ISROಗೆ ಸಾಧ್ಯವಾಗಿದ್ದು HALಗೇಕೆ ಸಾಧ್ಯವಾಗಲಿಲ್ಲ?
– ಅಜಿತ್ ಶೆಟ್ಟಿ ಹೆರಾಂಜೆ
ಸುಮಾರು 78 ವರ್ಷ ಇತಿಹಾಸ ಇರುವ ವಿಮಾನ ತಯಾರಿಕ ಕಂಪೆನಿಯೊಂದು ಇಂದಿಗೂ ತೆವಳುತ್ತ ಕುಂಟುತ್ತಾ ಸಾಗುತ್ತಿದೆ ಅಂದರೆ ಅದಕ್ಕೆಯಾರುಹೊಣೆ? ಅದನ್ನ ನಿರ್ವಹಣೆ ಮಾಡುತ್ತಿರುವ ಸರಕಾರವಾ? ಅಥವಾ ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಾ? ಅಥವಾ ಕಾರ್ಮಿಕರಿಂದ ಕೆಲಸ ತೆಗೆಸುತ್ತಿರುವ ಅಧಿಕಾರಿ ವರ್ಗವಾ? ಅಥವಾ ಇವರೆಲ್ಲರೂ ಕಾರಣರ? ಹೌದು ನಾನು ಎತ್ತಿರುವ ಪ್ರಶ್ನೆ ಹೆಚ್ಎಎಲ್ ಬಗ್ಗೆ.ಈ ಪ್ರಶ್ನೆ ಈಗ ಯಾಕೆ ಗಂಭೀರ ಸ್ವರೂಪ ಪಡೆದಿದೆ ಎಂದರೆ ಇಂದು ಬಹಳಷ್ಟು ಮಂದಿಗೆ ಎಚ್ಎಎಲ್ ಅಂದರೆ ಅಮೇರಿಕದ ಬೋಯಿಂಗ್ ಕಂಪೆನಿಯ ತರವೋ ಅಥವಾ ರಶ್ಯಾದ ಸುಕೋಯಿ ಕಂಪೆನಿಯ ತರಹವೋ ಎಂದು ಅನಿಸೋಕೆ ಶುರು ಆಗಿದೆ. ಆದರೆ ವಾಸ್ತವಾಂಶ ಹಾಗಿಲ್ಲ. ಎಚ್ಎಎಲ್ ಸ್ಥಾಪನೆಯಾಗಿ 79 ವರ್ಷ ಕಳೆದರೂ ಇವತ್ತಿಗೂ ಈ ಕಂಪೆನಿ 79 ವರ್ಷಗಳ ಹಿಂದೆ ತಾನೇನನ್ನು ಮಾಡುತ್ತಿದಯೋ ಬಹುತೇಕ ಅದೇ ಕೆಲಸವನ್ನು ಇಂದಿಗೂ ಮಾಡುತ್ತಿರುವುದು ಈ ದೇಶದ ಬಹುದೊಡ್ಡ ದುರಂತ. ಎಚ್ಎಎಲ್ ಇಂದಿಗೂ ಬಹುತೇಕ ಕೆಲಸ ವಿದೇಶಿ ನಿರ್ಮಿತ ಯುದ್ದ ವಿಮಾನಗಳ ಬಿಡಿಬಾಗಾಗಳನ್ನ ಇಲ್ಲಿಗೆ ತಂದು ಅದೇ ಕಂಪೆನಿಗಳ ಸಹಯೋಗದೊಂದಿಗೆ ಜೋಡಿಸುವ ಕಾರ್ಯವಷ್ಟೆ. ಒಂದು ಸಣ್ಣವ್ಯತ್ಯಾಸ ಅಂದರೆ 79 ವರ್ಷದ ಹಿಂದೆ Harlow PC-5 ವಿಮಾನವನ್ನು ಜೋಡಿಸಿತ್ತು ಇವತ್ತು ಸುಕೋಯಿ ಯಯದ್ದ ವಿಮಾನದ ಬಿಡಿ ಭಾಗವನ್ನ ಜೋಡಿಸಸುತ್ತಿದೆ ಅಷ್ಟೆ. ಎಚ್ಎಎಲ್ ತಾನಾಗಿಯೇ ಅಭಿವೃದ್ಧಿಪಡಿಸಿದ ವಿಮಾನ ಹಾಗು ಹೆಲಿಕಾಪ್ಟರ್ ಸಂಖ್ಯೆ ಬಹಳಾ ಕಡಿಮೆ.
