತ್ರಾಸ್ಪತ್ರೆಗಳು ಕೇವಲ ಮೂರು ವರ್ಷಗಳ ಹಿಂದೆ ಅಪರೂಪವಾಗಿದ್ದವು. ಐದು ವರ್ಷಗಳ ಹಿಂದೆಯಂತೂ ಅವುಗಳ ಹೆಸರನ್ನೇ ಯಾರೂ ಕೇಳಿರಲಿಲ್ಲ. ಈ ಕ್ಲಿನಿಕ್ ಯಾ ಆಸ್ಪತ್ರೆ ಅಷ್ಟೊಂದು ವೇಗವಾಗಿ ಬೆಳೆಯಲು ಏನು ಕಾರಣ? ಇದರ ಹಿಂದಿನ ಪ್ರೇರಕಶಕ್ತಿ ಯಾರು? ಇವನ್ನೆಲ್ಲ ತಿಳಿದುಕೊಳ್ಳಬೇಕಾದರೆ ನಾವು ವಾಸನ್ ಚರಿತ್ರೆಯಲ್ಲಿ ನಡೆದುಹೋಗಿರುವ ಒಂದಷ್ಟು ಘಟನೆಗಳನ್ನು ಬಹಳ ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಅಂದಹಾಗೆ, 2004ರಿಂದ 14ರವರೆಗೆ ನಮ್ಮ ದೇಶವನ್ನು ಆಳಿಹೋದ ಯುಪಿಎ ಸರಕಾರದ ಹತ್ತುಹಲವು ಹಗರಣಗಳ ಪಟ್ಟಿಯಲ್ಲಿ ವಾಸನ್ ಹೆಸರನ್ನೂ ದೊಡ್ಡದಾಗೇ ಬರೆಯಬೇಕಾಗುತ್ತದೆಂಬ ವಿಷಯ ನಿಮಗೆ ಅಚ್ಚರಿ ಮೂಡಿಸಬಹುದು. ಇಡೀ ಕತೆ ಶುರುವಾಗುವುದು 2007ರಲ್ಲಿ.

ಮತ್ತಷ್ಟು ಓದು »

12
ಮಾರ್ಚ್

“ಯೇಗ್ದಾಗೆಲ್ಲಾ ಐತೆ ” (ಪುಸ್ತಕ ಪರಿಚಯ)

– ನಾಗೇಶ ಮೈಸೂರು

4046ಕನ್ನಡದಲ್ಲಿ ಪುಸ್ತಕಗಳು ಒಂದು ಮುದ್ರಣ ಕಾಣುವುದೇ ಕಷ್ಟ. ಹೆಚ್ಚು ಪುಸ್ತಕಗಳು ಅಚ್ಚಿನ ಮನೆಯ ಮುಖವನ್ನೆ ಕಾಣುವುದಿಲ್ಲ. ಅಂತದ್ದರಲ್ಲಿ ಪುಸ್ತಕವೊಂದು ಹತ್ತು ಬಾರಿಗೂ ಮೀರಿ ಮುದ್ರಣ ಭಾಗ್ಯ ಕಂಡಿದೆಯೆಂದರೆ ? ಖಂಡಿತ ಅದರಲ್ಲೇನೊ ವಿಶೇಷ ಇರಲೇಬೇಕು. ಹಾಗೆಂದುಕೊಂಡೇ ಬೆಂಗಳೂರಿಗೆ ಭೇಟಿಯಿತ್ತಾಗ ಕೊಂಡು ತಂದ ಪುಸ್ತಕ – ‘ಯೇಗ್ದಾಗೆಲ್ಲಾ ಐತೆ’. ೨೫ ಸಾವಿರಕ್ಕೂ ಅಧಿಕ ಪ್ರತಿಗಳು ಅಚ್ಚಾಗಿದ್ದೇ ಅಲ್ಲದೆ ಇತರ ನಾಲ್ಕು ಭಾಷೆಗಳಿಗೂ ಅನುವಾದವಾಗಿದ್ದು, ನಾಟಕದ ರೂಪದಲ್ಲು ಜನಮನ ತಲುಪಿದ್ದು – ಇದೆಲ್ಲಾ ನೋಡಿದರೆ ಚಾಪೆಯಡಿ ನುಸುಳುವ ನೀರಂತೆ ಹರಿದು ಜನಪ್ರಿಯವಾಗುವುದು ಈ ಪುಸ್ತಕದ ‘ಯೇಗ್ದಾಗೇ’ ಇರುವಂತೆ ಕಾಣುತ್ತಿದೆ.

ಒಂಬತ್ತಿಂಚಿನ ಪೀಜಾಗು ೩೦೦ ರಿಂದ ೬೦೦ ರೂಪಾಯಿ ಪೀಕುವ ಈ ಕಾಲದಲ್ಲಿ, ೧೪೦ ಪುಟಗಳ ಈ ಪುಸ್ತಕ, ಎಷ್ಟೋ ಕಡೆ   ತೆರುವ  ಕಾಫಿಯ  ಕಾಸಿಗಿಂತಲು   ಅಗ್ಗವಾಗಿ  ೬೦  ರೂಪಾಯಿಗೆ ಸಿಕ್ಕಿತ್ತು ! ರೆಸ್ಟೋರೆಂಟಿನಲ್ಲಿ ಹಿಂದೆಮುಂದೆ ನೋಡದೆ ಸಾವಿರಾರು ಸುರಿವ ನಮಗೆ – ವರ್ಷಕ್ಕೊಂದು  ಸಾರಿಯಾದರು ಕನ್ನಡ ಪುಸ್ತಕ ಕೊಳ್ಳುವುದು ‘ ಯೇಗ್ದಾಗೆ ಬರ್ದಿಲ್ಲ’ ಅಂತ ಕಾಣುತ್ತೆ. ಆದರು ಪ್ಲೀಸ್ – ಓದಲಿ, ಬಿಡಲಿ ಛಾನ್ಸ್ ಸಿಕ್ಕಿದ್ರೆ ಈ ಪುಸ್ತಕ ಮಾತ್ರ ಕೊಂಡುಕೊಂಡು ಬಿಡಿ. ಯಾಕೇಂದ್ರೆ ಈ ಪುಸ್ತಕ ಮಾರಿ ಬಂದ ಆದಾಯವೆಲ್ಲ ನೇರವಾಗಿ ಹೋಗೋದು ಬೆಳಗೆರೆಯ ಶ್ರೀ ಶಾರದಾಮಂದಿರ ವಿದ್ಯಾಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳಿಗೆ. ಓದದೇ ಇದ್ದರೂ ನಿಮ್ಮಿಂದ ಪುಕ್ಕಟೆಯಾಗಿ ಸಮಾಜ ಸೇವೆ ಮಾಡಿಸುತ್ತೆ ಈ ಪುಸ್ತಕ – ಅದೂ ತೀರಾ ಅಗ್ಗವಾಗಿ!

