ಮೌಲ್ಯ ರಾಜಕಾರಣ ಮರೆತ ಜಯಲಲಿತಾ!
– ತುರುವೇಕೆರೆ ಪ್ರಸಾದ್
ಪತ್ರಕರ್ತರು
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನೊಂದಿಗೆ ಅವರ ಆಡಳಿತ ಕೊನೆಗೊಂಡಿದೆ. ಇದನ್ನೇ ಜಯಲಲಿತಾ ಯುಗಾಂತ್ಯ ಎಂದು ಬಣ್ಣಿಸಲಾಗುತ್ತಿದೆ. ತಮಿಳುನಾಡಿನ ಕೋಟಿ ಕೋಟಿ ಜನರು ತಮ್ಮ ಅಮ್ಮನ ನಿಧನದ ಸುದ್ದಿ ತಿಳಿದು ತೀವ್ರ ಆಘಾತಕ್ಕೊಳಗಾಗಿದ್ದಾರೆ. ನಾಡಿನಾದ್ಯಂತ ಶೋಕ ಮಡುಗಟ್ಟಿದೆ. ಅಮ್ಮನ ಸಾವಿನ ಭಾವೋದ್ವೇಗದ ಅಲೆ ಉಕ್ಕಿ ಹರಿಯುತ್ತಿದೆ. ಎಲ್ಲೆಡೆ ಅಮ್ಮನ ಗುಣಗಾನ ನಡೆಯುತ್ತಿದೆ. ಜಯಲಲಿತಾ ತಾವು ಬದುಕಿರುವಷ್ಟು ದಿನವೂ ತಮ್ಮ ನಾಡಿನ ರೈತರಿಗಾಗಿ ಕಾವೇರಿ ನೀರನ್ನು ಶತಾಯಗತಾಯ ಹರಿಸಿಕೊಳ್ಳಲೇಬೇಕು ಎಂದು ಹಠ ಹಿಡಿದವರಂತೆ ವರ್ತಿಸಿದರು. ಈ ವರ್ಷವೂ ಕರ್ನಾಟಕದ ಎಲ್ಲಾ ಜಲಾಶಯಗಳು ನೀರಿಲ್ಲದೆ ಒಣಗಿ ನಿಂತಿದ್ದಾಗಲೂ ಸಹ ಜಯಲಲಿತಾ ತಮ್ಮ ರಾಜ್ಯಕ್ಕೆ ನೀರು ಹರಿಸಲೇಬೇಕೆಂದು ಕರ್ನಾಟಕದ ಮೇಲೆ ಒತ್ತಡ ಹೇರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದಾಗ್ಯೂ ಕರ್ನಾಟಕದ ಜನ ಅವರ ಸಾವಿಗೆ ಅನುಕಂಪ ವ್ಯಕ್ತಪಡಿಸಿದ್ದಾರೆ, ಒಬ್ಬ ಧೀಮಂತ ಮಹಿಳೆಯ ಸಾವಿಗೆ ನೀಡಬೇಕಾದ ಘನತೆ ಗೌರವಗಳನ್ನು ಮಾನವೀಯತೆಯ ನೆಲೆಯಲ್ಲಿ ಪ್ರದರ್ಶಿಸಿ ಕನ್ನಡಿಗರು ಎಂದಿನಂತೆ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಮತ್ತಷ್ಟು ಓದು
ಜಯಲಲಿತಾರನ್ನು ಚಿರಸ್ಮರಣೀಯವಾಗಿಸಿದ “ಅಮ್ಮ ಉನವಾಗಮ್”
– ಶ್ರೇಯಾಂಕ ಎಸ್ ರಾನಡೆ
