“ಧರ್ಮ”ದ ದಾರಿ ತಪ್ಪಿಸುತ್ತಿರುವ ಹಿರಿಯರು;ಇಲ್ಲದ ಹಿಂದೂ ರಿಲಿಜನ್ನಿನ ಭ್ರಮೆಯಲ್ಲಿ ಕಿರಿಯರು
– ರಾಕೇಶ್ ಶೆಟ್ಟಿ
ಕಳೆದ ಜೂನ್ ೯ರಂದು ನಡೆದಿದ್ದ ಮೌಢ್ಯಮುಕ್ತ ಸಮಾಜ,ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ.ಕಲ್ಬುರ್ಗಿಯವರು,“ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದು” ಎಂದು ಹೇಳಿ ಸುದ್ದಿಯಾಗಿದ್ದರು. ಈಗ ಮತ್ತೆ, ಗದುಗಿನಲ್ಲಿ ಆಯೋಜಿಸಲಾಗಿದ್ದ ’ಸಮಾಜಶಾಸ್ತ್ರ,ಕನ್ನಡಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಚಾರಗೋಷ್ಠಿ’ಯಲ್ಲಿ, “ಹಿಂದುಗಳಿಗೆ ಧರ್ಮಗ್ರಂಥವೇ ಇಲ್ಲ.ಭಗವದ್ಗೀತೆ ಹಿಂದುಗಳ ಧರ್ಮ ಗ್ರಂಥವಲ್ಲ,ಅದೊಂದು ವಚನ ಸಾಹಿತ್ಯ… ರಾಜ್ಯ ಸರ್ಕಾರ ನಡೆಸಲು ತೀರ್ಮಾನಿಸಿರುವ ಜಾತಿಜನಗಣತಿಯ ಪ್ರಶ್ನಾವಳಿಯಲ್ಲಿ ಧರ್ಮ,ಜಾತಿ,ಉಪಜಾತಿಗೊಂದು ಪ್ರತ್ಯೇಕ ಕಾಲಂ ನಿಗದಿಪಡಿಸಲಾಗಿದೆ.ಜಾತಿ ಜನಗಣತಿಯಲ್ಲಿ ಧರ್ಮ ಯಾಕೆ ಬೇಕು.ಏಕೆಂದರೆ ಧರ್ಮ ಮತ್ತು ಜಾತಿ ಎರಡೂ ಒಂದೇ.ಜೈನ ಧರ್ಮವೂ ಹೌದು,ಜಾತಿಯೂ ಹೌದು.ಅದರಂತೆ ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಬೌದ್ಧ ಧರ್ಮವೂ ಹೌದು,ಜಾತಿಯೂ ಹೌದು.ಹೀಗಿದ್ದಾಗ ಇಂತಹ ಅನವಶ್ಯಕ ಕಾಲಂಗಳು ಏಕೆ ಬೇಕು?” ಎಂದು ಪ್ರಶ್ನಿಸಿದ್ದಾರೆಂದು ವರದಿಯಾಗಿತ್ತು.
ಡಾ.ಕಲ್ಬುರ್ಗಿಯವರ ಹೇಳಿಕೆಯನ್ನು ವಿರೋಧಿಸಿ,ಹಿರಿಯ ಸಂಶೋಧಕರಾದ ಡಾ.ಎಂ ಚಿದಾನಂದ ಮೂರ್ತಿಗಳು ವಿಜಯವಾಣಿಯ ಜನಮತ ವಿಭಾಗದಲ್ಲಿ ಪತ್ರವೊಂದನ್ನು ಬರೆದು ’ಕಲ್ಬುರ್ಗಿಯವರು ಗದುಗಿನಲ್ಲಿ ಮಾತನಾಡುತ್ತ ’ಹಿಂದೂ ಎಂಬ ಧರ್ಮವೇ ಇಲ್ಲ’ ಎಂದು ವಿತಂಡವಾದ ಮಾಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ’ ಎನ್ನುತ್ತಾ ಮುಂದುವರೆದೂ ’ಧರ್ಮ ಎಂಬ ಶೀರ್ಷಿಕೆಯಡಿಯಲ್ಲಿ ಹಿಂದೂ ಎಂದು ದಾಖಲಿಸಲು ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟಿದೆ.’ಹಿಂದೂ ವಿವಾಹ ಕಾನೂನು’ ಎಂಬ ಕಾನೂನು ಕೂಡ ಇದೆ.ಕಲ್ಕತ್ತೆಯ ಮಠವೊಂದು ತಾನು ಹಿಂದು ವ್ಯಾಪ್ತಿಗೆ ಬರುವುದಿಲ್ಲವೆಂದಾಗ,೧೯೯೫ರಲ್ಲಿ ಸರ್ವೋಚ್ಚ ನ್ಯಾಯಾಲಯದ ಪೂರ್ಣಪೀಠವು ಅದು ’ಹಿಂದು ಧರ್ಮಕ್ಕೆ ಸೇರಿದ ಮಠ” ಎಂದು ತೀರ್ಪು ನೀಡಿದೆ.ಗಾಂಧೀಜಿ ತಮ್ಮನ್ನು ’ಸನಾತನಿ ಹಿಂದೂ’ ಎನ್ನುತ್ತಾರೆ.ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ತಮ್ಮನ್ನು ’ಹಿಂದು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ… ” ಇತ್ಯಾದಿ ಉದಾಹರಣೆಗಳನ್ನು ನೀಡಿದ್ದಾರೆ.