ಈ ಪುಸ್ತಕ ಮೂಲತಃ ಶ್ರೀ ಸಾಮಾನ್ಯನಂತಿದ್ದೂ ಅದ್ಭುತ ಯೋಗಿಯ ಬಾಳು ಬದುಕಿದ ಶ್ರೀ ಮುಕುಂದೂರು ಸ್ವಾಮಿಗಳ ‘ಪವಾಡ’ ವನ್ನು ಕುರಿತದ್ದು. ಪವಾಡವೆಂದರೆ ಇದು ಯಾವುದೊ ‘ಛೂ ಮಂತ್ರಕಾಳಿ’ಯ ತರದ ಬೂಟಾಟಿಕೆಯ ಪುಸ್ತಕವೆಂದು ಮೂಗು ಮುರಿಯಬೇಡಿ ತಾಳಿ… ಈ ಸ್ವಾಮಿಗಳನ್ನು ಹತ್ತಿರದಿಂದ ಕಂಡು ಅಲ್ಲೇನಾದರು ಢೋಂಗಿತನವಿತ್ತೆ ಎಂದು ಸ್ವತಃ ತಾವೇ ಅಳೆದು ನೋಡಲೆತ್ನಿಸಿದ ಶ್ರೀ ಬೆಳಗೆರೆ ಕೃಷ್ಣಶಾಸ್ತ್ರಿಗಳು, ವಿಜ್ಞಾನದ ನಿಲುಕಿಗೆ ಸಿಗದ ನೂರಾರು ಘಟನೆ, ಅನುಭವಗಳಿಂದ ವಿಸ್ಮಿತರಾಗಿ ನೆನಪಿನ ಕೋಶದಿಂದ ಸಿಕ್ಕಷ್ಟನ್ನು ಹೆಕ್ಕಿ ಕೊನೆಗೆ ಈ ಪುಸ್ತಕರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ. ಒಂದು ವೇಳೆ ಬರೆಯುವ ಉದ್ದೇಶದಿಂದಲೇ ಅಭ್ಯಸಿಸಿ ಬರೆದಿದ್ದರೆ ಈ ಪುಸ್ತಕ ಇನ್ನೂ ಹೇಗಿರುತ್ತಿತ್ತೊ ?!
ಮತ್ತಷ್ಟು ಓದು »

10
ಮಾರ್ಚ್

ಪಕ್ಷಿಗಳಿಗೆ ಒಂದು ಬೊಗಸೆ ನೀರು ಕೊಡಿ.ಪ್ಲೀಸ್…!

9
ಮಾರ್ಚ್

ನನ್ನಿ- ತಾತ್ವಿಕ ಒಳಸುಳಿಗಳ ವಿಶ್ಲೇಷಣೆ.

ನವೀನ ಗಂಗೋತ್ರಿ

12122868_977678548941892_2941475822589158080_nಗಂಭೀರ ಓದುಗರು, ನೋಡುಗರು, ಕನ್ನಡದಲ್ಲಿ ಕಡಿಮೆಯಾದ್ದರಿಂದಲೇ ಕಡಮೆ ದರ್ಜೆಯ ಪತ್ರಿಕೆಗಳು, ಸಿನಿಮಾಗಳು, ಕಾದಂಬರಿಗಳು ನಮ್ಮಲ್ಲಿ ನಾಯಿಕೊಡೆಯಂತೆ ಹುಟ್ಟಿಕೊಂಡಿವೆ ಎನ್ನುವ ಮಾತನ್ನು ಆಗಾಗ ನಿರಾಶಾವಾದಿ ವಿಮರ್ಶಕರೂ, ತಮ್ಮ ಕಣ್ಣೀರಿನ ಕಾರ್ಯಕ್ರಮಗಳ ಸಮರ್ಥಕರಾದ ಚಾನೆಲ್ಗಳೂ ಹೇಳಿಕೊಂಡು ಬಂದಿವೆ. ಸಕಾರಾತ್ಮಕ ಧೋರಣೆಯ ಕೆಲವು ಬರಹಗಾರರು, ಚಿಂತಕರು ಓದುಗರನ್ನು ಇಷ್ಟು ತಳಮಟ್ಟದಲ್ಲಿ ಕಾಣುವುದಿಲ್ಲ. ಹಾಗಾಗಿಯೇ ಘನವಾದ ಕೃತಿಗಳನ್ನು ಕೊಡುವುದು ಅವರಿಗೆ ಇಂದಿಗೂ ಸಾಧ್ಯವಾಗುತ್ತಿದೆ.

ಕರ್ಮ ಕಾದಂಬರಿಯ ಮೂಲಕ ಕರಣಂ ಪವನ್ ಪ್ರಸಾದ್ ಹಾಗೊಬ್ಬ ಆಳ ಚಿಂತನೆಯ ಕಾದಂಬರಿಕಾರರಾಗುವ ಭರವಸೆಯನ್ನು ಹುಟ್ಟಿಸಿದ್ದರು. ತಾತ್ತ್ವಿಕ ಎತ್ತರವನ್ನು ಅಡಕಗೊಳಿಸಿಕೊಂಡಿದ್ದರೂ ಕರ್ಮದ ಓಘದಲ್ಲಿ ಇನ್ನೊಂದಿಷ್ಟು ನೈಪುಣ್ಯವನ್ನು ಬಯಸಿದ್ದ ಓದುಗ, ಇದೀಗ ಅವರ ಹೊಸ ಕಾದಂಬರಿ ’ನನ್ನಿ’ಯ ಮೂಲಕ ಹೆಚ್ಚು ಕುಶಲಿಯಾದ ಮತ್ತು ಪ್ರಭಾವಿಯಾದ ಕಾದಂಬರಿಕಾರನನ್ನು ಕಂಡಿದ್ದಾರೆ. ಎರಡುವಾರದ ಹಿಂದೆ ಬಿಡುಗಡೆಯಾದ ನನ್ನಿ ಅದಾಗಲೇ ಎರಡುಬಾರಿ ಟಾಪ್ ಟೆನ್ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಆನ್ ಲೈನ್ ನ್ಯೂಸ್ ಪೋರ್ಟಲ್ಗಳಲ್ಲಿ ಸುದ್ದಿಯಾಗ್ತಿದೆ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗ್ತಿದೆ. ಹೊತ್ತಿ ಉರಿವ ಬೆಂಕಿಯಂತಲ್ಲದೆ, ಚಾಪೆಯಡಿಗೆ ಹರಿವ ನೀರಿನಂತೆ ಓದುಗನನ್ನು ಆಂತವಾಗಿ ತಲುಪುತ್ತಿದೆ. ಅದ್ಯಾಕೆ ಹಾಗೆ ತಲುಪುತ್ತಿದೆ ಎನ್ನುವುದಕ್ಕೆ ನನ್ನಿ ಕಾದಂಬರಿಯ ಸಾಮರ್ಥ್ಯವೇ ಉತ್ತರ.

