ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸುಪ್ರೀಂ ಕೋರ್ಟ್’

10
ನವೆಂ

ಅಯೋಧ್ಯೆ : ಸೆಕ್ಯುಲರ್ ಮಾರೀಚರಿಗೆ ಸುಪ್ರೀಂ ರಾಮಬಾಣ

ರಾಕೇಶ್ ಶೆಟ್ಟಿ

ನವೆಂಬರ್ ೯,೨೦೧೯ರ ಶನಿವಾರದ ದಿನಕ್ಕೂ,ಸೆಪ್ಟಂಬರ್ ೩೦,೨೦೧೦ರ ಗುರುವಾರದ ದಿನಕ್ಕೂ ಸಾಮ್ಯತೆಯಿದೆ. ಆ ಎರಡು ದಿನಗಳು ೪೯೧ ವರ್ಷಗಳಷ್ಟು ಹಳೆಯದಾದ ರಾಮಜನ್ಮಭೂಮಿಯ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ಕೇಸಿನ ತೀರ್ಪು ಬರುವ ದಿನಗಳಾಗಿದ್ದವು.

“ವಿವಾದಿತ 2.7 ಎಕರೆ ಭೂಮಿಯನ್ನು ಯಾವುದೇ ಒಂದು ಪಂಗಡಕ್ಕೆ ನೀಡದೆ ಮೂರು ಹೋಳುಗಳನ್ನಾಗಿ,ಪ್ರಸ್ತುತ ರಾಮಲಲ್ಲಾ ಇರುವ ಸ್ಥಳ ರಾಮಮಂದಿರ ನಿರ್ಮಾಣಕ್ಕೆ,ಅದರ ಹೊರಗಿನ ಜಾಗ ಬಾಬ್ರಿ ಮಸೀದಿ ಕ್ರಿಯಾ ಸಮಿತಿಗೆ ಸೇರಬೇಕು ಮತ್ತು ಉಳಿದ ಮೂರನೇ ಒಂದು ಭಾಗವನ್ನು ನಿರ್ಮೋಹಿ ಅಖಾಡಕ್ಕೆ ನೀಡಬೇಕು” ಎಂದು ಅಲಹಾಬಾದ್ ಹೈಕೋರ್ಟ್ ೨೦೧೦ರಲ್ಲಿ ನೀಡಿದ ತೀರ್ಪು ಯಾವ ಗುಂಪಿಗೂ ಒಪ್ಪಿಗೆಯಾಗಲಿಲ್ಲ.ಆ ನಂತರ ೨೦೧೧ರ ಅಕ್ಟೋಬರ್ ತಿಂಗಳಿನಲ್ಲಿ,ಸುಪ್ರೀಂ ಕೋರ್ಟು,ಅಲಹಬಾದ್ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ನೀಡಿತ್ತು.

ಅದಾದ ನಂತರ ಈ ಕೇಸಿಗೆ ಪೂರಕವಾಗಿ ಬಂದ ಮತ್ತೊಂದು ಬಹುಮುಖ್ಯ ತೀರ್ಪು, 1994ರ ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಇಸ್ಲಾಂ ಪ್ರಕಾರ ಮಸೀದಿಯ ಮಹತ್ವ ಹಾಗೂ ನಮಾಜ್ ಮಾಡಲು ಅದೇ ಜಾಗ ಆಗಬೇಕೆಂದೇನಿಲ್ಲ, ಬಯಲು ಪ್ರದೇಶವೊಂದರಲ್ಲೂ ಪ್ರಾರ್ಥನೆ ಸಲ್ಲಿಸಬಹುದು ಎಂಬ ತೀರ್ಪನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿದ್ದು ಹಾಗೂ ಈ ವಿವಾದ ವಿಚಾರಣೆಗೆ ಸಾಂವಿಧಾನಿಕ ಪೀಠದ ಅಗತ್ಯವಿಲ್ಲ ಎನ್ನುವುದಾಗಿತ್ತು.