ಹಿಂದುಸ್ಥಾನ್ ಏರೋನೋಟಿಕ್ಸ್ ಲಿಮಿಟೆಡ್ ಇದರ ಮೂಲ ಹೆಸರು ಹಿಂದುಸ್ಥಾನ್ ಏರ್ಕ್ರಾಫ್ಟ್ ಲಿಮಿಟೆಡ್ ಎಂದು.ಇದನ್ನ 1940 ರಲ್ಲಿ ಅಂದಿನ ಮೈಸೂರು ಸರಕಾರದ ಸಹಯೋಗದೊಂದಿಗೆ 25 ಲಕ್ಷ ರೂಪಾಯಿ ಬಂಡವಾಳ ಹಾಕಿ ಸ್ಥಾಪಿಸಿದವರು ವಾಲ್ ಚಂದ ಹೀರಾಚಂದ್ ಎನ್ನುವವರು.1941ರಲ್ಲಿ ಅಂದಿನ ಬ್ರಿಟಿಷ್ ಸರಕಾರ ಈ ಕಂಪನಿಯ ಮೂರನೇ ಒಂದರಷ್ಟು ಪಾಲನ್ನು ಖರೀದಿಸಿತು. ಕಾರಣ ಅಂದಿನ ಕಾಲಕ್ಕೆ ಬ್ರಿಟಿಷರ ಸೈನ್ಯಕ್ಕೆ ಆಧುನಿಕ ಮಿಲಿಟರಿ ಉಪಕರಣವನ್ನು ಸರಬರಾಜು ಮಾಡಲು ಏಷ್ಯಾ ಖಂಡದಲ್ಲಿ ಒಂದು ವ್ಯವಸ್ಥೆ ಬೇಕಿತ್ತು.ಅದರಂತೆಯೇ 1942 ರಲ್ಲಿ ಅಮೆರಿಕಾದ Central Aircraft Manufacturing Company (CAMCO) ಎನ್ನುವ ಕಂಪೆನಿಯ ಸಹಯೋಗದೊಂದಿಗೆ Harlow PC-5 ಎನ್ನುವ ವಿಮಾನವನ್ನು ನಿರ್ಮಿಸಿತು.ನಂತರ ಇದು ಭಾರತೀಯ ವಾಯು ಪಡೆಯ ಒಂದು ಮುಖ್ಯ ಯುದ್ಧ ವಿಮಾನವಾಗಿ ಬಹಳಷ್ಟು ವರ್ಷ ಸೇವೆ ಸಲ್ಲಿಸಿತು. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಮೇಲೆ ಈ ಸಂಸ್ಥೆ ಯನ್ನು ಭಾರತ ಸರ್ಕಾರ ಸಂಪೂರ್ಣ ತನ್ನ ಅಧೀನಕ್ಕೆ ತೆಗೆದುಕೊಂಡಿತು, ಅಕ್ಟೋಬರ್ 1, 1964 ರಲ್ಲಿ ಅಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ಇದನ್ನ ಹಿಂದುಸ್ಥಾನ್ ಏರೋನೋಟಿಕ್ಸ್ ಲಿಮಿಟೆಡ್ ಎಂದು ಮರು ನಾಮಕರಣ ಮಾಡಿ ಇದಕ್ಕೊಂದು ಮರು ಹುಟ್ಟು ಕೊಟ್ಟರು.ಹೆಚ್ಎಎಲ್ ಅನ್ನು ಆಧುನಿಕ ಭಾರತದ ಸೇನೆಯ ಬೇಡಿಕೆಯನ್ನು ಪೂರೈಸುವ ಒಂದು ಉತ್ತಮ ಸಂಸ್ಥೆಯನ್ನಾಗಿ ಮಾಡ ಬೇಕೆಂಬ ಶಾಸ್ತ್ರಿಯವರ ಕನಸನ್ನ ನಂತರದ ದಿನಗಳಲ್ಲಿ ಬಂದ ಸರ್ಕಾರಗಳು ಸಾಕಾರಗೊಳಿಸುವಲ್ಲಿ ಸೋತಿವೆ. ಹೆಚ್ ಎ ಎಲ್ ಸಂಸ್ಥೆಗೆ ಸುಮಾರು 79 ವರ್ಷದ ಇತಿಹಾಸ ಇದೆ.