ಮತ್ತಷ್ಟು ಓದು »

9
ಮಾರ್ಚ್

ಹೂ ಈಸ್ ಕನ್ಹಯ್ಯಾ ಕುಮಾರ್?

-ಎಸ್.ಆರ್. ಅನಿರುದ್ಧ ವಸಿಷ್ಠ

kanhaiya-kumar_650x400_81457076102ಈ ಹುಡುಗನಿಗೆ ಆಜಾದಿ ಬೇಕಂತೆ! ಹಸಿವಿನಿಂದ ಆಜಾದಿ, ಭ್ರಷ್ಟಾಚಾರದಿಂದ ಆಜಾದಿ, ಜಾತಿವಾದದಿಂದ ಆಜಾದಿ ಬೇಕಂತೆ. ಇದಕ್ಕಾಗಿ ಆತ ಮೋದಿಯನ್ನು ದೂರುತ್ತಿದ್ದಾನೆ. ಆದರೆ, ಮೋದಿ ಅಧಿಕಾರಕ್ಕೆ ಬಂದು ಎರಡು ವರ್ಷ ಕೂಡಾ ಸಂದಿಲ್ಲ. ಇವನನ್ನು ಬೆಂಬಲಿಸಿದ ರಾಹುಲ್ ಗಾಂಧಿ ಪಕ್ಷವೇ ದೇಶವನ್ನು ೬೦ ವರ್ಷ ಆಳಿದ್ದು. ಇವನು ಕೇಳುತ್ತಿರುವ ಆಜಾದಿಗಳು ೬೦ ವರ್ಷದಲ್ಲಿ ಸಿಗಲಿಲ್ಲ. ಆದರೆ, ಮೋದಿ ಬಂದ ನಂತರ ಆ ಆಜಾದಿಗಳು ಸಿಗುವ ಭರವಸೆ ಮೂಡಿವೆ. ಆದರೆ ಇವನ ಪ್ರಕಾರ ಇವನು ಕೇಳುವ ಆಜಾದಿ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನಿಂದ ಸಿಕ್ಕಿಲ್ಲವಂತೆ. ಎಂತಹ ಹಾಸ್ಯಪ್ರಜ್ಞೆ ಈ ಹುಡುಗನಿಗೆ.
ಒಂದು ಪ್ರಸಂಗ:
ದೇಶದ ಒಂದು ವಿವಿಯಲ್ಲಿ ಓರ್ವ ವಿದ್ಯಾರ್ಥಿಯಿದ್ದ. ಆತ ಒಂದು ತಿಂಗಳ ಹಿಂದಿನವರೆಗೂ ಕೇವಲ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿ ಒಕ್ಕೂಟ ನಾಯಕನಷ್ಟೇ. ಆದರೆ, ಈಗ ಆತ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದಲ್ಲದೇ ಯುವಕರ ಶಕ್ತಿ(?)ಯಾಗಿ ಮಾರ್ಪಡುತ್ತಾನೆ. ಮುಂಬರುವ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷವೊಂದರ ಪರ ಪ್ರಚಾರಕ್ಕೆ ಆತನನ್ನು ಕರೆಸಲು ನಿರ್ಧಾರ ಮಾಡಲಾಗುತ್ತದೆ. ಆದರೆ, ಆ ವಿದ್ಯಾರ್ಥಿ ರಾತ್ರೋ ರಾತ್ರಿ ರಾಷ್ಟ್ರೀಯ ಮುಖಂಡ(?)ನಾದ ಪರಿ ಹೇಗೆ? ದೇಶ ಸೇವೆ ಮಾಡಿಯೇ, ದೇಶಕ್ಕಾಗಿ ಹೋರಾಡಿಯೇ, ಸಮಾಜಕ್ಕಾಗಿ ತ್ಯಾಗ ಮಾಡಿಯೇ? ಅಲ್ಲವೇ ಅಲ್ಲ, ರಾಷ್ಟ್ರದ್ರೋಹದ ಆರೋಪ ಹೊತ್ತು. ಯಾರು ಆ ವಿದ್ಯಾರ್ಥಿ ? ಅವರೇ ಈಗ ಪ್ರಚಂಡ ನಾಯಕನೆಂದು ಬಿಂಬಿಸಿಕೊಳ್ಳುತ್ತಿರುವ ಕನ್ಹಯ್ಯ ಕುಮಾರ್.

ಮತ್ತಷ್ಟು ಓದು »

9
ಮಾರ್ಚ್

ಸಾಯದ ಹೊರತು ನಿಮಗವನ ಹೆಸರು ಕೂಡ ಗೊತ್ತಿರುವುದಿಲ್ಲ…

ರೋಹಿತ್ ಚಕ್ರತೀರ್ಥ
beggar-made-store-owner-cryಅವನೊಬ್ಬನಿದ್ದ. ತನ್ನ ಮನೆಯ ಒಂದು ಭಾಗದಲ್ಲಿ ಅಂಗಡಿ ಇಟ್ಟುಕೊಂಡಿದ್ದ. ಪ್ರತಿದಿನ ಬೆಳಗ್ಗೆ ಮನೆಯ ಒಳಗಿಂದ ಷಟರ್ ತೆಗೆದು ಅಂಗಡಿ ತೆರೆಯುತ್ತಿದ್ದ. ಆದರೆ ಪ್ರತಿದಿನ ಆ ಕಬ್ಬಿಣದ ಬಾಗಿಲನ್ನು ಮೇಲಕ್ಕೆ ಸರಿಸುವಾಗ ಆತನ ಕಣ್ಣಿಗೆ ಮೊದಲು ಬೀಳುತ್ತಿದ್ದದ್ದು, ಅಂಗಡಿಯ ಎದುರಿಗೇ ಮಲಗಿರುತ್ತಿದ್ದ ಒಬ್ಬ ಭಿಕ್ಷುಕ. ಕೆದರಿದ, ಎಣ್ಣೆ ಕಾಣದ ತಲೆಕೂದಲು, ಬಣ್ಣಗೆಟ್ಟ ಮುಖ, ಹಲವು ದಿನಗಳಿಂದ ಸ್ನಾನ ಕಾಣದ ಮೈ, ಹರಿದ ಪ್ಯಾಂಟು, ಪುಟ್ಟಮಕ್ಕಳು ಗೀಚಿದಂತಿರುವ ನೂರೆಂಟು ಗೆರೆಗೀಟುಗಳಿಂದ ಕೂಡಿದ ಹರಕುಮುರುಕು ಅಂಗಿ, ಪ್ರಕ್ಷಾಲನವಿಲ್ಲದೆ ರಸಿಕೆಕಟ್ಟಿದ ಕೆಂಡಗಣ್ಣು, ಬಾಯಿ ತೆರೆದರೆ ಬ್ರಹ್ಮಾಂಡದರ್ಶನ. ಅಂಥ ಒಬ್ಬ ಭಿಕಾರಿ ತನ್ನ ಅಂಗಡಿಯೆದುರು ಅಪಶಕುನದಂತೆ ಕೈಕಾಲು ಮುದುರಿಕೊಂಡು ನಿದ್ದೆ ಹೊಡೆಯುವುದನ್ನು ನೋಡಿ ಅಂಗಡಿಯ ಮಾಲಿಕನಿಗೆ ನಖಶಿಖಾಂತ ಕೋಪ ಬಂದುಬಿಡುತ್ತಿತ್ತು. “ಕತ್ತೇ ಭಡವಾ” ಎಂದು ಗಟ್ಟಿಯಾಗಿ ಕಿರುಚುತ್ತಿದ್ದ. ಆತನ ಗಂಟಲಿಗೆ ಬೆಚ್ಚಿಬಿದ್ದೆದ್ದ ಭಿಕ್ಷುಕ ಕಂಗಾಲಾಗಿ ದಿಕ್ಕಾಪಾಲಾಗಿ ಓಡಿಹೋಗುತ್ತಿದ್ದ.