ಇದಾದ ನಂತರ ಅರ್ಜಿದಾರರು ಹಾಗೂ ಮಧ್ಯಸ್ಥಿಕೆದಾರರ ಜೊತೆಗೂಡಿ ಸಮಸ್ಯೆಗೆ ಸೌಹಾರ್ದಯುತ ಪರಿಹಾರಕ್ಕೂ ಸುಪ್ರೀಂ ಕೋರ್ಟ್ ಮಾರ್ಚ್ ತಿಂಗಳಲ್ಲಿ ಅವಕಾಶ ನೀಡಿತ್ತು. ಅಂತಿಮವಾಗಿ ಸತತ ೪೦ ದಿನಗಳ ಮ್ಯಾರಥಾನ್ ವಿಚಾರಣೆ ನಡೆಸಿತ್ತು.ಕಡೆಯ ದಿನ ಮತ್ತಷ್ಟು ಸಮಯ ಕೋರಿದ ಅರ್ಜಿದಾರರಿಗೆ,ಮುಖ್ಯನ್ಯಾಯ ಮೂರ್ತಿಗಳಾದ ರಂಜನ್ ಗೋಗೋಯ್ ಅವರು ‘Enough is Enough’ ಎಂದಿದ್ದರು.ಎಲ್ಲರ ಚಿತ್ತ ನವೆಂಬರ್ ತಿಂಗಳಲ್ಲಿ ಬರಲಿರುವ ತೀರ್ಪಿನ ಮೇಲೆಯೇ ಇತ್ತು. ನವೆಂಬರ್ ೯ನೇ ತಾರೀಕು ಐತಿಹಾಸಿಕ ತೀರ್ಪು ಹೊರಬಿದ್ದಿದೆ. ವಿವಾದಿತ ೨.೨೭ ಎಕರೆ ಜಾಗವು ರಾಮ್ ಲಲ್ಲಾನಿಗೆ ಸೇರಿದ್ದು ಎಂದು ಕೋರ್ಟ್ ತೀರ್ಪಿತ್ತಿದೆ. ಸುನ್ನಿ ವಕ್ಫ್ ಬೋರ್ಡಿಗೆ ಬೇರೆ ಜಾಗದಲ್ಲಿ ೫ ಎಕರೆ ಭೂಮಿಯನ್ನು ಇನ್ನು ೩-೪ ತಿಂಗಳಲ್ಲಿ ನೀಡುವಂತೆಯೂ ಸೂಚಿಸಿದೆ. ಮಂದಿರ ನಿರ್ಮಾಣದ ಹೊಣೆಯನ್ನು ಹಾಗೂ ನಿರ್ವಹಣೆಗಾಗಿ ಟ್ರಸ್ಟ್ ರಚನೆಯ ಹೊಣೆಯನ್ನು ಕೇಂದ್ರ ಸರ್ಕಾರಕ್ಕೆ ವಹಿಸಿದೆ.ಬಾಬ್ರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಾಣವಾಗಿಲ್ಲ ಎನ್ನುವುದನ್ನು ಕೋರ್ಟ್ ಒಪ್ಪಿದೆಯಾದರೂ, ಮಂದಿರವನ್ನು ಕೆಡವಿ ಕಟ್ಟಿರುವುದುಕ್ಕೆ ಪುರಾವೆ ಇಲ್ಲವೆಂದಿದೆ.ಹಾಗೆಯೇ ಮಸೀದಿಯ ಕೆಳಗೆ ಎಎಸ್ಐ ಉತ್ಖನನ ನಡೆಸಿ ನೀಡಿದ ವರದಿಯನ್ನು ಪುರಸ್ಕರಿಸಿ ಅಲ್ಲಿ ಇಸ್ಲಾಮೇತರ ಮಂದಿರದ ಅವಶೇಷ ಸಿಕ್ಕಿರುವುದನ್ನು ಒಪ್ಪಿಕೊಂಡಿದೆ. ಜೊತೆಗೆ ವಿವಾದಿತ ಜಾಗವು ರಾಮ ಜನ್ಮಸ್ಥಳ ಎನ್ನುವ ಹಿಂದೂಗಳ ವೈಯುಕ್ತಿಕ ನಂಬಿಕೆಯು ವಿವಾದರಹಿತವಾದದ್ದು ಎಂದಿದೆ.ಇದಿಷ್ಟು ತೀರ್ಪಿನ ಸಾರಾಂಶ.