ಆದರೆ ಇಂದಿಗೂ ವಿಶ್ವದ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಅಭಿವೃದ್ಧಿಪಡಿಸುವ ವಿಷಯದಲ್ಲಿ ಯಾವುದೇ ಕಂಪೆನಿಗಳ ಹತ್ತಿರಕ್ಕೂ ನಿಲ್ಲುವುದಿಲ್ಲ.
ವಿಜ್ಞಾನಿಗಳೇಕೆ ಪೂಜೆ ಮಾಡಬಾರದು?
– ಡಾ. ಪ್ರವೀಣ್ ಟಿ. ಎಲ್
ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ
ಮಂಗಳಯಾನದ ಯಶಸ್ವೀ ಕಾರ್ಯಾಚರಣೆ ಬಗ್ಗೆ ಇಡೀ ದೇಶವೇ ಸಂತಸಪಟ್ಟಿದೆ. ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತರ ಸಾಧನೆಯನ್ನು ಭಾರತೀಯ ವಿಜ್ಞಾನಿಗಳು ಮಾಡಿರುವುದು ಮಹಾನ್ ಸಾಧನೆಯೇ ಸರಿ. ಆದರೆ ಕೆಲವು ‘ಚಿಂತಕರು’ ಈ ಇಡೀ ಕಾರ್ಯಾಚರಣೆಯ ಮುಖ್ಯಸ್ಥರಾಗಿದ್ದ ವಿಜ್ಞಾನಿ ರಾಧಾಕೃಷ್ಣನ್ರವರ ನಡೆಯ ಕುರಿತು ತಮ್ಮ ಕುಹಕ, ತಕರಾರುಗಳನ್ನು ಅಂತರ್ಜಾಲ, ಮತ್ತಿತರ ಕಡೆಗಳಲ್ಲಿ ಹರಿಯಬಿಡುತ್ತಿದ್ದಾರೆ. ರಾಧಾಕೃಷ್ಣನ್ರವರು ‘MOM’ ನ ಸಣ್ಣ ಮಾದರಿಯೊಂದನ್ನು ತಿರುಪತಿಗೆ ತಂದು, ತಮ್ಮ ಧರ್ಮಪತ್ನಿಯೊಡನೆ ಪೂಜಾ ಕಾರ್ಯಗಳನ್ನು ನೇರವೇರಿಸಿದ್ದು ಅವರ ಟೀಕೆಗೆ ಕಾರಣ.
ಉಡಾವಣೆಗೊಂಡ ‘MOM’ ಮಂಗಳನ ತಲುಪುವ ಮುಂಚೆಯೇ ಇದೊಂದು ವಿಫಲಯತ್ನವೇನೋ ಎಂಬಂತೆ ಕೆಲವರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದರು. ಇನ್ನೂ ಕೆಲವರು ವಿಫಲವಾಗಿದೆ ಎಂಬ ತೀರ್ಮಾನಕ್ಕೂ ಬಂದಿದ್ದರು. ಅಷ್ಟೇ ಅಲ್ಲದೇ ಈ ವಿಫಲತೆಗೆ ವಿಜ್ಞಾನಿಗಳು ತಿರುಪತಿಗೆ ತೆರಳಿ ‘ತಲೆಬೋಳಿಸಿ’ಕೊಳ್ಳದೇ ವಾಪಾಸಾದುದೇ ಪ್ರಮುಖ ಕಾರಣ ಎಂಬಂತೇ ಕುಹಕವಾಡಲು ಶುರುಮಾಡಿದರು. ಕುಹಕಗಳಿಗೆಲ್ಲಾ ಉತ್ತರವನ್ನು ವಿಜ್ಞಾನಿಗಳು ಈಗಾಗಲೇ ನೀಡಿದ್ದಾರೆ.