ಆದರೆ ಅದು, ಒಂದು ದಿನದ ಮಟ್ಟಿಗೆ ಮಾತ್ರ. ಮರುದಿನ ಅಂಗಡಿ ಬಾಗಿಲು ತೆರೆಯುವಾಗ ಭಿಕ್ಷುಕನ ಸವಾರಿ ಅಲ್ಲಿ ಹಾಜರಿರುತ್ತಿತ್ತು. ಮತ್ತೆ ಮಾಲಿಕನ ಅರಚಾಟ ನಡೆಯುತ್ತಿತ್ತು. ಈ ಕ್ರಮ ಒಂದು ದಿನವೂ ತಪ್ಪದಂತೆ ನಡೆದುಕೊಂಡು ಬರುತ್ತಿತ್ತು. ಕೆಲವೊಮ್ಮೆ ಮಾಲೀಕ ದೊಡ್ಡ ದೊಣ್ಣೆ ಎತ್ತಿಕೊಂಡು ಬಂದು ಭಿಕ್ಷುಕನಿಗೆ ಬಾರಿಸುತ್ತಿದ್ದ. ಪೆಟ್ಟು ತಿಂದ ಭಿಕ್ಷುಕ ನೋವಿನಿಂದ ಕೈಕಾಲು ಬಡಿದುಕೊಂಡು ಓಡಿಹೋಗುತ್ತಿದ್ದ. ಇನ್ನು ಕೆಲವೊಮ್ಮೆ ಮಾಲೀಕ ಒಂದು ಬಕೆಟ್ ತಣ್ಣಗೆ ನೀರು ತಂದು ಈತನ ಮೈಮೇಲೆ ಸುರಿಯುತ್ತಿದ್ದ. ಮತ್ತೆ ಕೆಲವೊಮ್ಮೆ ಬೂಟು ಹಾಕಿಕೊಂಡು ಬಂದು ಮಲಗಿ ಗೊರಕೆ ಹೊಡೆಯುತ್ತಿದ್ದವನನ್ನು ಒದ್ದದ್ದೂ ಉಂಟು. ಒಮ್ಮೆ, ಅಂಗಡಿಯ ಬಾಗಿಲು ತೆಗೆಯುವಾಗ, ಮೂತ್ರವಿಸರ್ಜನೆಯ ವಾಸನೆ ಮಾಲೀಕನ ಮುಖಕ್ಕೆ ಹೊಡೆಯಿತು. ಈ ದರಿದ್ರ ಮನುಷ್ಯ ಇಲ್ಲಿ ಮಲಗುವುದು ಮಾತ್ರವಲ್ಲದೆ ತನ್ನ ದೇಹಬಾಧೆಗಳನ್ನೂ ತೀರಿಸಿಕೊಳ್ಳುತ್ತಾನೆಂದು ಅವತ್ತು ಅವನಿಗೆ ಮೈಯೆಲ್ಲ ಉರಿದಿತ್ತು. ಕೈಗೆ ಸಿಕ್ಕಿದ್ದನ್ನೆಲ್ಲ ಆ ಭಿಕ್ಷುಕನ ಮೇಲೆ ಎತ್ತಿಹಾಕಿ ತನ್ನ ಕೋಪ ತೋರಿಸಿದ್ದ.

ಮತ್ತಷ್ಟು ಓದು »

8
ಮಾರ್ಚ್

ನನಗೆ ಅಜಾದಿ ಬೇಕು” ಎಂಬ ಆಕರ್ಷಕ ಅಪ್ರಬುದ್ಧತೆ!!

-ಸಂಕೇತ್ ಡಿ ಹೆಗಡೆ, ಸಾಗರ

images (14)ಫೇಸ್ಬುಕ್ಕಿನಲ್ಲಿ ಸುಮ್ಮನೆ ಜಾಲಾಡುತ್ತಿದ್ದಾಗ ವಾಕ್ಯವೊಂದು ಎಡತಾಕಿತು. “Strict parents raise best liars” ಅಂತ. ತೀರಾ ಸ್ಟ್ರಿಕ್ಟ್ ಪೋಷಕರ ಮಕ್ಕಳು ಅತ್ಯುತ್ತಮ ಸುಳ್ಳುಗಾರರಾಗುತ್ತಾರೆ ಅಂತ. ಸತ್ಯ. ಮಕ್ಕಳು ಸ್ವಚ್ಚಂದವಾಗಿ ಸ್ವತಂತ್ರ್ಯವಾಗಿ  ಅವರಷ್ಟಕ್ಕೆ ಬೆಳೆಯಲು ಬಿಡದಿದ್ದರೆ, ಅವರು ತಪ್ಪಿಸಿಕೊಳ್ಳಲು ಅದ್ಭುತ ಸುಳ್ಳುಗಳನ್ನು ಹೆಣೆಯಬಲ್ಲ ಪ್ರತಿಭಾವಂತರಾಗಿಬಿಡುತ್ತಾರೆ! ಮನುಷ್ಯ ಅಂತ ಅಲ್ಲ, ಸ್ವಾತಂತ್ರ್ಯ ಪ್ರತಿ ಜೀವಿಯ ಮೂಲಭೂತ ಹಕ್ಕು. ಆದರೆ… ತನ್ನ ಮಗುವಿಗೆ ಸ್ವಾತಂತ್ರ್ಯ ಕೊಡಬೇಕೆಂದು ತಾಯಿ ಮಗುವಿಗೆ ಸಂಪೂರ್ಣ ತನ್ನಷ್ಟಕ್ಕೆ ಬೆಳೆಯಲು ಬಿಟ್ಟರೆ ಏನಾಗುತ್ತೆ? ತನ್ನ ಮಗು ಸರ್ವತೋಮುಖವಾಗಿ ಬೆಳೆಯಬೇಕೆಂದು ತಂದೆ ಮಗುವನ್ನು ಸಂಪೂರ್ಣ ಸ್ವೇಚ್ಛೆಗೆ ಬಿಟ್ಟುಬಿಟ್ಟರೆ ಏನಾಗುತ್ತೆ? ಮಗು ಹಾದಿತಪ್ಪದೆ ಉಳಿದೀತೇನು? ಆಜಾದಿ ಸರಿ, ಆದರೆ ಅದು ಆರೋಗ್ಯಪೂರ್ಣ ಆಜಾದಿ ಆದರೆ ಮಾತ್ರ ಚಂದ. ಸುಮ್ಮನೆ ಬೀದಿತಪ್ಪಿದ ನಾಲ್ಕು ಹುಡುಗರು ಹಾದಿತಪ್ಪಿದ ಹಳೆಯ ಸಿದ್ದಾಂತವೊಂದನ್ನು ನಂಬಿ, ಮತ್ತೂ ನಾಲ್ಕು ಕುರಿಗಳನ್ನ ಸೇರಿಸಿ ಕೆಲಸಕ್ಕೆ ಬಾರದ so called ಕ್ರಾಂತಿ ಮಾಡುತ್ತೇವೆ, ಆಜಾದಿ ತರುತ್ತೇವೆ ಅಂತೆಲ್ಲ ಕೂಗಿದರೆ ಚಂದವಲ್ಲ, ಭಂಗ. ಅವರು ಕೇಳುತ್ತಿರುವುದು ಖಂಡಿತವಾಗಿಯೂ ಸ್ವಾತಂತ್ರ್ಯವನ್ನಲ್ಲ, ಸ್ವೇಚ್ಛೆಯನ್ನ, ಅರಾಜಕತೆ ತಂದಿಡುವ ಸ್ವೇಚ್ಛೆಯನ್ನ. ಅದನ್ನೇ ಸ್ವಲ್ಪ ಆಕರ್ಷಣೀಯವಾಗಿ “ನಮಗೆ ಭಾರತದಿಂದ ಸ್ವಾತಂತ್ರ್ಯ ಬೇಡ. ಭಾರತದಲ್ಲಿ ಬೇಕು” ಅಂತ ಕೇಳುತ್ತಿರುವುದು. ಪ್ರಥಮ ಬಾರಿಗೆ ಕೇಳುತ್ತಿರುವವನಿಗೆ “ಎಷ್ಟು ಸೊಗಸಾಗಿ ಮಾತಾಡ್ತಾನಪಾ” ಅನ್ನಿಸಬೇಕು.

