ಆನುದೇವಾ ಹೊರಗಣವನು ಸೆಕ್ಯುಲರಿಸಂನಿಂದ
– ರಾಕೇಶ್ ಶೆಟ್ಟಿ
ಅರಸರ ಆಡಳಿತದಲ್ಲಿದ್ದು ಆ ನಂತರ ದಶಕಗಳಿಗೂ ಹೆಚ್ಚು ಕಾಲದ ಮಾವೋವಾದಿಗಳ ಹಿಂಸಾಚಾರದ ನಂತರ ಅರಸರ ಆಡಳಿತಕ್ಕೆ ತಿಲಾಂಜಲಿಯಿಟ್ಟು ಪ್ರಜಾಪ್ರಭುತ್ವವನ್ನು ಅಪ್ಪಿಕೊಂಡ ನೇಪಾಳಿಗಳು ಮತ್ತು ನೇಪಾಳ ಹೆಜ್ಜೆ-ಹೆಜ್ಜೆಗೂ ಸವಾಲುಗಳನ್ನು ಎದುರಿಸುತ್ತಲೇ ಸಾಗುತ್ತಲಿದೆ.ಪ್ರಜಾಪ್ರಭುತ್ವಕ್ಕೆ ಕಾಲಿಟ್ಟಂತೆ,ಹೊಸ ಸಂವಿಧಾನ ರಚಿಸುವ ನಿರ್ಧಾರಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಬಂದಿದ್ದರೂ ೨೦೦೬ರಿಂದ ಈ ಪ್ರಕ್ರಿಯೆ ನಾನಾ ವಿಘ್ನಗಳಿಂದ ಕುಂಟುತ್ತಲೇ ಸಾಗಿದೆ.ಇತ್ತೀಚೆಗೆ ನಡೆದ ಪ್ರಬಲ ಭೂಕಂಪದ ನಂತರ ದೊಡ್ಡ ಮನಸ್ಸು ಮಾಡಿ ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗೂಡಿ ಮತ್ತೆ ಈ ಕಾರ್ಯಕ್ಕೆ ಜೈ ಎಂದಿದ್ದವು.ಈಗ ಕಾರ್ಯ ಶುರುವಾದಂತೆ ಬಹಳಷ್ಟು ಪರ-ವಿರೋಧ ಪ್ರತಿಭಟನೆ ಚರ್ಚೆಗಳು ಶುರುವಾಗಿವೆ.
ಅವುಗಳಲ್ಲಿ ಒಂದು,ನೇಪಾಳದ ಭಾಗಗಳನ್ನು ಜನರ ಆಚರಣೆ-ಭಾಷೆಯ ಮೇಲೆ ಪ್ರತ್ಯೇಕವಾಗಿಸುವುದನ್ನು ವಿರೋಧ ವ್ಯಕ್ತವಾಗುತ್ತಿದೆ.ಈ ನಡೆ ಮುಂದೆ ನೇಪಾಳವನ್ನು ಇನ್ನಷ್ಟು ಚೂರು ಚೂರು ಮಾಡಲಿದೆ ಎಂಬ ದೂರದೃಷ್ಟಿಯುಳ್ಳವರು ನೇಪಾಳದಲ್ಲಿರುವುದು ನೇಪಾಳಿಗಳ ಪುಣ್ಯವೇ ಸರಿ.ಬಹುಷಃ ಅವರು ಭಾರತದ ಸ್ಥಿತಿಯಿಂದ ಪಾಠ ಕಲಿತಿರಬಹುದು.ಅದರಲ್ಲೂ ಮುಖ್ಯವಾಗಿ ಭಾರತದ ಈಶಾನ್ಯ ರಾಜ್ಯಗಳನ್ನು ನೋಡಿ.ಒಂದೆಡೆ ಮಿಷನರಿಗಳ ಚಿತಾವಣೆ,ಮತ್ತೊಂದೆಡೆ ಜನಾಂಗೀಯ ಆಧರಿತ ಉಗ್ರಪಡೆಗಳ ಹಿಂಸಾಚಾರಗಳಿಂದ ಈಗಾಗಲೇ ಎಂಟು ರಾಜ್ಯಗಳಾಗಿರುವ ಈಶಾನ್ಯ ಭಾಗವೂ ಇನ್ನೂ ಚೂರುಚೂರಾಗುವ ಆಂತಕವಿದ್ದೇ ಇದೆ.ಈಶಾನ್ಯ ರಾಜ್ಯಗಳ ಉದಾಹರಣೆಯೇಕೆ.ನೆರೆಯ ತಮಿಳುನಾಡಿನಲ್ಲಿಯೇ ಭಾಷೆ ಮತ್ತು ನಮ್ಮ ಸಂಸ್ಕೃತಿಯಗೇ ಪರಕೀಯವಾದ ’ದ್ರಾವಿಡ ಜನಾಂಗೀಯ’ ಎಂಬ ಹುಚ್ಚು ಕಲ್ಪನೆಯ ಚಳುವಳಿಯ ನೆಪದಲ್ಲಿ ಏನೆಲ್ಲಾ ಅಧ್ವಾನಗಳಾಯಿತು ಎಂಬುದನ್ನು ನೋಡಿದರೆ ಸಾಕಲ್ಲವೇ? ಈ ನಿಟ್ಟಿನಲ್ಲಿ ನೋಡಿದಾಗ ನೇಪಾಳಿಗಳ ಆತಂಕ ಸರಿಯಾಗಿದೆ ಎನಿಸುತ್ತದೆ.