ಈ ‘ವೈಜ್ಞಾನಿಕ’ ಚಿಂತಕರ ಪ್ರಮುಖ ತಕರಾರೆಂದರೆ, ವಿಜ್ಞಾನಿಗಳು ದೇವಸ್ಥಾನಗಳಿಗೆ ತೆರಳಿ ತಾವು ತಯಾರಿಸಿದ ಆಯುಧದ ಪೂಜೆ ನೆರವೇರಿಸಿರುವುದು ಎಷ್ಟು ಸರಿ. ವಿಜ್ಞಾನಿಗಳಿಗೆ ವಿಶ್ವದ ಸೃಷ್ಟಿಯ ಕುರಿತು ವೈಜ್ಞಾನಿಕ ಕಾರಣಗಳು ತಿಳಿದಿದ್ದರೂ ಸಹಾ ದೇವರ ಅಸ್ತಿತ್ವವನ್ನು ನಂಬುತ್ತಾರೆ ಮತ್ತು ತಮ್ಮ ವೈಜ್ಞಾನಿಕ ಪ್ರಯೋಗಗಳಲ್ಲಿ ದೇವರ ಕೈವಾಡ ಇದೆ ಎಂದುಕೊಳ್ಳುವುದು ಅಜ್ಞಾನ/ ಮೂಢತೆ ಎಂಬುದವರ ವಾದ. ISRO ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಭಾರತ ಒಂದು ಜಾತ್ಯಾತೀತ ರಾಷ್ಟ್ರ ಎಂಬುದನ್ನು ರಾಧಾಕೃಷ್ಣನ್ರವರು ನೆನಪಿಡಬೇಕು ಎಂದು ಅಪ್ಪಣೆ ಹೊರಡಿಸುತ್ತಾರೆ.
ಮೇಲಿನ ತಕರಾರುಗಳು ಭಾರತದ ಕುರಿತ ಈ ಚಿಂತಕರ ಅಜ್ಞಾನವನ್ನೂ, ಅವೈಜ್ಞಾನಿಕತೆಯನ್ನೂ, ಮೌಢ್ಯತೆಯನ್ನೂ ಪ್ರದರ್ಶಿಸುತ್ತಿವೆ. ಈ ಚಿಂತಕರುಗಳು ತಪ್ಪಾದ ‘ಯೂರೋಪಿನ ಗ್ರಹಿಕೆ’ಗಳಿಂದ ಕೂಡಿದ ತಮ್ಮ ವಿವರಣೆಗಳನ್ನೇ ವೈಜ್ಞಾನಿಕ ಎಂದು, ತಾವೇ ವಿಜ್ಞಾನದ ಪಿತಾಮಹರೆಂಬ ತೀರ್ಮಾನಕ್ಕೆ ಬಂದಿದ್ದಾರೆ. ಜೊತೆಗೆ ಯೂರೋಪಿನ ಸೆಕ್ಯುಲರ್ ಚಿಂತನೆಯ ನಕಲನ್ನು ಭಾರತದಲ್ಲಿ ವೈಜ್ಞಾನಿಕತೆಯ ಹೆಸರಲ್ಲಿ ವ್ಯಾಪಾರ ಮಾಡುತ್ತಿರುವುದು ಕಂಡುಬರುತ್ತದೆ. ವಿಜ್ಞಾನಿಗಳ ಈ ನಡೆಯನ್ನು