ನನಗೆ ತೀರಾ ನಿಗೂಢವಾಗಿ ಕಾಣುವ ವಿಷಯ ಅಂದರೆ ಈ ಎಡಪಂಥೀಯ ಚಿಂತನೆ ಉಳ್ಳ ಬುದ್ಧಿಜೀವಿಗಳು, ಕನ್ನಯ್ಯನಂತವರೆಲ್ಲ ಯಾಕೆ ಹೀಗೆ ರಾಷ್ಟ್ರೀಯತೆಗೆ ವಿರೋಧವಾಗಿರುವ ಸಂಗತಿಗಳನ್ನೇ ಹೆಚ್ಚು ಇಷ್ಟಪಟ್ಟು ಪಸರಿಸುತ್ತಾರೆ ಎಂಬುದು. ಅವರಿಗೇನು ನಿಜವಾಗಿಯೂ ಸತ್ಯ ಗೊತ್ತಿಲ್ಲವ? ಭಾರತ ತನ್ನ ಪ್ರಜೆಗಳಿಗೆ ಬೇಕಾಬಿಟ್ಟಿ ಸ್ವಾತಂತ್ರ್ಯ ಕೊಟ್ಟಿದೆ ಎಂಬುದು. ನಾವು ನೀವು ಇರುವುದೂ ಒಂದೇ ಭೂಮಿಯಲ್ಲಿ, ಅಂಥವರಿರುವುದೂ ಒಂದೇ ಭೂಮಿಯಲ್ಲಿ, ಅಂಥದ್ದರಲ್ಲಿ ನಮಗೆ ಕಣ್ಣಿಗೆ ಹೊಡೆಯುವ ಸತ್ಯ ಅವರ ಕಣ್ಣಿಗೆ ಮಸುಬಾಗಿಯೂ ಕಾಣದೇನು? ಯಾಕೀ ಪೂರ್ವಗ್ರಹಪೀಡಿತ ರೋಗಗ್ರಸ್ಥ ಮನಸ್ಸು? ಖ್ಯಾತಿಯ ಚಿಂತೆಯಾ? ವೋಟಿನ ಚಿಂತೆಯಾ? ಕಾಸಿನ ಚಿಂತೆಯಾ? ಅಸ್ತಿತ್ವದ ಚಿಂತೆಯಾ? ಅಥವಾ ಪೊಳ್ಳು ಭ್ರಮೆಯನ್ನೇ ತಾನೂ ನಂಬಿ ಪರರನ್ನೂ ನಂಬಿಸುವುದು ಒಂದು ಮಾನಸಿಕ ಖಾಯಿಲೆಯಾ?

ಮತ್ತಷ್ಟು ಓದು »

8
ಮಾರ್ಚ್

ಮಹಿಳಾ ಅಸ್ತಿತ್ವದ ವಿವಿಧ ನೆಲೆಗಳು

– ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ

ಮಾರ್ಚ್ 8 ಅಂತರಾಷ್ಟ್ರೀಯ ಮಹಿಳಾ ದಿನದ ನಿಮಿತ್ಯ ಈ ಲೇಖನ.