ಮತ್ತಷ್ಟು ಓದು »

22
ಫೆಬ್ರ

ವೋಟ್ ಬ್ಯಾಂಕ್ ಮದ್ದಾನೆಗೆ ಸಿಲುಕಿ ನರಳಿದ ಸಿಸಿಸಿ

– ಅನಿರುದ್ಧ ವಸಿಷ್ಟ,ಭದ್ರಾವತಿ

ಏಕರೂಪ ನಾಗರಿಕ ಸಂಹಿತೆ – ಸುಪ್ರೀಂ ಕೋರ್ಟ್ V/S ಜಮಾತೆ ವಿಚಾರಧಾರೆ

ಸಮಾನ ನಾಗರೀಕ ಸಂಹಿತೆವ್ಯಾಪಾರಕ್ಕೆಂದು ಭಾರತಕ್ಕೆ ಬಂದು ದೇಶದ ಸಂಪತ್ತನ್ನು ಕೊಳ್ಳೆ ಹೊಡೆದದ್ದು ಮಾತ್ರವಲ್ಲದೇ, ದೇಶವನ್ನು ದಾಸ್ಯದ ಸಂಕೋಲೆಯಲ್ಲಿ ಬೀಳಿಸಿ, ಅಬ್ಬರಿಸಿದ ಬ್ರಿಟೀಷರ ಒಡೆದಾಳುವ ನೀತಿಯ ಮನಸ್ಥಿತಿ, ಭಾರತೀಯ ವಂಶವಾಹಿಯಲ್ಲಿ ಸೇರಿಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಆದರೆ,ಇವರನ್ನು ಓಡಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟೆವೆಂದು ಬೀಗುವ ಅಹಿಂಸಾವಾದಿ(?)ಗಳ ಕಾಂಗ್ರೆಸ್, ಎಲ್ಲ ಕ್ರೆಡಿಟ್‌ನ್ನು ತನ್ನ ತೆಕ್ಕೆಗೆ ಹಾಕಿಕೊಂಡದ್ದು ಮಾತ್ರವಲ್ಲದೇ, ಬ್ರಿಟೀಷರ ಒಡೆದಾಳುವ ನೀತಿಯನ್ನೇ ಮೈಗೂಡಿಸಿಕೊಂಡಿತು. ಭಾರತೀಯ ಸ್ವಾತಂತ್ರ್ಯದ ಜನಕ ಮಹಾತ್ಮ ಗಾಂಧಿಯವರ ಮಾತನ್ನು ಧಿಕ್ಕರಿಸಲು ಆರಂಭಿಸಿದ ಜವಹರಲಾಲ್ ನೆಹರೂ,ತಮ್ಮಿಚ್ಚೆಗೆ ಬಂದಂತೆ ಸರ್ಕಾರ ನಡೆಸಲು ಆರಂಭಿಸಿದ್ದು ಮಾತ್ರವಲ್ಲದೇ, ದೇಶದ ಅಲ್ಪಸಂಖ್ಯಾತರನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸಿ, ಶಾಶ್ವತಗೊಳಿಸಲು ಯೋಚಿಸಿ, ವೋಟ್ ಬ್ಯಾಂಕ್ ಎಂಬ ಅನಿಷ್ಟ ಪದ್ದತಿಯನ್ನು ಭಾರತದ ರಾಜಕಾರಣಕ್ಕೆ ಕೊಡುಗೆಯನ್ನಾಗಿ ನೀಡಿದರು.

