ಪರಮಾತ್ಮ
– ಇಂಚರ
ಈ ನಮ್ಮ ಪರಮಾತ್ಮನಿಗೆ ಹಣ ಮಾಡುವುದರಿಂದ ಆಧ್ಯಾತ್ಮದವರೆಗೂ ಎಲ್ಲವೂ ಸುಲಭ. ಆದರೆ ಎಮ್ ಎಸ್ ಸಿ ಪರೀಕ್ಷೆ ಮಾತ್ರ ಬಿಡಿಸಲಾರದಷ್ಟು ಕಗ್ಗಂಟು. ಈತನ ತಂದೆ ಪ್ರಖ್ಯಾತ ಹೃದಯ ತಜ್ಞ. ವೈದ್ಯನಾಗಿ ಬೇಕಾದಷ್ಟು ಹಣ ಗಳಿಸಬಹುದಾದರೂ, ಆತ್ಮ ತೃಪ್ತಿಗೆ ಹಣವೇ ಮುಖ್ಯ ಅಲ್ಲವೆಂದು ಒಂದಷ್ಟು ಮಕ್ಕಳನ್ನು ಸಾಕಿಕೊಂಡು, ನೆಮ್ಮದಿಯಿಂದ ಬದುಕುತ್ತಿರುವ ಈತನಿಗೆ ಮಗನ ಹೃದಯದ ಬಗ್ಗೆ ಪರಮ ಹೆಮ್ಮೆ. ಈತ ಮಗ ಏನೂ ಮಾಡಿದರೂ ಪ್ರಶ್ನಿಸಲಾರ. ಮಗನ ಮೇಲೆ ಅದಮ್ಯ ವಿಶ್ವಾಸ. ಈಗಿನ ಅಪ್ಪಂದಿಗಿರುವ ಆತಂಕ, ನಿರೀಕ್ಷೆ ಈ ಅಪ್ಪನಿಗಿಲ್ಲ. ಹಾಗೆಯೇ ಅಪ್ಪ ನೀಡಿರುವ ಸ್ವಾತಂತ್ರದ ಇನಿತೂ ದುರುಪಯೋಗ ಪಡೆಯದ ಮಗ ಕಾಲೇಜಿನ ಪರೀಕ್ಷೆಯೊಂದನ್ನು ಬಿಟ್ಟು ಜೀವನದ ಎಲ್ಲಾ ಪರೀಕ್ಷೆಗಳಲ್ಲೂ ಫಸ್ಟ್ ಕ್ಲಾಸ್ ಪಾಸ್. ಮಗ ಪರೀಕ್ಷೆ ಪಾಸಾಗಲಿಲ್ಲವೆಂಬ ಕೊರಗು ಅಥವಾ ಮಗ ತನ್ನಂತೆಯೇ ವೈದ್ಯನಾಗಬೇಕೆಂಬ ಹಂಬಲವೂ ಕೂಡ ಈ ಅಪ್ಪನಿಗಿಲ್ಲ. ಆತನಿಗಿರುವ ಕಾಳಜಿಯೊಂದೇ, ತನ್ನ ಮಗನ ಹೃದಯಕ್ಕೆ ನೋವಾಗಬಾರದು. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವೆಲ್ಲರೂ ಎದುರಿಸುತ್ತಿರುವ ಆತಂಕ, ಒತ್ತಡ, ಸೋಲು, ಕಿರಿಕಿರಿ, ನಿರಾಶೆ ಇವುಗಳೆಲ್ಲವನ್ನೂ ಬಿಟ್ಟು ನಿರಾಳವಾಗಿ ಬದುಕುವುದು ಹೇಗೆ ಎಂಬುದನ್ನು ತೋರಿಸುವ ಮಾದರಿ ಈ ಅಪ್ಪ, ಮಗ!