ಅಂತರಾಷ್ಟ್ರೀಯ ಮಹಿಳಾ ದಿನರಾಮಾಯಣದಲ್ಲಿ ಊರ್ಮಿಳೆ ಎನ್ನುವ ಪಾತ್ರವೊಂದಿದೆ. ಈಕೆ ಲಕ್ಷ್ಮಣನ ಹೆಂಡತಿ. ರಾಮ ಕಾಡಿಗೆ ಹೋಗುವ ಸಂದರ್ಭ ಅಣ್ಣನನ್ನು ಅನುಸರಿಸಿ ಲಕ್ಷ್ಮಣ ಸಹ ಕಾಡಿಗೆ ತೆರಳುತ್ತಾನೆ. ಕಾಡಿಗೆ ಹೋಗುತ್ತಿರುವ ಲಕ್ಷ್ಮಣನಿಗೆ ತನ್ನನ್ನೇ ನಂಬಿಕೊಂಡ ಜೀವವೊಂದಿದೆ ಎನ್ನುವ ನೆನಪಾಗುವುದಿಲ್ಲ. ಹೆಂಡತಿ ಸೀತೆಯನ್ನೂ ತನ್ನೊಂದಿಗೆ ಕಾಡಿಗೆ ಕರೆದೊಯ್ಯುತ್ತಿರುವ ರಾಮನಿಗೂ ತನ್ನ ತಮ್ಮ ಲಕ್ಷ್ಮಣನಿಗೂ ಪತ್ನಿ ಇರುವಳೆಂಬ ಸತ್ಯ ಗೋಚರವಾಗುವುದಿಲ್ಲ. ರಾವಣ ಸೀತೆಯನ್ನು ಅಪಹರಿಸಿದಾಗ ವಿರಹ ವೇದನೆಯಿಂದ ಬಳಲುವ ರಾಮ ತಮ್ಮ ಲಕ್ಷ್ಮಣನೆದುರು ಸೀತೆಯ ಅಗಲುವಿಕೆಯಿಂದಾದ ದುಃಖವನ್ನು ತೋಡಿಕೊಳ್ಳುತ್ತಾನೆ. ದಾರಿಯಲ್ಲಿ ಎದುರಾಗುವ ಮರ,ಗಿಡ,ಬಳ್ಳಿ,ನದಿ,ಬೆಟ್ಟಗಳನ್ನು ಮಾತನಾಡಿಸಿ ನನ್ನ ಸೀತೆಯನ್ನು ಕಂಡಿರಾ ಎಂದು ಪ್ರಲಾಪಿಸುತ್ತಾನೆ. ಹೀಗೆ ದು:ಖಿಸುತ್ತಿರುವ ರಾಮನಿಗೆ ಲಕ್ಷ್ಮಣನೂ ವಿರಹಾಗ್ನಿಯಿಂದ ಬಳಲುತ್ತಿರಬಹುದೆನ್ನುವ ಕಿಂಚಿತ್ ಸಂದೇಹವೂ ಮನಸ್ಸಿನಲ್ಲಿ ಸುಳಿಯದೇ ಹೋಗುತ್ತದೆ.ರಾಮ ರಾವಣನನ್ನು ಜಯಿಸಿ ಹದಿನಾಲ್ಕು ವರ್ಷಗಳ ವನವಾಸವನ್ನು ಪೂರ್ಣಗೊಳಿಸಿ ಸೀತೆ ಮತ್ತು ಲಕ್ಷ್ಮಣನೊಂದಿಗೆ ಅಯೋಧ್ಯೆಗೆ ಮರಳುತ್ತಾನೆ. ಹಾಗಾದರೆ ಆ ಹದಿನಾಲ್ಕು ವರ್ಷಗಳ ಕಾಲ ಪತಿಯಿಂದ ದೂರಾಗಿ ಊರ್ಮಿಳೆ ಅನುಭವಿಸಿದ ವೇದನೆ ಮತ್ತು ಸಂಕಟಗಳ ಕಥೆ ಏನು?. ರಾಮಾಯಣವನ್ನು ಓದುತ್ತಿರುವ ಘಳಿಗೆ ಓದುಗ ಊರ್ಮಿಳೆಯ ಪಾತ್ರದೊಂದಿಗೆ ಮುಖಾಮುಖಿಯಾವುದೇ ಇಲ್ಲ. ಭಾತೃತ್ವದ ಪ್ರಶ್ನೆ ಎದುರಾದಾಗ ಅದಕ್ಕೆ ಶ್ರೇಷ್ಠ ಉದಾಹರಣೆಯಾಗಿ ಲಕ್ಷ್ಮಣನ ಹೆಸರನ್ನು ಹೇಳುವ ನಾವು ಊರ್ಮಿಳೆಯನ್ನು ಮರೆತು ಬಿಡುತ್ತೇವೆ. ಹಾಗಾದರೆ ಊರ್ಮಿಳೆಯದೂ ಶ್ರೇಷ್ಠ ತ್ಯಾಗವಲ್ಲವೇ? ಹದಿನಾಲ್ಕು ವರ್ಷಗಳ ಕಾಲ ಗಂಡನಿಂದ ದೂರವೇ ಉಳಿದು ಆತನನ್ನು ಅಣ್ಣನ ಸೇವೆಗಾಗಿ ಪ್ರಾಂಜಲ ಮನಸ್ಸಿನಿಂದ ಕಳಿಸಿಕೊಟ್ಟ ಊರ್ಮಿಳೆಯ ವ್ಯಕ್ತಿತ್ವಕ್ಕೆ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ದೊರೆಯಬೇಕಾದ ಮನ್ನಣೆ ಸಿಗಲೇ ಇಲ್ಲ. ಅಂದರೆ ಮಹಿಳೆಯನ್ನು ಪುರುಷ ಪ್ರಧಾನ ನೆಲೆಯಲ್ಲಿ ಶೋಷಣೆಗೊಳಪಡಿಸುತ್ತ ಬಂದಿರುವುದಕ್ಕೆ ನಮ್ಮ ಪ್ರಾಚೀನ ಪರಂಪರೆಯ ಒತ್ತಾಸೆಯಿದೆ ಎಂದರ್ಥ.ರಾಮಾಯಣ ಹಾಗೂ ಮಹಾಭಾರತದ ಕಾಲದಿಂದಲೂ ಸ್ತ್ರೀ ಶೊಷಣೆಯ ವಸ್ತುವಾಗಿಯೇ ಬಿಂಬಿತವಾಗುತ್ತ ಬಂದಿರುವಳು.

ಇತಿಹಾಸದ ಪಾತ್ರವೊಂದು ಸ್ತ್ರೀ ಶೋಷಣೆಯ ವಸ್ತುವಾಗಿ ಪುರುಷ ಪ್ರಧಾನ ವ್ಯವಸ್ಥೆಗೆ ಒತ್ತಾಸೆಯಾಗಿ ನಿಂತಾಗ ಇತಿಹಾಸದ ಮತ್ತೊಂದು ಪಾತ್ರವಾದ ಅಕ್ಕ ಮಹಾದೇವಿಯದು ಪುರುಷ ಪ್ರಧಾನ ವ್ಯವಸ್ಥೆಯನ್ನು ಧಿಕ್ಕರಿಸಿ ಹೊಸ ವ್ಯವಸ್ಥೆಯನ್ನು ಕಟ್ಟುವ ತಹತಹಿಕೆ. ಚೆನ್ನಮಲ್ಲಿಕಾರ್ಜುನನನ್ನೆ ತನ್ನ ಪತಿಯೊಂದು ಮಾನಸಿಕವಾಗಿ ಪರಿಭಾವಿಸಿದ ಅಕ್ಕ ಕೌಶಿಕ ರಾಜನ ಕಾಮನೆಗಳನ್ನು ಮೆಟ್ಟಿನಿಂತು ಮಹಿಳಾ ವಿಮೋಚನೆಗೆ ಹೊಸ ದಾರಿ ತೋರುತ್ತಾಳೆ. ಒಂದು ಪಾತ್ರದ ಮೂಲಕ ಸ್ತ್ರೀ ಶೊಷಣೆಗೆ ಸಾಕ್ಷಿಯಾದ ಇತಿಹಾಸ ಮತ್ತೊಂದು ಪಾತ್ರದ ಮೂಲಕ ಸ್ತ್ರೀ ವಿಮೋಚನೆಗೂ ಸಾಕ್ಷಿಯಾದದ್ದು ಇತಿಹಾಸದ ಮಹತ್ವಗಳಲ್ಲೊಂದು.ಇತಿಹಾಸದಿಂದ ಬಿಡುವಷ್ಟೇ ಪಡೆಯುವುದು ಕೂಡ ಬಹುಮುಖ್ಯವಾದದ್ದು.ನಮ್ಮ ನೆಲದ ಮಹಿಳೆಯರು ಅಕ್ಕ ಮಹಾದೇವಿಯ ಧೋರಣೆ ಹಾಗೂ ಪರುಷ ಸಮಾಜವನ್ನು ಧಿಕ್ಕರಿಸಿ ನಿಂತ ಆಕೆಯ ಮನೋಸ್ಥೈರ್ಯವನ್ನು ಬಳುವಳಿಯಾಗಿ ಪಡೆದು ಸ್ತ್ರೀ ವಿಮೋಚನೆಯ ಅನೇಕ ಸ್ಥಿತ್ಯಂತರಗಳಿಗೆ ಪ್ರಯತ್ನಿಸಿದರು.ಒಂದು ರೀತಿಯಲ್ಲಿ ಮಹಿಳೆ ತನ್ನ ಅಸ್ಮಿತೆಯನ್ನು (ಅಸ್ತಿತ್ವ) ವಿವಿಧ ನೆಲೆಗಳಲ್ಲಿ ಕಂಡುಕೊಳ್ಳಲು ಮಾಡಿದ ಪ್ರಯತ್ನವೂ ಅದಾಗಿತ್ತು.
ಮತ್ತಷ್ಟು ಓದು »