||ವಿಶ್ವಸಂಸ್ಥೆಯ ಅಂಗಸಂಸ್ಥೆ ಆಹಾರ ಮತ್ತು ಕೃಷಿ ಸಂಸ್ಥೆಯ ಇತ್ತೀಚಿನ “ವಿಶ್ವದ ಆಹಾರ ಅಭದ್ರತೆಯ ಪರಿಸ್ಥಿತಿ 2015″ರ ವರದಿಯ ಪ್ರಕಾರ ಭಾರತದಲ್ಲಿ ದಿನನಿತ್ಯ 19.46 ಕೋಟಿ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಭಾರತ ನಗರೀಕರಣಗೊಳ್ಳುತ್ತಿರುವ ದೇಶ. ಹಾಗಾಗಿ ಸರಿಯಾದ ಯೋಜನೆ ರೂಪಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳದ ಹೊರತು ನಗರೀಕರಣಗೊಂಡಂತೆಲ್ಲ ನಿರಾಶ್ರಿತರ, ಬಡವರ, ಹಸಿವಿನಿಂದ ಬಳಲುವವರ ಸಂಖ್ಯೆಯೂ ಹೆಚ್ಚಲಿದೆ. ತಕ್ಷಣದ ಪರಿಸ್ಥಿತಿಯಿಂದ ನೋಡಿದರೆ ಸರಕಾರಗಳ ಕಡಿಮೆ ಮೊತ್ತದ ಆದರೆ ಉತ್ತಮ ಗುಣಮಟ್ಟದ ‘ಅಮ್ಮ ಮೆಸ್’ನಂತಹ ಆಹಾರ ಪೂರೈಸುವ ಯೋಜನೆಗಳು ಈ ದೇಶದ ಹಸಿವು ಹಾಗೂ ಪೌಷ್ಟಿಕತೆಯ ಕೊರತೆಯನ್ನು ನೀಗಿಸಿ ದೇಶವನ್ನು ಮತ್ತಷ್ಟು ಉತ್ಪಾದಕಗೊಳಿಸಲು ಸಹಾಯ ಮಾಡುತ್ತವೆ.|| ಮತ್ತಷ್ಟು ಓದು
ತಮಿಳ್ ಮಕ್ಕಳನ್ನು ಆತಂಕದ ಗುಮ್ಮನ ಕೈಗಿತ್ತ ‘ಅಮ್ಮ’!
– ತುರುವೇಕೆರೆ ಪ್ರಸಾದ್
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 18 ವರ್ಷಗಳ ನಂತರ ಅವರ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು ಇದೀಗ ಶಿಕ್ಷೆಯಾಗಿದೆ. ಅಧಿಕಾರ ಹಾಗೂ ಕೀರ್ತಿಯ ಉತ್ತುಂಗದಲ್ಲಿದ್ದಾಗಲೇ ಅವರು ಜೈಲು ಸೇರುವಂತಾಗಿದೆ. ಹಾಲಿ ಮುಖ್ಯಮಂತ್ರಿಯೊಬ್ಬರು ಭ್ರಷ್ಟಾಚಾರ ಹಾಗೂ ಅಕ್ರಮ ಸಂಪತ್ತು ಗಳಿಕೆ ಆರೋಪದ ಮೇಲೆ ಜೈಲು ಸೇರುತ್ತಿರುವುದೂ ಇದೇ ಮೊದಲ ಬಾರಿಯಾದ್ದರಿಂದ ಈ ಪ್ರಕರಣ ಭಾರೀ ಮಹತ್ವ ಹಾಗೂ ಪ್ರಚಾರ ಪಡೆದಿದೆ. ಎಲ್ಲಾ ತತ್ವ, ಸಿದ್ಧಾಂತ,ಕಾನೂನಿನ ನಿಯಂತ್ರಣ ಮೀರಿ ಅಪರಾಧೀಕರಣಗೊಳ್ಳುತ್ತಿರುವ ರಾಜಕೀಯ ಕ್ಷೇತ್ರಕ್ಕೆ ನ್ಯಾಯಾಲಯದ ತೀರ್ಪು ಒಂದು ಎಚ್ಚರಿಕೆಯ ಗಂಟೆ ಎಂದರೆ ತಪ್ಪಾಗಲಾರದು. ಇದು ಜಯಲಲಿತಾ ವಿರೋಧಿಗಳಿಗೆ ಸಿಕ್ಕ ಜಯವೂ ಹೌದು, ಹಾಗೆಯೇ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸತ್ಯ, ನ್ಯಾಯಕ್ಕೆ ಸಿಕ್ಕ ಜಯವೂ ಹೌದು.
