ರಾಮಸೇತು ಒಡೆದರೆ ಥೋರಿಯಮ್ ನಿಕ್ಷೇಪಕ್ಕೆ ಎಳ್ಳು ನೀರು…
-ಚಕ್ರವರ್ತಿ ಸೂಲಿಬೆಲೆ
ನಮಗೇ ಅರಿವಿಲ್ಲದೇ ಭಯಾನಕ ಪರಿಸ್ಥಿತಿಯತ್ತ ತೆವಳಿಕೊಂಡು ಹೋಗುತ್ತಿದ್ದೇವೆ! ನಾವು ಬಳಸುವ ಪೆಟ್ರೋಲು – ಡೀಸೆಲ್ಲಿನ ಮುಕ್ಕಾಲು ಭಾಗ ಆಮದು ಮಾಡಿಕೊಳ್ಳುತ್ತಿದ್ದೇವೆ. ಕಳೆದ ವರ್ಷದ ಲೆಕ್ಕಾಚಾರದ ಪ್ರಕಾರ ೧೩೪ ಶತಕೋಟಿ ಡಾಲರುಗಳಷ್ಟು ತೈಲ ಆಮದು ಮಾಡಿಕೊಂಡಿದ್ದೇವೆ. ಆಮದು ಮಿತಿಮೀರಿ ರಫ್ತು ನೆಲ ಕಚ್ಚುತ್ತಿರುವುದರಿಂದ ಡಾಲರಿನೆದುರು ರೂಪಾಯಿ ಸೋಲುತ್ತಲೇ ಸಾಗುತ್ತಿದೆ. ಒಂದಷ್ಟು ಜನಕ್ಕೆ ರೂಪಾಯಿಯ ಅಪಮೌಲ್ಯ ಲಾಭದಾಯಕವೆನಿಸಿದರೂ ಭಾರತದ ದೃಷ್ಟಿಯಿಂದ ಬಲು ಭಯಾನಕ.
ಅದೇಕೋ ನೆಹರೂ ಕಾಲದಿಂದಲೂ ಈ ದೇಶಕ್ಕೆ ದೂರದೃಷ್ಟಿಯ ಕೊರತೆ ಇದೆ. ಮುಂದಿನ ನೂರು ವರ್ಷಗಳಿಗೆ, ಸಾವಿರ ವರ್ಷಗಳಿಗೆ ಯೋಜನೆ ರೂಪಿಸುವ ಪ್ರಯತ್ನಗಳೇ ಇಲ್ಲ. ಅದು ಬಿಡಿ, ಅಂತಾರಾಷ್ಟ್ರೀಯ ಒತ್ತಡಗಳಿಗೆ ಮಣಿದು ಇರುವ ಸಂಪತ್ತನ್ನೂ ನಾಶ ಮಾಡಿಕೋಳ್ಳುವ ಜಾಯಮಾನ ನಮ್ಮದು.
ಎನರ್ಜಿ ಇನ್ಫರ್ಮೇಶನ್ ಏಜೆನ್ಸಿಯ ಪ್ರಕಾರ ಅಮೆರಿಕಾ, ಚೀನಾ, ರಷ್ಯಾ ಬಿಟ್ಟರೆ ಹೆಚ್ಚು ತೈಲ ಬಳಸುವ ರಾಷ್ಟ್ರ ನಮ್ಮದೇ. ಉಳಿದ ಮೂರು ರಾಷ್ಟ್ರಗಳೂ ತೈಲ ಹೊರತೆಗೆದು ಸಂಸ್ಕರಿಸಿ ಬಳಸುವಲ್ಲಿ ಸ್ವಾವಲಂಬಿಯಾಗುವತ್ತ, ಅಷ್ಟೇ ಅಲ್ಲ, ತಮ್ಮ ತೈಲ ಕಂಪನಿಗಳನ್ನು ತೈಲ ರಾಷ್ಟ್ರಗಳಿಗೆ ಕಳಿಸುವತ್ತಲೂ ಗಮನ ನೀಡುತಿವೆ. ನಾವು ಮಾತ್ರ ಕಂಡುಹಿಡಿದಿರುವ ತೈಲ ಸಂಪತ್ತನ್ನು ಹೊರತೆಗೆಯಲೂ ಮೀನಾಮೇಷ ಎಣಿಸುತ್ತ ಬಿಲಿಯನ್ಗಟ್ಟಲೆ ಡಾಲರುಗಳನ್ನು ವ್ಯರ್ಥ ಮಾಡುತ್ತ, ಕಾಲ ಕಳೆಯುತ್ತಿದ್ದೇವೆ. ಅದೇ ಏಜೆನ್ಸಿಯ ಅಂಕಿ ಅಂಶದ ಪ್ರಕಾರ ೨೦೧೦ರಲ್ಲಿ ನಾವು ಏಳುವರೆ ಲಕ್ಷ ಬ್ಯಾರಲ್ನಷ್ಟು ತೈಲವನ್ನು ಪ್ರತಿ ನಿತ್ಯ ಹೊರತೆಗೆದರೆ, ಆ ವರ್ಷ ೩೨ ಲಕ್ಷ ಬ್ಯಾರಲ್ನಷ್ಟು ತೈಲವನ್ನು ಪ್ರತಿನಿತ್ಯ ಬಳಸಿದ್ದೇವೆ. ಅಂದಮೇಲೆ ಅಂತಾರಾಷ್ಟ್ರೀಯ ಒತ್ತಡಗಳು ನಮ್ಮ ಮೇಲೆ ಹೇಗಿರಬಹುದೆಂದು ಲೆಕ್ಕ ಹಾಕಿ. ನಮಗೆ ಪೆಟ್ರೋಲು- ಡೀಸೆಲ್ಲು ಕಳಿಸುವುದಿಲ್ಲವೆಂದು ತೈಲ ರಾಷ್ಟ್ರಗಳು ನಿರ್ಬಂಧ ಹೇರಿ ಕುಂತುಬಿಟ್ಟರೆ ನಮ್ಮ ಕಥೆ ಮುಗಿದೇಹೋಯ್ತು. ಹಾಹಾಕಾರ ಉಂಟಾಗಿಬಿಡುತ್ತೆ.