7
ಮಾರ್ಚ್

ಗುರುವಾಗುವುದು ಇಷ್ಟು ಕಷ್ಟವೇ?

– ಶ್ರೀಕಾಂತ. ಎನ್, ಸಂಶೋಧನಾ ವಿದ್ಯಾರ್ಥಿ ಕುವೆಂಪು ವಿ.ವಿ

16614791-Orange-cartoon-characters-sit-in-on-a-lecture--Stock-Photoನನಗೀಗ ಇಪ್ಪತ್ತೈದು ವಯಸ್ಸು. ಈಗ ನಾನು ಸಂಶೋಧನಾ ವಿದ್ಯಾರ್ಥಿ. ಇಲ್ಲಿಗೆ ಬರುವ ಮುನ್ನ ಎರಡು ವರ್ಷ ಶಿಕ್ಷಕನಾಗಿ ಕೆಲಸ ಮಾಡಿದ್ದೆ. ಅದರ ಅನುಭವವನ್ನು ಹಂಚಿಕೊಳ್ಳುತ್ತಿದ್ದೇನೆ. ತಲೆಯ ತುಂಬಾ ಹುಡುಗರಿಗೆ ಅದು ಹೇಳಬೇಕು ಇದು ಹೇಳಬೇಕು ಎಂದು ಹಿಂದಿನ ದಿನ ಘಂಟೆಗಟ್ಟಲೇ ತಯಾರಾಗಿ, ಡಸ್ಟರ್, ಚಾಕ್, ಅಟೆಂಡೆನ್ಸ್, ಸಣ್ಣ ಚೀಟಿ ಹಿಡಿದು ತರಗತಿಗೆ ಮೊದಲನೇ ಬಾರಿ ಹೊರಟ ನನಗೆ ದೊಡ್ಡ ಆಶ್ಚರ್ಯ ಕಾದಿತ್ತು. ಯುನಿವರ್ಸಿಟಿ ನೀನು ಗಣಿತ ಪಾಠ ಮಾಡಲು ಯೋಗ್ಯ ಎಂದು ಒಂದು ಕಾರ್ಡ್ ಕೊಟ್ಟು ಕಳುಹಿಸಿತ್ತೇ ಹೊರತು, ಹೇಗೆ ಪಾಠ ಮಾಡುವುದು ಎಂದು ತಿಳಿಸಿರಲಿಲ್ಲ. ನನಗಿಂತ ಎತ್ತರ & ದಪ್ಪ, ನೋಡಲು ಪ್ರಬುದ್ಧರಾಗಿ ಕಾಣುತ್ತಿದ್ದ ಹುಡುಗರು ಅನುಮಾನದೊಂದಿಗೆ ಎದ್ದು ನಿಂತಾಗ, ನನ್ನ ಊಹೆಗಳೆಲ್ಲಾ ತಲೆಕೆಳಗಾಯಿತು. ಪಾಠ ಹೇಗೆ ಮಾಡುವುದು, ಏನೇನೆಲ್ಲಾ ಹೊಸತು ಹೇಳಬೇಕು ಎಂದಷ್ಟೇ ಯೋಚಿಸಿ ಹೋದ ನನಗೆ, ನನ್ನ ದೇಹದ ಗಾತ್ರ ಕೂಡ ಮಾನದಂಡ ಎಂದು ತಿಳಿದಾಗ, ಹಿಂದಿನ ದಿನ ತಯಾರಾದದ್ದೆಲ್ಲಾ ಸೊನ್ನೆಯಿಂದ ಗುಣಿಸಿದ ಹಾಗೆ ನಾಶವಾಯಿತು. ಕೆಲವರಂತು, ಇವರು ಲೆಕ್ಚರ್ ಅಲ್ಲವೆಂದು ಭಾವಿಸಿಯೇ ಕುಳಿತಿದ್ದರು. ಎಲ್ಲರನ್ನು ಕೂಡಿಸಿ, ಜೋರಾಗಿ ಕೇಳುತ್ತಿದ್ದ ಹೃದಯ ಬಡಿತ ಎಣಿಸುತ್ತಾ, ನನ್ನನ್ನೇ ತಿನ್ನುವಂತೆ ನೋಡುತ್ತಿದ್ದ 60*2 ಕಣ್ಣುಗಳ ತೀವ್ರತೆ ತಡೆಯಲಾಗದೆ ಬೋರ್ಡ್ ಕಡೆ ತಿರುಗಿ ಅಳಿಸಿದ್ದ ಬೋರ್ಡನ್ನು ಮತ್ತೆ ಅಳಿಸುತ್ತಾ ನನ್ನನ್ನು ಸಮಾಧಾನ ಮಾಡಿಕೊಂಡೆ. ನನ್ನ ಸಹೋದ್ಯೋಗಿ ಹೇಳಿ ಕಳಿಸಿದಂತೆ ಮೊದಲು ನನ್ನ ಪರಿಚಯ ಮಾಡಿಕೊಂಡು, ಅವರ ಹೆಸರು ಕೇಳಿ, ಭಯದಿಂದ ನನಗೆ ತೋಚಿದ್ದು ಹೇಳಿ ಬಂದಾಗ, ಇಷ್ಟೊಂದು ಕಷ್ಟವೇ ಗುರುವಾಗೋದು ? ನನ್ನ ಕೆರಿಯರ್ ಆಯ್ಕೆ ತಪ್ಪೇ ! ಎಂದೆನಿಸಿತು.