ಆದರೆ ಈ ಪ್ರಕರಣದ ಹಿನ್ನಲೆಯಲ್ಲಿ ಕೆಲವೊಂದು ಅಂಶಗಳನ್ನು ಯೋಚಿಸಬೇಕಿದೆ. ಜಯಲಲಿತಾ ಅವರಿಗೆ ಅಕ್ರಮ ಸಂಪತ್ತು ಗಳಿಕೆ ಆರೋಪದ ಹಿನ್ನಲೆಯಲ್ಲಿ ಶಿಕ್ಷೆಯಾಗಿರುವುದರಿಂದ ಇನ್ನು ಮುಂದಾದರೂ ನಮ್ಮ ರಾಜಕೀಯ ಕ್ಷೇತ್ರ ಶುದ್ಧೀಕರಣಗೊಳ್ಳುತ್ತದೆ ಎಂದು ನಂಬುವ ಹಾಗಿಲ್ಲ. ಯಾಕೆಂದರೆ ಜಯಲಲಿತಾ ಅವರ ಅಕ್ರಮ ಅಸ್ತಿ ಪ್ರಮಾಣ ಕೇವಲ 66 ಕೋಟಿ. ಆದರೆ ಸಾವಿರಾರು ಕೋಟಿ ಅಕ್ರಮ ಆಸ್ತಿ ಮಾಡಿ, ಸ್ವಿಸ್ ಬ್ಯಾಂಕಿನಲ್ಲಿ ಕೋಟ್ಯಂತರ ರೂಪಾಯಿ ಇಟ್ಟಿರುವ ನೂರಾರು ರಾಜಕಾರಣಿಗಳು, ಉದ್ಯಮಿಗಳು ಹಾಗೂ ಅಧಿಕಾರಿಗಳು ಇದ್ದಾರೆ. ಅವರೆಲ್ಲರ ವಿರುದ್ಧ ನಮ್ಮ ಕಾನೂನು ಏನೂ ಮಾಡಲಾಗಿಲ್ಲ. ಸ್ವಾತಂತ್ಯ್ರ ಬಂದ ನಂತರ ದೇಶದಲ್ಲಿ ನಡೆದಿರುವ ಒಟ್ಟಾರೆ ಹಗರಣಗಳಲ್ಲಿ ರೂ.91063323430000 ರಷ್ಟು ದೊಡ್ಡ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗಿದೆ. ಈ ಅಕ್ರಮ ಹಣದ ಫಲಾನುಭವಿಗಳಲ್ಲಿ ಎಷ್ಟು ಮಂದಿಗೆ ಶಿಕ್ಷೆ ಆಗಿದೆ? ಯಾಕೆ ಆಗಿಲ್ಲ? ಎಂದು ಯೋಚಿಸಬೇಕಿದೆ.
ಹಾಗಾದರೆ ಜಯಲಲಿತಾ ಅವರಿಗೆ ಶಿಕ್ಷೆ ಆಗಿದ್ದೇಕೆ? ಜಯಲಲಿತಾ ಅನುಭವದ ಕೊರತೆ ಹಾಗೂ ಮಿತಿ ಮೀರಿದ ಉದ್ಧಟತನದಿಂದ ಎಲ್ಲಾ ತೊಂದರೆಗಳನ್ನು ತಾವೇ ಆಹ್ವಾನಿಸಿಕೊಂಡರು. 1991-96 ರ ಅಧಿಕಾರಾವಧಿಯಲ್ಲಿ ಅವರು ತೆಗೆದುಕೊಂಡ ತಪ್ಪು ನಿರ್ಧಾರಗಳಿಗೆ ಅವರು ಈಗ ಭಾರೀ ಬೆಲೆ ತೆರುವಂತಾಗಿದೆ. ಆ ಅವಧಿಯಲ್ಲಿ ಅವರಿಗೆ ರಾಜಕೀಯ ಪ್ರಬುದ್ಧತೆ ಇರಲಿಲ್ಲ, ರಾಜಕೀಯಕ್ಕೆ ಬೇಕಾದ ಸೂಕ್ಷ್ಮತೆ, ದೂರಾಲೋಚನೆ , ಅನುಭವ ಯಾವುದೂ ಅವರಿಗಿರಲಿಲ್ಲ. ಹೋಗಲೆಂದರೆ ಅವರಿಗೆ ಆ ಸಮಯದಲ್ಲಿ ಸೂಕ್ತ ಮಾರ್ಗದರ್ಶನವೂ ಸಿಗಲಿಲ್ಲ. ಅವರ ಬಂಧುಗಳು ಅಧಿಕಾರದಲ್ಲಿ ಭಾರೀ ಹಸ್ತಕ್ಷೇಪ ನಡೆಸಿದರು.