ಇದರ ಪರಿಣಾಮ, ಬ್ರಿಟೀಷರಂತೆ ಒಡೆದಾಳುವ ನೀತಿಯನ್ನು ೬೦ ವರ್ಷಗಳ ಕಾಲ ಕಾಂಗ್ರೆಸ್ ಅನುಸರಿಸಿಕೊಂಡು ಬಂದದ್ದಲ್ಲದೇ, ಜಾತ್ಯತೀತ ರಾಷ್ಟ್ರವೆಂಬ ಹಣೆಪಟ್ಟಿಯನ್ನು ಕೇವಲ ಸಂವಿಧಾನದ ಪೀಠಿಕೆಗೆ ಮಾತ್ರ ಸೀಮಿತವಾಗಿಸಿ, ಓಲೈಕೆ ರಾಜಕಾರಣದ ವಿಷಬೀಜವನ್ನು ಬಿತ್ತಿ, ಹೆಮ್ಮರವನ್ನಾಗಿ ಬೆಳೆಸಿದೆ. ಪರಿಣಾಮ, ಜಾತ್ಯತೀತ ರಾಷ್ಟ್ರದಲ್ಲಿ ಜಾತಿ, ಧರ್ಮಗಳೇ ಇಂದು ಎಲ್ಲ ಕ್ಷೇತ್ರಗಳ ಪ್ರಮುಖ ವಿಚಾರ ಹಾಗೂ ವಿವಾದಗಳಾಗಿ ಪರಿವರ್ತನೆಯಾಗಿದ್ದು, ವಿಶ್ವ ಭ್ರಾತೃತ್ವವನ್ನು ಪ್ರಪಂಚಕ್ಕೆ ಸಾರಿದ ಭಾರತದ ಮಾನವನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿತ್ತು. ಇಂದು ಹೆಮ್ಮರವಾಗಿ ಬೆಳೆದು ನಿಂತಿರುವ ಈ ವಿಚಾರಗಳು ಸಂವಿಧಾನದ ಮೂಲ ಆಶಯ ಹಾಗೂ ಈ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನೇ ಉಲ್ಲಂಘಿಸುವ ಮಟ್ಟಕ್ಕೆ ಧರ್ಮಾಧಾರಿತ ಕಾನೂನು ಹಾಗೂ ವ್ಯವಸ್ಥೆಗಳನ್ನು ರೂಪಿಸಿ, ಬೀಗಲು ಅವಕಾಶ ಮಾಡಿಕೊಟ್ಟಿದೆ.ಅಭಿವೃದ್ಧಿಶೀಲ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಲು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳು, ಭಾರತವನ್ನು ವಿಶ್ವಗುರುನ್ನಾಗಿಸುವತ್ತ ಹೊರಳಿಸುತ್ತಿದೆ. ಆದರೆ, ಜಾಗತಿಕ ಮಟ್ಟದಲ್ಲಿ ಈ ವಿಚಾರಕ್ಕೆ ದೇಶದೊಳಗಿರುವ ಇಂತಹ ಅನಿಷ್ಟ ಪದ್ದತಿಗಳು ತೊಡಕಾಗುತ್ತವೆ.ಈ ಹಿನ್ನೆಲೆಯಲ್ಲಿ ದೇಶದಲ್ಲಿ ಸಮಾನ ನ್ಯಾಯ ಒದಗಿಸಲು ಸಮಾನ ನಾಗರಿಕ ಸಂಹಿತೆ ಜಾರಿಗೆ ತರಬೇಕಾದ ಅವಶ್ಯಕತೆ ಇದೆ. ಭಾರತ ಸಂವಿಧಾನ ಪೀಠಿಕೆಯಲ್ಲಿ ಹೇಳಿರುಂತೆ ಜಾತ್ಯತೀತ ಹಾಗೂ ಸಮಾನತೆಯನ್ನು ದೇಶದಲ್ಲಿ ವಾಸ್ತವವಾಗಿ ಜಾರಿಗೊಳಿಸಬೇಕಾದರೆ, ಸಮಾನ ನಾಗರಿಕ ಸಂಹಿತೆ ಜಾರಿಗೆ ಬರಲೇಬೇಕು.
ಮತ್ತಷ್ಟು ಓದು »