ಮತ್ತಷ್ಟು ಓದು »

6
ಮಾರ್ಚ್

ಅಗ್ನಿರಾಜನ ಪ್ರಕರಣ

 

 

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ,
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ 

1058749_10154099009590649_1296063247_nಮೊನ್ನೆ ತಾನೆ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ತಂದೆಯಿಂದ ಅತ್ಯಾಚಾರಕ್ಕೊಳಗಾದ ಹೆಣ್ಣುಮಗಳೊಬ್ಬಳಿಗೆ ಪಂಚಾಯ್ತಿ ಛಡಿ ಏಟಿನ ಶಿಕ್ಷೆ ಕೊಟ್ಟಿದ್ದು ಇದೀಗ ರಾಷ್ಟ್ರವ್ಯಾಪಿ ಚರ್ಚೆಗೆ ಗ್ರಾಸವಾಗಿದೆ. ಇಂಥ ಕಥೆಯೊಂದು ಕ್ರಿ.ಶ. 900ರ ವೇಳೆಗೇ ನಡೆದಿದ್ದನ್ನು ಕಥೆಯೊಂದು ಹೇಳುತ್ತದೆ. ಇದನ್ನು ಹೇಳುವ ಮುನ್ನ ಸಣ್ಣ ಪೀಠಿಕೆ ಅಗತ್ಯ.

ಕಳೆದ ಮುನ್ನೂರು ವರ್ಷಗಳಲ್ಲಿ ಭಾರತೀಯ ಸಂಸ್ಕೃತಿಯ ಬಹುಪಾಲು ಸೈದ್ಧಾಂತಿಕ ಮತ್ತು ಪಠ್ಯ ಸಂಬಂಧಿ ಅಧ್ಯಯನವನ್ನು ಕೈಗೊಂಡವರು ಯೂರೋಪಿನ ಚಿಂತಕರು. ಅವರು ನಾವು ಹಾಗೂ ನಮ್ಮ ಸಮಾಜವನ್ನು ತಮ್ಮ ಇಷ್ಟದಂತೆ ಕಂಡು, “ಅಧ್ಯಯನ” ಮಾಡಿ, ನಮ್ಮ ಸಮಾಜ ಹಾಗೂ ಸಂಸ್ಕೃತಿಯಲ್ಲಿ ಏನೇನು ತಪ್ಪುಗಳಿವೆ ಎಂದು ತೋರಿಸಿ ಅದನ್ನೇ ಆಧುನಿಕ ಶಿಕ್ಷಣದ ಮೂಲಕ ನಮಗೆ ಕಲಿಸಿದರು. ಇಂದಿಗೂ ನಾವು ಅದನ್ನೇ ನಂಬಿಕೊಂಡು ಬಂದಿದ್ದೇವೆ. ಕಳೆದ ಎರಡರಿಂದ ಮೂರು ಸಾವಿರ ವರ್ಷಗಳ ಅವಧಿಯಲ್ಲಿ ಭಾರತೀಯ ಚಿಂತಕರು ಏನೇನೂ ಚಿಂತನೆ ಮಾಡಲೇ ಇಲ್ಲವೇ? ನಮ್ಮಿಂದ ಯೂರೋಪ್ ಕಲಿಯುವುದು ಏನೂ ಇಲ್ಲವೇ? ಎಂದು ಸಂಸ್ಕೃತಿ ಚಿಂತಕ ಬಾಲಗಂಗಾಧರ್ ಕೇಳುತ್ತಾರೆ. ಇಡೀ ಭಾರತದ್ದಿರಲಿ, ಕನ್ನಡ ಸಾಹಿತ್ಯದ ಹಲವಾರು ಸಂಗತಿಗಳನ್ನು ಗಮನಿಸಿದರೆ ಈ ಮಾತು ಅಕ್ಷರಶಃ ಸತ್ಯ ಅನಿಸುತ್ತದೆ. ಕನ್ನಡ ನವ್ಯ ಸಾಹಿತಿಗಳು ಪಾಶ್ಚಾತ್ಯರಿಂದ ಹೊಸದನ್ನು ತರುವ, ಪರಿಚಯಿಸುವ ಭರದಲ್ಲಿ ನಮ್ಮದೇ ಆದ ಹಳೆಗನ್ನಡವನ್ನು ಅಲಕ್ಷಿಸಿದರು. ಶಿಕ್ಷಣ, ಮಾಧ್ಯಮಗಳೆಲ್ಲ ನವ್ಯ ಸಾಹಿತ್ಯಕ್ಕೆ ನೀಡಿದ ಪ್ರಾಮುಖ್ಯವನ್ನು ಹಳೆಗನ್ನಡಕ್ಕೆ ನೀಡದೇ ಹೋದವು. ಮೂರ್ನಾಲ್ಕು ತಲೆಮಾರುಗಳು ಹೀಗೇ ರೂಪುಗೊಂಡು ಶಿಕ್ಷಣ ಸಂಸ್ಥೆಗಳಲ್ಲೂ ಇದೇ ಮಾದರಿ ತಯಾರಾಗಿ ಈಗ ಪ್ರಾಥಮಿಕ ಹಂತವಿರಲಿ, ಉನ್ನತ ಶಿಕ್ಷಣದಲ್ಲೂ ಹಳೆಗನ್ನಡ ಓದುವವರೂ ಇಲ್ಲವೇ ಇಲ್ಲ ಅನ್ನುವ ಪರಿಸ್ಥಿತಿ ಉಂಟಾಗಿದೆ. ನವ್ಯ ಪ್ರಭಾವದ ಇಂದಿನ ಕನ್ನಡ ಸಾಹಿತ್ಯ ಓದಿದವರಿಗೆ ಈಡಿಪಸ್ ಗೊತ್ತಿರುತ್ತಾನೆ, ಆದರೆ ಅಗ್ನಿರಾಜನಾಗಲೀ ಕುಮಾರರಾಮನಾಗಲೀ ಗೊತ್ತೇ ಇರದಿದ್ದರೆ ಅದು ವಿದ್ಯಾರ್ಥಿಗಳ ತಪ್ಪಲ್ಲ! ಸಿಗ್ಮಂಡ್ ಫ್ರಾಯ್ಡ್ ನ ಈಡಿಪಸ್ ಕಾಂಪ್ಲೆಕ್ಸ್ ಹೆಸರು ಹಾಗೂ ಕಥೆ ಪರಿಚಯವಿರುವಷ್ಟು ಅಗ್ನಿರಾಜನ ಕಥೆ ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಬಹಳಷ್ಟು ಅಧ್ಯಾಪಕರಿಗೂ ಗೊತ್ತೇ ಇಲ್ಲ! ಇದಕ್ಕೆ ಇರುವ ಕಾರಣವನ್ನು ಈಗಾಗಲೇ ಬಾಲು ಅವರ ಮಾತಿನಲ್ಲಿ ಕೇಳಿದ್ದಾಗಿದೆ.

ಮತ್ತಷ್ಟು ಓದು »