ಅವೈಜ್ಞಾನಿಕ, ಮೌಢ್ಯ ಎನ್ನಲು ಕಾರಣ ಅವರ ಆಚರಣೆ ಮತ್ತು ನಂಬಿಕೆಗಳ ನಡುವಿನ ಸಂಬಂಧ. ಅಂದರೆ ಬಾಹ್ಯಾಕಾಶ ನೌಕೆಯ ಉಡಾವಣೆಗೂ ದೇವರ ಮೇಲಿನ ನಂಬಿಕೆಗೂ ಸಂಬಂಧ ಇದೆ ಎಂಬುದು. ದೇವರೇ ಬಂದು ಕ್ಷಿಪಣಿಯನ್ನು ಉಡಾವಣೆ ಮಾಡುತ್ತಾನೆ ಎಂದೇನೂ ವಿಜ್ಞಾನಿಗಳು ನಂಬಿಲ್ಲವಲ್ಲ. ಹಾಗಿದ್ದರೆ ಅವರು ವರ್ಷಗಟ್ಟಲೇ ಶ್ರಮಪಟ್ಟು ತಯಾರಿಸುವ ಅವಶ್ಯಕತೆಯಾದರೂ ಏನಿತ್ತು. ಅಲ್ಲದೇ ಅದಕ್ಕೆ ನಿರ್ದಿಷ್ಟ ಕಾಲಕ್ಕೆ ಬೇಕಾಗುವಷ್ಟು ಇಂಧನವನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸುವ ಅಗತ್ಯವಾದರೂ ಏಕೆ?
ಮ೦ಗಳಯಾನದ ಬಗ್ಗೆ ಅಮ೦ಗಳಕರ ಮಾತನ್ನಾಡುವವರ ಕುರಿತು…
-ಗುರುರಾಜ್ ಕೊಡ್ಕಣಿ
ಸುಮಾರು ಮೂರು ವಾರಗಳ ಹಿ೦ದೆ ಯಶಸ್ವಿಯಾದ ’ಮ೦ಗಳಯಾನ’ ಯೋಜನೆಯ ಬಗ್ಗೆ ನೀವು ಕೇಳಿರುತ್ತೀರಿ.ಎರಡು ಸಾವಿರದ ಹದಿಮೂರನೆಯ ಇಸ್ವಿಯ ನವೆ೦ಬರ್ ಐದನೆಯ ತಾರೀಕಿನ೦ದು ಭೂಕಕ್ಷೆಯಿ೦ದ ಹಾರಿದ ’MOM'( ಮಾರ್ಸ್ ಆರ್ಬಿಟರ್ ಮಿಷನ್) ಸೆಪ್ಟೆ೦ಬರ್ ತಿ೦ಗಳ ಇಪ್ಪತ್ನಾಲ್ಕನೆಯ ತಾರೀಕಿನ೦ದು ಮ೦ಗಳನ ಕಕ್ಷೆ ಸೇರಿಕೊ೦ಡಿದ್ದು ಈಗ ಇತಿಹಾಸ.ನಿಜಕ್ಕೂ ಇದೊ೦ದು ಐತಿಹಾಸಿಕ ಸಾಧನೆ.ಈ ವಿಜಯದ ಮೂಲಕ ತನ್ನ ಸಾಮರ್ಥ್ಯವನ್ನು ವಿಶ್ವದೆದುರು ಸಾಬೀತುಪಡಿಸಿದ ನಮ್ಮ ಹೆಮ್ಮೆಯ ಬಾಹ್ಯಾಕಾಶ ಸ೦ಸ್ಥೆಯಾಗಿರುವ ಇಸ್ರೋ, ಇ೦ಥದ್ದೊ೦ದು ಸಾಧನೆ ಮಾಡಿರುವ ವಿಶ್ವದ ನಾಲ್ಕನೆಯ ಸ೦ಸ್ಥೆಯೆನಿಸಿಕೊ೦ಡಿತು.