ನೂರಾರು ಕೋಟಿ ರೂಗಳ ಅಕ್ರಮ ನಡೆಯಿತು. ಜೊತೆಗೆ ಜಯಲಲಿತಾ ತಮ್ಮ ರಾಜಕೀಯ ಜೀವನದುದ್ದಕ್ಕೂ ವಿರೋಧಿಗಳನ್ನೇ ಸೃಷ್ಟಿಸಿಕೊಳ್ಳುತ್ತಾ ಹೋದರು. ಸುಬ್ರಹ್ಮಣ್ಯಸ್ವಾಮಿ, ಟಿ.ಎನ್.ಶೇಷನ್, ಚಿದಂಬರಂ ಎಲ್ಲರನ್ನೂ ಎದುರು ಹಾಕಿಕೊಂಡರು. ಪ್ರಜಾಪ್ರಭುತ್ವದಿಂದ ಬಂದ ಅಧಿಕಾರವನ್ನು ಸರ್ವಾಧಿಕಾರಿಯ ಧೋರಣೆಯಿಂದ ನಡೆಸಿದರು.ಅವರಲ್ಲಿ ಅಹಂ ತುಂಬಿ ತುಳುಕುತ್ತಿತ್ತು. ವಿರೋಧಿಗಳೊಂದಿಗೆ ರಾಜಕೀಯ ದ್ವೇಷಕ್ಕೆ ಮೀರಿದ ವೈಯಕ್ತಿಕ ಸೇಡಿನ ಮನೋಭಾವ ಬೆಳೆಸಿಕೊಂಡರು. ಯಾರನ್ನೂ ಬೇಕಾದರೂ ದುಡ್ಡು ಚೆಲ್ಲಿ ಕೊಂಡುಕೊಳ್ಳಬಲ್ಲೆ ಎಂಬ ದರ್ಪ ಮೆರೆದರು.
ಭ್ರಷ್ಟ ಜಯಲಲಿತಾ ಯಾವೆಲ್ಲದರ ಫಲಿತಾಂಶ?
– ಚೇತನಾ ತೀರ್ಥಹಳ್ಳಿ
ಅಧಿಕೃತವಾಗಿ ತನ್ನ ಸ್ವಂತದವರೆಂದು ಹೇಳಿಕೊಳ್ಳಲು ಮತ್ತೊಂದು ಜೀವ ಜೊತೆಗಿರದ ಜಯಲಲಿತಾ ಇವೆಲ್ಲವನ್ನೂ ಮಾಡಿಟ್ಟಿದ್ದು ಯಾಕಾಗಿ? ತನ್ನ ನೆಲದ ಬಡ ಜನರಿಗೆ ರೂಪಾಯಿಗೊಂದು ಇಡ್ಲಿ, ಕುಡಿಯುವ ನೀರು, ಸೂರು ಎಂದೆಲ್ಲ ಜನಪರ – ಜನಪ್ರಿಯ ಯೋಜನೆಗಳನ್ನು ರೂಪಿಸಿದ ಜಯಲಲಿತಾ ಅದೇ ಜನರ ತೆರಿಗೆ ಹಣವನ್ನು ನುಂಗಿ ಕೂತಿರುವುದು ಯಾಕೆ? ನಿಜಕ್ಕೂ ಈ ಪರಿಯ ಹಪಾಹಪಿ ಅವರಲ್ಲಿದೆಯೇ? ತುಸು ಜಂಭದ, ಆದರೆ ಅಪ್ರಮಾಣಿಕತೆ ಕಾಣದ ಅವರ ಮುಖ ಹಾಗೂ ನಿಲುವಿನಲ್ಲಿ ಮೋಸವಿದೆಯೇ? ಇಂದು ನಾವು ನೋಡುತ್ತಿರುವ ಭ್ರಷ್ಟ ರಾಜಕಾರಣಿ ಜಯಲಲಿತಾ ರೂಪುಗೊಂಡಿದ್ದು ಹೇಗೆ?
ಬದುಕನ್ನು ಗಂಡು – ಹೆಣ್ಣೆಂಬ ಭೇದ ಮೀರಿದ ದೃಷ್ಟಿಕೋನದಿಂದ ನೋಡಬೇಕೆನ್ನುವುದು ನಿಜವಾದರೂ ಅದರ ಹೊರಳಾಟಗಳನ್ನು ನೋಡುವಾಗ ಈ ಭೇದದ ಊರುಗೋಲು ಅಗತ್ಯವಾಗಿಬಿಡುತ್ತದೆ. ಏಕೆಂದರೆ, ಬದುಕು ಒಂದೇ ಆದರೂ ಅದನ್ನು ಹೆಣ್ಣು ಎದುರುಗೊಳ್ಳುವ ಬಗೆಯೇ ಬೇರೆ ಮತ್ತು ಗಂಡು ಒಳಗೊಳಿಸಿಕೊಳ್ಳುವ ಬಗೆ ಬೇರೆ. ಏಕೆಂದರೆ, ನಾಗರಿಕತೆಯ ಆರಂಭಕಾಲದಿಂದಲೂ ಗಂಡು ಹೆಣ್ಣಿಗೆ ಕೊಡಲಾಗಿರುವ ಅವಕಾಶಗಳು ಹಾಗಿವೆ.
