ಜಾತಿ-ವಿರೋಧಿ ನಿಲುವು : ಸರಿಯಾದ ವೈಧಾನಿಕತೆ!
– ಡಂಕಿನ್ ಝಳಕಿ
ಇಂದಿನ ಪ್ರಜಾವಾಣಿಯಲ್ಲಿ (೦೪/೦೪/೨೦೧೩) ಎಂ.ಎಸ್. ಆಶಾದೇವಿಯವರು ಬರೆದ ವಚನ ಕುರಿತ ಚರ್ಚೆಯ ಬರಹಕ್ಕೆ ಇದು ನನ್ನ ಉತ್ತರ.
ನಮ್ಮ ಸಂಶೋಧನೆಯ ಕುರಿತು ಇವರು ಮಾಡುವ ಗುರುತರ ಆಪಾದನೆಯೆಂದರೆ, ಇದಕ್ಕೆ ವಚನಗಳ “ಜೀವಪರ ನಿಲುವು” ಕಾಣಿಸುವುದಿಲ್ಲ. ಏಕೆಂದರೆ ಈ ಸಂಶೋಧನೆಗೆ ಒಂದು “ವೈಧಾನಿಕತೆಯ ಕಣ್ಕಟ್ಟು” ಇದೆ. ಯಾವುದಿದು ವೈಧಾನಿಕತೆಯ ಕಣ್ಕಟ್ಟು? ಆಧ್ಯಾತ್ಮಿಕ ವಿಚಾರವನ್ನು ಅಕಾಡೆಮಿಕ್ ಅಧ್ಯಯನದಲ್ಲಿ ತರುವ ಪ್ರಯತ್ನವೇ ಈ ಕಣ್ಕಟ್ಟು ಅಥವಾ ಮಾಯೆ. ಮುಂದುವರೆಸಿ ಇವರು ಹೇಳುತ್ತಾರೆ, ಈ ಕುರುಡು ವೈಧಾನಿಕತೆಯು ಈ ಮುಂದಿನ ಮೂಲಭೂತ ಪ್ರಶ್ನೆಗಳನ್ನು ಎತ್ತುತ್ತದೆ: “ಆ ಆಧ್ಯಾತ್ಮಿಕ ಪರಂಪರೆಯ ಸ್ವರೂಪ ಮತ್ತು ವ್ಯಾಖ್ಯಾನ ಯಾವುದು?”
ಇವರ ಈ ಹೇಳಿಕೆಗಳನ್ನು ನಾನು ‘ಆಪಾದನೆ’ ಎಂದು ಯಾಕೆ ಹೇಳಿದೆನೆಂದರೆ ಇವರು ತಮ್ಮ ಈ ಹೇಳಿಕೆಗಳನ್ನು ಮುಂದೆ ಎಲ್ಲೂ ವಿವರಿಸುವುದೂ ಇಲ್ಲ, ಸಮರ್ಥನೆ ಮಾಡಿಕೊಳ್ಳುವುದೂ ಇಲ್ಲ. ಈ ಆಪಾದನೆಯ ನಂತರ ಇವರ ಲೇಖನ ಬೇರೆಡೆ ಹೊರಳುತ್ತದೆ. ತಮ್ಮ ಹೇಳಿಕೆಗಳನ್ನು ಇವರು ತಾವೇ ವಿವರಿಸದೆ ಹೋಗುವುದರಿಂದ ಅದನ್ನು ಅರ್ಥಮಾಡಿಕೊಳ್ಳುವುದು ಓದುಗನಿಗೆ ಬಿಟ್ಟ ಕೆಲಸ. ನನಗೆ ಇವರ ಕಷ್ಟದ ಭಾಷೆ ಅರ್ಥವಾದ ಮಟ್ಟಿಗೆ ಹೇಳುವುದಾದರೆ, ಯಾವುದೇ ಸಂಶೋಧನೆ ಮಾಡದೆ, ನೂರು ವರ್ಷಗಳಿಂದ ಹೇಳುತ್ತಾ ಬಂದಿರುವ ‘ವಚನಗಳು ಜಾತಿವಿರೋಧಿ’ ಎಂಬ ವಿಚಾರವನ್ನು ಒಪ್ಪಿಕೊಳ್ಳುವುದೇ ವಚನಗಳ ಜೀವಪರ ನಿಲುವನ್ನು ಗುರುತಿಸುವ ವೈಧಾನಿಕತೆ ಎಂದಾಯಿತು ಅಲ್ಲವೇ?