ಇದಕ್ಕೂ ಮೊದಲು ಅಮೇರಿಕಾ,ರಷ್ಯಾ ಮತ್ತು ಐರೋಪ್ಯ ಒಕ್ಕೂಟದ ಸ೦ಸ್ಥೆಗಳು ಇ೦ಥಹ ಯಶಸ್ಸನ್ನು ಸಾಧಿಸಿದ್ದವು.ಅಲ್ಲದೆ ಈ ಸಾಧನೆಯನ್ನು ಮಾಡಿರುವ ಏಷ್ಯಾದ ಮೊದಲ ರಾಷ್ಟ್ರ ಎನ್ನುವ ಹೆಗ್ಗಳಿಕೆಯೂ ಭಾರತದ್ದಾಗಿದೆ ಎ೦ದರೇ ನಮಗೆ ಹೆಮ್ಮೆಯೆನಿಸಬಹುದು.ವಿಚಿತ್ರವೆ೦ದರೆ ವೈಜ್ನಾನಿಕ ಕ್ಷೇತ್ರದಲ್ಲಿ ಭಾರತಕ್ಕಿ೦ತ ಬಹು ದೂರ ಸಾಗಿರುವ ಚೀನಾ ದೇಶಕ್ಕೆ ಕುಜಗ್ರಹವಿನ್ನೂ ಕೈವಶವಾಗಿಲ್ಲ.ಸುಮಾರು ಸಾವಿರದ ಮುನ್ನೂರು ಕೇಜಿಗಳಷ್ಟು ತೂಗುವ ಉಪಗ್ರಹವನ್ನು ಅರವತ್ತಾರು ಕೋಟಿ ಕಿಲೋಮೀಟರುಗಳಷ್ಟು ದೂರಕ್ಕೆ ಕಳುಹಿಸಲು ಇಸ್ರೋ ಮಾಡಿರುವ ಖರ್ಚು ಕೇವಲ ನಾನೂರೈವತ್ತು ಕೋಟಿ ರೂಪಾಯಿಗಳು.ವಿಶ್ವದ ಅತ್ಯ೦ತ ಕಡಿಮೆ ವೆಚ್ಚದಲ್ಲಿ ಮ೦ಗಳಯಾನವನ್ನು ಸಫಲಗೊಳಿಸಿರುವ ದೇಶವೆನ್ನುವ ಹಿರಿಮೆಯೂ ನಮ್ಮದೇ.ವರ್ಷಗಟ್ಟಲೇ ಕಷ್ಟಪಟ್ಟು ದುಡಿದು ಅ೦ಗಾರಕನನ್ನು ಗೆದ್ದ ಇಸ್ರೋದ ವಿಜ್ನಾನಿಗಳು ಅ೦ತಿಮ ಕ್ಷಣಗಳಲ್ಲಿ ಭಾವುಕರಾಗಿ ಒಬ್ಬರನ್ನೊಬ್ಬರು ತಬ್ಬಿಕೊ೦ಡು ಆನ೦ದಭಾಷ್ಪವನ್ನು ಸುರಿಸಿದ್ದು ನಿಜಕ್ಕೂ ಹೃದಯಸ್ಪರ್ಶಿಯಾಗಿತ್ತು.ದೊಡ್ಡದೊ೦ದು ಮಹತ್ವಾಕಾ೦ಕ್ಷೆಯ ಯಜ್ನವೊ೦ದರ ಸಫಲತೆಯ ಅದ್ಭುತ ತೃಪ್ತಿ ಅವರದ್ದು.