ಸದ್ಯದ ಭಾರತೀಯ ರಾಜಕಾರಣದ ಮುಖ್ಯಧಾರೆಯಲ್ಲಿರುವ ಐವರು ಹೆಣ್ಣುಗಳ ಬದುಕು ಮತ್ತು ಸಾಧನೆಗಳು ವಿಶಿಷ್ಟವೇ. ಅವರ ಹಗರಣಗಳೂ ಕೂಡಾ. ಭ್ರಷ್ಟಾಚಾರದ ವಿಷಯಕ್ಕೆ ಬಂದಾಗ ಅಲ್ಲಿ ಕೂಡ ಲಿಂಗ ತಾರತಮ್ಯ ಇರುವುದಿಲ್ಲ. ವಿಚಾರಣೆ, ಶಿಕ್ಷೆ, ಪರಿಣಾಮಗಳಿಗೆ ಸಂಬಂಧಿಸಿದಂತೆ ಅದನ್ನು ತರತಮವಿಲ್ಲದೆಯೇ ನೋಡಬೇಕಾಗುತ್ತದೆ. ಈ ಸಾಮಾಜಿಕ ಆಯಾಮವನ್ನು ಮೀರಿ, ಮಾನಸಿಕ ಸ್ತರದಲ್ಲಿ ನೋಡುವಾಗ, ಮಾನವೀಯ ಚಿಂತನೆಗೆ ಹಚ್ಚಿ ನೋಡುವಾಗ ಬಿಚ್ಚಿಕೊಳ್ಳುವ ದೃಶ್ಯಗಳೂ ಬೇರೆಯೇ ಇರುತ್ತವೆ. ಅಲ್ಲಿ ಮಾಯಾವತಿಯ ಮೂರ್ತಿಗಳಿಗೆ, ಚಿನ್ನದ ಕತ್ತಿಗಳಿಗೆ ಬೇರೆಯೇ ಅರ್ಥ ಕಾದಿರುತ್ತದೆ. ಹಿಂಜಿಹೋದ ಕಾಟನ್ ಸೀರೆಯನ್ನಷ್ಟೆ ಉಡುವ ಮಮತಾ ಬ್ಯಾನರ್ಜಿಯ ಹೆಸರು ಯಾಕೆ ಚೀಟಿ ವ್ಯವಹಾರದಂಥದರಲ್ಲಿ ಕಾಣಿಸುತ್ತದೆ ಎಂಬುದರ ಅರಿವಾಗುತ್ತದೆ. ಯಾಕೆ ಉಮಾ ಭಾರತಿ ಹಾಗೆ ರಚ್ಚೆ ಹಿಡಿದ ಮಗುವಿನಂತಾಡುತ್ತಾರೆ ಎಂದರೆ ಅವರ ಸೋತ ಹೃದಯದ ನೋವು ಕೇಳಿಸುತ್ತದೆ. ಸೋನಿಯಾರ ನಗುವಿಲ್ಲದ ಮುಖವೂ ಅವರ ಪರಿವಾರದೊಂದಿಗೆ ಹೆಣೆದುಕೊಂಡ ಹಗರಣಗಳು, ಹಣದ ವ್ಯವಹಾರಗಳು ಮತ್ತೊಂದೇ ಕಥೆ ಹೇಳತೊಡಗುತ್ತವೆ. ಈ ಎಲ್ಲವನ್ನು ಆ ಎಲ್ಲರ ಅಪರಾಧಗಳ ಸಮರ್ಥನೆಗಾಗಿ ಖಂಡಿತ ಬಳಸಬಾರದು. ಆದರೆ ಅರ್ಥೈಸಿಕೊಳ್ಳಲು ಮತ್ತು ನಮ್ಮನಮ್ಮ ಸ್ತರಗಳಲ್ಲಿ ಅವನ್ನು ಅನ್ವಯಿಸಿಕೊಂಡು ನೋಡಲು ಇವು ಬೇಕಾಗುತ್ತವೆ.
ಮತ್ತಷ್ಟು ಓದು