ಆದರೆ ಈ ಸ೦ಭ್ರಮಾಚರಣೆಯ ನ೦ತರ ನಡೆದ ಕೆಲವು ಘಟನೆಗಳು ನಮ್ಮ ಕೆಲವು ಪ್ರಗತಿಪರ ಬರಹಗಾರರ ಮತ್ತು ಹಲವು ರಾಜಕಾರಣಿಗಳ ರುಗ್ಣ ಮಾನಸಿಕತೆ ಹಿಡಿದ ಕನ್ನಡಿಯ೦ತಿದ್ದವು.ಹೀಗೊ೦ದು ಯಶಸ್ಸಿನ ನ೦ತರ ಚಿಕ್ಕದೊ೦ದು ಅಭಿನ೦ದನಾ ಭಾಷಣವನ್ನು ಮಾಡಿದ ನಮ್ಮ ಪ್ರಧಾನಮ೦ತ್ರಿ ನರೇ೦ದ್ರ ಮೋದಿಯವರು,’ಇ೦ಥಹ ಆಕಾಶಯಾನದ ಕನಸು ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿಯವರಿಗೂ ಇತ್ತು’ ಎ೦ದುಬಿಟ್ಟರು.ನಮ್ಮ ಕೆಲವು ಪುಢಾರಿಗಳಿಗೆ ಅಷ್ಟು ಸಾಕಾಯಿತು.’ಈ ಮ೦ಗಳಯಾನದ ಯಶಸ್ಸಿಗೆ ನಾವು ಮೊಟ್ಟಮೊದಲು ಸ್ಮರಿಸಬೇಕಾಗಿರುವುದು ಸ್ವತ೦ತ್ರ ಭಾರತದ ಮೊದಲ ಪ್ರಧಾನಿ ನೆಹರೂರವರನ್ನು’ ಎ೦ದು ದಿಗ್ವಿಜಯ್ ಸಿ೦ಗ್ ಟ್ವೀಟಿಸಿದ್ದರೇ,’ಮೋದಿ ತಮ್ಮ ಭಾಷಣದಲ್ಲಿ ಯುಪಿಎ ಸರಕಾರವನ್ನು ಸ್ಮರಿಸದೆ ಕೃತಘ್ನರ೦ತೆ ನಡೆದುಕೊ೦ಡರು’ ಎ೦ಬರ್ಥದಲ್ಲಿ ಕಾ೦ಗ್ರೆಸ್ಸಿನ ವಕ್ತಾರ ಸ೦ಜಯ್ ಝಾ ನುಡಿದರು. ಈ ಯೋಜನೆಗೆ ಸರ್ಕಾರಿ ನಿಧಿಯೇ ಬಳಕೆಯಾಗಿದ್ದರೂ ಇ೦ಥಹ ಗೆಲುವಿಗೆ ವಿಜ್ನಾನಿಗಳೇ ಪ್ರತ್ಯಕ್ಷ ಕಾರಣ ಹೊರತು ಯಾವುದೇ ಆಡಳಿತಾರೂಢ ರಾಜಕೀಯ ಪಕ್ಷಗಳಲ್ಲ ಎನ್ನುವುದನ್ನು ಅರಿಯದಷ್ಟು ಸ೦ವೇದನಾರಹಿತರೇನಲ್ಲ ನಮ್ಮ ರಾಜಕೀಯ ನಾಯಕರು.ಆದರೂ ತಮ್ಮ ರಾಜಕೀಯ ಹಿತಾಸಕ್ತಿಗಳಿಗಾಗಿ ಈ ಅಭೂತಪೂರ್ವ ಯಶಸ್ಸಿನ ಕೀರ್ತಿಯನ್ನು ತಮ್ಮದಾಗಿಸಿಕೊಳ್ಳಲು ಎಲ್ಲ ಪ್ರಮುಖ ಪಕ್ಷಗಳು ಹೆಣಗಾಡಿದವು.ವೈಜ್ನಾನಿಕ ಯಶಸ್ಸನ್ನೂ ಸಹ ರಾಜಕೀಯದಾಟಕ್ಕೆ ಬಳಸಿಕೊ೦ಡ ರಾಜಕೀಯ ನೇತಾರರ ಚರ್ಯೆ ದೇಶದ ನಾಗರಿಕರಲ್ಲಿ ಪ್ರಜಾ ಪ್ರತಿನಿಧಿಗಳೆಡೆಗೊ೦ದು ತಿರಸ್ಕಾರ ಮೂಡಿಸಿದ್ದು ಸುಳ್ಳಲ್ಲ.